ನಾಲ್ಕು ತಿಂಗಳಲ್ಲಿ ಬಾನೆತ್ತರ ರಾಮ ಮಂದಿರ ನಿರ್ಮಿಸುತ್ತೇವೆ- ಅಮಿತ್ ಶಾ

ರಾಂಚಿ: ನಾಲ್ಕು ತಿಂಗಳಲ್ಲಿ ಬಾನೆತ್ತರದ ರಾಮ ಮಂದಿರವನ್ನು ನಿರ್ಮಿಸುತ್ತೇವೆ ಎಂದು ಗೃಹಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ.

ಜಾರ್ಖಂಡ್‍ನ ಪಕೂರ್‍ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾನೆತ್ತರದ ರಾಮಮಂದಿರವನ್ನು ಕೇವಲ ನಾಲ್ಕು ತಿಂಗಳಲ್ಲಿ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದರು.

ರಾಮಮಂದಿರ ನಿರ್ಮಾಣದ ಪರವಾಗಿ ಸುಪ್ರೀಂ ಕೋರ್ಟ್ ನವೆಂಬರ್ 9ರಂದು ತೀರ್ಪು ನೀಡಿದ್ದು, ಇದರ ಬೆನ್ನಲ್ಲೇ ಮಂದಿರ ನಿರ್ಮಾಣಕ್ಕೆ ಹಿಂದೂ ಮಹಾಸಭಾ ಎಲ್ಲ ಸಿದ್ಧತೆ ನಡೆಸಿದೆ. ಅಲ್ಲದೆ ಕೆಲವೇ ದಿನಗಳ ಹಿಂದೆ ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿಕೆ ನೀಡಿ, ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ತಲಾ 11 ರೂ. ಹಾಗೂ ಒಂದು ಇಟ್ಟಿಗೆಯನ್ನು ಕೊಡಿ ಎಂದು ಮನವಿ ಮಾಡಿದ್ದರು.

ಇದೀಗ ಅಮಿತ್ ಶಾ ಅವರು ಈ ಕುರಿತು ಹೇಳಿಕೆ ನೀಡುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದು, ಕೇವಲ ನಾಲ್ಕು ತಿಂಗಳಲ್ಲಿ ಬಾನೆತ್ತರದ ರಾಮ ಮಂದಿರ ನಿರ್ಮಿಸುತ್ತೇವೆ ಎಂದು ಹೇಳುವ ಮೂಲಕ ಹುಬ್ಬೇರಿಸುವಂತೆ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ 18 ಮರುಪರಿಶೀಲನಾ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಪಂಚ ಸದಸ್ಯರ ಪೀಠ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಅಮಿತ್ ಶಾ ಅವರು ಈ ಹೇಳಿಕೆ ನೀಡಿದ್ದಾರೆ.

ನವೆಂಬರ್ 9ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಮಸೀದಿ ನಿರ್ಮಿಸಲು ಮುಸ್ಲೀಮರಿಗೆ ಪ್ರತ್ಯೇಕವಾಗಿ 5 ಎಕರೆ ಜಾಗವನ್ನು ಆಯೋಧ್ಯೆಯಲ್ಲಿ ನೀಡುವಂತೆ ಆದೇಶದಲ್ಲಿ ತಿಳಿಸಿದೆ.

Comments

Leave a Reply

Your email address will not be published. Required fields are marked *