ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

ಬೆಂಗಳೂರು: ಮಾರ್ಚ್ 1 ರಿಂದ ನಡೆಯುವ ದ್ವೀತಿಯ ಪಿಯುಸಿ ಪರೀಕ್ಷೆಗೆ ಪಿಯುಸಿ ಬೋರ್ಡ್ ಸಿದ್ಧತೆ ಪೂರ್ಣಗೊಳಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆ ಮುಗಿಸಿದ್ದು, ಪರೀಕ್ಷಾ ಸಿದ್ಧತೆ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವರ್ಷ ಕಳೆದ ವರ್ಷಕ್ಕಿಂತ ಸುಮಾರು 12 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತೆ. ಪೊಲೀಸ್ ಭದ್ರತೆಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಯುತ್ತಿದೆ. ಇನ್ನೂ ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ತಡೆಯಲು ಸೂಕ್ತ ಭದ್ರತೆ ತೆಗೆದುಕೊಳ್ಳಲಾಗಿದೆ. ಹೀಗಾಗಿ ಪರೀಕ್ಷೆಯನ್ನ ನಿರಾತಂಕವಾಗಿ ಬರೆಯಲು ಪಿಯುಸಿ ಬೋರ್ಡ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. ಪಿಯುಸಿ ಪರೀಕ್ಷೆಯ ಡಿಟೇಲ್ಸ್ ಹೀಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು:
ಒಟ್ಟು ವಿದ್ಯಾರ್ಥಿಗಳು – 6,73,606
ವಿದ್ಯಾರ್ಥಿಗಳು – 3,38,868
ವಿದ್ಯಾರ್ಥಿನಿಯರು – 3,34,738
ಪರೀಕ್ಷಾ ಕೇಂದ್ರ – 1013.

ಭದ್ರತೆ:
ಪರೀಕ್ಷಾ ಅಕ್ರಮ ತಡೆಯಲು 2026 ವಿಶೇಷ ಮೇಲ್ವಿಚಾರಕರ ನೇಮಕ ಮಾಡಲಾಗಿದ್ದು, ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ಕ್ವಾಡ್ ನೇಮಕ ಮಾಡಲಾಗಿದೆ. ಇನ್ನೂ 54 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಬಾರಿಗೆ ಆನ್‍ಲೈನ್ ಮೂಲಕ ಮೌಲ್ಯಮಾಪನ ಮಾಡಿದ ಅಂಕ ಕೇಂದ್ರದಿಂದಲೇ ನೇರವಾಗಿ ಅಪ್ಲೋಡ್ ಆಗುತ್ತದೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳಡಿಕೆ ಮಾಡಲಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರವೇಶ ಪತ್ರ ತೋರಿಸಿದರೆ ಪ್ರವೇಶ ಉಚಿತವಾಗಿರುತ್ತದೆ.

ಅರ್ಥಶಾಸ್ತ್ರ, ವ್ಯವಹಾರ ಅಧ್ಯಾಯನ, ಲೆಕ್ಕಶಾಸ್ತ್ರ ವಿಷಯಗಳ ಪರೀಕ್ಷೆ ಎನ್‍ಸಿಇಆರ್ ಟಿ ಪಠ್ಯ ಅಳವಡಿಕೆ ಮಾಡಿಕೊಳ್ಳಲಾಗಿದ್ದು, ಈ ವರ್ಷ ಈ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧತೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲಾ ವಾಹನಗಳಿಗೂ ಜಿಪಿಎಸ್ ಟ್ರಾಕಿಂಗ್ ಸಿಸ್ಟಮ್ ಅಳವಡಿಕೆ ಮಾಡಲಾಗಿದ್ದು, ಉತ್ತರ ಪತ್ರಿಕೆ ಕೊಠಡಿಗೆ 24*7 ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್ ಅಂಗಡಿ ಕ್ಲೋಸ್ ಮಾಡುವ ಮೂಲಕ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧ ಪ್ರದೇಶ ಮಾಡಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ನಿಷೇಧಿಸಿದ್ದು, ಗೃಹ ಇಲಾಖೆಯ ಜೊತೆ ಭದ್ರತೆ ಸಂಬಂಧ ಸೂಕ್ತ ಕ್ರಮವಹಿಸಲಾಗಿದೆ. ಹಿಂದಿನ ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕಂಡು ಬಂದ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ. ಅವಶ್ಯಕತೆ ಬಿದ್ದರೆ ಅಂತಹ ವ್ಯಕ್ತಿ ಮೇಲೆ ಕೋಕಾ ಕಾಯ್ದೆ ಜಾರಿಗೆ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ, ವಾಟ್ಸಪ್ ಮೆಸೇಜ್ ನಲ್ಲಿ ಪ್ರಶ್ನೆಗಳು ಸಿಕ್ಕಿದರೆ ತಕ್ಷಣ ಅವರು ದೂರು ಕೊಡಬೇಕು. ಒಂದು ವೇಳೆ ಇದನ್ನ ವಿದ್ಯಾರ್ಥಿಗಳು ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಪ್ರಾಥಮಿಕ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಭದ್ರತೆಯ ಬಗ್ಗೆ ವಿವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *