Tag: ಕಾವೇರಿ ನದಿ

  • ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

    ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

    ಕಾವೇರಿ ನೀರಿಗಾಗಿ ಸದಾ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಈಗ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದೆ. ಕರ್ನಾಟಕ ಸರ್ಕಾರ ಕುಡಿಯುವ ನೀರಿಗಾಗಿ ರಾಮನಗರದ ಮೇಕೆದಾಟು ಎಂಬಲ್ಲಿ ಕಿರು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗುತ್ತಿರುವುದು ತಮಿಳುನಾಡು ಸರ್ಕಾರದ ಪಿತ್ತ ನೆತ್ತಿಗೇರಿದೆ. ಸದಾ ಕಾವೇರಿ ವಿವಾದವನ್ನೇ ಬಂಡವಾಳ ಮಾಡಿಕೊಂಡು ತನ್ನ ಬೇಳೆ ಬೇಯಿಸಿಕೊಳ್ಳುವ ತಮಿಳುನಾಡು ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದು ಮಧ್ಯಪ್ರವೇಶಿಸುವಂತೆ ಮನವಿ ಮಾಡಿದೆ.

    ನಮ್ಮ ಕಡೆಯಿಂದ ಯಾವುದೇ ತಪ್ಪಿಲ್ಲದಿದ್ದರೂ ನಮ್ಮ ನೀರಿಗೆ ಕಲ್ಲು ಹಾಕುತ್ತಿರುವ ತಮಿಳುನಾಡು ವಿರುದ್ಧ ರಾಜ್ಯದ ಕನ್ನಡ ಪರ ಸಂಘಟನೆಗಳು, ರಾಜಕೀಯ ಪಕ್ಷಗಳು ರಾಜ್ಯದಲ್ಲೂ ಪ್ರತಿಭಟನೆ ನಡೆದಿದೆ. ಹೀಗಾಗಿ ಮೇಕೆದಾಟು ಯೋಜನೆ ಅಂದರೆ ಏನು? ಎರಡು ರಾಜ್ಯಗಳಲ್ಲಿ ಪ್ರತಿಭಟನೆ ಯಾಕೆ ನಡೆಯುತ್ತದೆ? ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

    ಮೇಕೆದಾಟು ಏನು?
    ಮೇಕೆದಾಟು ಎಂದರೇನು ಎಂದು ಕೇಳಿದರೆ ಸಿಗುವ ಉತ್ತರ ಪಿಕ್ನಿಕ್ ಸ್ಪಾಟ್. ಬೆಂಗಳೂರಿನಿಂದ 90 ಕಿ.ಮೀ ದೂರದ ರಾಮನಗರ ಜಿಲ್ಲೆಯಲ್ಲಿರುವ ಸ್ಥಳವೇ ಮೇಕೆದಾಟು. ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮ ಸ್ಥಳದಿಂದ 4 ಕಿಲೋಮೀಟರ್ ದೂರದಲ್ಲಿದೆ ಮೇಕೆದಾಟು. ಇಲ್ಲಿ ಕಾವೇರಿ ನದಿ ಮೇಕೆ ಹಾರಿ ದಾಟುವಷ್ಟು ಕಿರು ಜಾಗದಲ್ಲಿ ಹರಿದು ಆಳವಾದ ಕಂದಕಕ್ಕೆ ಧುಮುಕುತ್ತದೆ. ಇಲ್ಲಿಗೆ ಮೇಕೆದಾಟು ಎಂಬ ಹೆಸರು ಬರಲು ಒಂದು ಕಥೆಯೇ ಇದೆ. ನೂರಾರು ವರ್ಷಗಳ ಹಿಂದೆ ಇಲ್ಲಿ ಕುರಿಗಾಹಿಯೊಬ್ಬ ತನ್ನ ಮೇಕೆಗಳನ್ನು ಮೇಯಿಸುತ್ತ ಇದ್ದನಂತೆ. ನೂರಾರು ಮೇಕೆಗಳು ಒಂದೆಡೆ ಮೇಯುತ್ತಾ ಇದ್ದರೆ ಒಂದು ಮೇಕೆ ಮಾತ್ರ ಒಬ್ಬಂಟಿಯಾಗಿ ಓಡಾಡುತ್ತ ಸೊಪ್ಪು ತಿನ್ನುತ್ತಾ ಇತ್ತು. ಈ ಸಮಯದಲ್ಲಿ ಬೇಟೆಯಾಡಲು ಬಂದಿದ್ದ ಒಂದು ಹುಲಿ ಒಬ್ಬಂಟಿಯಾಗಿ ಸೊಪ್ಪು ತಿನ್ನುತ್ತಿದ್ದ ಮೇಕೆಯನ್ನು ನೋಡಿ ಅದರ ಮೇಲೆ ದಾಳಿ ನಡೆಸಿತು. ಆದರೆ ಹುಲಿಯಿಂದ ತಪ್ಪಿಸಿಕೊಂಡ ಮೇಕೆ ನದಿಯ ತೀರದಲ್ಲೇ ಪ್ರಾಣ ಉಳಿಸಲು ಓಡತೊಡಗಿತು. ಮುಂದೆ ಸಾಗಿದಂತೆ ದಾರಿ ಕಾಣದ ಮೇಕೆ ಒಂದೇ ನೆಗೆತಕ್ಕೆ ಒಂದು ಬಂಡೆಯಿಂದ ಮತ್ತೊಂದು ಬಂಡೆಗೆ ನೆಗೆದು ಪ್ರಾಣ ಉಳಿಸಿಕೊಂಡಿತು. ಆದರೆ ಹುಲಿ ಮಾತ್ರ ನದಿಯನ್ನು ಹಾರುವಂತಹ ಸಾಹಸಕ್ಕೆ ಕೈ ಹಾಕಲಿಲ್ಲ. ಮೇಕೆಯನ್ನು ಹಿಂಬಾಲಿಸುವ ಕಾರ್ಯವನ್ನು ನಿಲ್ಲಿಸಿದ ಹುಲಿ ಅಲ್ಲಿಂದ ಹಸಿದ ಹೊಟ್ಟೆಯಲ್ಲೇ ಹೊರಟಿತು ಎಂಬುದು ಪೂರ್ವಜರು ಹೇಳುವ ಕಥೆ. ಹೀಗಾಗಿ ಈ ಸ್ಥಳ ಮೇಕೆದಾಟು ಎಂಬ ಹೆಸರು ಬಂದು ಪ್ರಸಿದ್ಧಿ ಪಡೆದುಕೊಂಡಿತು.

    ಏನಿದು ಮೇಕೆದಾಟು ಯೋಜನೆ?
    ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುವ ತಮಿಳುನಾಡು ಈಗ ಮತ್ತೆ ಅಣೆಕಟ್ಟು ನಿರ್ಮಾಣ ಮಾಡುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

    ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಹೊರಟ್ಟಿದ್ದು ಯಾಕೆ?
    ಕಾವೇರಿ ನ್ಯಾಯಾಧೀಕರಣ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರತಿವರ್ಷ ಕರ್ನಾಟಕ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶ ನೀಡಿದೆ. ಈ ನೀರಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಅಂದಾಜಿನ ಪ್ರಕಾರ 80, 90 ಟಿಎಂಸಿ ನೀರು ತಮಿಳುನಾಡಿಗೆ ಸೇರುತ್ತದೆ. ಹೀಗೆ ರಾಜ್ಯದಿಂದ ಹರಿದು ಹೋಗುತ್ತಿರುವ ಈ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸಲು ಹೊರಟಿದೆ.

    ತಮಿಳುನಾಡು ವಿರೋಧ ಯಾಕೆ?
    ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬೇಕೆಂಬ ಪ್ರಸ್ತಾಪ 1952ರಲ್ಲೇ ಚಿಗುರೊಡೆದಿತ್ತು. ಆದರೆ ಕೆಲ ಕಾರಣಗಳಿಂದ ಈ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. 1996ರಲ್ಲಿ ಮೇಕೆದಾಟುವಿನಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿ ಕೇಂದ್ರ ವಿದ್ಯುತ್ ಪ್ರಾಧಿಕಾರಕ್ಕೆ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದೇ ಸಮಯದಲ್ಲಿ ಕಾವೇರಿ ವಿವಾದ ನ್ಯಾಯಾಧಿಕರಣ ಮುಂದೆ ಇದ್ದ ಕಾರಣ ಮೊದಲು ಈ ವಿವಾದವನ್ನು ಬಗೆಹರಿಸಿಕೊಳ್ಳಿ, ನಂತರ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ಹೇಳುವ ಮೂಲಕ ವಿದ್ಯುತ್ ಪ್ರಾಧಿಕಾರ ಉಪಾಯದಿಂದ ಜಾರಿಕೊಂಡಿತ್ತು. 2007ರಲ್ಲಿ ನ್ಯಾಯಾಧಿಕರಣ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ ಮತ್ತೆ ಮೇಕೆದಾಟು ಯೋಜನೆ ಗರಿಗೆದರತೊಡಗಿತು. ಅಂತಿಮವಾಗಿ 2013ರಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ನಿರ್ಮಿಸಲು ಮಹತ್ವದ ಹೆಜ್ಜೆ ಇಟ್ಟಿತು. ರಾಜ್ಯ ಸರ್ಕಾರ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದ್ದಂತೆ ಆಗಿನ ತಮಿಳುನಾಡು ಸಿಎಂ ಜಯಲಲಿತಾ ಕೇಂದ್ರದ ಮೊರೆ ಹೋಗಿ, ಸುಪ್ರೀಂನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಈಗ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗುತ್ತಿದ್ದು ತಮಿಳುನಾಡು ಸಿಎಂ ಪಳನಿಸ್ವಾಮಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ

    ತಮಿಳುನಾಡು ವಾದ ಏನು?
    ಕಾವೇರಿ ನ್ಯಾಯಾಧಿಕರಣದಲ್ಲಿ ನೀರು ಹಂಚಿಕೆ ವಿಚಾರಣೆ ನಡೆಯುವ ವೇಳೆ ಮೇಕೆದಾಟು ವಿಚಾರ ಪ್ರಸ್ತಾಪವಾಗಿಲ್ಲ. ಆದರೆ ಸರ್ಕಾರ ಈಗ ಯೋಜನೆ ಮುಂದಾಗಿದ್ದು ನ್ಯಾಯಮಂಡಳಿಯ ತೀರ್ಪನ್ನು ಉಲ್ಲಂಘಿಸಿದೆ. ತಮಿಳುನಾಡಿಗೆ ನೈಸರ್ಗಿಕವಾಗಿಯೇ ಮಳೆ ಮೂಲಕ ಹೆಚ್ಚುವರಿ ನೀರು ಬರುತ್ತದೆ. ಅದರೆ ಈ ಅಣೆಕಟ್ಟು ನಿರ್ಮಿಸುವ ಮೂಲಕ ಕರ್ನಾಟಕ ತಮಿಳುನಾಡಿನ ರೈತರ ಕೃಷಿಗೆ ಅಡ್ಡಗಾಲು ಹಾಕುತ್ತಿದೆ.

    ಕರ್ನಾಟಕದ ವಾದ ಏನು?
    ಪ್ರತಿವರ್ಷ 177.25 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವುದು ನಮ್ಮ ಹೊಣೆ. ಒಂದು ವೇಳೆ ನಾವು ಅಷ್ಟು ಪ್ರಮಾಣದ ನೀರನ್ನು ಬಿಡದಿದ್ದರೆ ತಮಿಳುನಾಡು ಪ್ರಶ್ನಿಸುವುದು ಸರಿ. 2018 ರಲ್ಲಿ ಭಾರೀ ಮಳೆಯಾದ ಪರಿಣಾಮ ಈಗಾಗಲೇ ಕರ್ನಾಟಕದಿಂದ 310 ಟಿಎಂಸಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ತಮಿಳುನಾಡು ಹರಿದುಹೋಗಿದೆ. ಮೆಟ್ಟೂರಿನಲ್ಲಿ ಅಧಿಕ ನೀರಿನ ಸಂಗ್ರಹ ಸಾಮರ್ಥ್ಯ ಇಲ್ಲದೇ ಇರುವ ಕಾರಣ 100 ಟಿಎಂಸಿಗೂ ಹೆಚ್ಚು ನೀರು ಸಮುದ್ರಕ್ಕೆ ಹರಿದು ಹೋಗಿದೆ. ಮೇಕೆದಾಟಿನಲ್ಲಿ ಅಣೆಕಟ್ಟೆ ಇದ್ದಿದ್ದರೆ ಕನಿಷ್ಠ 60 ಟಿಎಂಸಿ ಹಿಡಿದಿಟ್ಟುಕೊಳ್ಳಬಹುದಾಗಿತ್ತು. ಒಂದು ಡ್ಯಾಂ ಇದ್ದಿದ್ದರೆ ತಮಿಳುನಾಡಿಗೆ ತಿಂಗಳವಾರು ಕೋಟಾದಂತೆ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೂ ಅನುಕೂಲವಾಗುತ್ತಿತ್ತು. ನಾವು ಕುಡಿಯುವ ನೀರಿಗಾಗಿ ಡ್ಯಾಂ ಕಟ್ಟುತ್ತೇವೆಯೇ ಹೊರತು ವಿದ್ಯುತ್ ಉತ್ಪಾದನೆಯೇ ನಮ್ಮ ಮೂಲ ಉದ್ದೇಶ ಅಲ್ಲ. ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕೆಂದು ಎಂದು ಅಂತಾರಾಷ್ಟ್ರೀಯ ಜಲ ನೀತಿಯೇ ಹೇಳಿದೆ. ಹೀಗಾಗಿ ನಾವು ಎತ್ತಿಕೊಂಡ ಮೇಕೆದಾಟು ಯೋಜನೆ ನ್ಯಾಯ ಸಮ್ಮತವಾಗಿದೆ.

    ಕರ್ನಾಟಕಕ್ಕೆ ಈ ಅಣೆಕಟ್ಟು ಅಗತ್ಯ ಯಾಕೆ?
    ಬೆಂಗಳೂರು ನಗರಕ್ಕೆ ನೀರು ಬರುವುದು ಕೆಆರ್‌ಎಸ್ ಡ್ಯಾಂನಿಂದ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದರೆ ಬೆಂಗಳೂರು ಜನತೆಗೆ ನೀರು ಭಾಗ್ಯ. ಬೆಂಗಳೂರು ನಗರಕ್ಕೆ ಪ್ರತಿದಿನ 1400 ದಶಲಕ್ಷ ಲೀಟರ್ ಅಗತ್ಯವಿದೆ. ಬೇಸಿಗೆ ಸಮಯದಲ್ಲಿ ನೀರಿನ ಬೇಡಿಕೆ ಶೇ.15ರಷ್ಟು ಹೆಚ್ಚಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಿಂದ 2012ರಲ್ಲಿ ನೀರು ಪಂಪಿಂಗ್ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಬೆಂಗಳೂರಿನ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಇಲ್ಲಿ ಸಂಗ್ರಹವಾದ ಡ್ಯಾಂ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ ಬಳಸುವ ಉದ್ದೇಶ ರಾಜ್ಯ ಸರ್ಕಾರದ್ದು.

    ಎಷ್ಟು ಡ್ಯಾಂ ನಿರ್ಮಾಣವಾಗಲಿದೆ?
    ಆರಂಭಿಕ ಯೋಜನೆ ಪ್ರಕಾರ 4,500 ಎಕ್ರೆ ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮುಳುಗಡೆಯಾಗುವ ಪ್ರದೇಶವನ್ನು ತಪ್ಪಿಸಲು 20 ಟಿಎಂಸಿ ಸಾಮರ್ಥ್ಯದ  2, 3 ಅಣೆಕಟ್ಟು ಕಟ್ಟುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಆದರೆ ಎಷ್ಟು ಡ್ಯಾಂ ನಿರ್ಮಾಣ ಮಾಡಬೇಕು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಸ್ಥಳ ಪರಿಶೀಲನೆಯಾಗಿದ್ದು, ಸಮಗ್ರ ಯೋಜನಾ ವರದಿ ಸರ್ಕಾರದ ಕೈ ಸೇರಿದ ಬಳಿಕ ಎಷ್ಟು ಡ್ಯಾಂ ನಿರ್ಮಿಸಬೇಕು ಎನ್ನುವುದು ಅಂತಿಮವಾಗಲಿದೆ.

    ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
    ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು(ನ್ಯಾಯಾಲಯಗಳು ನೀಡುವ ಅಂತಿಮ ಆದೇಶಕ್ಕೆ ತೀರ್ಪು ಎಂದು ಕರೆದರೆ ನ್ಯಾಯಾಧಿಕರಣಗಳು ನೀಡುವ ಅಂತಿಮ ಆದೇಶಕ್ಕೆ ಐತೀರ್ಪು(Award) ಎಂದು ಕರೆಯಲಾಗುತ್ತದೆ) ನೀಡಿತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10, ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು.

    ಕಾವೇರಿಯಲ್ಲಿ ಯಾರಿಗೆ ಎಷ್ಟು ನೀರು?
    ಕಾವೇರಿ ನ್ಯಾಯಾಧಿಕರಣ ನೀಡಿದ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ 2018ರ ಫೆಬ್ರವರಿ 15 ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಈ ತೀರ್ಪಿನ ಅನ್ವಯ ಕರ್ನಾಟಕಕ್ಕೆ 284 ಟಿಎಂಸಿ, ತಮಿಳುನಾಡು 177.25 ಟಿಎಂಸಿ, ಕೇರಳ 30 ಟಿಎಂಸಿ, ಪುದುಚೇರಿಗೆ 10 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ.

    ಯಾವ ತಿಂಗಳು ಎಷ್ಟು ಟಿಎಂಸಿ ನೀರು ಬಿಡಬೇಕು?
    ಜೂನ್ 9.19, ಜುಲೈ 31.24, ಆಗಸ್ಟ್ 45.95, ಸೆಪ್ಟೆಂಬರ್ 36.76, ಅಕ್ಟೋಬರ್ 20.22, ನವೆಂಬರ್ 13.78, ಡಿಸೆಂಬರ್ 7.35, ಜನವರಿ 2.76 ಟಿಎಂಸಿ ಬಿಡಬೇಕು. ಫೆಬ್ರವರಿ, ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಡಬೇಕು.

    ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಕರ್ನಾಟಕ ನಿರ್ಮಿಸಿರುವ ಅಣೆಕಟ್ಟುಗಳು
    ಹಾರಂಗಿ(ಕೊಡಗು), ಕಬಿನಿ(ಮೈಸೂರು), ಹೇಮಾವತಿ(ಹಾಸನ), ಕೆಆರ್‌ಎಸ್(ಮಂಡ್ಯ)ದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದೆ.

    ತಮಿಳುನಾಡಿಗೆ ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
    ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಾರೆ. ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೂಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನನವರು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.

    ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು Cubic feet per Second  ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ

    – ಅಶ್ವಥ್ ಸಂಪಾಜೆ/ ಹನುಮಂತು ಪಡುವಣಗೆರೆ

  • ರಂಗನತಿಟ್ಟು ಪಕ್ಷಿಧಾಮದಲ್ಲಿ ಮತ್ತೆ ಬೋಟಿಂಗ್ ಸ್ಥಗಿತ!

    ರಂಗನತಿಟ್ಟು ಪಕ್ಷಿಧಾಮದಲ್ಲಿ ಮತ್ತೆ ಬೋಟಿಂಗ್ ಸ್ಥಗಿತ!

    ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೊರ ಹರಿವು 26 ಸಾವಿರ ಕ್ಯೂಸೆಕ್‍ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.

    ಕಳೆದ ಹಲವು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಪ್ರವಾಹದ ಭೀತಿ ಉಂಟಾಗಿದ್ದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿ, ಬೋಟಿಂಗ್ ಸ್ಥಗಿತಗೊಳಿಸಲಾಗಿತ್ತು. ಆದರೆ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಎರಡು ದಿನಗಳ ಹಿಂದಷ್ಟೆ ಬೋಟಿಂಗ್ ಪುನರಾರಂಭ ಮಾಡಲಾಗಿತ್ತು.

    ಇದೀಗ ಕಾವೇರಿ ನದಿಯಲ್ಲಿ ಮತ್ತೆ ಹೊರಹರಿವು 26 ಸಾವಿರ ಕ್ಯೂಸೆಕ್‍ಗೆ ಹೆಚ್ಚಳವಾಗಿರುವುದರಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‍ಗೆ ಮಾತ್ರ ನಿಷೇಧ ಹೇರಲಾಗಿದೆ. ಹೀಗಾಗಿ ಮುಂಜಾಗ್ರತವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಆದರೆ ಎಂದಿನಂತೆ ಪಕ್ಷಿಧಾಮ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ

    ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ

    ಮಂಡ್ಯ: ಜಿಲ್ಲೆಯಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು,ಕೆಆರ್‌ಎಸ್ ಜಲಾಶಯದಿಂದ ಹೊರ ಬಿಡಲಾಗುತ್ತಿದ್ದ ಹೆಚ್ಚುವರಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

    ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಾವೇರಿ ನದಿ ಸೇರಿದಂತೆ ಹಲವು ನದಿಗಳು ಮೈದುಂಬಿ ಹರಿಯುತ್ತಿದ್ದವು. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್‍ಗೂ ಹೆಚ್ಚಿನ ನೀರು ಹರಿದು ಬರುತ್ತಿದ್ದರಿಂದ ಜಲಾಶಯ ಸಂಪೂರ್ಣವಾಗಿ ತುಂಬಿತ್ತು. ಇದರಿಂದಾಗಿ ಅಷ್ಟೇ ಪ್ರಮಾಣದ ನೀರನ್ನು  ಕಾವೇರಿ ನದಿಗೆ ಬಿಡಲಾಗಿತ್ತು. ಅಧಿಕ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ್ದರಿಂದ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಅಧಿಕಾರಿಗಳು ಸಹ ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ ನೀರಿನ ಮಟ್ಟವನ್ನು 121 ಅಡಿಗೆ ಕಾಯ್ದುಕೊಂಡಿದ್ದರು.

    ಸದ್ಯ ಜಿಲ್ಲೆಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದರಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಭಾರೀ ಇಳಿಕೆ ಕಂಡಿದೆ. ಜಲಾಶಯಕ್ಕೆ ಶುಕ್ರವಾರದಿಂದ 21,170 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಇದಕ್ಕೆ ಸಮಾಂತರವಾಗಿ 21,202 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆಮಾಡಲಾಗುತ್ತಿದೆ.

    ಮಳೆ ಕಡಿಮೆಯಾಗಿದ್ದರಿಂದ ಜಲಾಶಯವನ್ನು ಮತ್ತೆ ಸಂಪೂರ್ಣವಾಗಿ ಭರ್ತಿ ಮಾಡಲಾಗಿದ್ದು, ಶನಿವಾರದ ಮಾಹಿತಿಯಂತೆ ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದರೆ, ಸಂಗ್ರಹವಾದ ನೀರಿನ ಮಟ್ಟ 124.70 ಅಡಿಗಳಷ್ಟಾಗಿದೆ ಎಂದು ತಿಳಿದುಬಂದಿದೆ.

    ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾವೇರಿ ಪ್ರವಾಹ ವೀಕ್ಷಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ತಂದೆ- ಕೊಚ್ಚಿ ಹೋದ ಮಗ

    ಕಾವೇರಿ ಪ್ರವಾಹ ವೀಕ್ಷಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ತಂದೆ- ಕೊಚ್ಚಿ ಹೋದ ಮಗ

    ಚೆನ್ನೈ: ಕಾವೇರಿ ನದಿಯ ಪ್ರವಾಹ ವೀಕ್ಷಣೆಗೆ ಬಂದು, ಸೆಲ್ಫಿ ಕ್ರೇಜ್‍ನಲ್ಲಿ ಮುಳುಗಿದ್ದ ತಂದೆಯ ಕೈತಪ್ಪಿ ಮಗ ನೀರಿನಲ್ಲಿ ಕೊಚ್ಚಿ ಹೋದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಕರೂರ್‍ನ ನಿವಾಸಿ ಬಾಬು ಅವರ ಪುತ್ರ ಧನ್ವಂತ್ (4) ಮೃತಪಟ್ಟ ಬಾಲಕ. ಧನ್ವಂತ್ ತನ್ನ ತಂದೆ ಬಾಬು ಜೊತೆಗೆ ಭಾರೀ ಪ್ರಮಾಣದಲ್ಲಿ ತುಂಬಿ ಹರಿಯುತ್ತಿದ್ದ ನದಿಯನ್ನು ವೀಕ್ಷಿಸಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.

    ನಡೆದದ್ದು ಏನು?
    ಮಂಗಳವಾರ ಬೆಳಗ್ಗೆ ಧನ್ವಂತ್‍ನನ್ನು ಕರೆದುಕೊಂಡು ಬಾಬು ಕಾವೇರಿ ನದಿ ಪಾತ್ರದ ಪ್ರವಾಹವನ್ನು ವೀಕ್ಷಿಸಲು ವಂಗಲ್ ಮತ್ತು ಮೋಹನೂರ್ ಸೇತುವೆಗೆ ಹೋಗಿದ್ದರು. ಈ ವೇಳೆಯ ಸೇತುವೆಯ 24ನೇ ಕಂಬದ ಬಳಿ ನಿಂತ ಬಾಬು ಧನ್ವಂತ್‍ನನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಆಗ ಧನ್ವಂತ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಭಾರೀ ರಭಸವಾಗಿ ಹರಿಯುತ್ತಿದ್ದ ನೀರಿಗೆ ಬಾಲಕ ತೇಲಿಹೋಗಿದ್ದಾನೆ. ತಂದೆ ಎಷ್ಟೇ ಪ್ರಯತ್ನಿಸಿದರೂ ಮಗನನ್ನು ಉಳಿಸಿಕೊಳ್ಳಲು ಸಾಧ್ಯವಿರಲಿಲ್ಲ.

    ಘಟನಾ ಸ್ಥಳದಿಂದ ಓಡಿದ ಬಾಬು ಸಮೀಪದ ಪೊಲೀಸ್ ಠಾಣೆಗೆ ತೆರಳಿ, ನಡೆದ ಅವಘಡದ ಕುರಿತು ವಿವರಿಸಿದ್ದ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ 15 ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯಚರಣೆ ಮಾಡಿದರೂ ಧನ್ವಂತ್ ಪತ್ತೆಯಾಗಲಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಳುಗಡೆ ಭೀತಿಯಲ್ಲಿ ರಂಗನತಿಟ್ಟು, ಕೆಆರ್ ಎಸ್ ಉದ್ಯಾನವನಕ್ಕೆ ನಿಷೇಧ

    ಮುಳುಗಡೆ ಭೀತಿಯಲ್ಲಿ ರಂಗನತಿಟ್ಟು, ಕೆಆರ್ ಎಸ್ ಉದ್ಯಾನವನಕ್ಕೆ ನಿಷೇಧ

    – ವೈಮಾನಿಕ ಕ್ಯಾಮೆರಾದಲ್ಲಿ ಜೀವನದಿ ಕಾವೇರಿ ನದಿ ಸೆರೆ

    ಮಂಡ್ಯ: ಅನೇಕ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿದೆ. ಮತ್ತೊಂದೆಡೆ ಪ್ರವಾಹದ ಭೀತಿಯಿಂದ ಜನರು ಭಯಗೊಂಡಿದ್ದಾರೆ.

    ಜಿಲ್ಲೆಯ ಕನ್ನಂಬಾಡಿ ಅಣೆಕಟ್ಟಿನಿಂದ ಬೃಹತ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗಿ ಬೃಂದಾವನ ಬೋಟಿಂಗ್ ಸ್ಥಳದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು, ರಂಗನತಿಟ್ಟು ಪಕ್ಷಿಧಾಮ ಮುಳುಗಡೆಯಾಗಿದೆ.

    ವೈಮಾನಿಕ ಕ್ಯಾಮರಾದ ದೃಶ್ಯ

    ಮಳೆಯಿಂದ ಭರ್ತಿಯಾಗಿದ್ದ ಕೆಆರ್ ಎಸ್ ಡ್ಯಾಂನಿಂದ ಕಳೆದ ಎರಡು ದಿನಗಳಿಂದ ಅಧಿಕ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ. ಒಟ್ಟು 56,000 ಕ್ಯೂಸೆಕ್ ನೀರು ಕೆಆರ್‍ಎಸ್ ಜಲಾಶಯದಿಂದ ಹೊರ ಹೋಗುತ್ತಿದೆ. ಆದ್ದರಿಂದ ಜಲಾಶಯದ ಸುತ್ತಮುತ್ತಲಿನ ಪ್ರದೇಶಗಳು ಮುಳುಗುವ ಹಂತಕ್ಕೆ ಬಂದಿದ್ದು, ಇದರಿಂದ ಬೃಂದಾವನ ಬೋಟಿಂಗ್ ಸ್ಥಳದಲ್ಲಿ ಪ್ರವಾಹದ ವಾತಾವರಣ ಸೃಷ್ಟಿಯಾಗಿದೆ.

    ಭಾರೀ ಪ್ರಮಾಣದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಉದ್ಯಾನವನಕ್ಕೆ ಸಾರ್ವಜನಿಕರಿಗೆ ನಿಷೇಧವನ್ನು ಮಾಡಲಾಗಿದೆ. ನದಿಯಲ್ಲಿನ ನೀರಿನ ಪ್ರಮಾಣ ಹೆಚ್ಚಾದ್ದರಿಂದ ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮ ಮುಳುಗಡೆ ಭೀತಿಯಲ್ಲಿದೆ. ಆದ್ದರಿಂದ ಪಕ್ಷಿಧಾಮಕ್ಕೆ ಡಿಸಿಎಫ್ ಸಿದ್ದರಾಮಪ್ಪ ಭೇಟಿ ನೀಡಿದ್ದು, ಪ್ರವಾಸಿಗರ ಸುರಕ್ಷತಾ ಕ್ರಮಗಳ ಬಗೆಗೆ ಪರಿಶೀಲನೆ ನಡೆಸಿದ್ದಾರೆ.

    ವೈಮಾನಿಕ ಕ್ಯಾಮರಾದ ದೃಶ್ಯ

    ಕನ್ನಡ ನಾಡಿನ ಜೀವನದಿ ಕಾವೇರಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಬ್ರಿಟಿಷರ ಕಾಲದ ವೆಲ್ಲೆಸ್ಲಿ ಸೇತುವೆ ಮೂಲಕ ಹರಿಯುತ್ತಿರುವ ದೃಶ್ಯ ವೈಮಾನಿಕ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈದುಂಬಿ ಹರಿಯುತ್ತಿರುವ ಕಾವೇರಿಯನ್ನು ನೋಡಲು ಜನಸಾಗರವೇ ಸೇರಿದೆ.

  • ಸೆಲ್ಫಿ ತೆಗೆಯಲು ಹೋಗಿ ಕಾವೇರಿ ನದಿಗೆ ಬಿದ್ದು ಟೆಕ್ಕಿಗಳಿಬ್ಬರ ದುರ್ಮರಣ

    ಸೆಲ್ಫಿ ತೆಗೆಯಲು ಹೋಗಿ ಕಾವೇರಿ ನದಿಗೆ ಬಿದ್ದು ಟೆಕ್ಕಿಗಳಿಬ್ಬರ ದುರ್ಮರಣ

    ರಾಮನಗರ: ಸೆಲ್ಫಿ ತೆಗೆಯಲು ಹೋಗಿ ಎಂಜಿನಿಯರ್ ಗಳಿಬ್ಬರು ಕಾಲು ಜಾರಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟಿನಲ್ಲಿ ನಡೆದಿದೆ.

    ಮೂಲತಃ ಬೀದರ್ ಜಿಲ್ಲೆಯವರಾದ ಭವಾನಿ ಶಂಕರ್(29) ಮತ್ತು ಷಮೀರ್ ರೆಹಮಾನ್ (29) ಮೃತ ದುರ್ದೈವಿಗಳು. ಬೆಂಗಳೂರಿನ ಸೋಲದೇವನಹಳ್ಳಿಯ ಖಾಸಗಿ ಕಂಪನಿಯಲ್ಲಿ ಮೃತರು ಎಂಜಿನಿಯರ್ ಗಳಾಗಿ ಕೆಲಸ ಮಾಡುತ್ತಿದ್ದರು.

    ಭಾನುವಾರ ನಾಲ್ವರು ಸ್ನೇಹಿತರು ಪ್ರವಾಸಕ್ಕೆಂದು ಕನಕಪುರ ತಾಲೂಕಿನ ಮೇಕೆದಾಟಿಗೆ ತೆರಳಿದ್ದರು. ಮೇಕೆದಾಟಿನಲ್ಲಿನ ಬಂಡೆಯ ಮೇಲೆ ನಿಂತು ಕಾವೇರಿ ನೀರು ಹರಿಯುವುದರ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಕಾಲುಜಾರಿ ಇಬ್ಬರು ಕೂಡಾ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

    ಕೆಆರ್ ಎಸ್ ಜಲಾಶಯದಿಂದ ನೀರನ್ನು ಹರಿಬಿಟ್ಟಿದ್ದು, ನೀರಿನ ಹರಿವು ಹೆಚ್ಚಿದ ಹಿನ್ನೆಲೆಯಲ್ಲಿ ಇಬ್ಬರು ಕೂಡಾ ಕೊಚ್ಚಿ ಹೋಗಿದ್ದಾರೆ. ಸಾತನೂರು ಪೊಲೀಸರಿಂದ ಶವಶೋಧ ಕಾರ್ಯ ನಡೆಸಿದ್ದಾರೆ. ಆದರೆ ಇದೂವರೆಗೆ ಮೃತದೇಹಗಳು ಸಿಕ್ಕಿಲ್ಲ. ನೀರಿನ ಹರಿವು ಹೆಚ್ಚಿರುವ ಕಾರಣ ತಮಿಳುನಾಡಿನ ಗಡಿಭಾಗಕ್ಕೆ ಮೃತದೇಹಗಳು ಕೊಚ್ಚಿ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

    ಈ ಘಟನೆ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

  • ದೇವಸ್ಥಾನ ಸುತ್ತಲೂ ಆವರಿಸಿದ ನೀರು: ಕ್ಷೇತ್ರದಿಂದ ಹೊರ ಬರಲ್ಲ ಅಂತಾ ಪಟ್ಟು ಹಿಡಿದ ಸ್ವಾಮೀಜಿ

    ದೇವಸ್ಥಾನ ಸುತ್ತಲೂ ಆವರಿಸಿದ ನೀರು: ಕ್ಷೇತ್ರದಿಂದ ಹೊರ ಬರಲ್ಲ ಅಂತಾ ಪಟ್ಟು ಹಿಡಿದ ಸ್ವಾಮೀಜಿ

    ಮಂಡ್ಯ: ಕಾವೇರಿ ನದಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ದೇವಸ್ಥಾನದಿಂದ ಹೊರಬರುವಂತೆ ಜಿಲ್ಲಾಧಿಕಾರಿ ಮನವಿ ಮಾಡಿಕೊಂಡರೂ ಸ್ವಾಮೀಜಿಯೊಬ್ಬರು ಇದಕ್ಕೆ ಒಪ್ಪದೇ ಅಲ್ಲಿಯೇ ಕುಳಿತಿದ್ದಾರೆ.

    ಕಾವೇರಿ ನದಿ ಪಾತ್ರದ ಶ್ರೀರಂಗಪಟ್ಟಣದ ಗೌತಮ ಕ್ಷೇತ್ರ ದೇವಸ್ಥಾನ ಈಗಾಗಲೇ ನದಿ ಪ್ರವಾಹದಿಂದ ಅರ್ಧ ಮುಳುಗಡೆಯಾಗಿದೆ. ಮತ್ತೇ ಕೆಆರ್‌ಎಸ್‌ ಡ್ಯಾಂ ನಿಂದ 1 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ದೇವಸ್ಥಾನವೇ ಮುಳುಗಡೆ ಆಗುತ್ತದೆ. ಹೀಗಾಗಿ ಜಿಲ್ಲಾಧಿಕಾರಿ ಮಂಜುಶ್ರೀ ಸ್ಥಳಕ್ಕೆ ಭೇಟಿ ನೀಡಿ, ಸ್ವಾಮೀಜಿಗಳಿಗೆ ಕರೆ ಮಾಡಿ ದೇವಸ್ಥಾನ ಬಿಟ್ಟು ಬರುವಂತೆ ಮನವಿ ಮಾಡಿಕೊಂಡಿದ್ದಾರೆ.

    ನೀರು ಬಂದರೂ ನಮಗೆನೂ ಆಗಲ್ಲ. ನಾನು ಗೌತಮ ಕ್ಷೇತ್ರದಿಂದ ಹೊರ ಬರುವುದಿಲ್ಲ ಎಂದು ಸ್ವಾಮೀಜಿ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸ್ವಾಮೀಜಿಯ ಯೋಗಕ್ಷೇಮ ವಿಚಾರಿಸಿದ ಮಂಜುಶ್ರೀ ಅವರು, ನೀರಿನ ಮಟ್ಟ ಹೆಚ್ಚಾಗಿ ನೀವು ತೊಂದರೆಗೆ ಒಳಗಾಗುತ್ತಿದ್ದಂತೆ ತಿಳಿಸಿ, ನಾವು ನಿಮ್ಮನ್ನು ಬೋಟ್‍ನಲ್ಲಿ ಕರೆದು ತರುತ್ತೇವೆ ಎಂದು ಸಲಹೆ ನೀಡಿದ್ದಾರೆ.

    ಬಳಿಕ ಸ್ಥಳೀಯ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಯಾವುದೇ ಅವಘಡ ಸಂಭವಿಸದಂತೆ ಎಚ್ಚರವಹಿಸಿ ಎಂದು ಸೂಚಿಸಿದ್ದಾರೆ.

  • ದಶಕದ ಬಳಿಕ ಜುಲೈನಲ್ಲಿ ಕೆಆರ್ ಎಸ್ ಭರ್ತಿ

    ದಶಕದ ಬಳಿಕ ಜುಲೈನಲ್ಲಿ ಕೆಆರ್ ಎಸ್ ಭರ್ತಿ

    ಮಂಡ್ಯ: ದಶಕಗಳ ಬಳಿಕ ಇದೀಗ ಅವಧಿಗೂ ಮುನ್ನವೇ ಕೆಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಕನ್ನಡ ನಾಡಿನ ಜೀವನದಿ ಕಾವೇರಿ ಭೋರ್ಗರೆದು ಹರಿಯುತ್ತಿದ್ದಾಳೆ. ಬತ್ತಿ ಹೋಗಿದ್ದ ಕಾವೇರಿ ಕೊಳ್ಳದ ಭೂಮಿಯೀಗ ಹಸಿರಿನಿಂದ ಕಂಗೊಳಿಸುತ್ತಿದೆ.

    ಕೆಲ ವರ್ಷಗಳಿಂದ ಬರಿದಾಗಿದ್ದ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಮಳೆ ಬಂದು ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಅವಧಿಗೂ ಮುನ್ನವೇ ಕೆಆರ್‍ಎಸ್ ಭರ್ತಿಯಾಗಿರೋದ್ರಿಂದ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ.

    ವಾಡಿಕೆಯಂತೆ ಆಗಸ್ಟ್ ನಲ್ಲಿ ಕೆಆರ್ ಎಸ್ ತುಂಬುವುದು. ಆದರೆ ಈ ಬಾರಿ ಒಂದು ತಿಂಗಳ ಮುಂಚಿತವಾಗಿ ಅಂದರೆ ಜುಲೈ ತಿಂಗಳಲ್ಲಿಯೇ ಅಣೆಕಟ್ಟೆ ಭರ್ತಿಯಾಗಿದೆ. ಮೂರು ವರ್ಷಗಳ ಹಿಂದೆ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿತ್ತು. 2014ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಇದೀಗ ಮತ್ತೆ ಅಣೆಕಟ್ಟು ಭರ್ತಿಯಾಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

    ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನದಿಗಳಿಗೆ 20 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಕೆಆರ್ ಎಸ್ ಭರ್ತಿಯಾದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಜಲಾಶಯ ವೀಕ್ಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜುಲೈ 20ರಂದು ಕೆಆರ್ ಎಸ್ ಅಣೆಕಟ್ಟುವಿಗೆ ಬಾಗಿನ ಅರ್ಪಿಸಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆದಿದೆ.

  • ಕಾವೇರಿ ನದಿಯಲ್ಲಿ ಕೊಚ್ಚಿಹೋದ ಯುವಕ: ಸಹಾಯಕ್ಕಾಗಿ ಅಂಗಲಾಚುತ್ತಿರುವ ಮತ್ತೊಬ್ಬ ಯುವಕ!

    ಕಾವೇರಿ ನದಿಯಲ್ಲಿ ಕೊಚ್ಚಿಹೋದ ಯುವಕ: ಸಹಾಯಕ್ಕಾಗಿ ಅಂಗಲಾಚುತ್ತಿರುವ ಮತ್ತೊಬ್ಬ ಯುವಕ!

