Tag: ಕರ್ಣಿ ಸೇನಾ

  • ಮಣಿಕರ್ಣಿಕಾ ವಿರುದ್ಧ ಪ್ರತಿಭಟನೆಗಿಳಿದ ಕರ್ಣಿ ಸೇನಾ!

    ಮಣಿಕರ್ಣಿಕಾ ವಿರುದ್ಧ ಪ್ರತಿಭಟನೆಗಿಳಿದ ಕರ್ಣಿ ಸೇನಾ!

    ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅಭಿನಯದ ಐತಿಹಾಸಿಕ ಕಥನಾಕವುಳ್ಳ ‘ಮಣಿಕರ್ಣಿಕಾ’ ಸಿನಿಮಾ ಜನವರಿ 25ರಂದು ಬಿಡುಗಡೆಯಾಗಲು ಸಿದ್ಧಗೊಂಡಿದೆ. ಝಾನ್ಸಿ ರಾಣಿ ಲಕ್ಷ್ಮಿಬಾಯಿ ಅವರ ಕಥೆಯನ್ನು ಸಿನಿಮಾ ಒಳಗೊಂಡಿದೆ. ಸದ್ಯ ಚಿತ್ರದ ಬಿಡುಗಡೆಯನ್ನು ವಿರೋಧಿಸಿ ಕರ್ಣಿ ಸೇನಾ ಪ್ರತಿಭಟನೆಗೆ ಇಳಿದಿದೆ. ಈ ಹಿಂದೆ ಕರ್ಣಿ ಸೇನಾ ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಸಿನಿಮಾ ವಿರೋಧಿಸಿ ದೇಶಾದ್ಯಂತ ದೊಡ್ಡ ಪ್ರತಿಭಟನೆ ನಡೆಸಿತ್ತು.

    ವಿರೋಧ ಯಾಕೆ?
    ಚಿತ್ರದಲ್ಲಿ ರಾಣಿ ಲಕ್ಷ್ಮಿಬಾಯಿ ಮತ್ತು ಬ್ರಿಟಿಷ್ ಅಧಿಕಾರಿ ನಡುವೆ ಪ್ರೇಮ ಕಥೆಯನ್ನು ತೋರಿಸಲಾಗಿದೆ. ಚಿತ್ರದ ಕೆಲವು ಹಾಡುಗಳಲ್ಲಿ ಕಂಗಾನರನ್ನು ಸೆಕ್ಸಿಯಾಗಿ ತೋರಿಸಲಾಗಿದೆ. ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದರಿಂದ ಮುಂದಿನ ದಿನಗಳಲ್ಲಿ ಸೇನೆಯ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಕರ್ಣಿ ಸೇನಾದ ರಾಷ್ಟ್ರೀಯ ನಾಯಕ ಸುಖದೇವ್ ಸಿಂಗ್ ಶೇಖಾವತ್, ಮಣಿಕರ್ಣಿಕಾ ಚಿತ್ರದಲ್ಲಿ ಇತಿಹಾಸವನ್ನು ತಿರುಚಿ ತಮಗೆ ಅಗತ್ಯ ಇರುವಂತೆ ಬದಲಾಯಿಸಿಕೊಂಡಿದ್ದಾರೆ. ಚಿತ್ರತಂಡ ಭಾರತದ ಇತಿಹಾಸವನ್ನು ಬದಲಾವಣೆ ಮಾಡಲು ಪ್ರಯತ್ನ ಮಾಡುತ್ತಿದೆ. ಆದ್ರೆ ಚಿತ್ರತಂಡದ ಪ್ಲಾನ್ ಯಶಸ್ವಿಯಾಗಲು ನಾವು ಅವಕಾಶ ನೀಡಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    2018ರಲ್ಲಿ ನಾವು ಪದ್ಮಾವತ್ ಸಿನಿಮಾಗೆ ವಿರೋಧ ಮಾಡಿದ್ದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಮಣಿಕರ್ಣಿಕಾ ಸಿನಿಮಾ ವಿಷಯ ತಿಳಿದು ಕಳೆದ ಫೆಬ್ರವರಿಯಲ್ಲಿ ಚಿತ್ರತಂಡದ ಜೊತೆ ನಾವು ಮಾತನಾಡಿದ್ದರೂ ನೈಜ ಇತಿಹಾಸವನ್ನು ತೋರಿಸದೆ ಇಷ್ಟ ಬಂದಂತೆ ಬದಲಾವಣೆ ಮಾಡಲು ಮುಂದಾಗುತ್ತಿದ್ದಾರೆ. ಸಿನಿಮ ಬಿಡುಗಡೆ ಮುನ್ನ ಚಿತ್ರವನ್ನು ನಮಗೆ ತೋರಿಸಬೇಕು, ಇಲ್ಲವಾದಲ್ಲಿ ಪದ್ಮಾವತ್ ಸಿನಿಮಾ ವಿರುದ್ಧ ನಡೆಸಿದ ಹೋರಾಟವನ್ನು ಇಂದು ಮಾಡಬೇಕಾಗುತ್ತದೆ ಎಂದು ಸುಖದೇವ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

    ಸೆನ್ಸಾರ್ ಕ್ಲೀನ್ ಚಿಟ್: ಈಗಾಗಲೇ ಸೆನ್ಸಾರ್ ಬೋರ್ಡ್ ಮಣಿಕರ್ಣಿಕಾ ಚಿತ್ರ ಬಿಡುಗಡೆ ಅನುಮತಿ ನೀಡಿದೆ. ಸೆನ್ಸಾರ್ ಬೋರ್ಡ್ ನೀಡಿರುವ ಅನುಮತಿ ಇಲ್ಲಿ ಅನ್ವಯವಾಗಲ್ಲ. ಚಿತ್ರದಲ್ಲಿ ರಾಣಿ ಮತ್ತು ಬ್ರಿಟಿಷ್ ಅಧಿಕಾರಿ ನಡುವೆ ಪ್ರೇಮ ಕಹಾನಿ ತೋರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರವನ್ನ ನಮಗೆ ತೋರಿಸಬೇಕಿದೆ. ಇಲ್ಲವಾದಲ್ಲಿ ಸಿನಿಮಾ ಬಿಡುಗಡೆಯಾಗುವ ಚಿತ್ರಮಂದಿರಗಳ ಮೇಲೆ ದಾಳಿ ಮಾಡಲಾಗುವುದು ಎಂದು ಗುಡುಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪದ್ಮಾವತ್ ವಿರುದ್ಧದ ಪ್ರತಿಭಟನೆಯನ್ನು ಹಿಂಪಡೆದ ಕರ್ಣಿ ಸೇನಾ

    ಪದ್ಮಾವತ್ ವಿರುದ್ಧದ ಪ್ರತಿಭಟನೆಯನ್ನು ಹಿಂಪಡೆದ ಕರ್ಣಿ ಸೇನಾ

    ಮುಂಬೈ: ಪದ್ಮಾವತ್ ಸಿನಿಮಾದ ವಿರುದ್ಧದ ನಮ್ಮ ಪ್ರತಿಭಟನೆಯನ್ನು ಹಿಂಪಡೆಯಲಾಗುತ್ತಿದೆ ಎಂದು ಶ್ರೀ ರಜಪೂತ ಕರ್ಣಿ ಸೇನಾ ತನ್ನ ನಿರ್ಧಾರವನ್ನು ಶುಕ್ರವಾರ ತಿಳಿಸಿದೆ.

    ಮುಂಬೈನ ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ನಾಯಕ ಯೋಗೇಂದ್ರ ಸಿಂಗ್ ಖಟರ್ ಈ ಬಗ್ಗ ನಿರ್ಣಯ ತೆಗೆದುಕೊಂಡಿದ್ದಾರೆ. ಯೋಗೇಂದ್ರ ಸಿಂಗ್ ತಮ್ಮ ನಿರ್ಧಾರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ಅಧ್ಯಕ್ಷ ಸುಖ್ ದೇವ್ ಸಿಂಗ್ ಗೋಮಾಡಿ ಅವರಿಗೆ ರವಾನಿಸಿದ್ದಾರೆ. ಶುಕ್ರವಾರದಂದು ಮುಂಬೈನಲ್ಲಿ ಕರ್ಣಿ ಸೇನಾದ ಕೆಲವು ಸದಸ್ಯರು ಪದ್ಮಾವತ್ ಸಿನಿಮಾ ವೀಕ್ಷಣೆ ಮಾಡಿದ್ದು, ಚಿತ್ರದ ವಿವಾದಗಳಿಂದ ಮುಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬ ರಜಪೂತ ವ್ಯಕ್ತಿ ಹೆಮ್ಮೆ ಪಡುತ್ತಾರೆ ಎಂದು ಹೇಳಿದ್ದಾರೆ.

    ಚಿತ್ರ ಯಾವುದೇ ಆಕ್ಷೇಪಾರ್ಹ ದೃಶ್ಯಗಳನ್ನು ಹೊಂದಿಲ್ಲ. ದೆಹಲಿ ಸುಲ್ತಾನ್ ಅಲ್ಲಾವುದ್ದೀನ್ ಖಿಲ್ಜಿ ಮತ್ತು ರಾಣಿ ಪದ್ಮಿನಿ ದೃಶ್ಯಗಳು ಎಲ್ಲಿಯೂ ರಜಪೂತ ಸಮುದಾಯದ ಜನರ ಭಾವನೆಗಳಿಗೆ ನೋವುಂಟು ಮಾಡುವುದಿಲ್ಲ. ಪ್ರತಿಭಟನೆಯನ್ನು ಹಿಂಪಡೆದುಕೊಳ್ಳುವ ಪತ್ರವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಪತ್ರ ರಾಜಸ್ಥಾನ, ಮಧ್ಯ ಪ್ರದೇಶ, ಗುಜರಾತ್, ಹರಿಯಾಣ ಮತ್ತು ದೇಶದ ಚಿತ್ರಮಂದಿರಗಳ ಮಾಲೀಕರಿಗೆ ಸಿನಿಮಾ ರಿಲೀಸ್ ಮಾಡಲು ಒಪ್ಪಿಗೆ ನೀಡಿದಂತಾಗುತ್ತದೆ ಎಂದು ಯೋಗೇಂದ್ರ ಸಿಂಗ್ ತಿಳಿಸಿದ್ದಾರೆ.

    ಕರ್ಣಿ ಸೇನಾ ಈ ಹಿಂದೆ ಸುಪ್ರೀಂ ಕೋರ್ಟ್ ಗೆ ಸಿನಿಮಾವನ್ನು ಬ್ಯಾನ್ ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಆದ್ರೆ ಸುಪ್ರೀಂ ಕೋರ್ಟ್ ಕರ್ಣಿ ಸೇನಾದ ಅರ್ಜಿಯನ್ನ ರದ್ದುಗೊಳಿಸಿ, ಪದ್ಮಾವತ್ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಕರ್ಣಿ ಸೇನಾ ಮಾತ್ರ ಚಿತ್ರ ಪ್ರದರ್ಶನಗೊಳ್ಳುವ ಥಿಯೇಟರ್ ಗೆ ಬೆಂಕಿ ಹಾಕಲಾಗುವುದು ಎಂದು ಬೆದರಿಕೆ ಹಾಕಿದ್ದರು. ಕರ್ಣಿ ಸೇನಾದ ಬೆದರಿಕೆ ಹೆದರಿದ ಕೆಲವು ಚಿತ್ರಮಂದಿರಗಳ ಮಾಲೀಕರು ‘ಪದ್ಮಾವತ್’ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರು. ಕರ್ಣಿ ಸೇನಾ ಪ್ರತಿಭಟನೆಯನ್ನು ಹಿಂದೆ ಪಡೆದಿರುವದರಿಂದ ಚಿತ್ರಮಂದಿರಗಳ ಮಾಲೀಕರು ನಿರ್ಭಯವಾಗಿ `ಪದ್ಮಾವತ್’ ಸಿನಿಮಾ ರಿಲೀಸ್ ಮಾಡಬಹುದಾಗಿದೆ.

    ಪದ್ಮಾವತ್ ಸಿನಿಮಾ ಜನವರಿ 25ರಂದು ಬಿಡುಗೊಡೆ ಆಗಿದ್ದು, ಈಗಾಗಲೇ 200 ಕೋಟಿ ಅಧಿಕ ಹಣವನ್ನು ತನ್ನ ಗಲ್ಲಾಪೆಟ್ಟಿಗೆಯಲ್ಲಿ ತುಂಬಿಸಿಕೊಂಡಿದೆ. ದೇಶದ ಕೆಲವು ರಾಜ್ಯಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಭದ್ರತೆ ನೀಡಲಾಗಿತ್ತು. 2017 ಡಿಸೆಂಬರ್ 01 ರಂದು ಪದ್ಮಾವತ್ ಸಿನಿಮಾ ಬಿಡುಗೊಡೆ ಆಗಲಿದೆ ಎಂದು ಈ ಹಿಂದೆ ಚಿತ್ರತಂಡ ಹೇಳಿಕೊಂಡಿತ್ತು. ಚಿತ್ರ ಸೆಟ್ಟೇರಿದಾಗಿನಿಂದಲೂ ತನ್ನ ವಿರೋಧ ಮಾಡುತ್ತಿದ್ದ ಕರ್ಣಿ ಸೇನಾ ದೇಶಾದ್ಯಂತ ಪ್ರತಿಭಟನೆಯನ್ನು ತೀವ್ರಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಬೋರ್ಡ್ ಚಿತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿ ಸಿನಿಮಾದ ಟೈಟಲ್ ಸೇರಿದಂತೆ ಕೆಲವು ಬದಲಾವಣೆ ಮಾಡುವಂತೆ ಚಿತ್ರತಂಡಕ್ಕೆ ಸೂಚಿಸಿತ್ತು. ಸೆನ್ಸಾರ್ ಮಂಡಳಿಯ ನಿರ್ದೇಶನದಂತೆ ಚಿತ್ರತಂಡ ಸಿನಿಮಾದಲ್ಲಿ ಮಾರ್ಪಡು ಮಾಡಿಕೊಂಡು ಬಿಡುಗೊಡೆ ಮಾಡಿದೆ.