ಹಾಸನ ಬಿಜೆಪಿ ಕಾರ್ಯಕರ್ತನ ಮೇಲೆ ಕಲ್ಲೆಸೆತ ಪ್ರಕರಣ – 8 ಮಂದಿ ವಿರುದ್ಧ ಎಫ್‍ಐಆರ್ ದಾಖಲು

ಹಾಸನ: ಶಾಸಕ ಪ್ರೀತಂ ಗೌಡ ಮನೆಯ ಮುಂದೆ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸರು 8 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇಂದು ಶಾಸಕ ಪ್ರೀತಂ ಗೌಡ ಅವರ ಮನೆಯ ಎದುರು ದೇವೇಗೌಡ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಶಾಸಕ ಪ್ರೀತಂ ಗೌಡ ಅವರ ಮನೆಯ ಮೇಲೆ ಕಲ್ಲೆಸೆಯಲಾಗಿತ್ತು. ಪರಿಣಾಮ ಬಿಜೆಪಿ ಕಾರ್ಯಕರ್ತ ರಾಹುಲ್ ಕಿಣಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಅವರ ಹೇಳಿಕೆಯನ್ನು ಪಡೆದ ಪೊಲೀಸರು ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್ ಅನಿಲ್, ಜಿಪಂ ಸದಸ್ಯ ಎಚ್.ಪಿ ಸ್ವರೂಪ್ ಸೇರಿದಂತೆ ಒಟ್ಟು ಎಂಟು ಮಂದಿಯ ವಿರುದ್ಧ ಸೆಕ್ಷನ್ 324(ಹಲ್ಲೆ) ಅಡಿ ಎಫ್‍ಐಆರ್ ದಾಖಲಾಗಿದೆ. ಗಾಯಾಳು ರಾಹುಲ್ ಕಿಣಿ ಹೇಳಿಕೆ ಆಧಾರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರೀತಂ ಮನೆಗೆ ಭೇಟಿ ಕೊಟ್ಟ ಬಿಎಸ್‍ವೈ:
ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ನಡೆದಿರುವ ವಿರುದ್ಧ ಬೆಂಗಳೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯ 16 ಹೆಚ್ಚು ಶಾಸಕರೊಂದಿಗೆ ಶಾಸಕ ಪ್ರೀತಂ ಅವರ ಮನೆಗೆ ಭೇಟಿಕೊಟ್ಟು ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಅಲ್ಲದೇ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿ ನಾಳೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಡಿಸಿಎಂ ಆರ್ ಅಶೋಕ್ ಅವರು, ಪ್ರೀತಂ ಗೌಡ ನನ್ನ ತಮ್ಮನಿದ್ದಂತೆ, ಬಿಜೆಪಿಯ ಒಬ್ಬ ಕಾರ್ಯಕರ್ತನನ್ನು ಮುಟ್ಟಿದ್ರೆ ಹುಲಿಯಂತಹ ಯಡಿಯೂರಪ್ಪ ಇದ್ದಾರೆ. ಶಾಸಕರ ತಂದೆ ತಾಯಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದೇನು ಗೂಂಡಾ ರಾಜ್ಯ ಎಂದುಕೊಂಡಿದ್ದೀರಾ? ಶಾಸಕರಿಗೆ ರಕ್ಷಣೆ ಇಲ್ಲ ಎಂದರೆ, ಜನ ಸಾಮಾನ್ಯರನ್ನು ಹೇಗೆ ರಕ್ಷಣೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅಲ್ಲದೇ ಶಾಸಕರಿಗೆ ರಕ್ಷಣೆ ನೀಡುವಂತೆ ಸದನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

https://www.youtube.com/watch?v=V2Yszl9rLEg

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *