Tag: ಜೆ ಮಂಜುನಾಥ್

  • ಅಂಬೇಡ್ಕರ್, ವಾಲ್ಮೀಕಿ ಭವನಗಳಲ್ಲಿ ಗ್ರಂಥಾಲಯ ನಿರ್ಮಿಸಲು ಕ್ರಮ: ಜೆ ಮಂಜುನಾಥ್

    ಅಂಬೇಡ್ಕರ್, ವಾಲ್ಮೀಕಿ ಭವನಗಳಲ್ಲಿ ಗ್ರಂಥಾಲಯ ನಿರ್ಮಿಸಲು ಕ್ರಮ: ಜೆ ಮಂಜುನಾಥ್

    ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವತಿಯಿಂದ ನಿರ್ಮಿಸಿರುವ ಅಂಬೇಡ್ಕರ್ ಭವನ ಹಾಗೂ ಮಹರ್ಷಿ ವಾಲ್ಮೀಕಿ ಭವನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಯುವಜನರಿಗೆ ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಿ ನಿರ್ವಹಿಸಲು ಬಿಬಿಎಂಪಿ ಆಯವ್ಯಯದಲ್ಲಿ ಸೇರ್ಪಡೆಗೊಳಿಸುವಂತೆ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

    ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಂಜುನಾಥ್ ಮಾತನಾಡಿದರು. ನಗರದ ಬಹುಭಾಗಗಳಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಸಮರ್ಪಕವಾಗಿ ಉಪಯೋಗವಾಗುತ್ತಿಲ್ಲ. ಈ ಬಗ್ಗೆ ಸಮಿತಿಯ ವತಿಯಿಂದ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿ ಮೂಲಭೂತ ಸೌಕರ್ಯಗಳಿಗೆ ಅನುದಾನ ಮೀಸಲಿಡಲು ಕೋರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

    ದೌರ್ಜನ್ಯ ಪ್ರಕರಣಗಳ ಸಂಬಂಧ ಬಾಧಿತರು ಪೊಲೀಸ್ ಬಳಿ ಮೊರೆ ಹೋದಾಗ ವಿಳಂಬ ಧೋರಣೆ ತೋರದೆ, ದೂರಿಗೆ ಕೂಡಲೇ ಸ್ವೀಕೃತಿಯನ್ನು ನೀಡಬೇಕು. ದೂರು ದಾಖಲಿಸಲು ಬಂದವರೊಡನೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಸೂಚಿಸಿದರು.  ಇದನ್ನೂ ಓದಿ: ವಿದ್ಯಾರ್ಥಿಗಳ ರಕ್ಷಣೆ ಯಾವಾಗ?: ಸಿಎಂ ಬಸವರಾಜ ಬೊಮ್ಮಾಯಿಗೆ ನಟಿ ರಮ್ಯಾ ಪ್ರಶ್ನೆ

    ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳಿಗೆ ಒಮ್ಮೆ ಪರಿಶಿಷ್ಠ ಜಾತಿ, ಪಂಗಡದ ಮುಖಂಡರನ್ನು ಆಹ್ವಾನಿಸಿ ಸಭೆ ನಡೆಸಿ ಸಮಸ್ಯೆಗಳ ಸೂಕ್ತ ಚರ್ಚೆಗೆ ಅವಕಾಶ ಕಲ್ಪಿಸಬೇಕು. ನಿರ್ಧಿಷ್ಟವಾಗಿ ಯಾವ ಠಾಣೆಗಳಲ್ಲಿ ಈ ಸಭೆ ನಡೆಸಲಾಗುತ್ತಿಲ್ಲವೋ ಅವರ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲು ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿಗೆ ಸೂಚಿಸಿದರು.

    ಹರೆಬಿನ್ನಮಂಗಲ, ಜಾಲಹೋಬಳಿ ಹಾಗೂ ಜ್ಯೋತಿಪುರ ಗ್ರಾಮಗಳಲ್ಲಿ ಫಾರಂ 53ರ ಅರ್ಜಿಗಳನ್ನು ದಾಖಲಿಸಿ ಭೂಮಿ ಸಕ್ರಮೀಕರಣಗೊಳಿಸಲು ಮಂಜೂರಾತಿ ಈಗಾಗಲೇ ನೀಡಲಾಗಿದ್ದರೂ ಪ. ಜಾ/ ಪ. ಪಂ ಫಲಾನುಭವಿಗಳಿಗೆ ಮಾತ್ರ ಸಾಗವಳಿ ಚೀಟಿ ವಿತರಿಸಿರುವುದಿಲ್ಲ ಎಂದು ಸಮಿತಿ ಸದಸ್ಯ ಹೆಣ್ಣೂರು ಶ್ರೀನಿವಾಸ್ ಸಭೆಯಲ್ಲಿ ಗಮನಕ್ಕೆ ತಂದರು. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಿವಂತೆ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.

    ಕೊಳಚೆ ಅಭಿವೃದ್ಧಿ ಮಂಡಳಿಯ ಹೆಸರನ್ನು ಬದಲಾಯಿಸಲು ಸದಸ್ಯರೆಲ್ಲರೂ ಸಭೆಯ ಅಧ್ಯಕ್ಷರಿಗೆ ಆಗ್ರಹಿಸಿದರು. ಈ ಬಗ್ಗೆ ಸೂಕ್ತ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ: ಗೋವಿಂದ ಕಾರಜೋಳ

    ದೌರ್ಜನ್ಯ ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡಂತಹ ಪ.ಜಾ/ ಪ.ಪಂ ದವರ ಕುಟುಂಬದವರಿಗೆ ಅನುಕಂಪಾಧಾರಿತ ಸರ್ಕಾರಿ ನೌಕರಿ ನೀಡುವಲ್ಲಿ ಕೆಲವು ಕಡೆ ಲೋಪ ಕಂಡುಬಂದಿವೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ರೆಡ್ಡಿ, ಪ್ರಸ್ತುತ 32 ನೊಂದ ಕುಟುಂಬಗಳಿಗೆ ಪ್ರತಿ ತಿಂಗಳು 5,000 ರೂ. ಮಾಸಾಶನವನ್ನು ಕಳೆದ ಒಂದು ವರ್ಷದಿಂದ ಒದಗಿಸಲಾಗುತ್ತಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ದಕ್ಷಿಣ ಉಪವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

  • ಕೆರೆ ಸರ್ವೆ ಕಾರ್ಯ, ಒತ್ತುವರಿ ತೆರವಿಗೆ ವಿಳಂಬ ಮಾಡಬೇಡಿ: ಡಿಸಿ ಜೆ ಮಂಜುನಾಥ್

    ಕೆರೆ ಸರ್ವೆ ಕಾರ್ಯ, ಒತ್ತುವರಿ ತೆರವಿಗೆ ವಿಳಂಬ ಮಾಡಬೇಡಿ: ಡಿಸಿ ಜೆ ಮಂಜುನಾಥ್

    ಬೆಂಗಳೂರು: ನಗರ, ಜಿಲ್ಲೆ ಕೆರೆಗಳನ್ನು ಶಾಶ್ವತ ಆಸ್ತಿಯನ್ನಾಗಿ ಅಭಿವೃದ್ಧಿಪಡಿಸಿ ನಮ್ಮ ಮುಂದಿನ ಪೀಳಿಗೆಗೆ ಸುರಕ್ಷಿತ ಪರಿಸರ ಉಳಿಸುವುದು ನಮ್ಮ ಜವಾಬ್ದಾರಿ. ಹಾಗಾಗಿ ಜಿಲ್ಲೆಯ ಎಲ್ಲ ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕೆರೆಗಳ ಅಭಿವೃದ್ಧಿ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆರೆಗಳ ಸುತ್ತ ಗಡಿ ಗುರುತಿಸಿ, ಅದರ ಸುತ್ತ ಇರುವ ಬಫರ್ ಝೋನ್ ಪ್ರದೇಶದಲ್ಲಿ ಯಾವುದೇ ಕಟ್ಟಡ ಅಥವಾ ಇತರೆ ಕಾಮಗಾರಿಗಳಿಗೆ ಅನುಮತಿ ನೀಡುವಂತ್ತಿಲ್ಲ. ಈ ಬಗ್ಗೆ ಕೂಡಲೇ ಸರ್ವೆ ನಡೆಸಿ ಒತ್ತುವರಿ ಮಾಹಿತಿ ನೀಡುವಂತೆ ಅವರು ಸೂಚಿಸಿದರು.

    ಕೆರೆಗಳಿಗೆ ನೀರು ಪೂರೈಸುವ ರಾಜಕಾಲುವೆಗಳ ಒತ್ತುವರಿಯನ್ನೂ ಸಹ ಕೂಡಲೆ ತೆರವುಗೊಳಿಸಬೇಕು ಎಂದ ಜಿಲ್ಲಾಧಿಕಾರಿಗಳು, ನಾಳೆಯೊಳಗೆ ಈ ಸಂಪೂರ್ಣ ಕಾರ್ಯ ನಿರ್ವಹಿಸಲು ವೇಳಾಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಒಟ್ಟು 836 ಕೆರೆಗಳಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ 204 ಕೆರೆಗಳು, ಸಣ್ಣ ನೀರಾವರಿ ಇಲಾಖೆಗೆ 46 ಕೆರೆಗಳು, ಜಿಲ್ಲಾ ಪಂಚಾಯ್ತಿಗೆ 421, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಐದು ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಗೆ ಒಂದು ಕೆರೆ ಸೇರುತ್ತದೆ. ಉಳಿದ ಕೆರೆಗಳು ಯಾವ ಇಲಾಖೆಗೆ ಸೇರುತ್ತದೆ ಎಂಬ ಬಗ್ಗೆ ನಿರ್ಧರಿಸಲು ಸಮೀಕ್ಷೆ ನಡೆಸಲು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್

    ಬೆಂಗಳೂರು ಕೇವಲ ಸಿಲಿಕಾನ್ ವ್ಯಾಲಿಯಾಗಿ ಜಾಗತಿಕವಾಗಿ ಬ್ರಾಂಡ್ ಆಗುವುದು ಮಾತ್ರವಲ್ಲ, ಆರೋಗ್ಯಕರ ಪರಿಸರವನ್ನು ನಿವಾಸಿಗಳಿಗೆ ಒದಗಿಸಿ ಜೀವನ ಗುಣಮಟ್ಟವನ್ನು ಉತ್ತಮಗೊಳಿಸುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.

    ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಿದಲ್ಲಿ ಕೈಗಾರಿಕೆಗಳಿಗೆ ಅವುಗಳನ್ನು ಅಭಿವೃದ್ಧಿ ಪಡಿಸಲು ನೀಡಲಾಗುವುದು ಎಂದ ಅವರು, ಸರ್ಕಾರದ ಮಟ್ಟದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಕೆರೆ ಅಭಿವೃದ್ಧಿ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಅನುಷ್ಠಾನ ಇಲಾಖೆಗಳು ಕ್ರಿಯಾಶೀಲರಾಗುವುದು ಅತ್ಯಗತ್ಯ ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅನಿತಾ ಲಕ್ಷ್ಮೀ, ಉತ್ತರ ವಿಭಾಗಾಧಿಕಾರಿ ರಂಗನಾಥ್, ದಕ್ಷಿಣ ಉಪವಿಭಾಗಾಧಿಕಾರಿ ಡಾ. ಶಿವಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.