ಮೋದಿ, ಶಾ ದೇಶದ ಯುವ ಜನತೆಯ ಭವಿಷ್ಯವನ್ನು ಹಾಳು ಮಾಡಿದ್ದಾರೆ- ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶದ ಯುವ ಜನತೆಯ ಭವಿಷ್ಯವನ್ನು ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಬ್ಬರೂ ನಾಯಕರು ಸಹ ಯುವಕರ ಆಕ್ರೋಶಕ್ಕೆ ತುತ್ತಾಗಿದ್ದು, ಯುವಕರಿಗೆ ಕೆಲಸ ಸಿಗದಿರುವುದು ಹಾಗೂ ದೇಶದ ಆರ್ಥಿಕತೆ ಕುಸಿಯುತ್ತಿರುವುದರಿಂದ ಆಕ್ರೋಶಗೊಂಡಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಮೋದಿ, ಶಾ ಯತ್ನಿಸುತ್ತಿದ್ದಾರೆ. ಹೀಗಾಗಿ ಭಾರತವನ್ನು ವಿಭಾಗಿಸುತ್ತಿದ್ದಾರೆ. ಆದರೆ ಪ್ರತಿಯೊಬ್ಬ ಭಾರತೀಯನನ್ನು ಪ್ರೀತಿಸುವ ಮೂಲಕ ಅವರನ್ನು ನಾವು ಸೋಲಿಸಬಹುದು ಎಂದು ಟ್ವೀಟ್ ಮಾಡಿದ್ದಾರೆ.

ಆತ್ಮೀಯ ಯುವಕರೇ, ಮೋದಿ ಮತ್ತು ಶಾ ನಿಮ್ಮ ಭವಿಷ್ಯವನ್ನು ಹಾಳು ಮಾಡಿದ್ದಾರೆ. ಉದ್ಯೋಗದಿಂದ ವಂಚಿತರಾಗಿದ್ದಕ್ಕೆ ಹಾಗೂ ಆರ್ಥಿಕತೆಯನ್ನು ಹಾಳು ಮಾಡಿದ್ದಕ್ಕೆ ನೀವು ತೋರುತ್ತಿರುವ ಆಕ್ರೋಶವನ್ನು ತಡೆದುಕೊಳ್ಳುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಪ್ರೀತಿಯ ಭಾರತವನ್ನು ಒಡೆಯುತ್ತಿದ್ದಾರೆ. ಈ ಮೂಲಕ ವಿರೋಧದಿಂದ ತಪ್ಪಿಸಿಕೊಳ್ಳಲು ನೋಡುತ್ತಿದ್ದಾರೆ. ಆದರೆ ಪ್ರತಿಯೊಬ್ಬ ಭಾರತೀಯನನ್ನು ಪ್ರೀತಿಸುವ ಮೂಲಕ ನಾವು ಅವರನ್ನು ಸೋಲಿಸಬಹುದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಈ ಹೇಳಿಕೆ ಹೊರ ಬಿದ್ದಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‍ಆರ್ ಸಿ ಕುರಿತು ಜನರಲ್ಲಿ ಭಯ ಹುಟ್ಟಿಸಿ, ಅವರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ.

ಧನ್ಯವಾದ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಸಿಎಎ ಉದ್ದೇಶ ಪೌರತ್ವವನ್ನು ನೀಡುವುದಾಗಿದೆಯೇ ಹೊರತು, ಕಿತ್ತುಕೊಳ್ಳುವುದಲ್ಲ. ಭಾರತದಲ್ಲಿ ಹುಟ್ಟಿದ ಮುಸ್ಲಿಮರು ಈ ಕುರಿತು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

Comments

Leave a Reply

Your email address will not be published. Required fields are marked *