Tag: ಕೈಗಾರಿಕಾ ನೀತಿ

  • ಐದು ವಲಯಗಳಲ್ಲಿ ಟೌನ್‍ಶಿಪ್ ನಿರ್ಮಾಣ: ಮುರುಗೇಶ್ ನಿರಾಣಿ

    ಐದು ವಲಯಗಳಲ್ಲಿ ಟೌನ್‍ಶಿಪ್ ನಿರ್ಮಾಣ: ಮುರುಗೇಶ್ ನಿರಾಣಿ

    ಬೆಂಗಳೂರು: ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

    ಜೆಡಿಎಸ್‍ನ ಸಿ.ಎನ್. ಮಂಜೇಗೌಡರಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್‍ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಕೋಲಾರದ ಬೆಮೆಲ್ ಕಾರ್ಖಾನೆ ಖಾಸಗಿಯವರಿಗೆ ಹಸ್ತಾಂತರ ಇಲ್ಲ: ಸಚಿವ ಮುರುಗೇಶ್ ನಿರಾಣಿ

    ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಹೂಡಿಕೆದಾರರಿಗೆ ಸೌಲಭ್ಯಗಳು ಮತ್ತು ರಿಯಾಯ್ತಿಗಳನ್ನು ನೀಡುವುದನ್ನು ಕಡಿಮೆ ಮಾಡಿದ್ದು, ರಾಜ್ಯದ 2ನೇ ಹಂತದ ನಗರಗಳಾದ ತುಮಕೂರು, ಕಲಬುರಗಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ, ನೆರವು, ರಿಯಾಯ್ತಿ ನೀಡಲು ಉದ್ದೇಶಿಸಲಾಗಿದೆ ಎಂದರು.

    ಕನ್ನಡಿಗರಿಗೆ ಆದ್ಯತೆ
    ಹೊಸ ಕೈಗಾರಿಕಾ ನೀತಿ-2020-25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ.100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ. ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ.85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು. ಇದನ್ನೂ ಓದಿ: ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ

  • ಕೈಗಾರಿಕೆಗಳು ಬೆಂಗಳೂರು ಕೇಂದ್ರಿತವಾಗದಂತೆ ಹೊಸ ಕೈಗಾರಿಕಾ ನೀತಿ ಜಾರಿ – ಜಗದೀಶ್ ಶೆಟ್ಟರ್

    ಕೈಗಾರಿಕೆಗಳು ಬೆಂಗಳೂರು ಕೇಂದ್ರಿತವಾಗದಂತೆ ಹೊಸ ಕೈಗಾರಿಕಾ ನೀತಿ ಜಾರಿ – ಜಗದೀಶ್ ಶೆಟ್ಟರ್

    ಬೆಂಗಳೂರು: ಕೈಗಾರಿಕೆಗಳೆಂದರೆ ಬೆಂಗಳೂರು ಕೇಂದ್ರಿತ ಎನ್ನುವಂತಾಗಿದೆ. ಹೀಗಾಗಿ ಹೊಸ ಕೈಗಾರಿಕಾ ನೀತಿ ಜಾರಿಗೆ ಮುಂದಾಗಿದ್ದೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕಾ ಅಭಿವೃದ್ಧಿ ಟೈರ್ ನಗರಗಳಿಗೂ ವಿಸ್ತರಣೆ ಆಗಬೇಕಿದೆ. ಅಂದರೆ ರಾಜ್ಯದ ಇತರ ನಗರಗಳಿಗೂ ಕೈಗಾರಿಕೆಗಳನ್ನು ವಿಸ್ತರಿಸುವ ಮೂಲಕ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ, ಹಾಗೂ ಅಭಿವೃದ್ಧಿಯಾಗಬೇಕಿದೆ. ಈ ನಿಟ್ಟಿನಲ್ಲಿ ಬೇರೆ ರಾಜ್ಯಗಳ ಕೈಗಾರಿಕಾ ನೀತಿಗಳನ್ನೂ ಅಧ್ಯಯನ ಮಾಡಲಾಗುತ್ತಿದೆ. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕಾ ನೀತಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

    ಹಿಂದಿನ ಸರ್ಕಾರ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನಕ್ಕೆ ತೀರ್ಮಾನಿಸಿತ್ತು. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಂಡವಾಳ ಹೂಡಿಕೆದಾರರ ಸಮ್ಮೇಳನ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಮುಂದಿನ ಜನವರಿಗೆ ಬಂಡವಾಳ ಹೂಡಿಕೆದಾರ ಸಮ್ಮೇಳನ ನಡೆಸುವ ಪ್ರಸ್ತಾಪ ಇದೆ ಎಂದು ಸ್ಪಷ್ಟಪಡಿಸಿದರು.

    ಆರ್ಥಿಕ ಹಿಂಜರಿತ ಸದ್ಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿದೆ, ರಾಜ್ಯದ ಮಟ್ಟಿಗೆ ಆರ್ಥಿಕ ಹಿಂಜರಿತದ ಬಿಸಿ ತಟ್ಟಿಲ್ಲ. ಇದು ತಾತ್ಕಾಲಿಕ ಆರ್ಥಿಕ ಹಿಂಜರಿತ ಮಾತ್ರ, ಇದು ಸಧ್ಯದಲ್ಲೇ ಅಂತ್ಯವಾಗುವ ನಿರೀಕ್ಷೆ ಇದೆ. ನಾನು ಸಹ ಇಲಾಖವಾರು ಪರಿಣಾಮಗಳ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ ಎಂದು ಮಾಹಿತಿ ನೀಡಿದರು.

    ಜಿಂದಾಲ್‍ಗೆ ಕೊಟ್ಟ ಭೂಮಿಯನ್ನು ವಾಪಸ್ ಪಡೆಯುವ ಬಗ್ಗೆ ನಿರ್ಧಾರ ವಿಳಂಬವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಹಿಂದಿನ ಸರ್ಕಾರ ಸಂಪುಟ ಉಪಸಮಿತಿ ರಚಿಸಿತ್ತು. ಅದರ ವರದಿಯನ್ನು ಪರಿಶೀಲಿಸಬೇಕು. ಪರಿಸ್ಥಿತಿ ಏನಿದೆ ಎಂದು ಸಮಗ್ರವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಸರ್ಕಾರ ರಚನೆಯಾಗಿ ಒಂದು ತಿಂಗಳಾಗಿದೆಯಷ್ಟೇ, ನಾನು ಇಲಾಖೆ ವಹಿಸಿಕೊಂಡು ಒಂದು ವಾರ ಆಗಿದೆ. ಜಿಂದಾಲ್ ವಿಚಾರದಲ್ಲಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಇದರಲ್ಲಿ ಯಾವುದೇ ವಿಳಂಬ ಆಗಿಲ್ಲ ಎಂದು ಸಮರ್ಥಿಸಿಕೊಂಡರು.

    ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ ಕುರಿತು ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಯುತ್ತಿದೆ. ಹಾಗಾಗಿ ಅವರಿಗೆ ಹಾಗನ್ನಿಸುತ್ತಿರಬಹುದು. ಅವರ ಭಾವನೆಗೆ ನಾವು ಏನೂ ಮಾಡಲೂ ಸಾಧ್ಯವಿಲ್ಲ. ಇಡಿ, ಸಿಬಿಐ, ಐಟಿ ಸ್ವಾಯತ್ತ ಸಂಸ್ಥೆಗಳಾಗಿದ್ದು, ಕೇಂದ್ರದಿಂದ ಈ ಸಂಸ್ಥೆಗಳ ದುರುಪಯೋಗ ಆಗಿಲ್ಲ. ಇಡಿ, ಸಿಬಿಐ ಪ್ರಕರಣ ಇಂದು, ನಿನ್ನೆಯದಲ್ಲ ಮೊದಲಿನಿಂದಲೂ ಡಿಕೆಶಿ ವಿರುದ್ಧ ಪ್ರಕರಣ ನಡೆಯುತ್ತಿದೆ. ಹೀಗಿರುವಾಗ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯನವರ ಮಧ್ಯಂತರ ಚುನಾವಣೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಯಾವಾಗ ಭವಿಷ್ಯಗಾರರು ಆಗಿದ್ದಾರೋ ಗೊತ್ತಿಲ್ಲ. ಸರ್ಕಾರ ಹೋದ ಮೇಲೆ ಸಿದ್ದರಾಮಯ್ಯ ಖಾಲಿ ಆಗಿದ್ದಾರೆ. ಹೀಗಾಗಿ ಮಧ್ಯಂತರ ಚುನಾವಣೆ ನಿರೀಕ್ಷೆಯಲ್ಲಿದ್ದಾರೆ. ಅಧಿಕಾರ ಕಳೆದುಕೊಂಡ ಮೇಲೆ ಸಿದ್ದರಾಮಯ್ಯನವರಿಗೆ ಕೆಲಸ ಇಲ್ಲ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಮಧ್ಯಂತರ ಚುನಾವಣೆ ಬರಲ್ಲ ಎಂದು ತಿಳಿಸಿದರು.