ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು – ಆಸ್ಪತ್ರೆಗೆ ಕಲ್ಲು ಎಸೆದು, ಶವವಿಟ್ಟು ಪ್ರತಿಭಟನೆ

ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಆಕೆಯ ಸಂಬಂಧಿಗಳು ಆಸ್ಪತ್ರೆಗೆ ಕಲ್ಲು ಎಸೆದು, ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿ ತಾಲೂಕು ಬಾರಂದೂರು ಗ್ರಾಮದ ರಾಧಾ ಎಂಬವರು ಹೆರಿಗೆಗಾಗಿ ಕಳೆದ ಭಾನುವಾರ ಭದ್ರಾವತಿಯ ನಿರ್ಮಲಾ ಆಸ್ಪತ್ರೆಗೆ ದಾಖಲಾಗಿದ್ದರು. ರಾಧಾ ಅವರು ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಹೆಚ್ಚು ರಕ್ತ ಸ್ರಾವವಾಗಿದ್ದರಿಂದ ಬಾಣಂತಿಯನ್ನು ಬೇರೆ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ರಾಧಾ ಅವರನ್ನು ನಿನ್ನೆ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಧಾ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

ರಾಧಾ ಸಾವಿಗೆ ಮೊದಲು ಚಿಕಿತ್ಸೆ ನೀಡಿದ ನಿರ್ಮಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಕೆಯ ಸಂಬಂಧಿಕರು ಆರೋಪ ಮಾಡಿದ್ದಾರೆ. ಈ ವೇಳೆ ರಾಧಾ ಮೃತ ದೇಹವನ್ನು ಆಸ್ಪತ್ರೆ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ವೈದ್ಯರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಆಕ್ರೋಶಗೊಂಡ ಸಂಬಂಧಿಗಳು ಆಸ್ಪತ್ರೆಗೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಓಲ್ಡ್ ಟೌನ್ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸ್ ಮಧ್ಯಪ್ರವೇಶದ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಮೃತ ರಾಧಾ ಸಂಬಂಧಿಕರ ನಡುವೆ ವಾಗ್ದಾಳಿ ನಡೆಯಿತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *