ಪ್ರಧಾನಿ ಎಲ್ಲಾ ಪಕ್ಷಗಳ ಪರ ಪ್ರಚಾರ ಮಾಡಬೇಕು – ಉದ್ಧವ್ ಠಾಕ್ರೆ

ಮುಂಬೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಬಿಜೆಪಿ ಪಕ್ಷ ಪರ ಮಾತ್ರ ಪ್ರಚಾರದಲ್ಲಿ ನಡೆಸದೆ, ಎಲ್ಲಾ ಪಕ್ಷಗಳ ಪರ ಪ್ರಚಾರ ನಡೆಸಬೇಕು ಎಂದು ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಠಾಕ್ರೆ, ಪ್ರಧಾನಿ ನರೇಂದ್ರ ಮೋದಿ ಕೇವಲ ಬಿಜೆಪಿ ಪಕ್ಷದ ಪರ ಮಾತ್ರ ಏಕೆ ಪ್ರಚಾರ ನಡೆಸಲು ತೆರಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದರೂ ಅವರು ದೇಶದ ಪ್ರಧಾನಿಯಾಗಿದ್ದಾರೆ. ಅದ್ದರಿಂದ ಅವರು ಎಲ್ಲರನ್ನು ಸಮಾನವಾಗಿ ಕಾಣಬೇಕು. ಪ್ರಧಾನಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಹೇಳಿದ ಮಾತಿನಂತೆ ಪ್ರಧಾನಿ, ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಎಲ್ಲರನ್ನು ಸಮಾನವಾಗಿ ಕಾಣಬೇಕಿದೆ. ಶಿವಸೇನೆ, ಕಮ್ಯುನಿಸ್ಟ್ ಪಕ್ಷ ಸೇರಿದಂತೆ ಸ್ವತಂತ್ರ ಅಭ್ಯರ್ಥಿಗಳ ಪರವೂ ಪ್ರಚಾರ ನಡೆಸಬೇಕು ಎಂದು ತಿಳಿಸಿದ್ದಾರೆ.

ಇದೇ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಉದಾಹರಣೆಯಾಗಿ ನೀಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಚುನಾವಣಾ ಆಯೋಗಕ್ಕೆ ಈ ಕುರಿತು ಪತ್ರ ಬರೆದಿದ್ದಕ್ಕೆ ನಮ್ಮ ಬೆಂಬಲವಿದೆ. ಆದರೆ ಚುನಾವಣಾ ಆಯೋಗವೂ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಪ್ರಚಾರದಲ್ಲಿ ಭಾಗವಹಿಸಲು ನಿಷೇಧ ಹೇರಬೇಕು ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸರ್ಕಾರ ಬಡವರಿಗೆ 2022 ರ ವೇಳೆಗೆ ಮನೆ ನೀಡುವುದಾಗಿ ಹೇಳುತ್ತಿದೆ. ಆದರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿರುವ ಅಚ್ಚೇ ದಿನ್ ಘೋಷಣೆ ಸದ್ಯ ಎನ್‍ಡಿಎ ಮೈತ್ರಿಕೂಟಕ್ಕೆ ನುಂಗಲಾಗದ ತುತ್ತಾಗಿದೆ ಎಂದು ವ್ಯಂಗ್ಯವಾಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Comments

Leave a Reply

Your email address will not be published. Required fields are marked *