Tag: ಬ್ಯಾಂಕಿಂಗ್ ಪರೀಕ್ಷೆ

  • ಕನ್ನಡದಲ್ಲಿ ಪರೀಕ್ಷೆ ನಡೆಸದ್ದಕ್ಕೆ ಕೇಂದ್ರದ ವಿರುದ್ಧ ಗುಡುಗಿದ ಹೆಚ್‍ಡಿಕೆ

    ಕನ್ನಡದಲ್ಲಿ ಪರೀಕ್ಷೆ ನಡೆಸದ್ದಕ್ಕೆ ಕೇಂದ್ರದ ವಿರುದ್ಧ ಗುಡುಗಿದ ಹೆಚ್‍ಡಿಕೆ

    ಬೆಂಗಳೂರು: ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕನ್ನಡದ ಮೇಲೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸುತ್ತೇನೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದು ತಮ್ಮ ಟ್ವಿಟ್ಟರ್‍ ನಲ್ಲಿ ಬರೆದುಕೊಂಡಿದ್ದಾರೆ.

    ಈ ವಿಚಾರಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಕೆಲ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬ್ಯಾಂಕಿಂಗ್ ಪರೀಕ್ಷೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವುದಾಗಿ ಹೇಳಿ ಮಾತಿಗೆ ತಪ್ಪಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು, ಕೇಂದ್ರಸಚಿವೆ ನಿರ್ಮಲಾ ಸಿತಾರಾಮನ್ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತ ಪಡಿಸಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    ಈ ಹಿಂದೆ ಜುಲೈ 7 ರಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಲ್ಲಿ 45 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿದ್ದು, 90 ಸಾವಿರ ಜನರು ಉದ್ಯೋಗಿಗಳಿದ್ದಾರೆ. ಇವುಗಳಿಗೆ ಆರ್.ಆರ್.ಬಿ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಐಬಿಪಿಎಸ್ ಮೂಲಕ ನೇಮಕಾತಿ ನಡೆಯುತ್ತಿದೆ. ಹೀಗಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಬ್ಯಾಂಕ್‍ನಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡುವ ನಿಟ್ಟಿನಲ್ಲಿ ಕನ್ನಡ ಸೇರಿದಂತೆ 13 ಸ್ಥಳಿಯ ಭಾಷೆಯಲ್ಲೂ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದ್ದರು.

    ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಥಳೀಯ ಭಾಷೆಯಲ್ಲಿ ಹೆಚ್ಚು ಜ್ಞಾನ ಪಡೆದುಕೊಂಡಿರುತ್ತಾರೆ. ಹೀಗಾಗಿ ಪ್ರಾದೇಶಿಕ ಭಾಷೆಯಲ್ಲಿಯೇ ಆರ್.ಆರ್.ಬಿ, ಐಬಿಪಿಎಸ್ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು.

    ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಕ್ಲರ್ಕ್ ಹುದ್ದೆಗಳನ್ನು ನೇಮಕಾತಿ ಮಾಡಲು ಇಂದು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಅರ್ಜಿಯನ್ನು ಅಹ್ವಾನ ಮಾಡಿದ್ದು, ಇದರಲ್ಲಿ ಕೇವಲ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದೆ. ಆದರೆ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆಗಳು ತಿಳಿದಿರಬೇಕು ಎಂದು ಹೇಳಲಾಗಿದೆ. ಆದರೆ ಅದನ್ನು ಖಚಿತ ಪಡಿಸಲು ಯಾವುದೇ ಮಾನದಂಡವನ್ನು ಹೇಳದೇ ಇರುವುದು ಕನ್ನಡಿಗರ ಟೀಕೆಗೆ ಗುರಿಯಾಗಿದೆ.

  • ಬ್ಯಾಂಕ್ ಉದ್ಯೋಗದಲ್ಲಿ ಕನ್ನಡಿಗರ ಮೀಸಲಾತಿಗೆ ಆಗ್ರಹ-ಕೈ ಕುಯ್ದುಕೊಂಡು ಪರೀಕ್ಷಾರ್ಥಿಗಳ ಅಕ್ರೋಶ

    ಬ್ಯಾಂಕ್ ಉದ್ಯೋಗದಲ್ಲಿ ಕನ್ನಡಿಗರ ಮೀಸಲಾತಿಗೆ ಆಗ್ರಹ-ಕೈ ಕುಯ್ದುಕೊಂಡು ಪರೀಕ್ಷಾರ್ಥಿಗಳ ಅಕ್ರೋಶ

    – ಪರೀಕ್ಷೆ ಬರೆಯದೇ ರಾಜ್ಯದ ವಿವಿಧೆಡೆ ಅಭ್ಯರ್ಥಿಗಳ ಪ್ರತಿಭಟನೆ

    ಬೆಂಗಳೂರು: ಕನ್ನಡ ಭಾಷಾ ಮಾಧ್ಯಮದಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ರಾಜ್ಯದ ವಿವಿಧೆಡೆ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

    ಬೆಂಗಳೂರು, ಬಳ್ಳಾರಿ, ಕಲಬುರಗಿ, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ ಮತ್ತು ಶಿವಮೊಗ್ಗ ಸೇರಿದಂತೆ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

    ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವಕಾಶ ನೀಡ್ತಿರೋದನ್ನ ಖಂಡಿಸಿ ಹುಬ್ಬಳ್ಳಿಯಲ್ಲಿ ಸಲೀಂ ಎಂಬ ವಿದ್ಯಾರ್ಥಿ ತನ್ನ ಕೈಯನ್ನು ಕುಯ್ದುಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್ ನಾಗರಾಜ್ ಭೇಟಿ ನೀಡಿದ್ದು, ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

    ಧಾರವಾಡದಲ್ಲಿಯೂ ರೂರಲ್ ಬ್ಯಾಂಕ್ ಪರೀಕ್ಷೆಯಿಂದ ಹೊರಗುಳಿದು ಪ್ರತಿಭಟಿಸಿದ ಅಭ್ಯರ್ಥಿಗಳು, ಆಂಧ್ರ ಮೂಲದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ಕೇಂದ್ರದ ಹೊರಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

    ನಮಗೆ ಕನ್ನಡ ಬಂದರೂ ಗ್ರಾಮೀಣ ಬ್ಯಾಂಕ್ ಗಳಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಕ್ಕಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯಲ್ಲಿ ಲಾಭಿ ಮಾಡಲಾಗುತ್ತಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.

    ಕಲಬುರಗಿಯಲ್ಲಿ ಪರೀಕ್ಷೆಗೆ ನೆರೆಯ ರಾಜ್ಯ ಆಂಧ್ರಪ್ರದೇಶದಿಂದಲೂ ಅಭ್ಯರ್ಥಿಗಳು ಬಂದಿದ್ದು ಅವರನ್ನ ಪರೀಕ್ಷೆ ಬರೆಯಲು ಬಿಡುವುದಿಲ್ಲ ಎಂದು ಸ್ಥಳೀಯ ಪರೀಕ್ಷಾ ಅಭ್ಯರ್ಥಿಗಳು ಪಟ್ಟು ಹಿಡಿದಿದ್ದಾರೆ. ಶಹಬಾದ್ ರಸ್ತೆಯಲ್ಲಿರುವ ಶೆಟ್ಟಿ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಆದ್ರೆ ನೂರಾರು ಅಭ್ಯರ್ಥಿಗಳು ಕಾಲೇಜು ಆವರಣದಲ್ಲಿ ಕುಳಿತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.

    https://www.youtube.com/watch?v=33Oq19s8_gA