Tag: ಎಸ್ಸೆಸ್ಸೆಲ್ಸಿ

  • SSLC ಪರೀಕ್ಷೆಗೆ ಎಲ್ಲ ಸಿದ್ಧತೆ  –  ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಸಭೆ

    SSLC ಪರೀಕ್ಷೆಗೆ ಎಲ್ಲ ಸಿದ್ಧತೆ – ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಸಭೆ

    ಬೆಂಗಳೂರು: ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ಪಡೆಯುವುದರೊಂದಿಗೆ ಪರೀಕ್ಷೆ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ ವಿಶ್ವಾಸ ಮೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಮಂಗಳವಾರ ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದ ನಂತರ ಮಾತನಾಡಿದ ಅವರು, ಹೊಸ ರೀತಿಯಲ್ಲಿ ನಡೆಯುತ್ತಿರುವ ಪರೀಕ್ಷೆಗಳನ್ನು ಬರೆಯುವ ಕುರಿತು ಮಕ್ಕಳ ಮನಃಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು, ಕಳೆದ ಬಾರಿಯಂತೆ ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಈ ಬಾರಿಯೂ ಪರೀಕ್ಷೆಯ ಯಶಸ್ಸಿಗೆ ಸಹಕರಿಸಿ ಮಕ್ಕಳ ಹಿತಕ್ಕಾಗಿ ಶ್ರಮಿಸಬೇಕೆಂದು ಸೂಚನೆ ನೀಡಿದರು. ಇದನ್ನೂ ಓದಿ: ಡಾ.ದೇವಿಶೆಟ್ಟಿ ಸಮಿತಿ ಶಿಫಾರಸ್ಸಿನಂತೆ ಶಾಲಾ-ಕಾಲೇಜು ಪ್ರಾರಂಭ ಮಾಡಿ: ದೊರೆಸ್ವಾಮಿ

    ರಾಜ್ಯದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಇಳಿಮುಖ ಕಾಣುತ್ತಿರುವುದು ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸಿದ್ದು ಪರೀಕ್ಷೆಗೆ ಮಕ್ಕಳನ್ನು ಧೈರ್ಯವಾಗಿ ಕಳಿಸಲು ಪೋಷಕರು ಉತ್ಸುಕವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು.

    ಶೇಕಡಾ 95 ಕ್ಕಿಂತ ಹೆಚ್ಚು ಸಂಖ್ಯೆಯ ಪರೀಕ್ಷಾ ಸಿಬ್ಬಂದಿ ಲಸಿಕೆಯನ್ನು ಈಗಾಗಲೇ ಪಡೆದುಕೊಂಡಿರುವುದು ಅತ್ಯಂತ ಭರವಸೆ ತಂದಿರುವ ಸಂಗತಿ. ಇನ್ನುಳಿದವರು ಇನ್ನೆರಡು ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆ ಎಂದು ಡಿಡಿಪಿಐ ಗಳು ಅಂಕಿ – ಅಂಶ ಗಳ ಮೂಲಕ ತಿಳಿಸಿದ್ದಾರೆ. ಪರೀಕ್ಷೆಗಳ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಆಯಾ ಹಂತದಲ್ಲಿ ಕೈಗೊಂಡ ಉಪಕ್ರಮಗಳನ್ನು ಆಲಿಸಿದ ಸಚಿವರು ಉತ್ತಮ ಕ್ರಮಗಳನ್ನು ಇತರೆ ಜಿಲ್ಲೆಗಳವರು ವಿನಿಮಯ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಪರೀಕ್ಷೆ ಕುರಿತಂತೆ ಮಕ್ಕಳನ್ನು ನೇರವಾಗಿ ತಲುಪಿ ಆ ಕುರಿತು ಮಾರ್ಗದರ್ಶನ ನೀಡಲು ಮುಂದಾಗಬೇಕು. ಮಕ್ಕಳನ್ನು ಆಯಾ ಗ್ರಾಮಪಂಚಾಯ್ತಿ ಮಟ್ಟದ ಗ್ರಂಥಾಲಯಗಳಿಗೆ ಕರೆಸಿಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಕ್ರಮ ವಹಿಸಬೇಕು. ಇದನ್ನು ಆಯಾ ಬಿಇಒಗಳು ಬಿಆರ್‍ಸಿ/ ಸಿಆರ್‍ಸಿ ಮತ್ತು ಮುಖ್ಯ ಶಿಕ್ಷಕರ ಮೂಲಕ ಈ ಕ್ರಮಕ್ಕೆ ಮುಂದಾಗಬೇಕೆಂದು ಸುರೇಶ್ ಕುಮಾರ್ ಸಲಹೆ ನೀಡಿದರು.

