Tag: ಆನೆ ಕಾರಿಡಾರ್

  • ಅರಣ್ಯ ಇಲಾಖೆಗೆ ಒಳಪಟ್ಟಿರುವ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕಂದಾಯ ಇಲಾಖೆಗೆ ಹಸ್ತಾಂತರ: ಲಿಂಬಾವಳಿ

    ಅರಣ್ಯ ಇಲಾಖೆಗೆ ಒಳಪಟ್ಟಿರುವ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕಂದಾಯ ಇಲಾಖೆಗೆ ಹಸ್ತಾಂತರ: ಲಿಂಬಾವಳಿ

    ಬೆಂಗಳೂರು: ಅರಣ್ಯ ಇಲಾಖೆಗೆ ಒಳಪಟ್ಟಿರುವ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಿದ್ದೇವೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆಯಿಂದಲೇ ಮಲೆನಾಡು ಭಾಗದ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಮಲೆನಾಡು ಭಾಗದ ಶಾಸಕರ ಸಭೆ ಕರೆದಿದ್ದೆ. ಮಲೆನಾಡು ಭಾಗದ ಅರಣ್ಯಕ್ಕೆ ಸಂಬಂಧಿಸಿದ ಸಭೆ ಕರೆಯುತ್ತೇನೆ ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಭರವಸೆ ಕೊಟ್ಟಿದ್ದೆ. ಅದರಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಜೆಡಿಎಸ್ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದ ಇಪ್ಪತ್ತು ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದರು.

    ಮಲೆನಾಡಿನ ಕೆಲವು ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಡೆತಡೆ ಕೂಡಾ ಇದೆ. ರಾಷ್ಟ್ರೀಯ ಅರಣ್ಯಕ್ಕೆ ಒಳಪಟ್ಟಿದ್ದರೆ ಕೇಂದ್ರದ ಅನುಮತಿ ಪಡೆಯಬೇಕು. ಇದು ರಾಜ್ಯದ ಪ್ರದೇಶವಾಗಿದ್ದರೆ ನಮ್ಮ ಅರಣ್ಯಾಧಿಕಾರಿಗೆ ಇದರ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಇದೆ ಎಂದರು.

    ಹಕ್ಕು ಪತ್ರ ವಿತರಣೆ : ಅರಣ್ಯ ವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡುವ ವ್ಯವಸ್ಥೆ ಯನ್ನು ಕಂದಾಯ ಇಲಾಖೆ ಜೊತೆಗೂಡಿ ಮಾಡುತ್ತೇವೆ ಎಂದು ತಿಳಿಸಿದರು. ಉತ್ತರ ಕನ್ನಡ ಭಾಗದಲ್ಲಿ ಈ ಸಮಸ್ಯೆ ಸ್ವಲ್ಪ ಹೆಚ್ಚಾಗಿದೆ. ಕೆಲವು ಅರಣ್ಯ ಗಳಲ್ಲಿ ಇರುವ ಗ್ರಾಮಗಳು ಕಾಡಿನಿಂದ ಹೊರಗೆ ಸ್ಥಳಾಂತರಿಸಲು ಹಣಕಾಸಿನ ಕೊರತೆ ಇದೆ ಎಂದ ಸಚಿವರು, ಸ್ಥಳಾಂತರಕ್ಕೆ ಅರಣ್ಯ ಗ್ರಾಮ ವಾಸಿಗಳು ಒಪ್ಪಿದ್ದಾರೆ. ಮುಂದಿನ ಬಜೆಟ್ ನಲ್ಲಿ ಹಣ ಮಂಜೂರಾದರೆ ಈ ಕಾರ್ಯವನ್ನು ಪೂರ್ಣ ಗೊಳಿಸಲಾಗುವುದು ಎಂದು ಹೇಳಿದರು.

    ಆನೆ ಕಾರಿಡಾರ್ : ಆನೆ ಮತ್ತು ಮಾನವ ನಡುವಿನ ಸಂಘರ್ಷ ಹೆಚ್ಚಾಗುತ್ತಿದೆ. ಸಾಕಷ್ಟು ಮಂದಿ ಇದರಿಂದ ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಆನೆ ಕಾರಿಡಾರ್ ಸುತ್ತ ರೈಲು ಕಂಬಿಗಳನ್ನು ಅಳವಡಿಸಲಾಗಿದೆ. ಪ್ರಾಯೋಗಿಕವಾಗಿ ಯಶಸ್ಸು ಕಂಡಿದ್ದೇವೆ. ಇದನ್ನು ಸಂಪೂರ್ಣವಾಗಿ ಮುಗಿಸುವ ನಿಟ್ಟಿನಲ್ಲಿ ಕೇಂದ್ರ ಅರಣ್ಯ ಸಚಿವ ಮತ್ತು ರೈಲ್ವೆ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

    ವರದಿಯನ್ನು ಒಪ್ಪಿಲ್ಲ : ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಒಪ್ಪಿಕೊಂಡಿಲ್ಲ. ಹಾಗಾಗಿ, ಅದರ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವ ಲಿಂಬಾವಳಿ ಸ್ಪಷ್ಟಪಡಿಸಿದರು.

  • ಕಾಡಾನೆ ಹಾವಳಿ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಗೋಪಾಲಯ್ಯ ಭರವಸೆ

    ಕಾಡಾನೆ ಹಾವಳಿ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಗೋಪಾಲಯ್ಯ ಭರವಸೆ

    – ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 10 ಸಾವಿರ ಕೋಟಿ ಮೀಸಲು

    ಹಾಸನ: ಜಿಲ್ಲೆಯಲ್ಲಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಡಾನೆ ಸಮಸ್ಯೆಗೆ ಪರಿಹಾರ ಒದಗಿಸಲು ಫೆ.16 ರಂದು ಸಕಲೇಶಪುರ ಪಟ್ಟಣದಲ್ಲಿ ಅರಣ್ಯ ಸಚಿವ ಅರವಿಂದ್ ಲಿಂಬಾವಳಿ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಸಭೆಗೆ ಆನೆ ಹಾವಳಿಗೆ ತುತ್ತಾದ ಬೆಳೆಗಾರರನ್ನು ಹಾಗೂ ಗ್ರಾಮಸ್ಥರನ್ನು ಆಹ್ವಾನಿಸಲಾಗಿದೆ. ಇಲ್ಲಿ ಅವರ ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

    ಆನೆ ಕಾರಿಡಾರ್ ನಿರ್ಮಾಣ ಸಂಬಂಧ ಹಿಂದಿನ ಸರ್ಕಾರ ಕೈಗೊಂಡ ನಿರ್ಣಯ ಹಾಗೂ ಇತ್ತೀಚಿನ ದಿನಗಳಲ್ಲಿ ನಮ್ಮ ಸರ್ಕಾರ ಕೈಗೊಂಡ ಕೆಲಸಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈಗಾಗಲೇ ಪುಂಡಾನೆ ಸೆರೆ ಸೇರಿದಂತೆ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿದ್ದು, ಕಾರಿಡಾರ್ ನಿರ್ಮಾಣಕ್ಕೆ ಸಭೆಯಲ್ಲಿ ಜನರಿಂದ ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಈ ಬಾರಿಯ ಕೇಂದ್ರ ಬಜೆಟ್ ಅಲ್ಲಿ ರಾಜ್ಯಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಲಾಗಿದೆ. ಪ್ರಮುಖವಾಗಿ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆಯಾಗಿ ಹತ್ತು ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ಹಾಗೂ ರಸ್ತೆ ಅಭಿವೃದ್ಧಿಗೆ ಅನುಮೋದನೆ ದೊರೆತಿದ್ದು ಕೇಂದ್ರ ಸಚಿವರಾದ ಸದಾನಂದಗೌಡ ಹಾಗೂ ಬಿಜೆಪಿ ಪಕ್ಷದ ರಾಜ್ಯ ಅಧ್ಯಕ್ಷರು ಈ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಸಚಿವರು ತಿಳಿಸಿದರು.

