Tag: ಆಡಳಿತ ಪಕ್ಷ

  • ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ: ಸಿದ್ದರಾಮಯ್ಯ ಟ್ವೀಟ್

    ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ: ಸಿದ್ದರಾಮಯ್ಯ ಟ್ವೀಟ್

    -ಸ್ಪೀಕರ್ ಕ್ಲಾಸ್ ಟೀಚರ್ ಅಲ್ಲ

    ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.

    ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಡಿಡಿ ಚಾನೆಲ್ ನಲ್ಲಿ ಆಡಳಿತ ಪಕ್ಷದವರ ಧ್ವನಿ ಮಾತ್ರ ಕೊಡುತ್ತಿದ್ದಾರೆ. ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಧ್ವನಿ ತಗ್ಗಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಈ ವಿಚಾರವಾಗಿ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿದ್ದು, ವಿರೋಧಪಕ್ಷಗಳ ದನಿಯನ್ನು ದಮನಿಸಿ ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ್‍ಗಳ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ವಿರುದ್ಧ ಗುಡಿಗಿದ್ದಾರೆ.

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದು, ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ವೈಫಲ್ಯದ ಬಗ್ಗೆ ಆಡಿದ ಮಾತುಗಳು ಮತ್ತು ಅವರ ಮುಖಗಳನ್ನು ಸರ್ಕಾರಿ ಕೃಪಾಪೋಷಿತ ಡಿಡಿ ಚಂದನ ನ್ಯೂಸ್ ಸೆನ್ಸಾರ್ ಮಾಡಿ ಬಿತ್ತರಿಸುತ್ತಿರುವುದು ಖಂಡನೀಯ ಎಂದು ಡಿಡಿ ಚಂದನ ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.

    ಬಿಜೆಪಿಗೆ ಟ್ವೀಟ್‍ಗೆ ತಿರುಗೇಟು:
    ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ. ಸ್ಪೀಕರ್ ಕಾಗೇರಿಯವರ ಜೊತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ. ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಖಂಡನೀಯ ಎಂದು ಬರೆದುಕೊಂಡು ಸಿದ್ದರಾಮಯ್ಯನವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

    ಬಿಜೆಪಿ ಟ್ವೀಟ್:
    ಈ ವಿಡಿಯೋ ನೋಡಿದವರಿಗೆ ಕಾಂಗ್ರೆಸ್ ಹಾಗೂ ಗೂಂಡಾ ಸಂಸ್ಕೃತಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬುದರ ಅರಿವಾಗುತ್ತದೆ. ತಮ್ಮ 5 ವರ್ಷದ ಅವಧಿಯಲ್ಲಿ ಇದೇ ಧೋರಣೆ ಪ್ರದರ್ಶಿಸಿ ಅಧಿಕಾರ ಕಳೆದುಕೊಂಡ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ siddaramaiah ಅವರ ಈ ವರ್ತನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರ್ಣಾಮವಾಗುವುದು ಖಚಿತ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.