    ಯಾವುದೇ ಕಾರಣದಿಂದಲೂ ಯಾವುದೇ ಒಂದು ಮಗುವೂ ಸಹ ಪರೀಕ್ಷೆಯಿಂದ ವಂಚಿತವಾಗದಂತೆ ಕ್ರಮ ವಹಿಸುವುದೂ ಸೇರಿದಂತೆ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿದ ಎಸ್‍ಒಪಿ ಅನುಷ್ಠಾನ ಕುರಿತು ಚರ್ಚಿಸಿ, ಅಗತ್ಯವಿರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆ ಮಾಡಲು ಸಚಿವರು ಸೂಚನೆ ನೀಡಿದರು. ಕಳೆದ ವರ್ಷ ಯಾವೊಬ್ಬ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತವಾಗದೇ ಇರುವುದು ಮತ್ತು ಒಬ್ಬನೇ ಒಬ್ಬ ಕೊನೆಯ ಕುಗ್ರಾಮದ ವಿದ್ಯಾರ್ಥಿಯೊಬ್ಬನಿಗಾಗಿ ಒಂದು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಿದ್ದನ್ನು ಅವರು ಸ್ಮರಿಸಿದರು.

    ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ನೀಡಿದ ಪ್ರಶ್ನೆ ಪತ್ರಿಕೆಗಳ ಒಎಂಆರ್ ಶೀಟ್ ಸೇರಿದಂತೆ ಆಯಾ ಜಿಲ್ಲೆಗಳಲ್ಲಿ ರೂಪಿಸಲಾದ ಮಾದರಿ ಪ್ರಶ್ನೆಪತ್ರಿಕೆಗಳಿಗೆ ಮಕ್ಕಳು ಉತ್ತರಿಸಿ ಪರೀಕ್ಷಾ ಪದ್ಧತಿ ಕುರಿತು ಆತ್ಮವಿಶ್ವಾಸ ಮೂಡಿಸಿಕೊಂಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಸಿ ಮಾರ್ಗದರ್ಶನ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಮಕ್ಕಳ ಮನೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಿ ಅವುಗಳನ್ನು ಪಡೆದುಕೊಂಡು ಮಾರ್ಗದರ್ಶನ ನೀಡಲಾಗಿದೆ. ವೆಬಿನಾರ್, ವಾಟ್ಸಪ್‍ಗಳ ಮೂಲಕ ಹಾಗೆಯೇ ಕೆಲವೆಡೆಗಳಲ್ಲಿ ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಪ್ರಶ್ನೆ ಪತ್ರಿಕೆ ಉತ್ತರಿಸಲು ಮಕ್ಕಳಿಗೆ ತಿಳಿಹೇಳಲಾಗಿದ್ದು, ಪರೀಕ್ಷೆ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ವಿಶ್ವಾಸ ಮೂಡುವಂತಹ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದೂ ಸಚಿವರು ವಿವರಿಸಿದರು.

    ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಪರೀಕ್ಷೆ ಸಿದ್ಧತೆ ಕುರಿತು ಚರ್ಚಿಸಿ ವಿವಿಧ ಇಲಾಖೆ ಅಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಕುರಿತು ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್ ಸೇರಿದಂತೆ ಆಯಾ ಸ್ಥಳೀಯ ಸಂಸ್ಥೆಗಳು ಪರೀಕ್ಷಾ ಕೇಂದ್ರದ ಸ್ಯಾನಿಟೈಸೇಷನ್ ಮಾಡುವ ಕುರಿತು ಸೂಚನೆಗಳನ್ನು ನೀಡಿದ್ದಾರೆ. ಸಾರಿಗೆ ವ್ಯವಸ್ಥೆಯ ಕೊರತೆಯಿರುವ ಮಕ್ಕಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಪರೀಕ್ಷೆಗೆ ಬಹಳ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಬರುತ್ತಿರುವುದರಿಂದ ಮಕ್ಕಳು ಕೇಂದ್ರದಿಂದ ಹೊರಡುವಾಗ ಅವರಿಗೆ ಲಘು ಉಪಹಾರದ ವ್ಯವಸ್ಥೆಯನ್ನೂ ಕೆಲ ಜಿಲ್ಲೆಗಳಲ್ಲಿ ಮಾಡಲಾಗಿದೆ. ಅದೇ ರೀತಿ ಉಳಿದ ಜಿಲ್ಲೆಗಳಲ್ಲಿ ಲಘು ಉಪಹಾರ, ಬಿಸ್ಕತ್ ಇಲ್ಲವೇ ನೀರಿನ ವ್ಯವಸ್ಥೆ ಹಾಗೆಯೇ ಮಾಸ್ಕ್, ಸ್ಯಾನಿಟೈಸರ್ ಒದಗಿಸಲು ಯಾವುದೇ ಸಂಘಸಂಸ್ಥೆಗಳು ಮುಂದೆಬಂದರೆ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಚಿವರು ಸಲಹೆ ನೀಡಿದದರು. ಕೆಲ ಜಿಲ್ಲೆಗಳಲ್ಲಿ ಶಾಸಕರು, ಸಂಘ ಸಂಸ್ಥೆಗಳು ಉದಾರವಾಗಿ ಇಂತಹ ಕೊಡುಗೆಗಳಿಗೆ ಮುಂದೆ ಬಂದಿದ್ದು ಅವುಗಳನ್ನು ಪಡೆದುಕೊಳ್ಳಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು ಎಂದು ಸಚಿವರು ತಿಳಿಸಿದರು.

    ಜನಪ್ರತಿನಿಧಿಗಳ ಸಹಕಾರ:
    ಪರೀಕ್ಷೆ ಕುರಿತು ಕೆಲವೆಡೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಆಯಾ ಭಾಗದ ವಿಧಾನಸಭಾ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು ಅಧಿಕಾರಿಗಳ ಸಭೆ ನಡೆಸಿ ಪರೀಕ್ಷೆ ಯಶಸ್ಸಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಈಗಾಗಲೇ ಎರಡೆರಡು ಬಾರಿ ಸಭೆಗಳನ್ನು ನಡೆಸಿ ಸಿದ್ಧತೆ ಪರಿಶೀಲಿಸಿದ್ದಾರೆ. ಬ್ಲಾಕ್ ಮಟ್ಟದಲ್ಲಿ ಸಿಆರ್‍ಪಿ, ಬಿಆರ್‍ಪಿ ಹಂತದಲ್ಲಿ ಹಾಗೆಯೇ ಮುಖ್ಯೋಪಾಧ್ಯಾಯರು ಶಾಲಾ ಹಂತದಲ್ಲಿ ಪ್ರತಿಯೊಬ್ಬ ಮಕ್ಕಳನ್ನೂ ತಲುಪಿದ್ದು, ಪೋಷಕರು ಮತ್ತು ಮಕ್ಕಳೊಂದಿಗೆ ಪರೀಕ್ಷೆ, ಈ ವರ್ಷದ ಪರೀಕ್ಷಾ ಪದ್ಧತಿ ಕುರಿತು ಮತ್ತು ಪರೀಕ್ಷೆಯನ್ನು ಮಕ್ಕಳ ಮುಂದಿನ ವ್ಯಾಸಂಗದ ಆಯ್ಕೆಯ ಅನುಕೂಲಕ್ಕಾಗಿ ಮತ್ತು ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುತ್ತಿರುವ ಕುರಿತು ವಿವರಣೆ ನೀಡಿ ಆತ್ಮವಿಶ್ವಾಸ ತುಂಬಿದ್ದಾರೆ.

    ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವುದರಿಂದ ಪ್ರಮುಖವಾಗಿ ಪರೀಕ್ಷಾ ಪಾವಿತ್ರ್ಯತೆ ಕುರಿತು ಹೆಚ್ಚಿನ ಗಮನ ಹರಿಸಬೇಕು. ಯಾವುದೇ ಕಾರಣಕ್ಕಾಗಿಯೂ ಯಾವುದೇ ರೀತಿಯಲ್ಲೂ ಯಾವುದೇ ಪರೀಕ್ಷಾ ಕೇಂದ್ರಗಳು ಸಲ್ಲದ ಕಾರಣಕ್ಕಾಗಿ ಮಾಧ್ಯಮಗಳಿಗೆ ವಿಷಯವಸ್ತುವಾಗದಂತೆ ಎಚ್ಚರಿಕೆ ವಹಿಸಿ ಪರೀಕ್ಷೆಗಳನ್ನು ಯಶಸ್ವಿಗೊಳಿಸಬೇಕೆಂದು ಅವರು ಸಲಹೆ ನೀಡಿದರು. ಇಂತಹ ಕಾಲಘಟ್ಟದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಪರೀಕ್ಷಾರ್ಥಿಗಳಿಗಷ್ಟೇ ಅಲ್ಲ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲರಿಗೂ ಸಹ ನೆನಪಿನಲ್ಲುಳಿಯುವಂತಹ ಒಂದು ಅವಿಸ್ಮರಣೀಯ ಘಟನೆಯಾಗಲಿರುವುದರಿಂದ ಈ ಪರೀಕ್ಷೆಗೆ ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

    ಹೆಚ್ಚು ಮಳೆಯ ಜಿಲ್ಲೆಗಳಲ್ಲಿ ಸಾರಿಗೆ ವ್ಯವಸ್ಥೆ:
    ಪರೀಕ್ಷೆ ಮಳೆಗಾಲದ ಸಮಯದಲ್ಲಿ ನಡೆಯುತ್ತಿರುವುದರಿಂದ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಕ್ಕಳು ಪರೀಕ್ಷೆಗೆ ಬಂದು ಹೋಗುವ ಕುರಿತು ಕೈಗೊಳ್ಳಲಾದ ಕ್ರಮಗಳನ್ನು ಆಲಿಸಿದರು. ಹಾಗೆಯೇ ದಕ್ಷಿಣ ಕನ್ನಡದಲ್ಲಿ ದೋಣಿಯಲ್ಲಿ ಬರಬೇಕಾದ ಮಕ್ಕಳ ಕುರಿತಂತೆ ಕೈಗೊಳ್ಳಲಾದ ಕ್ರಮದ ಕುರಿತು ಸಲಹೆ ನೀಡಿದರು. ಹೋಗಿ ಬರಲು ತೊಂದರೆಯಾಗುವಂತಹ ಕಡೆಗಳಲ್ಲಿ ವಿದ್ಯಾರ್ಥಿನಿಲಯಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕೆಂದು ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಸ್ಥಳೀಯ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿರುವುದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಯಾವೊಬ್ಬ ವಿದ್ಯಾರ್ಥಿಗೂ ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದು. ಉತ್ತಮ ಮನಸ್ಥಿತಿಯಲ್ಲಿ ಹಾಜರಾಗಿ ಉತ್ತಮ ಮತ್ತು ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುಂತಹ ಪರಿಸರವಿರುವಂತೆ ಮತ್ತು ಮಳೆಯ ಇರುಚಲಿನಿಂದಲು ಪರೀಕ್ಷಾರ್ಥಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸುರೇಶ್ ಕುಮಾರ್ ಸಲಹೆ ನೀಡಿದರು.

    ಪರೀಕ್ಷಾ ಸಿದ್ಧತೆ, ಸಿಬ್ಬಂದಿ ಲಸಿಕೆ ಪಡೆದಿರುವುದು, ಸ್ಥಳೀಯ ಹಂತದಲ್ಲಿ ಜಿಲ್ಲಾಧಕಾರಿಗಳ ನೇತೃತ್ವದ ಸಭೆಗಳ ಮಾಹಿತಿ, ಸ್ವಯಂ ಸೇವಕರ ನೇಮಕ, ಮಾಸ್ಕ್, ಸ್ಯಾನಿಟೈಜರ್ ವ್ಯವಸ್ಥೆ, ಎಸ್‍ಒಪಿ ಪಾಲನೆ ಕುರಿತು ಎಲ್ಲ 34 ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು.

    15-17ರಂದು ಅಣಕು ಪರೀಕ್ಷೆ:
    ಪರೀಕ್ಷಾ ಸಿದ್ಧತೆ ಕುರಿತಂತೆ ವಿವರಣೆ ಪಡೆದ ಸುರೇಶ್ ಕುಮಾರ್, ಜುಲೈ 15 ಮತ್ತು 17ರಂದು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಅಣಕು ಪರೀಕ್ಷೆಗಳನ್ನು ನಡೆಸುವುದಕ್ಕೆ ಸೂಚನೆ ನೀಡಿ, ಪರೀಕ್ಷಾ ಕೇಂದ್ರ ಪ್ರವೇಶದಿಂದ ಹಿಡಿದು ಪರೀಕ್ಷಾ ಕೊಠಡಿ ಪ್ರವೇಶ ಹಾಗೆಯೇ ಪರೀಕ್ಷೆ ನಂತರ ಮಕ್ಕಳು ಸಾಮಾಜಿಕ ಅಂತರದ ಮೂಲಕ ಪರೀಕ್ಷಾ ಕೇಂದ್ರದಿಂದ ಹೊರಬರುವ ತನಕ ಎಲ್ಲ ರೀತಿಯ ಕ್ರಮಗಳನ್ನು ಪಾಲಿಸುವಂತೆ ಸಚಿವರು ಸೂಚಿಸಿದರು.

    ಮಕ್ಕಳೊಂದಿಗೆ ಫೋನ್ ಇನ್ ಸಂವೇದನಾ:
    ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಪರೀಕ್ಷೆಗೆ ಮಕ್ಕಳು ಸಜ್ಜಾಗಿರುವ ಕುರಿತು ಮಕ್ಕಳೊಂದಿಗೆ ತಾವು ಮಾತನಾಡು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಜುಲೈ 9 ಮತ್ತು 14ರಂದು ಫೋನ್ ಇನ್ ಸಂವೇದನಾ ಕಾರ್ಯಕ್ರಮ ನಡೆಯಲಿದೆ. ಪ್ರತಿಯೊಂದು ಜಿಲ್ಲೆಗಳಿಂದ 2000ಕ್ಕೂ ಹೆಚ್ಚು ಮಕ್ಕಳು ಈ ಸಂವೇದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದರು.

    ಸಭೆಯಲ್ಲಿ ಸಾಶಿಇ ಆಯುಕ್ತ ವಿ. ಅನ್ಬುಕುಮಾರ್, ಅಪರ ಆಯುಕ್ತರಾದ ನಳಿನ್ ಅತುಲ್, ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

  • ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ – KSRTC  ಬಸ್ ಪ್ರಯಾಣ‌ ಉಚಿತ

    ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ – KSRTC ಬಸ್ ಪ್ರಯಾಣ‌ ಉಚಿತ

    ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹತ್ವದ ನಿರ್ಧಾರ ಕೈಗೊಂಡಿದೆ.

    ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯಾದ್ಯಂತ ಉಚಿತ ಬಸ್ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ಇಲಾಖೆ ಕಲ್ಪಿಸಿದೆ. ಈ ಮೂಲಕ ವಿದ್ಯಾರ್ಥಿಗಳು ನಿಗಮದ ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

    ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್ 25ರಿಂದ ಜುಲೈ 4ರವರಗೂ ನಡೆಯಲಿವೆ. ಕೊರೊನಾ ಕಾರಣದಿಂದಾಗಿ ಮುಂದೂಡಲ್ಪಟ್ಟ ಪರೀಕ್ಷೆಗೆ ತೆರಳುವುದು ವಿದ್ಯಾರ್ಥಿಗಳ ಪಾಲಿಗೆ ಸಮಸ್ಯೆಯಾಗಿತ್ತು. ಆದರೆ ಈಗ ಸಾರಿಗೆ ನಿಗಮವು ವಿದ್ಯಾರ್ಥಿಗಳಿಗೆ ಅಭಯ ನೀಡಿದೆ.

    ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪತ್ರ (ಹಾಲ್ ಟಿಕೆಟ್)ಅನ್ನು ಬಸ್ ಸಿಬ್ಬಂದಿಗೆ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು. ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಉಚಿತವಾಗಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

  • ಫೇಲಾದ ಗಣಿತದಲ್ಲಿಯೇ ಐಎಎಸ್ ಮಾಡಿದೆ- ವಿದ್ಯಾರ್ಥಿಗಳಿಗೆ ಸಿಇಓ ಪಾಠ

    ಫೇಲಾದ ಗಣಿತದಲ್ಲಿಯೇ ಐಎಎಸ್ ಮಾಡಿದೆ- ವಿದ್ಯಾರ್ಥಿಗಳಿಗೆ ಸಿಇಓ ಪಾಠ

    – ಎಸ್‍ಎಲ್‍ಎಲ್‍ಸಿ ಫಲಿತಾಂಶದಲ್ಲಿ ಬಳ್ಳಾರಿ ಅಗ್ರಸ್ಥಾನಕ್ಕೇರಲು ಶ್ರಮಿಸಿ

    ಬಳ್ಳಾರಿ: ಜಿಲ್ಲೆಯಲ್ಲಿ ಈ ಬಾರಿ ಎಸ್‍ಎಲ್‍ಎಲ್‍ಸಿ ಫಲಿತಾಂಶ ವೃದ್ಧಿಸುವ ನಿಟ್ಟಿನಲ್ಲಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಬಾರಿ ಜಿಲ್ಲೆ ಅಗ್ರಸ್ಥಾನಕ್ಕೇರಿಸಲು ಎಲ್ಲ ಶಿಕ್ಷಕ ಸಮುದಾಯ ಶ್ರಮಿಸಬೇಕು. ಎಲ್ಲ ಮಕ್ಕಳನ್ನು ಪಾಸ್ ಮಾಡುವ ಸಾಮರ್ಥ್ಯ ಹಾಗೂ ಅಸಾಧ್ಯವನ್ನು ಸಾಧ್ಯವಾಗಿಸುವ ಸಾಮರ್ಥ್ಯ ತಮ್ಮಲ್ಲಿದೆ ಎಂದು ಜಿ.ಪಂ ಸಿಇಒ ಕೆ.ನಿತೀಶ್ ಹೇಳಿದ್ದಾರೆ.

    ಜಿಲ್ಲಾಡಳಿತ, ಜಿ.ಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಬಿಡಿಎಎ ಫುಟ್ಬಾಲ್ ಸಭಾಂಗಣದಲ್ಲಿ ಎಸ್‍ಎಲ್‍ಎಲ್‍ಸಿ ಫಲಿತಾಂಶ ಉತ್ತಮಗೊಳಿಸುವ ಕುರಿತು ಜಿಲ್ಲೆಯ ಎಲ್ಲಾ ಪ್ರೌಢಶಾಲೆ ಮುಖ್ಯಗುರುಗಳು, ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯ ಶಿಕ್ಷಕರಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಬದುಕು ರೂಪಿಸುವ ನಿಟ್ಟಿನಲ್ಲಿ ಎಸ್‍ಎಲ್‍ಎಲ್‍ಸಿ ಮುಖ್ಯ ಘಟ್ಟ. ತಾವು ವಿದ್ಯಾರ್ಥಿಗಳನ್ನು ಯಾವ ರೀತಿ ಪರಿಣಾಮಕಾರಿಯಾದ ಬೋಧನೆಯ ಮೂಲಕ ಅಣಿಗೊಳಿಸುತ್ತೀರೋ ಅವರು ಉತ್ತಮ ಫಲಿತಾಂಶ ಪಡೆಯಲು ಸಜ್ಜಾಗುತ್ತಾರೆ ಎಂದರು.

