Tag: ಕಾರ್ಯದರ್ಶಿ

  • ರಾಜ್ಯದ ನೂತನ ಸಿಎಸ್‌ಆಗಿ ವಂದಿತಾ ಶರ್ಮಾ ನೇಮಕ

    ರಾಜ್ಯದ ನೂತನ ಸಿಎಸ್‌ಆಗಿ ವಂದಿತಾ ಶರ್ಮಾ ನೇಮಕ

    ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.

    ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮೇ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

    ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

    ಮಹಿಳೆಯರ ದರ್ಬಾರ್: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. ಇದನ್ನೂ ಓದಿ: ಗೆಳೆಯರ ರಕ್ತವನ್ನು ಮೈಗೆ ಮೆತ್ತಿಕೊಂಡು ಸತ್ತೋದಂತೆ ನಟಿಸಿದೆ – ಆಪ್ಪ ಅವನು ಮತ್ತೆ ಬರ್ತಾನೆ: ಶಾಕ್‍ಗೆ ಒಳಗಾದ ಬಾಲಕಿ

    ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

    ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

    1986ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್‌ ವರೆಗೆ ಅಧಿಕಾರವಧಿ ಇರಲಿದೆ.

  • ಸಂತೋಷ್ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ- ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್

    ಸಂತೋಷ್ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ- ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್

    ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್. ಆರ್ ಸಂತೋಷ್ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ಎಮ್.ಎಸ್ ರಾಮಯ್ಯ ಆಸ್ಪತ್ರೆ ವೈದ್ಯ ನರೇಶ್ ಶೆಟ್ಟಿ ಹೇಳಿದರು.

    ಸಂತೋಷ್ ಆರೋಗ್ಯ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಅವರು, ನಿದ್ದೆ ಮಂಪರಿನಲ್ಲೇ ಇರುವ ಸಂತೋಷ್ ಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ನಿನ್ನೆ ರಾತ್ರಿಗಿಂತ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆಯಾಗಿದೆ. ಡಿಸ್ಚಾರ್ಜ್ ಮಾಡುವ ಬಗ್ಗೆ ಯಾವುದೇ ನಿರ್ಧಾರವಿಲ್ಲ. ಮಧ್ಯಾಹ್ನ ನಂತರ ಡಿಸ್ಜಾರ್ಜ್ ಮಾಡಬಹುದು ತಿಳಿಸಿದರು.

    ಸಂತೋಷ್ ಅವರನ್ನು ನಿನ್ನೆ ರಾತ್ರಿ 8.30ರ ಸುಮಾರಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಮಧ್ಯಾಹ್ನ ನಂತರ ಜನರಲ್ ವಾರ್ಡಿಗೆ ಶಿಫ್ಟ್ ಮಾಡುತ್ತೇವೆ. ಅವರು ನಿನ್ನೆ ಬಂದಾಗ ಸ್ವಲ್ಪ ಮಂಕಾಗಿದ್ದರು. ಬೇರೆ ಯಾವುದೇ ಸಮಸ್ಯೆ ಇಲ್ಲ. ಎಷ್ಟು ನಿದ್ದೆ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಅಂತ ಹೇಳೋಕೆ ಆಗಲ್ಲ ಎಂದು ನುಡಿದರು.

    ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ನಗರ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ. ಆತ್ಮಹತ್ಯೆಗೆ ಯತ್ನ ಮಾಡಿರುವ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

  • ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೇಲೆ ಸದಸ್ಯನಿಂದ ಹಲ್ಲೆಗೆ ಯತ್ನ

    ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೇಲೆ ಸದಸ್ಯನಿಂದ ಹಲ್ಲೆಗೆ ಯತ್ನ

    ಮಂಡ್ಯ: ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಹಾಗೂ ಮಾಂಸದಂಗಡಿಗಳ ತೆರವಿಗೆ ಮುಂದಾಗಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೇಲೆ ಗ್ರಾಮ ಪಂಚಾಯತಿ ಸದಸ್ಯ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆಯಲ್ಲಿ ನಡೆದಿದೆ.

    ಪರವಾನಗಿ ಇಲ್ಲದೆ ಕೋಳಿ ಹಾಗೂ ಮಾಂಸದಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹರೀಶ್‍ಗೌಡ ಅಂಗಡಿಗಳ ತೆರವಿಗೆ ಮುಂದಾಗಿದ್ದಾರೆ. ಈ ವೇಳೆ ಮಂಗರವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಅಂಗಡಿಗಳನ್ನು ತೆರವು ಮಾಡದಂತೆ ತಡೆಯುತ್ತಾರೆ.

    ನಂತರ ಬಿಂಡಿಗನವಿಲೆ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಆಗಮಿಸಿ, ಹರೀಶ್‍ಗೌಡರ ಮೇಲೆ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಪ್ರಕಾಶ್ ಹರೀಶ್‍ಗೌಡರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ನಂತರ ಸ್ಥಳದಲ್ಲಿದ್ದವರು ಪ್ರಕಾಶ್ ಅವರನ್ನು ತಡೆದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಕುರಿತು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹಾಲಿನ ಡೈರಿಯಿಂದ ಮೋಸ- ಸಚಿವ ರೇವಣ್ಣ ಸ್ಥಳಕ್ಕೆ ಬರುವಂತೆ ಆಗ್ರಹಿಸಿ ರೈತ ಮಹಿಳೆಯರಿಂದ ಪ್ರತಿಭಟನೆ

    ಹಾಲಿನ ಡೈರಿಯಿಂದ ಮೋಸ- ಸಚಿವ ರೇವಣ್ಣ ಸ್ಥಳಕ್ಕೆ ಬರುವಂತೆ ಆಗ್ರಹಿಸಿ ರೈತ ಮಹಿಳೆಯರಿಂದ ಪ್ರತಿಭಟನೆ

     

    ಹಾಸನ: ಹಾಲಿನ ಹಣ ಸಂದಾಯ ಮಾಡದ ಕಾರಣ ಗ್ರಾಮದ ಡೈರಿ ಕಾರ್ಯದರ್ಶಿ ವಿರುದ್ಧ ಹಾಸನ ತಾಲೂಕಿನ ಎಜಿ ಕೊಪ್ಪಲದ ಬಂಡಿಹಳ್ಳಿ ರೈತರು ಪ್ರತಿಭಟನೆ ಕೈಗೊಂಡಿದ್ದಾರೆ.

    ಹಾಲಿನೊಂದಿಗೆ ಡೈರಿ ಮುಂದೆ ಧರಣಿ ಕುಳಿತ ರೈತ ಮಹಿಳೆಯರು, 18 ವರ್ಷಗಳಿಂದಲೂ ಡೈರಿಗೆ ಹಾಲು ಹಾಕುತ್ತಿದ್ದೇವೆ. ಆದ್ರೆ ಇದ್ರಿಂದ ನಮಗೆ ಒಂದು ರೂಪಾಯಿಯೂ ಲಾಭವಿಲ್ಲ. ಎರಡು ತಿಂಗಳಿಂದ ಹಾಲಿನ ಹಣ ಸಂದಾಯ ಮಾಡದೆ ಬಾಕಿ ಇದೆ. ಅಷ್ಟೇ ಅಲ್ಲದೇ ಹಾಲು ಅಳೆಯಲು ಕಂಪ್ಯೂಟರ್ ವ್ಯವಸ್ಥೆಗಳಿದ್ದು, ಅದರಿಂದ ಅಳತೆ ಮಾಡದೇ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಡೈರಿಯ ಬಳಿ ಸೆಕ್ರೆಟರಿ ಮತ್ತು ಹಾಲು ಅಳತೆ ಮಾಡುವವರು ಯಾರೂ ಬಂದಿಲ್ಲ. ಹಾಗೇ ಒಂದು ಚೀಲ ಬೂಸ ಕೊಟ್ರೆ, ಎರಡು ಚೀಲ ಬೂಸ ಎಂದು ಬರೆದುಕೊಳುತ್ತಾರೆ. ಹೀಗೆ ಮಾಡಿದರೆ ನಾವು ಏನು ಮಾಡೋದು ಎಂದು ಡೈರಿ ಕಾರ್ಯದರ್ಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಸ್ಥಳಕ್ಕೆ ಸಚಿವ ರೇವಣ್ಣ ಬಂದು ಸಮಸ್ಯೆ ಬಗೆಹರಿಸಬೇಕೆಂದು ಮಹಿಳೆಯರು ಆಗ್ರಹಿಸುತ್ತಿದ್ದಾರೆ.

  • ಉನ್ನತ ಹುದ್ದೆಯಲ್ಲಿದ್ದು, ಜ್ಞಾನವಂತನಾಗಿ ತಪ್ಪು ಮಾಡಿದೆ- ಕ್ಷಮೆಯಾಚಿಸಿದ ವಿಧಾನಸಭೆ ಕಾರ್ಯದರ್ಶಿ

    ಉನ್ನತ ಹುದ್ದೆಯಲ್ಲಿದ್ದು, ಜ್ಞಾನವಂತನಾಗಿ ತಪ್ಪು ಮಾಡಿದೆ- ಕ್ಷಮೆಯಾಚಿಸಿದ ವಿಧಾನಸಭೆ ಕಾರ್ಯದರ್ಶಿ

    ಬೆಂಗಳೂರು: ವಿಧಾಸಭೆಯ ಮೊಗಸಾಲೆಯಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಂಡಿರೋ ಘಟನೆಗೆ ಸಂಬಂಧಿಸಿದಂತೆ ಕಾರ್ಯದರ್ಶಿ ಎಸ್ ಮೂರ್ತಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಅಧಿವೇಶನ ಇಲ್ಲದ ಸಂದರ್ಭದಲ್ಲಿ ಮೊಗಸಾಲೆಯನ್ನು ನೌಕರರು ಬಳಸಿಕೊಳ್ಳುತ್ತಾರೆ. ತಿಳುವಳಿಕೆ ಇಲ್ಲದೇ ಅವರು ಅಲ್ಲಿ ಕೇಕ್ ತಂದು ಇಟ್ಟಿದ್ದರು. ಅಲ್ಲದೇ ಅದಾಗಲೇ ಸುಮಾರು 200 ಮಂದಿ ನೌಕರರು ಸೇರಿದ್ದು, ಭಾವನಾತ್ಮಕವಾಗಿ ನಾನು ಆಚರಿಸಿಕೊಂಡು ತಪ್ಪು ಮಾಡಿದೆ ಅಂತ ಹೇಳಿದ್ರು.

    30 ವರ್ಷದಿಂದ ಇಲ್ಲೇ ದುಡಿತಾ ಇದ್ದೀನಿ. ಅವರು ಕೂಡ ನನ್ನ ಜೊತೆ ಬಹಳಷ್ಟು ಕಾಲ ದುಡಿದಿದ್ದಾರೆ. ನನ್ನ ಕರ್ಮ ಭೂಮಿಯಾಗಿರೋ ವಿಧಾನಸಭೆಗೆ ನಾನು ನನ್ನ ತಾಯಿಯ ಸ್ಥಾನ ನೀಡಿದ್ದೇನೆ. ಭಾವನಾತ್ಮಕವಾಗಿ ನಾನು ಅಲ್ಲಿಗೆ ಹೋದೆ ಅಂತ ಅವರು ಹೇಳಿದ್ರು.

    ವಿಧಾನಸಭೆಯ ಮೊಗಸಾಲೆಯಲ್ಲಿ ಬರ್ತ್ ಡೇ ಆಚರಣೆ ಬೇಡ ಅಂತ ಹೇಳದ್ದು ನನ್ನಿಂದ ತಪ್ಪಾಗಿದೆ. ಇಷ್ಟು ದೊಡ್ಡ ಹುದ್ದೆಯಲ್ಲಿ ಇದ್ದುಕೊಂಡು ಪವಿತ್ರ ಸ್ಥಳದ ಬಗ್ಗೆ ಜ್ಞಾನ, ಮಾಹಿತಿ ಹೊಂದಿದ್ದು, ತಿಳಿದು ತಪ್ಪು ಮಾಡಿದೆ. ಆದ್ರೆ ನೌಕರರು ಅಲ್ಲಿ ನೆರೆದಿದ್ದನ್ನು ಕಂಡು ಭಾವನಾತ್ಮಕವಾಗಿ ನಾನು ಅದೇ ಜಾಗದಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡೆ. 10 ನಿಮಿಷ ಅವರ ಜೊತೆ ಇದ್ದು ನಾನು ಈ ಕಡೆ ಬಂದಿದ್ದೇನೆ. ಏನೇ ಆಗಲಿ ನಾನು ಆ ಸ್ಥಳದಲ್ಲಿ ಇಂತಹ ತಪ್ಪು ಮಾಡಬಾರದು ಅಂತ ತನ್ನ ತಪ್ಪನ್ನು ಒಪ್ಪಿಕೊಂಡರು.

    ಇದೇ ವೇಳೆ ತಾರಾ ಅವರು ಕೂಡ ಪಬ್ಲಿಕ್ ಟಿವಿ ಜೊತೆ ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ. ಯಾವುದೋ ಒಂದು ಕೆಲಸದ ನಿಮಿತ್ತ ನಾನು ವಿಧಾನಸಭೆಗೆ ತೆರಳಿದ್ದೆ. ಈ ವೇಳೆ ಮೂರ್ತಿಯವರ ಹುಟ್ಟು ಹಬ್ಬ ಅಂತ ಹೇಳಿದ್ರು. ಹೀಗಾಗಿ ನಾನು ಅವರಿಗೆ ವಿಶ್ ಮಾತಾನಾಡುತ್ತಿದ್ದೆ. ಇದೇ ಸಂದರ್ಭದಲ್ಲಿ ನೌಕರರೆಲ್ಲರೂ ಅಲ್ಲಿಗೆ ಬಂದು ಮೂರ್ತಿಯವರನ್ನು ಕರೆದ್ರು. ಅಲ್ಲದೇ ನನ್ನನ್ನೂ ಕೂಡ ಬರುವಂತೆ ಪ್ರೀತಿಯಿಂದ ಕೇಳಿಕೊಂಡರು. ನಾನೇನು ಕೇಕ್ ತಗೆದುಕೊಂಡು ಹೋಗಿರಲಿಲ್ಲ. ಅಲ್ಲದೇ ನನಗೂ ಅದಕ್ಕೂ ಸಂಬಂಧವಿಲ್ಲ. ಬನ್ನಿ ಅಂತ ಕರೆದಾಗ ಹೋದೆ ಅಷ್ಟೆ ಅಂತ ಅವರು ಹೇಳಿದ್ರು.

    ಏನಿದು ಘಟನೆ?:
    ಜುಲೈ 17ರಂದು ವಿಧಾನಸಭೆಯ ಮೊಗಸಾಲೆಯಲ್ಲಿಯೇ ಕಾರ್ಯದರ್ಶಿ ಮೂರ್ತಿಯವರು ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದರು. ಈ ಪಾರ್ಟಿಯಲ್ಲಿ ಚಿತ್ರ ನಟಿ ಕಮ್ ಮೇಲ್ಮನೆ ಸದಸ್ಯೆ ತಾರಾ ಸೇರಿ ಹಲವರು ಭಾಗಿಯಾಗಿದ್ದರು. ಪಾರ್ಟಿಯಲ್ಲಿದ್ದ ಅರ್ಧದಷ್ಟು ಮಂದಿ ವಿಧಾನಸೌಧ ಸಿಬ್ಬಂದಿಯೇ ಅಲ್ಲ. ಪಾಸ್ ಇಲ್ಲದೇ ಇವರೆಲ್ಲ ನಿಬರ್ಂಧಿತ ಸ್ಥಳಕ್ಕೆ ಹೇಗೆ ಪ್ರವೇಶ ಪಡೆದ್ರು? ವಿಧಾನಸಭೆ ಸಭಾಂಗಣದ ಮೊಗಸಾಲೆಯಲ್ಲಿ ಬರ್ತ್ ಡೇ ಪಾರ್ಟಿ ಮಾಡಬಹುದಾ? ನಿರ್ಬಂಧಿತ ಸ್ಥಳದಲ್ಲಿ ಬರ್ತ್ ಡೇ ಪಾರ್ಟಿಗೆ ಅನುಮತಿ ಕೊಟ್ಟಿದ್ದು ಯಾರು? ಎಲ್ಲರಿಗೂ ಇದೇ ರೀತಿ ಪಾರ್ಟಿಗೆ ಅವಕಾಶ ಕೊಡುತ್ತೀರಾ? ಅನ್ನೋ ಹಲವಾರು ಪ್ರಶ್ನೆಗಳು ಇದೀಗ ಜನಸಾಮಾನ್ಯರಲ್ಲಿ ಮೂಡಿತ್ತು.