    ತಾತ್ಕಾಲಿಕ ರಸ್ತೆ ದುರಸ್ತಿಗೆ ಕಠಿಣ ಸೂಚನೆ:
    ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಮಾರ್ಹದ ಸಕಲೇಶಪುರ ಹೊರಗಿನ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ನಡುವೆ ಸಂಚಾರಿ ಯೊಗ್ಯವಾಗಿ ಮಾಡಲು ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕಾರ್ಯಕ್ಕೆ ಈ ತಿಂಗಳು 28ರವರೆಗೆ ಕಾಲಾವಕಾಶ ನೀಡಲಾಗಿದೆ. ಹದಿನೈದು ದಿನಗಳ ಬಳಿಕ ಸ್ಥಳ ಪರಿಶೀಲನೆ ನಡೆಸಿ ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಈ ಹೆದ್ದಾರಿ ಮಾರ್ಗದಲ್ಲಿ ಬರುವಂತಹ ಸೇತುವೆ ಕಾಮಗಾರಿಯನ್ನು ಸಹ ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಮುಗಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಗುವುದು ಎಂದು ಸಚಿವರು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಶಾಸಕ ಪ್ರೀತಮ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್ ಕೆ ಸುರೇಶ್, ಮಾಜಿ ಶಾಸಕ ಬಿ.ಆರ್. ಗುರುದೇವ್, ನಿಜಗುಣ ರಾಜ್, ವಿಜಯ್ ಇದ್ದರು.

  • ಆನೆ ಕಾರಿಡಾರ್‌ನಲ್ಲಿ ಸೋಲಾರ್ ಪ್ಲಾಂಟ್- ಸ್ಥಳಾಂತರಕ್ಕೆ ವನ್ಯಪ್ರಿಯರ ಒತ್ತಾಯ

    ಆನೆ ಕಾರಿಡಾರ್‌ನಲ್ಲಿ ಸೋಲಾರ್ ಪ್ಲಾಂಟ್- ಸ್ಥಳಾಂತರಕ್ಕೆ ವನ್ಯಪ್ರಿಯರ ಒತ್ತಾಯ

    ಚಾಮರಾಜನಗರ: ಜಿಲ್ಲೆಯ ಬಿ.ಆರ್.ಟಿ.ಹುಲಿ ರಕ್ಷಿತಾರಣ್ಯದ ಸೂಕ್ಷ್ಮ ಪರಿಸರವಲಯದಲ್ಲೇ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ತಲೆ ಎತ್ತಿದ್ದು ವನ್ಯಜೀವಿಗಳಿಗೆ ಕಂಟಕಪ್ರಾಯವಾಗಿದೆ.

    ಬಿಳಿಗಿರಿ ರಂಗನಬೆಟ್ಟದ ಗುಂಡಾಲ್ ಜಲಾಯಶಯದ ಬಳಿ ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಯಲ್ಲೇ 500 ಎಕರೆ ಪ್ರದೇಶದಲ್ಲಿ ಬೃಹತ್ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಪ್ರಾರಂಭವಾಗಿದೆ. ಖಾಸಗಿ ಕಂಪನಿಯೊಂದು ರೈತರ ಜಮೀನುಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆದು ಇಲ್ಲಿ ಸೋಲಾರ್ ಘಟಕ ಆರಂಭಿಸಿದೆ.

    ಈ ಪ್ರದೇಶ ಬಿಳಿಗಿರಿರಂಗನಬೆಟ್ಟದಿಂದ ಮಲೆಮಹದೇಶ್ವರಬೆಟ್ಟಕ್ಕೆ ಆನೆಗಳು ಸೇರಿದಂತೆ ವನ್ಯಜೀವಿಗಳು ಮುಕ್ತವಾಗಿ ಸಂಚರಿಸುವ ಮೊಗಸಾಲೆಯಾಗಿದೆ. ಆದರೆ ಇಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣವಾಗಿರುವುದರಿಂದ ಎರಡು ಅರಣ್ಯಗಳ ನಡುವೆ ಆನೆ ಸೇರಿದಂತೆ ವನ್ಯಜೀವಿಗಳ ಮುಕ್ತ ಸಂಚಾರಕ್ಕೆ ಕಡಿವಾಣ ಬಿದ್ದಿದೆ. ಈ ಹಿಂದೆ ಇದೇ ಪ್ರದೇಶದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವನ್ಯಜೀವಿಗಳ ಹಿತದೃಷ್ಟಿಯಿಂದ ಅದನ್ನು ಕೈಬಿಡಲಾಗಿತ್ತು. ಆದರೆ ಇದೀಗ ಅದೇ ಪ್ರದೇಶದಲ್ಲಿ ಸೋಲಾರ್ ಉತ್ಪಾದನಾ ಘಟಕ ತಲೆ ಎತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ.

    ಸೂಕ್ಷ್ಮ ಪರಿಸರ ವಲಯದಲ್ಲಿ ಆರಂಭವಾಗಿರುವ ಈ ಘಟಕಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅನುಮತಿ ನೀಡಿರುವುದಕ್ಕೆ ಪರಿಸರವಾದಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ಮೊದಲೇ ಇಲ್ಲಿ ಸೋಲಾರ್ ಘಟಕ ಸ್ಥಾಪನೆಗೆ ಅನುಮತಿ ನೀಡಲಾಗಿತ್ತು. ಆದರೆ ಸೂಕ್ಷ್ಮ ಪರಿಸರ ವಲಯ ಘೋಷಣೆ ನಂತರ ಯಾವುದೇ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡುತ್ತಿಲ್ಲ ಎಂಬುದು ಅರಣ್ಯ ಇಲಾಖೆ ಸಮರ್ಥಿಸಿಕೊಳ್ಳುತ್ತಿದೆ.

    ಎರಡು ಅರಣ್ಯಗಳ ನಡುವೆ ಪ್ರಾಣಿಗಳು ಸಂಚರಿಸುವ ಕಾರಿಡಾರ್ ಗೆ ಕುತ್ತು ಬಂದಿದೆ. ಭವಿಷ್ಯದಲ್ಲಿ ಜೀವವೈವಿಧ್ಯತೆಗೂ ಧಕ್ಕೆ ಉಂಟಾಗಲಿದೆ. ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಾಣಿಗಳು ಸಂಚರಿಸುವ ದಾರಿ ಬಂದ್ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಕಾಡುಪ್ರಾಣಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಲಿದೆ ಎಂದು ವನ್ಯಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

  • ಬೆಳಗಾವಿ ಇಂದೂ ನಮ್ಮದೇ, ನಾಳೆಯೂ ನಮ್ಮದೇ: ಸಚಿವ ಸಿ.ಸಿ. ಪಾಟೀಲ್

    ಬೆಳಗಾವಿ ಇಂದೂ ನಮ್ಮದೇ, ನಾಳೆಯೂ ನಮ್ಮದೇ: ಸಚಿವ ಸಿ.ಸಿ. ಪಾಟೀಲ್

    – 100 ಕೋಟಿ ವೆಚ್ಚದಲ್ಲಿ ಆನೆ ತಡೆಗೋಡೆ ನಿರ್ಮಾಣ

    ಮೈಸೂರು: ಮಹಾರಾಷ್ಟ್ರ ಸರ್ಕಾರ ಬೆಳಗಾವಿ ವಿಚಾರದಲ್ಲಿ ಗಡಿ ಕ್ಯಾತೆ ಆರಂಭಿಸಿರುವ ಬಗ್ಗೆ ಅರಣ್ಯ ಸಚಿವ ಸಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಇಂದು ಮತ್ತು ನಾಳೆಯೂ ನಮ್ಮದೇ ಎಂದು ಹೇಳಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉದ್ಧವ್ ಠಾಕ್ರೆ ನೂತನವಾಗಿ ಮುಖ್ಯಮಂತ್ರಿಗಳಾಗಿದ್ದಾರೆ. ಅವರು ಅಲ್ಲಿಯ ಜನರನ್ನು ಓಲೈಕೆ ಮಾಡಲು ಯತ್ನಿಸುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಕರ್ನಾಟಕ ಯಾವುದೇ ರಾಜಿಗೂ ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿದರು.

    ಕಳೆದ ವರ್ಷ ಬಂಡೀಪುರದಲ್ಲಿ ಉಂಟಾದ ಭಾರೀ ಪ್ರಮಾಣದ ಬೆಂಕಿ ಅವಘಡ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯ ಸರಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮುಂಜಾಗ್ರತವಾಗಿ ವಿಶೇಷ ಸೇನಾ ಹೆಲಿಕಾಪ್ಟರ್ ಬಳಸಲು ಚಿಂತಿಸಲಾಗಿದೆ. ಇದಕ್ಕೆ ಹೆಚ್ಚು ಹಣ ಖರ್ಚಾಗಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಕಳೆದ ಬಾರಿ ಬೆಂಕಿ ರೇಖೆ ನಿರ್ಮಾಣವಾಗದೆ ಅವಘಡ ಸಂಭವಿಸಿತ್ತು. ಆದರೆ ಈ ಬಾರಿ ಸಂಪೂರ್ಣ ಬೆಂಕಿ ರೇಖೆ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