    ತಮ್ಮ ಸ್ವಂತ ಮಕ್ಕಳಿಗಿಂತ ಹೆಚ್ಚಾಗಿ ಅವರನ್ನು ಪರಿಗಣಿಸಿ ಮತ್ತು ಬೋಧಿಸಿ. ಶಿಕ್ಷಕರು ಸರಿಯಾಗಿ ಪಾಠ ಮಾಡಿದರೇ ವಿದ್ಯಾರ್ಥಿಗಳು ಭವಿಷ್ಯ ಕಟ್ಟಿಕೊಂಡ ಬಳಿಕ ನಿಮ್ಮನ್ನು ಸ್ಮರಿಸಲಿದ್ದಾರೆ. ಶಿಕ್ಷಕರಿಗೆ ಪ್ರತಿ ವರ್ಷ 10ನೇ ಕ್ಲಾಸ್ ಬರುತ್ತೆ. ಆದರೆ ವಿದ್ಯಾರ್ಥಿಗಳಿಗೆ ಒಂದೆ ಸಾರಿ ಬರುವುದು. ಇದೊಂದು ನಿಮಗೆ ಸದಾವಕಾಶ, ಅದನ್ನು ಬಳಸಿಕೊಳ್ಳಿ ಎಂದು ಕರೆ ನೀಡಿದರು.

    ತಾವು ಖುಷಿಯಿಂದ ಮಕ್ಕಳಿಗೆ ಪಾಠ ಹೇಳಿಕೊಟ್ಟರೇ ಅದು ಅವರ ತಲೆಗೆ ಹೋಗುತ್ತದೆ. ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ತಮಗೆ ಯಾವ ಸಹಾಯ-ಸಹಕಾರ ಬೇಕು ಅದನ್ನು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ಚಿತ್ರದುರ್ಗದಲ್ಲಿ ನವೋದಯ ಶಾಲೆಯಲ್ಲಿ ನಾನು 8ನೇ ತರಗತಿಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಗಣಿತ ವಿಷಯದಲ್ಲಿ ಫೇಲಾಗಿದ್ದೆ. ಆದರೆ ನಂತರ ಅದೇ ಗಣಿತ ಶಿಕ್ಷಕರು ಅತ್ಯಂತ ಇಷ್ಟವಾಗಿ ಅವರ ಪಾಠವನ್ನು ಪ್ರೀತಿಯಿಂದ ಕಲಿತು ಎಸ್‍ಎಲ್‍ಎಲ್‍ಸಿಯಲ್ಲಿ 99 ಹಾಗೂ ಪಿಯುಸಿಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆದುಕೊಂಡೆ ಎಂದು ಕೆ.ನಿತೀಶ್ ಹೇಳಿದ್ದಾರೆ.

    ನಂತರದ ದಿನಗಳಲ್ಲಿ ಗಣಿತ ಇಷ್ಟದ ವಿಷಯವಾಯ್ತು. ಇಂಜನಿಯರಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರಿದೆ. ಐಎಎಸ್ ಪರೀಕ್ಷೆಯನ್ನು ಗಣಿತದಲ್ಲಿಯೇ ಎದುರಿಸಿ ಇಡೀ ದೇಶಕ್ಕೆ 8ನೇ ರ‌್ಯಾಂಕ್ ಗಳಿಸಿದೆ. ಇದಕ್ಕೆ ಕಾರಣ ನನಗೆ ಕಲಿಸಿದ ಗಣಿತ ಶಿಕ್ಷಕರು ಎಂದು ಅವರು ಸ್ಮರಿಸಿದರು. ತಾವು ತಮ್ಮ ಮಕ್ಕಳನ್ನು ಅತ್ಯಂತ ಇಷ್ಟದಿಂದ ಕಲಿಸಿ. ಅವರು ಉನ್ನತ ಸ್ಥಾನಕ್ಕೇರಿದಾಗ ತಮ್ಮನ್ನು ಸದಾ ಸ್ಮರಿಸುತ್ತಾರೆ. ಅಂದು ಫೇಲಾಗಿದ್ದ ನನ್ನನ್ನೇ ಐಎಎಸ್ ಅಧಿಕಾರಿಯನ್ನಾಗಿ ಮಾಡಿದ ಕೀರ್ತಿ ಶಿಕ್ಷಕ ಸಮೂಹಕ್ಕೆ ಸೇರುತ್ತದೆ ಎಂದು ತಮ್ಮ ಬಾಲ್ಯವನ್ನು ನೆನೆದರು.

  • SSLC ಪರೀಕ್ಷೆ ವೇಳೆ ನಕಲಿಗೆ ಸಹಕರಿಸುತ್ತಿದ್ದ ಪ್ರಾಚಾರ್ಯ ಸೇರಿ ನಾಲ್ವರು ಅರೆಸ್ಟ್

    SSLC ಪರೀಕ್ಷೆ ವೇಳೆ ನಕಲಿಗೆ ಸಹಕರಿಸುತ್ತಿದ್ದ ಪ್ರಾಚಾರ್ಯ ಸೇರಿ ನಾಲ್ವರು ಅರೆಸ್ಟ್

    ಬೆಳಗಾವಿ: ಎಸ್‍ಎಸ್‍ಎಲ್‍ಸಿ ಗಣಿತ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ್ದ ನಾಲ್ವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣ ನಡೆದಿದೆ.

    ಹಾರೂಗೇರಿ ವಿದ್ಯಾಲಯದ ಪ್ರಾಚಾರ್ಯ ಎಂ.ಆರ್.ಮಗದುಮ್, ಸಹಶಿಕ್ಷಕರಾದ ಡಿ.ಪಿ.ದೇಸಾಯಿ, ಎ.ಬಿ.ಪಾಟೀಲ, ಅಲಕನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಪಿ.ಬಿ.ಪಾಲಯಾ ಬಂಧಿತರು. ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ಆಗಿದ್ದೇನು?:
    ಮವಾರ ಗಣಿತ ಪರೀಕ್ಷೆ ನಡೆದಿತ್ತು. ಹಾರೂಗೇರಿ ವಿದ್ಯಾಲಯದ ಶಿಕ್ಷಕರು ಕೆಲ ವಿದ್ಯಾರ್ಥಿಗಳಿಂದ ಪಶ್ನೆ ಪತ್ರಿಕೆ ಪಡೆದು ಕೊಠಡಿಯಲ್ಲಿ ಕುಳಿತು ಉತ್ತರ ಸಿದ್ಧಪಡಿಸಿದ್ದಾರೆ. ಬಳಿಕ ಪ್ರತಿಯೊಂದು ಪರೀಕ್ಷಾ ಕೊಠಡಿಗಳಿಗೆ ಹೋಗಿ ವಿದ್ಯಾರ್ಥಿಗಳಿಗೆ ಉತ್ತರವನ್ನು ಹೇಳಲು ಮುಂದಾಗಿದ್ದರು. ಕೊಠಡಿಯಲ್ಲಿ ಶಿಕ್ಷಕರು ಪ್ರಶ್ನೆ ಪತ್ರಿಕೆ ಹಿಡಿದು ಉತ್ತರ ಬರೆಯುತ್ತಿದ್ದ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದು, ರಾಯಬಾಗ ಬಿಇಒ ಎಚ್.ಎ.ಭಜಂತ್ರಿ ಅವರಿಗೆ ನೀಡಿದ್ದರು.

    ವಿಡಿಯೋ ನೋಡಿದ ಬಿಇಒ ಎಚ್.ಎ.ಭಜಂತ್ರಿ ಅವರು ಹಾರೂಗೇರಿ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಶಿಕ್ಷಕರನ್ನು ಮಂಗಳವಾರ ಸಂಜೆ 4 ಗಂಟೆಗೆ ಬಂಧಿಸಿದ್ದಾರೆ.