    ಮಂಡ್ಯ/ ಹೈದರಾಬಾದ್: ಅಪಾಯಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಯುವಕನೊಬ್ಬ ಕೊಚ್ಚಿಹೋದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಬಳಿಯ ಗೂಳಿತಿಟ್ಟು ಬಳಿ ನಡೆದಿದೆ.

    ಇಂದು ಸುಪ್ರಸಿದ್ಧ ಪಕ್ಷಿಧಾಮವಾದ ರಂಗನತಿಟ್ಟು ವೀಕ್ಷಿಸಲು ಇಬ್ಬರು ಯುವಕರು ಆಗಮಿಸಿದ್ದಾರೆ. ಈ ವೇಳೆ ರಂಗನ ತಿಟ್ಟು ಬಳಿಯ ಗೂಳಿತಿಟ್ಟಿನ ಬಳಿ ಕೆಆರ್‍ಎಸ್‍ನಿಂದ ನದಿಗೆ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಾವೇರಿ ನದಿಯ ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ. ಇದರಲ್ಲಿ ಓರ್ವ ಯುವಕ ನದಿ ಮಧ್ಯೆ ಸಿಲುಕಿ, ತಾಳೆ ಗಿಡದ ಸಹಾಯದಿಂದ ಪಾರಾಗಿದ್ದು, ರಕ್ಷಣೆ ಮಾಡುವಂತೆ ಅಂಗಲಾಚುತ್ತಿದ್ದಾನೆ.

    ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಇವರಲ್ಲಿ ಓರ್ವ ಯುವಕ ನದಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾನೆ.

    15 ಮಂದಿ ನಾಪತ್ತೆ:ಆಂಧ್ರಪ್ರದೇಶದ ಪೂರ್ವ ಗೋಧಾವರಿಯಲ್ಲಿ ಪ್ರಯಾಣಿಕರ ದೋಣಿಯೊಂದು ಮುಳುಗಿದ ಪರಿಣಾಮ 15 ಮಂದಿ ನಾಪತ್ತೆಯಾಗಿದ್ದಾರೆ. ದೋಣಿಯಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದು, ಬಹುತೇಕ ಮಂದಿ ವಿದ್ಯಾರ್ಥಿಗಳೇ ಇದ್ದರು ಎಂದು ತಿಳಿದು ಬಂದಿದೆ.

    ವರದಿಯ ಪ್ರಕಾರ ಗೋಧಾವರಿ ನದಿಗೆ ಕಟ್ಟಲಾಗಿದ್ದ ಸೇತುವೆಯ ಕಂಬಕ್ಕೆ ದೋಣಿ ಗುದ್ದಿದ್ದರಿಂದ ಅವಘಡ ಸಂಭವಿಸಿದ್ದು, ನಾಪತ್ತೆಯಾದರವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ, ಘಟನೆ ಸಂಬಂಧ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

  • ಕಾವೇರಿ ನನಗೊಬ್ಬನಿಗೆ ಸೇರಿದ್ದಲ್ಲ, ಲೋಕಸಭೆಯಲ್ಲಿ ಚರ್ಚಿಸಿ ಪ್ರಾಧಿಕಾರ ರಚನೆಯಾಗಬೇಕು: ಎಚ್‍ಡಿಡಿ

    ಕಾವೇರಿ ನನಗೊಬ್ಬನಿಗೆ ಸೇರಿದ್ದಲ್ಲ, ಲೋಕಸಭೆಯಲ್ಲಿ ಚರ್ಚಿಸಿ ಪ್ರಾಧಿಕಾರ ರಚನೆಯಾಗಬೇಕು: ಎಚ್‍ಡಿಡಿ

    ಬೆಂಗಳೂರು: ಕಾವೇರಿ ನನಗೊಬ್ಬನಿಗೆ ಸೇರಿದ್ದಲ್ಲ. 35 ತಾಲೂಕಿಗೆ ಸೇರಿದ್ದು. ಹೀಗಾಗಿ ನೀರು ಹಂಚಿಕೆ ವಿಚಾರದ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಿ ಪ್ರಾಧಿಕಾರ ರಚನೆ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

    ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಕಾವೇರಿ ಪ್ರಾಧಿಕಾರದ ಕುರಿತು ಚರ್ಚೆ ಆಗಬೇಕು. ಇತ್ತೀಚೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಕೂಡಾ ಈ ವಿಚಾರವಾಗಿ ಮಾತನಾಡಿದ್ದಾರೆ. ಕಾವೇರಿ ವ್ಯಾಜ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕದ ಸಂಸದರಿಗೆ ಮಾಹಿತಿ ನೀಡಲು ಪುಸ್ತಕವೊಂದನ್ನು ಹೊರತರುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿರುವೆ ಎಂದು ಅವರು ಹೇಳಿದರು.

    ಕಾವೇರಿ ವ್ಯಾಜ್ಯಕ್ಕೆ ಸಂಬಂಧಿಸಿದ ಮಾಹಿತಿ, ಚರ್ಚೆ ಮತ್ತು ದಾಖಲೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲು ಹೇಳಿರುವೆ. ನಮ್ಮ ರಾಜ್ಯಕ್ಕೆ ಕಾವೇರಿ ನೀರು ಎಷ್ಟು ಉಳಿಸಲು ಸಾಧ್ಯವೋ ಅಷ್ಟು ಉಳಿಸಲು ನಾನು ಶ್ರಮಿಸುತ್ತೇನೆ ಎಂದು ಹೇಳಿದ ಅವರು, ಉಜಿರೆಯಲ್ಲಿ ಬಜೆಟ್ ಮತ್ತು ರೈತರ ಸಾಲ ಮನ್ನಾ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿ, ಅದೆಲ್ಲವನ್ನು ನಾನು ಈಗ ಮಾತನಾಡುವುದಿಲ್ಲ ಎಂದು ಸಿಟ್ಟು ವ್ಯಕ್ತಪಡಿಸಿದರು.