ರಾಜೀನಾಮೆಯಿಂದ ಹಿಂದೆ ಸರಿದು ಸೇಫ್ ಗೇಮ್‍ಗೆ ಸೌಮ್ಯಾ ರೆಡ್ಡಿ ಪ್ಲಾನ್

ಬೆಂಗಳೂರು: ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಮನವೊಲಿಕೆ ವಿಫಲವಾಗಿದ್ದು, ಇತ್ತ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.

ಸೌಮ್ಯ ರೆಡ್ಡಿ ರಾಜೀನಾಮೆ ನೀಡದೇ ಸೇಫ್ ಗೇಮ್‍ನತ್ತ ಮುಖ ಮಾಡುವ ಮೂಲಕ ಅನರ್ಹತೆ ಭೀತಿಯಿಂದ ಪಾರಾಗಲು ಶಾಸಕಿ ನಿರ್ಧರಿಸಿದ್ದಾರೆ. ಒಂದು ವೇಳೆ ತಂದೆ ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಹಿಂದೆ ಸರಿದರೆ, ಪ್ರತಿಯಾಗಿ ಪುತ್ರಿಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆಯನ್ನು ಮುಂದಿಡುವ ಸಾಧ್ಯತೆಗಳಿವೆ. ಹೀಗಾಗಿ ರಾಜೀನಾಮೆಯಿಂದ ಸೌಮ್ಯಾ ರೆಡ್ಡಿ ಹಿಂದೆ ಸರಿದ್ರಾ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಾಸಕಾಂಗ ಸಭೆಯಿಂದ ಹೊರಬಂದು ಮಾಧ್ಯಮಗಳ ಜೊತೆ ಮಾತನಾಡಿದ ಸೌಮ್ಯ ರೆಡ್ಡಿ, ಸಿಎಲ್‍ಪಿ ಸಭೆಯಿಂದ ಬಂದಿದ್ದೇನೆ. ನಾನು ತಂದೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ನಾನು ಇಂಡಿಪೆಂಡೆಂಟ್ ಮಹಿಳೆಯಾಗಿದ್ದು, ಯಾರು ನನ್ನ ಮೇಲೆ ಒತ್ತಡ ಹಾಕಲು ಸಾಧ್ಯವಿಲ್ಲ. ನನ್ನ ನಿರ್ಧಾರವನ್ನು ನಾನು ತೆಗೆದುಕೊಳ್ಳುತ್ತೇನೆ. ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನನ್ನನ್ನು ಆಯ್ಕೆ ಮಾಡಲಾಗಿತ್ತು. ಹಾಗಾಗಿ ದೆಹಲಿಗೆ ತೆರಳಿ ಸುಷ್ಮಿತಾ ದೇವ್ ಅವರನ್ನು ಭೇಟಿಯಾಗಿದ್ದೇನೆ ಎಂದು ತಿಳಿಸಿದರು.

ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಮಲಿಂಗಾರೆಡ್ಡಿ, ನಾನು ಯಾರಿಗೂ ನಡುಕ ಹುಟ್ಟಿಸಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಕಾಂಗ್ರೆಸ್‍ನ ಹಿರಿಯ ನಾಯಕರು ಯಾವುದೇ ಕಾರಣಕ್ಕೂ ಪಕ್ಷ ಬಿಡಬಾರದು ಎಂದು ಹೇಳಿದ್ದಾರೆ. ನಾನು ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುವುದು ಮೊದಲೇ ಎಲ್ಲರಿಗೂ ಗೊತ್ತಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಮಾತ್ರ ಕರೆ ಮಾಡಿ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಪತ್ರವನ್ನು ಹಿಂಪಡೆಯಲ್ಲ. ಸ್ಪೀಕರ್ ಎಲ್ಲರನ್ನು ಕರೆದು ಮಾತನಾಡಿಸುತ್ತಾರೆ. ನನ್ನೊಬ್ಬನ ರಾಜೀನಾಮೆಯಿಂದ ದೋಸ್ತಿ ಸರ್ಕಾರಕ್ಕೆ ಏನೂ ಆಗುವುದಿಲ್ಲ. ನಾನು ಯಾರಿಗೂ ರಾಜೀನಾಮೆ ನೀಡಿ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Comments

Leave a Reply

Your email address will not be published. Required fields are marked *