ಕೂಡಿಗೆಯಲ್ಲಿ ನೀರಿನ ಘಟಕವಿದ್ರೂ ಪ್ರಯೋಜನವಿಲ್ಲ – ಮೂರು ತಿಂಗಳಿಂದ ಜನರ ಪರದಾಟ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳುಗಳಿಂದ ಶುದ್ಧ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಅಸಮರ್ಪಕ ನಿರ್ವಹಣೆ ಇಲ್ಲದಿರುವುದರಿಂದ ಶುದ್ಧ ನೀರಿನ ಘಟಕ ಮೂರು ತಿಂಗಳುಗಳಿಂದ ಸ್ಥಗಿತಗೊಂಡಿದೆ.

ಈ ವ್ಯಾಪ್ತಿಯ ಗ್ರಾಮಸ್ಥರು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ, ಜನ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡುತ್ತಾ ಬಂದಿದ್ದರೂ ಯಾರೂ ಇದನ್ನು ಸರಿಪಡಿಸಲು ಮುಂದಾಗಿಲ್ಲ. ಸಮಸ್ಯೆ ಹೇಳಿದರೆ ಬೇಜವಾಬ್ದಾರಿ ಉತ್ತರವನ್ನು ನೀಡುತ್ತಿದ್ದಾರೆ ಎಂದು ಕೂಡಿಗೆ ಗ್ರಾಮಸ್ಥರು ಆರೋಪಿಸಿದರು. ಇದನ್ನೂ ಓದಿ: ಅಶುದ್ಧಗೊಂಡಿದೆ ಶುದ್ಧ ಕುಡಿಯುವ ನೀರಿನ ಘಟಕ

ಇದೇ ಸಂದರ್ಭದಲ್ಲಿ ಮಾತನಾಡಿದ ಕೂಡಿಗೆ ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷರಾದ ಕೆ.ಎಸ್ ಕಾಂತರಾಜ್ ಅವರು, ಕಳೆದ ಎರಡು ವರ್ಷಗಳ ಹಿಂದೆ ಕೂಡಿಗೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಗೊಂಡಿದೆ. ಆದರೆ ಇಲ್ಲಿಯ ಜನರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ದೊರಕುತ್ತಿಲ್ಲ. ಗ್ರಾಮ ಪಂಚಾಯ್ತಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರನ್ನು ಪಡೆಯಲು ಕಾರ್ಡನ್ನು ವಿತರಿಸಲಾಯಿತು. ಆದರೆ ಸಮರ್ಪಕವಾಗಿ ನೀರು ದೊರಕದ ಕಾರಣ ಗ್ರಾಮಸ್ಥರು ಕಾರ್ಡನ್ನು ಗ್ರಾಮ ಪಂಚಾಯ್ತಿಗೆ ಹಿಂತಿರುಗಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ಮಳೆಗಾಲ ಪ್ರಾರಂಭವಾದರೂ ಮಳೆಯಾಗದ ಕಾರಣ ಈ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಜನರು ಕುಡಿಯುವ ನೀರಿನ ಘಟಕದಿಂದ ಕಾರ್ಡನ್ನು 300 ರೂ. ಕೊಟ್ಟು ಗ್ರಾಮ ಪಂಚಾಯ್ತಿಯಲ್ಲಿ ತೆಗೆದುಕೊಂಡಿದ್ದಾರೆ. ಆದರೆ ಜನರಿಗೆ ಯಾವುದೇ ಶುದ್ಧ ಕುಡಿಯುವ ನೀರು ದೊರಕುತ್ತಿಲ್ಲ. ಇಷ್ಟಾದರೂ ಕೂಡಿಗೆ ಗ್ರಾಮ ಪಂಚಾಯ್ತಿ, ಜನಪ್ರತಿನಿಧಿಗಳು, ಅಧಿಕಾರಿಗಳು ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಪಡಿಸುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇನ್ನಾದರೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಾರ್ವಜನಿಕರ ಉಪಯೋಗಕ್ಕೆ ಬರುವ ರೀತಿಯಲ್ಲಿ ಆದಷ್ಟು ಬೇಗನೆ ಸರಿಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

Comments

Leave a Reply

Your email address will not be published. Required fields are marked *