    ಅರಣ್ಯ ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಮೆಡಲ್ ನೀಡದ ವಿಚಾರದ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿ, ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಬಗ್ಗೆ ಗಮನಿಸಲು ಸಾಧ್ಯವಾಗಿರಲಿಲ್ಲ. ಆದಷ್ಟು ಬೇಗ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕ ನಿಗದಿ ಪಡಿಸುತ್ತೇನೆ ಎಂದರು.

    ಮಾನವ ಮತ್ತು ವನ್ಯಜೀವಿ ಸಂಘರ್ಷವನ್ನು ತಪ್ಪಿಸಲು 100 ಕೋಟಿ ರೂ. ವೆಚ್ಚದಲ್ಲಿ ಆನೆ ತಡೆಗೋಡೆ ನಿರ್ಮಾಣ ಮಾಡಲಾಗುತ್ತೆ. ಕಾಡಂಚಿನ ಪ್ರದೇಶಲ್ಲಿ ಆನೆ ತಡೆಗೋಡೆ ನಿರ್ಮಾಣ ಮಾಡಲಾಗುವುದು. ರೈಲ್ವೇ ಕಂಬಿಗಳು, ಸೋಲಾರ್ ಫೆನ್ಸ್ ಹಾಗೂ ಕಂದಕಗಳ ಮೂಲಕ ತಡೆಗೋಡೆ ನಿರ್ಮಾಣ ಮಾಡಲು ರೂಪು ರೇಷೆ ಸಿದ್ಧಪಡಿಸುತ್ತಿದ್ದೇವೆ. ಮೊದಲ ಹಂತದಲ್ಲಿ ಸಂಘರ್ಷ ಇರುವ ಕಡೆ ಮಾಡಲಾಗುತ್ತೆ. ನಂತರ ಉಳಿದಂತ ಸ್ಥಳಗಳಲ್ಲಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

    ಇದೇ ವೇಳೆ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ಇದು ಸಿಎಂಗೆ ಬಿಟ್ಟ ವಿಚಾರ. ನಾನು ಇದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದ್ರು. ಡಿಸಿಎಂ ಹುದ್ದೆ ಬೇಕು, ಬೇಡ ಎನ್ನುವ ವಿಚಾರಕ್ಕೂ ಪ್ರತಿಕ್ರಿಯೆ ನೀಡಲಿಲ್ಲ. ಕೆಲವು ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.

  • ಅರಣ್ಯ ಪ್ರದೇಶ ಗಡಿ ಭಾಗದಲ್ಲಿ ಆನೆಗಳು ಪ್ರತ್ಯಕ್ಷ- ಅಪಾರ ಬೆಳೆ ನಾಶ

    ಅರಣ್ಯ ಪ್ರದೇಶ ಗಡಿ ಭಾಗದಲ್ಲಿ ಆನೆಗಳು ಪ್ರತ್ಯಕ್ಷ- ಅಪಾರ ಬೆಳೆ ನಾಶ

    ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿ ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಟೊಮಾಟೋ, ಪಪ್ಪಾಯ, ಬೀನ್ಸ್, ಭತ್ತ ಸೇರಿದಂತೆ ರೈತರ ಪಂಪು ಮೋಟಾರ್, ಗುಡಿಸಲುಗಳನ್ನು ಧ್ವಂಸ ಮಾಡಿವೆ.

    ಶುಕ್ರವಾರ ರಾತ್ರಿ ರೈತರ ತೋಟಗಳ ಮೇಲೆ ದಾಳಿ ಮಾಡಿರುವ 6 ಆನೆಗಳ ಹಿಂಡು ನೂರಾರು ಎಕರೆ ಪ್ರದೇಶದ ವಿವಿಧ ಬೆಳೆಗಳನ್ನು ನಾಶ ಮಾಡಿವೆ. ಪ್ರತಿ ವರ್ಷ ಕಾಡಾನೆ ಹಾವಳಿ ಹೆಚ್ಚಾಗುತ್ತಲಿದ್ದು, ಆಹಾರ-ನೀರು ಹರಸಿ ನಾಡಿನತ್ತ ಆನೆಗಳ ಹಿಂಡು ಹೆಜ್ಜೆ ಹಾಕುತ್ತಲಿವೆ. ಇದರಿಂದ ಅರಣ್ಯ ಪ್ರದೇಶದ ಗಡಿಭಾಗದ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಜೊತೆಗೆ ಲಕ್ಷಾಂತರ ರೂಪಾಯಿ ಬೆಳೆಗಳನ್ನು ಕಳೆದುಕೊಳ್ಳುವಂತಾಗಿದೆ. ಇದರಿಂದ ರೈತರಿಗೆ ಪರಿಹಾರವೂ ಸಿಗದೆ, ರಕ್ಷಣೆಯೂ ಇಲ್ಲದಾಗಿದೆ.

    ಪ್ರಮುಖವಾಗಿ ಜಿಲ್ಲೆಯ ಗಡಿ ಪ್ರದೇಶವಾದ ಬಂಗಾರಪೇಟೆ ತಾಲೂಕಿನ ಆಂಧ್ರ ಗಡಿಯ ಚಿಕ್ಕಕಳವಂಚಿ, ತೊಪ್ಪನಹಳ್ಳಿ, ಕದರಿನತ್ತ ಗ್ರಾಮಗಳ ಬಳಿ ಸುಮಾರು ಆರು ಆನೆಗಳ ಹಿಂಡು ಕಳೆದ 15 ದಿನಗಳಿಂದ ಬೀಡು ಬಿಟ್ಟಿವೆ. ರಾಮಕುಪ್ಪಂ ಹಾಗೂ ಕೃಷ್ಣಗಿರಿ ಅರಣ್ಯ ಪ್ರದೇಶದಿಂದ ಬಂದಿರುವ ಈ ಆನೆಗಳ ಹಿಂಡು ಕರ್ನಾಟಕದ ಗಡಿ ಭಾಗದ ಜನರ ನಿದ್ದೆಗೆಡಿಸಿವೆ.

    ಜಿಲ್ಲೆಯ ಗಡಿಭಾಗವಾದ ಕಾಮಸಮುದ್ರಂ ಪ್ರದೇಶ ಸುತ್ತಮುತ್ತ ಸಾವಿರಾರು ಹೆಕ್ಟೇರು ಅರಣ್ಯ ಪ್ರದೇಶವಿದೆ. ಈ ಅರಣ್ಯ ಪ್ರದೇಶ ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಅರಣ್ಯಕ್ಕೆ ಸಂಪರ್ಕ ಹೊಂದಿದೆ. ಹೀಗಾಗಿ ಈ ಭಾಗದಲ್ಲಿ ಇದೀಗ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಪ್ರತಿ ವರ್ಷ ನೂರಾರು ಆನೆಗಳು ಇಲ್ಲಿಗೆ ಆಹಾರ ನೀರಿಗಾಗಿ ವಲಸೆ ಬರುತ್ತಿದ್ದು, ಆನೆಗಳಿಂದಾಗಿ ರೈತರು ಬೆಳೆದ ಬೆಳೆಗಳ ಜೊತೆಗೆ ರೈತರು ಸಾವನ್ನಪ್ಪಿರುವ ಘಟನೆಗಳು ಸಂಭವಿಸಿದೆ.

    ಆನೆ ಹಿಂಡನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ, ಪಟಾಕಿ, ಸಿಡಿ ಮದ್ದುಗಳನ್ನು ಬಳಸಿಕೊಂಡು ಹಗಲು ರಾತ್ರಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಾಡಾನೆಗಳ ದಾಳಿಯಿಂದ ರೈತರು ಕಳೆದುಕೊಂಡ ನೂರಾರು ಎಕರೆ ಬೆಳೆಗೆ ಪರಿಹಾರ ನೀಡಿ, ಸರ್ಕಾರ ಸಹಾಯಹಸ್ತವನ್ನು ಚಾಚಬೇಕು. ಅಲ್ಲದೇ ಆನೆ ಕಾರಿಡಾರ್ ನಿರ್ಮಾಣ ಮಾಡಿ, ಈ ಭಾಗದ ಜನರಿಗೆ ನೆಮ್ಮದಿ ಕಲ್ಪಿಸಬೇಕಾಗಿದೆ ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.