Tag: ಕದ್ರಾ ಜಲಾಶಯ

  • ಕಾರವಾರದಲ್ಲಿ ಪ್ರವಾಹ ಹಾನಿ ವೀಕ್ಷಿಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್

    ಕಾರವಾರದಲ್ಲಿ ಪ್ರವಾಹ ಹಾನಿ ವೀಕ್ಷಿಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್

    ಕಾರವಾರ: ಕಾಳಿ ನದಿ ಪ್ರವಾಹದಿಂದ ಹಾನಿಗೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪ್ರದೇಶಗಳಿಗೆ ಇಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜನರಿಗೆ ಮಾಹಿತಿ ನೀಡದೇ ಕೆ.ಪಿ.ಸಿ.ಎಲ್ ಅಧಿಕಾರಿಗಳು ನೀರನ್ನು ಬಿಟ್ಟಿರುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ.

    ಜುಲೈ 23 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ನೆರೆ ಸೃಷ್ಟಿಯಾಗಿ ಅನಾಹುತ ಮಾಡಿತ್ತು. ಕಾಳಿ ನದಿ ಉಕ್ಕಿ ಹರಿದ ಪರಿಣಾಮ ಕದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಟ್ಟಿದ್ದರಿಂದ ಕಾರವಾರ ತಾಲೂಕಿನ ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದವು. ಅದರಲ್ಲೂ ಜಲಾಶಯದ ಸಮೀಪದಲ್ಲೇ ಇರುವ ಮಲ್ಲಾಪುರ, ಕುರ್ನಿಪೇಟೆ, ಗಾಂಧಿನಗರ ಗ್ರಾಮಗಳಲ್ಲಿ ಮನೆಗಳೇ ಪ್ರವಾಹದಿಂದ ಕೊಚ್ಚಿ ಹೋಗಿದ್ದವು. ತಾಲೂಕಿನ ಕದ್ರಾ ಜಲಾಶಯದ ಸುತ್ತಮುತ್ತಲಿನ ಗ್ರಾಮಕ್ಕೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸೋಮವಾರ ಭೇಟಿ ನೀಡಿದರು. ಮಲ್ಲಾಪುರ, ಕುರ್ನಿಪೇಟೆ, ಗಾಂಧಿನಗರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದ ಆದ ಹಾನಿ ಕುರಿತು ವೀಕ್ಷಣೆ ಮಾಡಿದರು.

    ಇದಾದ ನಂತರ ಕೆಪಿಸಿ ಅಧಿಕಾರಿಗಳ ಸಭೆಯನ್ನ ನಡೆಸಿದ ಸಿದ್ದರಾಮಯ್ಯ ಯಾವುದೇ ಮುನ್ಸೂಚನೆ ನೀಡದೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟು ಜನರನ್ನ ಸಮಸ್ಯೆಗೆ ಸಿಲುಕಿಸಿದ್ದೀರಿ ಎಂದು ಗರಂ ಆದರು. ಅಲ್ಲದೇ ನಿರಾಶ್ರಿತರಾದವರಿಗೆ ಕೆಪಿಸಿ ಕಾಲೋನಿಯಲ್ಲಿಯೇ ಉಳಿದುಕೊಳ್ಳಲು ಸೂರು ನೀಡುವಂತೆ ವಾರ್ನಿಂಗ್ ನೀಡಿದ್ದು ಕಾಯಂ ಬದಲಿ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

    ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳ ಜನರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿ ಅಹವಾಲನ್ನ ಸ್ವೀಕರಿಸಿದರು. ಹಲವು ಗ್ರಾಮಸ್ಥರು ಸಿದ್ದರಾಮಯ್ಯನವರ ಮುಂದೆ ತಮ್ಮ ನೋವನ್ನ ಹೇಳಿಕೊಂಡಿದ್ದು, ತಮಗೆ ಪದೇ ಪದೇ ಪ್ರವಾಹದಿಂದ ಕಷ್ಟಕ್ಕೆ ಸಿಲುಕುವಂತಾಗಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿಕೊಂಡರು.

    ಸಿದ್ದರಾಮಯ್ಯ ಕೆಪಿಸಿ ಅಧಿಕಾರಿಗಳ ಜೊತೆ ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೂ ಕ್ಲಾಸ್ ತೆಗೆದುಕೊಂಡರು. ಸಿದ್ದರಾಮಯ್ಯನವರ ಜೊತೆ ಮಾಜಿ ಸಚಿವ ಆರ್.ವಿ ದೇಶಪಾಂಡೆ, ಮಾಜಿ ಶಾಸಕರಾದ ಸತೀಶ್ ಸೈಲ್, ಮಂಕಾಳು ವೈದ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಆರ್.ವಿ ದೇಶಪಾಂಡೆ, ಕೆಪಿಸಿ ಅಧಿಕಾರಿಗಳು ನೋಟಿಸ್ ನೀಡದೆ ನೀರು ಬಿಟ್ಟು ಅನಾಹುತಕ್ಕೆ ಕಾರಣವಾಗಿದ್ದಾರೆ. ಸೂಕ್ತ ಪರಿಹಾರ ಹಾನಿಗೊಳಗಾದವರಿಗೆ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು. ಇದಲ್ಲದೇ ವಿಧಾನಸೌದದಲ್ಲಿ ಈ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದರು.

    ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕಾರವಾರ ನಂತರ ಅಂಕೋಲಾ ತಾಲೂಕಿನಲ್ಲಿ ಗಂಗಾವಳಿ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಲ್ಲದೇ ಅಂಕೋಲಾ ಪಟ್ಟಣದಲ್ಲೂ ನಿರಾಶ್ರಿತರ ಅಹವಾಲು ಸಭೆಯನ್ನ ನಡೆಸಿದರು. ಇದಾದ ನಂತರ ಯಲ್ಲಾಪುರಕ್ಕೆ ತೆರಳಿ ಅಲ್ಲೂ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಇದನ್ನೂ ಓದಿ: ನೆಟ್ ಇಲ್ಲದೇ ಮೊಬೈಲಿನಿಂದ ಹಣ ಪಾವತಿಸಿ – ಏನಿದು ಇ-ರುಪೀ?

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದ ಜನರಿಗೆ ಸಾಂತ್ವಾನ ಹೇಳಲು ಮುಂದಾಗಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲೂ ಸಾಕಷ್ಟು ಸಂಚಲನ ಮೂಡಿಸಿದೆ.

  • ಉತ್ತರ ಕನ್ನಡದಲ್ಲಿ ಭಾರೀ ಮಳೆ- ಕದ್ರಾ, ಕೊಡಸಳ್ಳಿ ಜಲಾಶಯದಿಂದ ನೀರು ಹೊರಕ್ಕೆ

    ಉತ್ತರ ಕನ್ನಡದಲ್ಲಿ ಭಾರೀ ಮಳೆ- ಕದ್ರಾ, ಕೊಡಸಳ್ಳಿ ಜಲಾಶಯದಿಂದ ನೀರು ಹೊರಕ್ಕೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ದಿನ ಅಲ್ಪ ಬಿಡುವು ಕೊಟ್ಟಿದ್ದ ಮಳೆ, ಮಧ್ಯಾಹ್ನದ ನಂತರ ತನ್ನ ವೇಗವನ್ನು ಮುಂದುವರಿಸಿದ್ದು, ಅಬ್ಬರಿಸಿ ಬೊಬ್ಬಿರಿಯುತ್ತಿದೆ.

    ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತಿದ್ದು, ಕದ್ರಾ ಮತ್ತು ಕೊಡಸಳ್ಳಿ ಡ್ಯಾಮ್ ನಿಂದ ಬುಧವಾರ ನೀರನ್ನು ಬಿಡುಗಡೆ ಮಾಡಲಾಗಿದೆ. ಕದ್ರಾ ಜಲಾಶಯದಲ್ಲಿ ಎಂಟು ಗೇಟ್ ತೆರೆದು ಒಟ್ಟು 22,143 ಕ್ಯೂಸೆಕ್ಸ್ ನೀರು ಹಾಗೂ ಕೊಡಸಳ್ಳಿ ಡ್ಯಾಮ್ ನಿಂದ ನಾಲ್ಕು ಗೇಟ್ ತೆರೆದು 22,393 ಕ್ಯೂಸೆಕ್ಸ್ ನೀರನ್ನು ಹರಿಬಿಡಲಾಗಿದೆ.

    ಹೊನ್ನಾವರ ತಾಲೂಕಿನ ಚಿತ್ತಾರ ಅರಣ್ಯ ಭಾಗದಲ್ಲಿ ಮಳೆಯಿಂದ ಬೃಹದಾಕಾರದ ಮರ ರಸ್ತೆಗೆ ಉರುಳಿ ಹಲವು ಕಾಲ ಸಂಚಾರಕ್ಕೆ ತೊಂದರೆ ಉಂಟಾಯಿತು. ಇನ್ನೂ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ತುಂಬಿ ಹರಿದ ಕಾಳಿ ನದಿ- ಕದ್ರಾ ಜಲಾಶಯದಿಂದ ಸಮುದ್ರಕ್ಕೆ ನೀರು ಬಿಡುಗಡೆ

    ತುಂಬಿ ಹರಿದ ಕಾಳಿ ನದಿ- ಕದ್ರಾ ಜಲಾಶಯದಿಂದ ಸಮುದ್ರಕ್ಕೆ ನೀರು ಬಿಡುಗಡೆ

    ಕಾರವಾರ: ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ತಾಲೂಕಿನ ಕದ್ರಾ ಜಲಾಶಯ ಭರ್ತಿಯಾಗಿದ್ದು, ಶನಿವಾರ ಮಧ್ಯಾಹ್ನ ಮೂರು ಕ್ರಸ್ಟ್ ಗೇಟ್‍ಗಳ ಮೂಲಕ 5,500 ಕ್ಯುಸೆಕ್ಸ್ ನೀರನ್ನು ಸಮುದ್ರಕ್ಕೆ ಹರಿಸಲಾಯಿತು.

    ನೀರು ಬಿಟ್ಟ ಹಿನ್ನಲೆಯಲ್ಲಿ ನದಿಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿದ್ಯುತ್ ನಿಗಮವು ಸೂಚನೆ ನೀಡಿದೆ. ಕಾರವಾರದ ಕದ್ರಾ ಜಲಾಶಯವು ಹತ್ತು ಗೇಟ್ ಗಳನ್ನು ಹೊಂದಿದ್ದು, 34.50 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ ಇದೀಗ 31.50 ಮೀಟರ್ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಗರಿಷ್ಠ 32.50 ಮೀಟರ್ ನೀರು ಸಂಗ್ರಹಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯು ಅನುಮತಿ ನೀಡಿದೆ. 2019ರಲ್ಲಿ ಉಂಟಾದ ಪ್ರವಾಹದ ಬಳಿಕ ಈ ಕ್ರಮ ಅನುಸರಿಸಲಾಗುತ್ತಿದೆ.

    ಇದು ಕಾಳಿ ನದಿಯ ಕೊನೆಯ ಜಲಾಶಯವಾಗಿದ್ದು, ನದಿಯ ಆರಂಭದಲ್ಲೇ ಇರುವ `ಸೂಪಾ’ ರಾಜ್ಯದ ಅತಿದೊಡ್ಡ ಜಲಾಶಯಗಳಲ್ಲಿ ಒಂದಾಗಿದೆ. ಜಲಾಶಯದ ಸುತ್ತ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೂಪಾಕ್ಕೂ ಒಳಹರಿವು ಹೆಚ್ಚಾಗಿದೆ.

    ಈ ವರ್ಷ ಕೋವಿಡ್ ಲಾಕ್‍ಡೌನ್ ಕಾರಣದಿಂದ ಕಡು ಬೇಸಿಗೆಯಲ್ಲೂ ಜಲವಿದ್ಯುತ್‍ಗೆ ಬೇಡಿಕೆ ಕುಸಿದಿತ್ತು. ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಲ್ಲಿ 250 ರಿಂದ 260 ಮಿಲಿಯನ್ ಯೂನಿಟ್‍ಗಳಷ್ಟು (ಎಂ.ಯು) ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಆದರೆ ಈ ವರ್ಷದ ಬೇಡಿಕೆಯು 200 ಮಿಲಿಯನ್ ಯೂನಿಟ್‍ಗಿಂತಲೂ ಕಡಿಮೆಯಾಗಿತ್ತು. ಹೀಗಾಗಿ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ನೀರಿನ ಸಂಗ್ರಹ ಹೆಚ್ಚಿದೆ. ಹೀಗಾಗಿ ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಕದ್ರಾ ಜಲಾಶಯದ ಗೇಟ್‍ಗಳನ್ನು ತೆರೆಯಲಾಗಿದೆ.

    ಈ ಬಗ್ಗೆ ಪಬ್ಲಿಕ್ ಟಿ.ವಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ ಭಾರೀ ಮಳೆಯಾಗುವುದಿಲ್ಲ. ಆದರೆ ಈ ಬಾರಿ ಚಂಡಮಾರುತದಿಂದಾಗಿ ಉತ್ತಮ ಮಳೆಯಾಗಿದೆ. ಹೀಗಾಗಿ ಮಳೆಗಾಲದ ಆರಂಭದಲ್ಲೇ ಅಲ್ಲಲ್ಲಿ ನೆರೆಯ ಸಾಧ್ಯತೆಗಳನ್ನು ಗುರುತಿಸಲಾಗಿದೆ. ಅದನ್ನು ಎದುರಿಸಲು ಸಿದ್ಧತೆ ಸಹ ಮಾಡಿಕೊಳ್ಳಲಾಗಿದೆ. ಹೊನ್ನಾವರ, ಸಿದ್ದಾಪುರ, ಶಿರಸಿ ಭಾಗದಲ್ಲಿ ಗುಡ್ಡ ಕುಸಿಯುವ ಸಾಧ್ಯತೆಗಳಿದ್ದು, ಆಯಾ ಭಾಗದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ಸಿಬ್ಬಂದಿ ನೇಮಿಸಲಾಗಿದೆ ಎಂದರು.

    ಗುಂಡಳಬಾಳದಲ್ಲಿ ಕಾಳಜಿ ಕೇಂದ್ರ
    ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಗುಂಡಳಬಾಳದಲ್ಲಿ ಐದು ಮನೆಗಳು ಜಲಾವೃತವಾಗಿವೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾಳಜಿ ಕೇಂದ್ರವನ್ನು ಗುಂಡಳಬಾಳ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತೆರೆಯಲಾಗಿದೆ. ಸಿದ್ದಾಪುರ ಗಡಿ ಭಾಗದಲ್ಲಿ ವರದಾ ನದಿ ಸಹ ಧುಮ್ಮಿಕ್ಕಿ ಹರಿಯುತಿದ್ದು, ಅರೆಂದೂರು ಗ್ರಾಮದ ಭಾಗದಲ್ಲಿ 200 ಕ್ಕೂ ಹೆಚ್ಚು ಕೃಷಿ ಭೂಮಿ ಜಲಾವೃತವಾಗಿದೆ.

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ- ಕದ್ರಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ- ಕದ್ರಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

    – 150ಕ್ಕೂ ಹೆಚ್ಚು ಮನೆಗಳು ಜಲಾವೃತ
    – ಮೀನುಗಾರಿಗೆ ಸ್ತಬ್ಧ

    ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಕರಾವಳಿ ತಾಲೂಕುಗಳ ಅನೇಕ ಹಳ್ಳಿಗಳು ಜಲಾವೃತವಾಗಿವೆ.

    ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಯಲ್ಲಾಪುರ ತಾಲೂಕಿನ ತಗ್ಗು ಪ್ರದೇಶಗಳಿಗೆ ಗಂಗಾವಳಿ, ಅಘನಾಶಿನಿ, ಬೇಡ್ತಿ ನದಿ ನೀರು ನುಗ್ಗಿದೆ. ಗಂಗಾವಳಿ ನದಿ ಪ್ರವಾಹದಿಂದ ಅಂಕೋಲಾ ತಾಲೂಕಿನ ವಾಸರಕುದ್ರಗಿ ಹಳ್ಳಿ ಸಂಪೂರ್ಣ ಜಲಾವೃತವಾಗಿದ್ದು, 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ಜನರನ್ನು ದೋಣಿ ಮೂಲಕ ರಕ್ಷಣೆ ಮಾಡಲಾಗುತ್ತಿದೆ.

    ಹಲವು ಮನೆಗಳಲ್ಲಿ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, ದಾಖಲೆಗಳು ನೀರುಪಾಲಾಗಿದ್ದು ಗ್ರಾಮದಲ್ಲಿ ಐದು ಪರಿಹಾರ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸ್ಥಳಕ್ಕೆ ಕಾರವಾರದ ಶಾಸಕಿ ರೂಪಾಲಿ ನಾಯ್ಕ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

    ಅಂಕೋಲ-ಯಲ್ಲಾಪುರ ರಸ್ತೆ ಬಂದ್: ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಜಿಲ್ಲೆಯ ಹುಬ್ಬಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿ 63ರ ಸುಂಕಸಾಳ ಬಳಿ ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಗಿದೆ. ಇಲ್ಲಿನ ಹೆಗ್ಗಾರ್, ಡೋಂಗ್ರಿ, ರಾಮನಗುಳಿ, ಸುಂಕಸಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನದಿನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇದಲ್ಲದೇ ಮಳೆ ಅಬ್ಬರ ಹೆಚ್ಚಾದ್ದರಿಂದ ಅಂಕೋಲ-ಯಲ್ಲಾಪುರ ರಸ್ತೆಯನ್ನು ಬಂದ್ ಮಾಡಲಾಗಿದೆ.

    ಮೀನುಗಾರಿಕೆ ಸ್ತಬ್ಧ: ಜಿಲ್ಲೆಯ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸುರಿಯುತ್ತಿರುವ ಮಳೆಗೆ ಜನ ಕಂಗಾಲಾಗಿದ್ದಾರೆ. ಮನೆಯಿಂದ ಹೊರ ಬರದ ಸ್ಥಿತಿ ನಿರ್ಮಾಣ ವಾಗಿದೆ. ತಗ್ಗು ಪ್ರದೇಶಗಳು ಜಲಾವೃತ್ತವಾಗಿ ಅಪಾಯ ತಂದಿರಿಸಿದೆ. ಭಾರೀ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು ಜನರನ್ನು ಆತಂಕಕ್ಕೆ ದೂಡಿದೆ. ಜಿಲ್ಲೆಯ ಕರಾವಳಿಯಲ್ಲಿ ಸಮುದ್ರದ ಅಲೆಗಳ ರೌದ್ರ ನರ್ತನಕ್ಕೆ ಮೀನುಗಾರರ ಸ್ಥಿತಿ ಅಯೋಮಯವಾಗಿದೆ. ಸಮುದ್ರ ಆಳೆತ್ತರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದೆ. ಬಹುತೇಕ ಕಡೆ ಕಡಲ ಕೊರೆತ ಉಂಟಾಗಿ ಸಮುದ್ರದ ನೀರು ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ.

    ಜಿಲ್ಲೆಯ ಕರಾವಳಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣ ಸ್ಥಗಿತವಾಗಿದೆ. ಹೊಸ ಆಸೆ ಹೊಸ ಕನಸಿನೊಂದಿಗೆ ಆರಂಭವಾದ ಈ ವರ್ಷದ ಮೀನುಗಾರಿಕೆ ಹಂಗಾಮಿಗೆ ಆರಂಭದಲ್ಲಿಯೇ ಪ್ರಕೃತಿ ಭಾರೀ ಪ್ರಮಾಣದಲ್ಲಿ ಹೊಡೆತ ಕೊಟ್ಟಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯ ಬನವಾಸಿ ರಸ್ತೆ ಬಳಿ ವಿದ್ಯುತ್ ಕಂಬ ಹಾಗೂ ಮರಗಳು ಉರುಳಿ ಸಾಕಷ್ಟು ಹಾನಿಯಾಗಿದೆ.

    ಕದ್ರಾ ಜಲಾಶಯದಿಂದ ನೀರು ಬಿಡುಗಡೆ: ಮಳೆ ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ಹೆಚ್ಚು ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಜಾಗೃತಾ ಕ್ರಮವಾಗಿ ಕದ್ರಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರನ್ನು 6 ಗೇಟ್‍ಗಳ ಮೂಲಕ ಹೊರ ಬಿಡಲಾಗಿದೆ. ಕಾಳಿ ನದಿ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಕಳೆದ ಮೂರು ದಿನಗಳಿಂದ ಮಳೆ ಜೋರಾಗಿದ್ದು, ಕದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಗರಿಷ್ಠ 34.50 ಮೀಟರ್ ಸಾಮಥ್ರ್ಯ ಹೊಂದಿರುವ ಜಲಾಶಯದಲ್ಲಿ ಈಗಾಗಲೇ 32.00 ಮೀಟರ್ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ 6 ಗೇಟ್‍ಗಳನ್ನು ತೆರೆದು 40 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

    ಈಗಾಗಲೇ ನದಿ ತೀರದ ಜನರಿಗೆ ಎಚ್ಚರಿಕೆ ನೀಡಿ ಸ್ಥಳಾಂತರಿಸಿರುವ ಕೆಪಿಸಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಮೈಕ್ ಮೂಲಕ ಸಂದೇಶ ರವಾನಿಸುತ್ತಿದ್ದಾರೆ. ಅಲ್ಲದೇ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿ, ನೋಡಲ್ ಅಧಿಕಾರಿ ಸೇರಿದಂತೆ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ.