ಪಿಕಪ್ ವಾಹನ, ಬೈಕ್ ಮುಖಾಮುಖಿ – ಶಾಲೆಯಿಂದ ಬರುತ್ತಿದ್ದ ತಂದೆ, ಮಗಳು ದಾರುಣ ಸಾವು

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಬಳಿ ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಂದೆ ಮಗಳು ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.

ಮೃತರನ್ನು ಸಾಹಿತ್ಯ ಹಾಗೂ ರಾಘವೇಂದ್ರ ಎಂದು ಗುರುತಿಸಲಾಗಿದೆ. ರಾಮಕೃಷ್ಣ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸಾಹಿತ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬೈಕ್ ಸವಾರ ತಂದೆ ರಾಘವೇಂದ್ರಗೆ ಚಿಕಿತ್ಸೆಗೆಂದು ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.

ಶಾಲೆಯಿಂದ ಮಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ವೇಳೆ ಆಕ್ರೋಶಗೊಂಡ ಮೃತರ ಸಂಬಂಧಿಕರು ಗಂಭೀರ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡದೆ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ವೈದ್ಯ ಅನಿಲ್ ಕುಮಾರ್ ವಿರುದ್ಧ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುತ್ತಿಗೆ ಹಾಕಿ ಬಾಗಿಲು ಮುಚ್ಚಿ ಪ್ರತಿಭಟಿಸಿದರು. ಆಸ್ಪತ್ರೆಗೆ ಉತ್ತಮ ಡಾಕ್ಟರ್ ಇಲ್ಲದೆ ಈ ಸಾವು ಸಂಭವಿಸಿದೆ ಎಂದು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *