Tag: ಉನ್ನಾವ್

  • ಉನ್ನಾವ್ ರೇಪ್ ಕೇಸ್ – ಸಂತ್ರಸ್ತೆಗೆ 25 ಲಕ್ಷ ರೂ. ಪರಿಹಾರ, ಸಿಆರ್‌ಪಿಎಫ್ ಭದ್ರತೆ ಕೊಡಿ

    ಉನ್ನಾವ್ ರೇಪ್ ಕೇಸ್ – ಸಂತ್ರಸ್ತೆಗೆ 25 ಲಕ್ಷ ರೂ. ಪರಿಹಾರ, ಸಿಆರ್‌ಪಿಎಫ್ ಭದ್ರತೆ ಕೊಡಿ

    ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬಕ್ಕೆ ಸಿಆರ್‌ಪಿಎಫ್  ಯೋಧರ ಭದ್ರತೆ, 25 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಅಪಘಾತದ ಕುರಿತ ತನಿಖೆಯನ್ನು 7 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

    ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಯ್‍ಬರೇಲಿಯಲ್ಲಿ ನಡೆದ ಸಂತ್ರಸ್ತೆಯ ಅಪಘಾತ ಪ್ರಕರಣ ಸೇರಿದಂತೆ ಉನ್ನಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದೂ ಪ್ರಕರಣಗಳನ್ನು ದೆಹಲಿಯ ಸಿಬಿಐಗೆ ವರ್ಗಾಯಿಸಬೇಕು. ಇದರೊಂದಿಗೆ ರಾಯ್‍ಬರೇಲಿಯಲ್ಲಿ ನಡೆದ ಅಪಘಾತ ಪ್ರಕರಣದ ತನಿಖೆಯನ್ನು ಬುಧವಾರದಿಂದ ಕೇವಲ 7 ದಿನಗಳ ಒಳಗಡೆ ಪೂರ್ಣಗೊಳಿಸುವಂತೆ ಸಿಬಿಐಗೆ ಸೂಚಿಸಿದೆ.

    ಪ್ರತಿ ದಿನ ವಿಚಾರಣೆ ನಡೆಸಿ 45 ದಿನಗಳೊಳಗೆ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದೆ. 25 ಲಕ್ಷ ರೂ. ಪರಿಹಾರದ ಜೊತೆಗೆ ಸಂತ್ರಸ್ತೆಯ ಕುಟುಂಬ ಬಯಸಿದರೆ, ಅಪಘಾತದಲ್ಲಿ ಬದುಕುಳಿದವರನ್ನು ಲಕ್ನೋ ಆಸ್ಪತ್ರೆಯಿಂದ ಉತ್ತಮ ಚಿಕಿತ್ಸಾ ಸೌಲಭ್ಯ ಹೊಂದಿರುವ ದೇಶದ ಯಾವುದೇ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

    ಸಂತ್ರಸ್ತೆಯ ತಾಯಿ, ಒಡಹುಟ್ಟಿದವರು, ಚಿಕ್ಕಪ್ಪ ಮಹೇಶ್ ಸಿಂಗ್ ಸೇರಿದಂತೆ ಅವರ ಹತ್ತಿರದ ಸಂಬಂಧಿ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ವಕೀಲರಿಗೆ ಸಿಆರ್‌ಪಿಎಫ್  ಯೋಧರ ಭದ್ರತೆ ನೀಡಬೇಕು. ಭದ್ರತೆಯ ಕುರಿತ ಆದೇಶವನ್ನು ಪಾಲಿಸಿರುವ ಕುರಿತು ನಾಳೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ತಿಳಿಸಿದೆ. ವಿಚಾರಣೆ ತಡವಾಗಿರುವ ಕುರಿತು ಸೂಕ್ತ ಕಾರಣ ತಿಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

    ಸಂತ್ರಸ್ತೆ ಮತ್ತು ಅವರ ಕುಟುಂಬಸ್ಥರು ವಕೀಲರೊಂದಿಗೆ ರಾಯ್‍ಬರೇಲಿ ಜೈಲಿನಲ್ಲಿರುವ ಸಂಬಂಧಿಕರೊಬ್ಬರನ್ನು ನೋಡಲು ತೆರಳುತ್ತಿದ್ದರು. ಈ ವೇಳೆ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು. ಅಲ್ಲದೆ, ಸಂತ್ರಸ್ತೆ ಹಾಗೂ ವಕೀಲರು ತೀವ್ರ ಗಾಯಗೊಂಡಿದ್ದರು.

    ಮಳೆ ಹೆಚ್ಚು ಬರುತ್ತಿದ್ದರಿಂದ ಎರಡೂ ವಾಹನಗಳ ನಿಯಂತ್ರಣ ತಪ್ಪಿ ಅಪಘಾತ ಸಂಭವಿದೆ ಎಂದು ಉನ್ನಾವ್ ಪೊಲೀಸ್ ವರಿಷ್ಠಾಧಿಕಾರಿ ಮಾಧವ್ ಪ್ರಸಾದ್ ವರ್ಮಾ ತಿಳಿಸಿದ್ದರು. ಸಂತ್ರಸ್ತೆಯು ಉನ್ನಾವ್‍ನ ನಿವಾಸಿಯಾಗಿದ್ದು, ಬ್ಯಾಂಗರ್ಮೌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕುಲ್‍ದೀಪ್ ಸೆಂಗರ್ 2017ರಲ್ಲಿ ಮಗಳನ್ನು ಅತ್ಯಾಚಾರ ಗೈದಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದರು. ಆದರೆ ಈ ಬಗ್ಗೆ ಯಾರು ಕೂಡ ಕ್ರಮ ತೆಗೆದುಕೊಂಡಿರಲಿಲ್ಲ. ಬಳಿಕ ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು.

    ಅಪಘಾತದ ನಂತರ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕಲು ಆರೋಪಿಗಳೇ ಈ ಅಪಘಾತ ಮಾಡಿಸಿರಬಹುದು ಎಂದು ದೂರಿದ್ದರು. ಕಳೆದ ಎರಡು ದಿನಗಳಿಂದ ಪ್ರಕರಣ ಭಾರೀ ಸಂಚಲನ ಮೂಡಿಸಿದ್ದು, ಯುಪಿಯಲ್ಲಿ ಪ್ರತಿಭಟನೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಯಾನ ನಡೆಸಲಾಗುತ್ತಿದೆ. ಇಂದು ಶಾಸಕ ಕುಲ್‍ದೀಪ್ ಸೆಂಗರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ಆದೇಶ ಹೊರಡಿಸಿದೆ.

  • ಉನ್ನಾವ್ ರೇಪ್ ಕೇಸ್ – ಬಿಜೆಪಿಯಿಂದ ಆರೋಪಿ ಶಾಸಕ ಕುಲದೀಪ್ ಸಿಂಗ್ ಉಚ್ಛಾಟನೆ

    ಉನ್ನಾವ್ ರೇಪ್ ಕೇಸ್ – ಬಿಜೆಪಿಯಿಂದ ಆರೋಪಿ ಶಾಸಕ ಕುಲದೀಪ್ ಸಿಂಗ್ ಉಚ್ಛಾಟನೆ

    ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ಆದೇಶ ಹೊರಡಿಸಿದೆ.

    ಉನ್ನಾವ್ ಅತ್ಯಾಚಾರಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಿದ ಬೆನ್ನಲ್ಲೇ, ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ಸುಪ್ರೀಂ ಕೋರ್ಟ್ 1 ವಾರದ ಒಳಗಡೆ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ

    ಅತ್ಯಾಚಾರ ಸಂತ್ರಸ್ತೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಕೆಲ ದಿನಗಳ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗಳು ನಡೆಯುತ್ತಿವೆ. ಸಂತ್ರಸ್ತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರೇ ನನ್ನನ್ನು ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಳು. ಇತ್ತೀಚೆಗೆ ನಡೆದ ಲಾರಿ ಅಪಘಾತದಲ್ಲಿ ಸಂತ್ರಸ್ತೆ ಕುಟುಂಬದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೆ, ಸಂತ್ರಸ್ತೆ ಹಾಗೂ ಅವರ ವಕೀಲರ ಸ್ಥಿತಿ ಗಂಭೀರವಾಗಿದೆ.

    ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ತನ್ನ ಕುಟುಂಬ ಮತ್ತು ವಕೀಲರೊಂದಿಗೆ ರಾಯ್‍ಬರೇಲಿ ಸಮೀಪ ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಕಾರಿನಲ್ಲಿದ್ದ ಸಂತ್ರಸ್ತೆ ಹಾಗೂ ವಕೀಲರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಅಲ್ಲದೆ ಸಂತ್ರಸ್ತೆಯ ಇಬ್ಬರು ಕುಟುಂಬಸ್ಥರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಳೆ ಬೀಳುತ್ತಿದ್ದ ಕಾರಣ ನಿಯಂತ್ರಣ ತಪ್ಪಿ ಎರಡು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ ಎಂದು ಪೊಲೀಸರು ತಿಳಿಸಿದ್ದರು. ಆದರೆ, ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿಗಳೇ ಉದ್ದೇಶಪೂರ್ವಕವಾಗಿ ಈ ಅಪಘಾತ ಮಾಡಿಸಿದ್ದಾರೆ ಎಂದು ಕಾಂಗ್ರೆಸ್, ಸೇರಿದಂತೆ ವಿರೋಧ ಪಕ್ಷಗಳು ದೂರಿದ್ದವು.

    ಸಂತ್ರಸ್ತೆ ಮತ್ತು ಅವರ ಕುಟುಂಬಸ್ಥರು ವಕೀಲರೊಂದಿಗೆ ರಾಯ್‍ಬರೇಲಿ ಜೈಲಿನಲ್ಲಿರುವ ಸಂಬಂಧಿಕರೊಬ್ಬರನ್ನು ನೋಡಲು ತೆರಳುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆ ಅಪಘಾತವಾಗಿದೆ ಎಂದು ಉನ್ನಾವ್ ಪೊಲೀಸ್ ವರಿಷ್ಠಾಧಿಕಾರಿ ಮಾಧವ್ ಪ್ರಸಾದ್ ವರ್ಮಾ ತಿಳಿಸಿದ್ದರು.

    ಸಂತ್ರಸ್ತೆಯು ಉನ್ನಾವ್‍ನ ನಿವಾಸಿಯಾಗಿದ್ದು, ಬ್ಯಾಂಗರ್ಮೌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕುಲ್‍ದೀಪ್ ಸೆಂಗರ್ 2017ರಲ್ಲಿ ಮಗಳನ್ನು ಅತ್ಯಾಚಾರ ಗೈದಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದರು. ಆದರೆ ಈ ಬಗ್ಗೆ ಯಾರು ಕೂಡ ಕ್ರಮ ತೆಗೆದುಕೊಂಡಿರಲಿಲ್ಲ. ಬಳಿಕ ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು.

    ದುರ್ನಡತೆ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಶಾಸಕರು ಹಾಗೂ ಸಂಸದರು ಸೇರಿದಂತೆ ಜನಪ್ರತಿನಿಧಿಗಳನ್ನು ಪಕ್ಷದಿಂದ ಹೊರ ಹಾಕುವಂತೆ ಪ್ರಧಾನಿ ಮೋದಿ ಇತ್ತೀಚೆಗಷ್ಟೇ ಕಟ್ಟಪ್ಪಣೆ ನೀಡಿದ್ದರು. ಶಾಸಕ ಆಕಾಶ್ ವಿಜಯ್‍ವರ್ಗಿಯಾ ಅವರು ಕ್ರಿಕೆಟ್ ಬ್ಯಾಟ್‍ನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಪ್ರಕರಣದ ನಂತರ ಬಿಜೆಪಿಯ ಎಲ್ಲ ಜನಪ್ರತಿನಿಧಿಗಳಿಗೆ ಮೋದಿ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಯಾವ ನಾಯಕರ ಮಗನಾಗಿದ್ದರೂ ಸರಿ ಅಂತಹವನ್ನು ಪಕ್ಷದಿಂದ ಹೊರಹಾಕಿ ಎಂದು ಆದೇಶಿಸಿದ್ದರು. ಈ ಬೆನ್ನಲ್ಲೇ ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಬಿಜೆಪಿ ಆದೇಶ ಹೊರಡಿಸಿದೆ.