ಪತ್ನಿ, ಮಗಳು, ಅತ್ತೆ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು

ಮೈಸೂರು: ತನ್ನ ಪತ್ನಿ, ಮಗಳು ಹಾಗೂ ಅತ್ತೆಯ ಮುಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳೋ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತಪಟ್ಟ ಘಟನೆ ಜಿಲ್ಲೆಯ ಚೋರನಹಳ್ಳಿಯಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಜಿ.ಮಾರನಹಳ್ಳಿ ನಿವಾಸಿ ರಾಜು (42) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ಆ.14 ರಂದು ಆತ್ಮಹತ್ಯೆಗೆ ಯತ್ನಿಸಿ, ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಸಾಕಷ್ಟು ಸಾಲ ಮಾಡಿಕೊಂಡಿದ್ದನು. ಗಂಡನ ಬೇಜವಾಬ್ದಾರಿ ವರ್ತನೆಯಿಂದ ಬೇಸತ್ತಿದ್ದ ಪತ್ನಿ ಗೌರಮ್ಮ ಚೋರನಹಳ್ಳಿಯಲ್ಲಿರುವ ತವರು ಮನೆಗೆ ಸೇರಿಕೊಂಡಿದ್ದರು. ಆಗಾಗ ರಾಜು ಅತ್ತೆ ಮನೆಗೆ ಬಂದು ಹಣಕ್ಕಾಗಿ ಪೀಡಿಸುತ್ತಿದ್ದರು.

ಆ.14 ರಂದು ರಾತ್ರಿ ರಾಜು ಹಣ ಕೇಳಲು ಅತ್ತೆ ಮನೆಗೆ ಬಂದು ಎಲ್ಲರ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದನು. ಅಲ್ಲದೇ ಇದೇ ಸಂದರ್ಭದಲ್ಲಿ ಪತ್ನಿ ಹಾಗೂ ಮಗಳನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದ್ದನು. ಆದರೆ ಅವರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ತೀವ್ರ ಗಾಯಗೊಂಡ ರಾಜುವನ್ನ ಕೆ ಆರ್ ಆಸ್ಪತ್ರೆಗೆ ದಾಖಲಾಗಿದ್ದನು.

ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *