Tag: ಕಲಿಕೆ

  • ಭಾಷೆಯಾಗಿ ಕನ್ನಡ ಕಲಿಕೆ-ಯಾವುದೇ ರಾಜಿಗೂ ಅವಕಾಶವಿಲ್ಲ: ಸುರೇಶ್ ಕುಮಾರ್

    ಭಾಷೆಯಾಗಿ ಕನ್ನಡ ಕಲಿಕೆ-ಯಾವುದೇ ರಾಜಿಗೂ ಅವಕಾಶವಿಲ್ಲ: ಸುರೇಶ್ ಕುಮಾರ್

    ಬೆಂಗಳೂರು: ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

    ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಬುಧವಾರ ತಮ್ಮನ್ನು ಭೇಟಿ ಮಾಡಿ ಮನವಿ ಮಾಡಿದ ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದ್ದು, ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಿದೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಪ್ರಕಾರ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದೆ. ಒಂದರಿಂದ ಹತ್ತನೇ ತರಗತಿಯವರಿಗೆ ಹಂತಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸಿ ಈ ಕಡ್ಡಾಯ ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದ್ದು, ಇದು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ಕ್ಕೆ ವಿರುದ್ಧವಾಗಿದೆ. ಅಲ್ಲದೇ ಈ ನೆಲದ ಸಂಸ್ಕೃತಿಯನ್ನು ವಿರೋಧಿಸುವಂತಹುದ್ದಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಯಾವುದೇ ಆಗ್ರಹಕ್ಕೂ ಮಣಿಯದೇ ಕಟ್ಟುನಿಟ್ಟಾಗಿ ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಕಲಿಸುವುದಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯ ಬೇಡ – ಪೋಷಕರಿಂದ ಅಭಿಯಾನ

    ಪೋಷಕರೂ ಕೂಡ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದ ಸದಾಶಯವನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಿಸಬೇಕು. ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೂ ಸಹ ಯಾವುದೇ ಆಗ್ರಹಗಳಿಗೆ ಮಣಿಯದೇ ಮತ್ತು ಕನ್ನಡ ಕಲಿಕೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿಗೆ ಒಳಗಾಗದೇ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ ಕನ್ನಡವನ್ನು ತಮ್ಮ ಶಾಲೆಗಳಲ್ಲಿ ಕಡ್ಡಾಯವಾಗಿ, ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಎಂದಿನಂತೆ ಮುಂದುವರೆಸುವುದು ಮತ್ತು ಈ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆ ನೀಡುವ ಕುರಿತು ಕೂಡಲೇ ಸುತ್ತೋಲೆಯೊಂದನ್ನು ಹೊರಡಿಸಬೇಕೆಂದು ಸಚಿವರು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.

    ಈ ಕುರಿತು ಆಯಾ ಮಟ್ಟದ ಇಲಾಖೆಯ ಅಧಿಕಾರಿಗಳು ಎಲ್ಲ ಶಾಲೆಗಳಿಗೂ ಭೇಟಿ ನೀಡಿ ಕಾಯ್ದೆಯ ಜಾರಿ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುವಂತೆ ಸಹ ಕೂಡಲೇ ನಿರ್ದೇಶನ ನೀಡಲಾಗಿದೆ. ಈಗಾಗಲೇ ಬೆಂಗಳೂರಿನ ಕೇಂದ್ರ ಪಠ್ಯಕ್ರಮದ ಶಾಲೆಗಳ ಪ್ರಾಚಾರ್ಯರು ಮತ್ತು ಮುಖ್ಯಸ್ಥರ ಸಭೆಯನ್ನೂ ನಡೆಸಿ ಈ ಕುರಿತು ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯವಾಗಿ ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ. ಯಾರೇ ಆಗಲಿ ಯಾವುದೇ ಭಾಷೆಯನ್ನು ಕಲಿಯುವುದರಿಂದ ಹೆಚ್ಚಿನ ಶಕ್ತಿ ಬರುತ್ತದೆ. ಹೆಚ್ಚಿನ ಭಾಷೆಗಳನ್ನು ಕಲಿಯುವುದರಿಂದ ಸಮೃದ್ಧ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಂತಾಗುತ್ತದೆ. ಇದನ್ನು ನಮ್ಮ ಪೋಷಕರು ಅರಿತುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

  • 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ

    1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ

    ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಯನ್ನು ವಿದ್ಯಾರ್ಥಿಗಳು ಅತ್ಯಂತ ಸರಳ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.

    ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಕಲಿಕಾ ನಿರ್ವಹಣಾ ವ್ಯವಸ್ಥೆಯ ಮೂಲಕ ಬೋಧನೆ- ಕಲಿಕೆಗಾಗಿ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಇಂದು ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಹತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿದರು.

    ಏಕಕಾಲದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜುಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಬ್ಲಾಂಕ್ವೆಟ್ ಹಾಲ್ ವೇದಿಕೆಗೆ ವರ್ಚುಯಲ್ ಮೂಲಕ ಲಿಂಕ್ ಆಗಿ ಟ್ಯಾಬ್‍ಗಳನ್ನು ವಿತರಣೆ ಮಾಡಿದರು. ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು, ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರೂ ಆನ್‍ಲೈನ್ ವೇದಿಕೆ ಮೂಲಕ ಟ್ಯಾಬ್‍ಗಳನ್ನು ವಿತರಣೆ ಮಾಡಿದರು. ಇದನ್ನೂ ಓದಿ: 2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಸ್ಮಾರ್ಟ್ ಕ್ಲಾಸ್ ರೂಂ ಲೋಕಾರ್ಪಣೆ:
    ಬ್ಯಾಂಕ್ವೆಟ್ ಹಾಲ್‍ನಲ್ಲಿ ಸ್ಥಾಪಿಸಲಾಗಿದ್ದ ಮಾದರಿ ಸ್ಮಾಟ್‍ಕ್ಲಾಸ್ ರೂಂ ಅನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಿ ಅದರ ವ್ಯವಸ್ಥೆ ವೀಕ್ಷಿಸಿದರು. ಅದರ ಮೂಲಕ ವಿದ್ಯಾರ್ಥಿಗಳು ಹೇಗೆ ಕಲಿಯುತ್ತಾರೆ ಎಂಬುದನ್ನು ಅವರು ಗಮನಿಸಿದರಲ್ಲದೆ ಈ ಕುರಿತ ಮಾಹಿತಿಯನ್ನು ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಂದ ಪಡೆದುಕೊಂಡರು. ಸ್ಮಾರ್ಟ್‍ಕ್ಲಾಸ್ ರೂಂನ ತಾಂತ್ರಿಕ ನೈಪುಣ್ಯತೆ ಹಾಗೂ ಬೋಧನೆ-ಕಲಿಕೆ ವಿಧಾನದ ಬಗ್ಗೆ ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಕೋವಿಡ್ ಸಂಕಷ್ಟ ಕಾಲದಲ್ಲಿ ತಮ್ಮ ನೆರವಿಗೆ ಬಂದ ಕಲಿಕಾ ನಿರ್ವಹಣಾ ವ್ಯವಸ್ಥೆ, ಟ್ಯಾಬ್‍ಗಳು ಹಾಗೂ ಸ್ಮಾರ್ಟ್‍ಕ್ಲಾಸ್ ರೂಂಗಳ ಉಪಯೋಗದ ಬಗ್ಗೆ ಇಬ್ಬರು ವಿದ್ಯಾರ್ಥಿಗಳು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸಮಕ್ಷಮದಲ್ಲಿ ಅಭಿಪ್ರಾಯ ಹಂಚಿಕೊಂಡರು.

    163 ಕೋಟಿ ರೂ. ವೆಚ್ಚ: ಸಿಎಂ
    ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಉಚಿತವಾಗಿ ನೀಡಲಾಗಿದೆ. ಈ ಯೋಜನೆಗೆ ಸರ್ಕಾರ 163 ಕೋಟಿ ರೂ. ವೆಚ್ಚ ಮಾಡಿದೆ ಎಂದು ಯಡಿಯೂರಪ್ಪ ಅವರು ಮಾಹಿತಿ ಹಂಚಿಕೊಂಡರು.

    ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ನಗರ- ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಿಸುವುದು, ಅವರ ನಡುವೆ ಡಿಜಿಟಲ್ ಅಂತರವನ್ನು ಅಳಿಸಿಹಾಕುವ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಇಂಥ ಉತ್ತಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಅಲ್ಲದೆ 27.77 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ನಿರ್ವಹಣೆ ವ್ಯವಸ್ಥೆ ವಿದ್ಯಾರ್ಥಿಗಳು ಕಲಿಯುವುದಕ್ಕೆ ಅನುವಾಗುವಂತೆ 2,500 ಸ್ಮಾರ್ಟ್‍ಕ್ಲಾಸ್ ರೂಂಗಳನ್ನು ರಾಜ್ಯಾದ್ಯಂತ ಸ್ಥಾಪಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚು ಪೂರಕವಾಗಲಿದೆ ಎಂದು ನುಡಿದರು.  ಇದನ್ನೂ ಓದಿ: ಇದನ್ನೂ ಓದಿ:ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

    ದೇಶದಲ್ಲಿಯೇ ಮೊದಲ ಉಪಕ್ರಮ:
    ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‍ಗಳ ಮೂಲಕ ಕಲಿಕಾ ನಿರ್ವಹಣಾ ವ್ಯವಸ್ಥೆ ಮಾಡಿರುವ ರಾಜ್ಯದ ಕ್ರಮ ದೇಶದಲ್ಲೇ ಪ್ರಥಮ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಅಭಿಪ್ರಾಯಪಟ್ಟರು.

    ಇದೊಂದು ಉದಾತ್ತ ಕಾರ್ಯಕ್ರಮ. ಇದರಲ್ಲಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ. ಮೂರು ಇಲಾಖೆಗಳ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತಸ ಉಂಟು ಮಾಡಿದೆ. ರಾಜ್ಯದ ಉನ್ನತ ಶಿಕ್ಷಣದಲ್ಲಿ ಸುಧಾರಣೆಗಳ ಪರ್ವವೇ ಆರಂಭವಾಗಿದೆ. ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿಯೂ ಜಾರಿಗೆ ಬರುತ್ತದೆ. ಅದಕ್ಕೆ ಮೊದಲೇ ಕಲಿಕಾ ನಿರ್ವಹಣೆ ವ್ಯವಸ್ಥೆ ಜಾರಿಗೆ ಬಂದಿದ್ದು, ಅದನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಕೋಡಲಾಗಿದೆ. ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‍ಲೈನ್ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‍ಗಳು ನೆರವಾಗುತ್ತವೆ ಎಂದು ಅವರು ಹೇಳಿದರು.

    ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್ ಟ್ಯಾಬ್ಲೆಟ್ ಪಿಸಿಗಳ ಬಗ್ಗೆ ಮಾಹಿತಿ ಹಾಗೂ ಅವುಗಳ ಮೂಲಕ ಸಮಗ್ರ ಕಲಿಕಾ ವ್ಯವಸ್ಥೆ ಕಲಿಕೆ-ಬೋಧನೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

    ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ನಾಗಲಾಂಬಿಕೆ ದೇವಿ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಪಾಠ ಕೇಳಿದ ಡಿಸಿಎಂ
    ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಮಾರ್ಟ್‍ಕ್ಲಾಸ್ ರೂಂ ಉದ್ಘಾಟಿಸಿ ನಿರ್ಗಮಿಸಿದ ನಂತರ, ಮತ್ತೆ ಅಲ್ಲಿಗೆ ಆಗಮಿಸಿದ ಡಾ.ಅಶ್ವತ್ಥನಾರಾಯಣ, ಸ್ಮಾರ್ಟ್‍ಕ್ಲಾಸ್ ರೂಂನಲ್ಲಿ ಪಾಠ ಕೇಳಿದರು.

    ಈ ವೇಳೆಯಲ್ಲಿ ಕನ್ನಡ ಪ್ರಾಧ್ಯಾಪಕರೊಬ್ಬರು ಸ್ಮಾರ್ಟ್‍ಕ್ಲಾಸ್ ರೂಂನಿದಲೇ ಮೊದಲ ಪಾಠ ಆರಂಭಿಸಿದರು. ಹೈಸ್ಪೀಡ್ ಇಂಟರ್‍ ನೆಟ್, ಆಧುನಿಕ ಫಿಚರ್‍ ಗಳುಳ್ಳ ಟ್ಯಾಬ್ಲೆಟ್ ಪಿಸಿ ಮೂಲಕ ಕಲಿಕಾ ನಿರ್ವಹಣಾ ವ್ಯವಸ್ಥೆ ಅಡಿಯಲ್ಲಿ ನಡೆದ ಈ ಬೋಧನೆ- ಕಲಿಕೆಯ ಮಾದರಿಯನ್ನು ಅವರು ನೇರವಾಗಿ ವಿದ್ಯಾರ್ಥಿಯಂತೆಯೇ ವೀಕ್ಷಿಸಿದರು.

    ವಿದ್ಯಾರ್ಥಿಗಳ ಜತೆಯಲ್ಲಿ ಪಾಠವನ್ನು ಆಸಕ್ತಿಯಿಂದ ಕೇಳಿದ ಡಿಸಿಎಂ, ತಂತ್ರಜ್ಞಾನದ ಮೂಲಕ ಕನ್ನಡ ಪಾಠ ಕೇಳಿ ಚಕಿತರಾದರು. ಅಲ್ಲದೆ, ಸ್ಮಾರ್ಟ್‍ಕ್ಲಾಸ್ ರೂಂನ ಪರಿಣಾಮಕಾರಿ ದಕ್ಷತೆಯನ್ನು ವೀಕ್ಷಿಸಿ ಸಂತಸಪಟ್ಟರು. ಬೋಧನೆಗೆ ಈ ವ್ಯವಸ್ಥೆ ಎಷ್ಟರಮಟ್ಟಿಗೆ ಪರಿಣಾಮಕಾರಿ ಎಂದು ಬೋಧಕರಿಂದಲೇ ಮಾಹಿತಿ ಪಡೆದರಲ್ಲದೆ, ತಮ್ಮ ಜೊತೆ ಕೂತು ಪಾಠ ಕೇಳಿದ ವಿದ್ಯಾರ್ಥಿಗಳ ಜೊತೆಗೂ ಸಂವಾದ ನಡೆಸಿದರು. ಇದನ್ನೂ ಓದಿ: ನೆರೆಯ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ವೈರಾಣು ಪತ್ತೆ – ಸರ್ಕಾರಕ್ಕೆ ತಜ್ಞರ ಎಚ್ಚರಿಕೆ

    ಕೋಲಾರ ಜಿಲ್ಲೆಯ ಮಾಲೂರಿನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಶ್ವೇತಾ ಈ ವೇಳೆ ಪಾಠ ಮಾಡಿದರು. ನಂತರ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ಶಾಲಿನಿ ಅವರು ರಾಸಾಯನ ಶಾಸ್ತ್ರ ಕ್ಲಾಸ್ ನಡೆಸಿಕೊಟ್ಟರು. ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಅವರೂ ಪಾಠ ಕೇಳಿಸಿಕೊಂಡರು.