ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ- ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ಚೆನ್ನೈ ಸೇರಿದಂತೆ ಕಾಂಚಿಪುರಂ ಹಾಗೂ ತಿರುವಳ್ಳುವರ್ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಮತ್ತು ಕೇರಳದಲ್ಲಿ ಭಾರಿ ಮಳೆ ಸಂಭವಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಈಗಾಗಲೇ ಕರಾವಳಿ ಜಿಲ್ಲೆಗಳಾದ ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್ ಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಅಕ್ಟೋಬರ್ 7 ರಿಂದ ಹವಾಮಾನ ವೈಪರೀತ್ಯ ಉಂಟಾಗಲಿದೆ. ಹೀಗಾಗಿ ವಿಪತ್ತು ನಿರ್ವಹಣಾ ಮಂಡಳಿ ಮತ್ತು ರಕ್ಷಣಾ ಇಲಾಖಾ ಸಿಬ್ಬಂದಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಅಕ್ಟೋಬರ್ 7 ರಿಂದ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡು ಸರ್ಕಾರ ಮಳೆಯಿಂದ ಹೆಚ್ಚಿನ ಪ್ರಮಾಣದ ಹಾನಿಗೆ ತುತ್ತಾಗುವ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ಡಾ.ಕೆ.ಸತ್ಯಗೋಪಾಲ್, ಪ್ರವಾಹದ ನೀರು ಸರಾಗವಾಗಿ ಹರಿದುಹೋಗುವಂತೆ ಹೊಸದಾಗಿ ಒಳಚರಂಡಿ ವ್ಯವಸ್ಥೆಯನ್ನು ಈಗಾಗಲೇ ನಿರ್ಮಿಸಿದೆ. ಸುಮಾರು 1,275 ಕ್ಕೂ ಹೆಚ್ಚಿನ ಯುವ ಪೊಲೀಸ್ ಸಿಬ್ಬಂದಿಗೆ ಪ್ರವಾಹ ಪರಿಸ್ಥಿತಿ ಸಂದರ್ಭ ಕಾರ್ಯಾಚರಣೆ ನಡೆಸುವ ತರಬೇತಿ ನೀಡಿ ಸನ್ನದ್ದುಗೊಳಿಸಿದ್ದೇವೆ. ಅಲ್ಲದೇ ಮೆಟ್ಟೂರು ಜಲಾಶಯವು ಕೂಡ ತುಂಬಿದ್ದು, ಜಲಾಶಯದಿಂದ ಹೊರ ಹರಿಯುವ ನೀರಿನ ಮೇಲೆ ಸೂಕ್ಷ್ಮವಾಗಿ ಗಮನವಿಟ್ಟಿದ್ದೇವೆ. ಅವಶ್ಯ ಬಿದ್ದರೆ ಹೆಚ್ಚುವರಿ ನೀರನ್ನು ಬಿಡುವ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *