ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ ನಡೆ – ಬೆಂಗಳೂರಿಗೆ ಆಗಮನ

ಬೆಂಗಳೂರು: ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಎನ್‍ಡಿಎ ಮೈತ್ರಿ ಕೂಟದ ಪರ ಬರುತ್ತಿದಂತೆ ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ಕಾಣಿಸಿಕೊಂಡಿದೆ. ಕಾಂಗ್ರೆಸ್ ಬಂಡಾಯ ನಾಯಕರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು ನಿವಾಸಕ್ಕೆ ತೆರಳದೆ ನಗರದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಮಾಡಿದ್ದಾರೆ. ಈ ವೇಳೆ ಹೋಟೆಲ್ ನಲ್ಲಿ ಬಿ.ನಾಗೇಂದ್ರ ಅವರನ್ನು ಭೇಟಿ ಮಾಡಿದ್ದು, ಅತೃಪ್ತ ಶಾಸಕರನ್ನು ಒಟ್ಟುಗೂಡಿಸುತ್ತಿರುವ ಪ್ರಯತ್ನ ನಡೆಸಿದ್ದರಾ ಎಂಬ ಅನುಮಾನ ಮೂಡಲು ಕಾರಣವಾಗಿದೆ.

ಇತ್ತ ಇದೇ ವೇಳೆ ಶಾಸಕರಾದ ಜೆ.ಎನ್ ಗಣೇಶ್, ನಾಗೇಂದ್ರ, ಮಹೇಶ್ ಕುಮಟಹಳ್ಳಿ, ಬಿ.ಸಿ.ಪಾಟೀಲ್ ಸೇರಿದಂತೆ 8 ಕ್ಕೂ ಹೆಚ್ಚು ಶಾಸಕರನ್ನು ಭೇಟಿ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದ್ದು, ಇಂದು ಅಥವಾ ನಾಳೆ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಅಲ್ಲದೇ ಒಂದೆರಡು ದಿನಗಳ ಬಳಿಕ ದೆಹಲಿಗೂ ರಮೇಶ್ ಜಾರಕಿಹೊಳಿ ಪ್ರಯಾಣ ಬೆಳೆಸಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *