Tag: ಭರಚುಕ್ಕಿ ಫಾಲ್ಸ್

  • ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಭರಚುಕ್ಕಿ ಜಲಪಾತ

    ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಭರಚುಕ್ಕಿ ಜಲಪಾತ

    – ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಜಲಪಾತ

    ಚಾಮರಾಜನಗರ: ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಂದ 35 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಜಿಲ್ಲೆಯ ಭರಚುಕ್ಕಿ ಧುಮ್ಮಿಕ್ಕುತ್ತಿದ್ದು, ಕಾವೇರಿಯ ರುದ್ರ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಆಗಮಿಸುತ್ತಿದೆ.

    ಕೇರಳದ ವೈಯನಾಡು ಹಾಗೂ ಕಬಿನಿ ಜಲಾನಯನ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ವ್ಯಾಪಕ ಮಳೆಯಾಗಿದ್ದು, ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ನದಿಗೆ 30 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಕೆಆರ್‍ಎಸ್ ಜಲಾಶಯದಿಂದಲು 6 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.

    ಮೈಸೂರು ಜಿಲ್ಲೆಯ ಮೂಲಕ ಹರಿದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿಗೆ ಪ್ರವೇಶಿಸುವ ಕಾವೇರಿ, ಶಿವನಸಮುದ್ರದ ಬಳಿ ಎರಡು ಕವಲಾಗಿ ಹರಿದು ಒಂದೆಡೆ ಗಗನಚುಕ್ಕಿಯಾಗಿ ಇನ್ನೊಂದೆಡೆ ಭರಚುಕ್ಕಿಯಾಗಿ ಭೋರ್ಗೆರೆದು ಧುಮ್ಮಿಕುತ್ತಿದೆ. ಕರ್ನಾಟಕದ ನಯಾಗಾರ ಎಂದೇ ಹೆಸರಾದ ಭರಚುಕ್ಕಿಯಲ್ಲಿ ಬೆಟ್ಟಗುಡ್ಡಗಳ ನಡುವೆ ಕವಲು ಕವಲಾಗಿ ಹಾಲ್ನೊರೆಯಂತೆ ಧುಮ್ಮಿಕ್ಕುವ ಕಾವೇರಿಯ ರುದ್ರ ರಮಣೀಯ ದೃಶ್ಯಗಳನ್ನು ನೋಡಲು ಕಣ್ಣುಗಳೆರಡು ಸಾಲದಂತೆ ಭಾಸವಾಗುತ್ತಿದೆ.

    ಕಳೆದ ಕೆಲವು ತಿಂಗಳಿಂದ ನೀರಿಲ್ಲದೆ ಬಣಗುಡುತ್ತಿದ್ದ ಭರಚುಕ್ಕಿಗೆ ಮತ್ತೆ ಜೀವ ಕಳೆ ಬಂದಿದೆ. ಕಾವೇರಿಯ ಜಲವೈಭವ ಅನಾವರಣಗೊಂಡಿದೆ. ಸುತ್ತಲೂ ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟಗುಡ್ಡಗಳು. ಬೆಟ್ಟಗುಡ್ಡಗಳ ನಡುವೆ ಧುಮ್ಮಿಕ್ಕಿ ಹರಿಯುತ್ತಿರುವ ಕಾವೇರಿ ಭರಚುಕ್ಕಿಯಲ್ಲಿ ಅತ್ಯಂತ ವಿಶಾಲವಾಗಿ ಕವಲು ಕವಲಾಗಿ ರಭಸದಿಂದ ಧುಮ್ಮಿಕ್ಕುವ ದೃಶ್ಯಕಾವ್ಯ ವರ್ಣನಾತೀತವಾಗಿದೆ.

  • ಭರಚುಕ್ಕಿಯಲ್ಲಿ ಹಾಲ್ನೊರೆಯಂತೆ ಹರಿಯುತ್ತಿದ್ದಾಳೆ ಕಾವೇರಿ

    ಭರಚುಕ್ಕಿಯಲ್ಲಿ ಹಾಲ್ನೊರೆಯಂತೆ ಹರಿಯುತ್ತಿದ್ದಾಳೆ ಕಾವೇರಿ

    ಚಾಮರಾಜನಗರ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಹಾಗೂ ಕೆಆರ್‍ಎಸ್ ನಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆಯಾಗುತ್ತಿರುವುದರಿಂದ ಭರಚುಕ್ಕಿಗೆ ಮತ್ತೆ ಜೀವಕಳೆ ಬಂದಿದೆ.

    ಕೇರಳದ ವೈನಾಡು ಹಾಗೂ ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗೆ ಕಬಿನಿ ಹಾಗೂ ಕೆಆರ್‌ಎಸ್‌ ನಿಂದ 12 ಸಾವಿರ ಕ್ಯುಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಭರಚುಕ್ಕಿಯಲ್ಲಿ ಕಾವೇರಿ ಅತ್ಯಂತ ವಿಶಾಲವಾಗಿ ಕವಲು ಕವಲಾಗಿ, ಧುಮ್ಮಿಕ್ಕಿ ಹರಿಯುತ್ತಿದ್ದಾಳೆ.

    ಕಳೆದ ಹಲವಾರು ತಿಂಗಳಿಂದ ಬಣಗುತ್ತಿದ್ದ ಭರಚುಕ್ಕಿಗೆ ಮತ್ತೆ ಜೀವಕಳೆ ಬಂದಿದೆ. ಕಾವೇರಿ ಭರ್ರೆಂದು ಧುಮ್ಮಿಕ್ಕುವ ಭರಚುಕ್ಕಿ ಜಲಪಾತದ ಸೊಬಗು ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಸುತ್ತಲು ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟಗುಡ್ಡಗಳು, ಬೆಟ್ಟಗುಡ್ಡಗಳ ನಡುವೆ ಧುಮ್ಮಿಕ್ಕಿ ಹರಿಯುತ್ತಿರುವ ಕಾವೇರಿ ನದಿ. ನೋಡಲು ಎರಡು ಕಣ್ಣು ಸಾಲದು ಎಂದು ಬೆಂಗಳೂರಿನಿಂದ ಬಂದಿರುವ ಪ್ರವಾಸಿ ಕೀರ್ತಿ ಹೇಳಿದ್ದಾರೆ.

    ಇಲ್ಲಿನ ಪ್ರಕೃತಿಯ ಸೊಬಗಂತು ಅತ್ಯಾದ್ಭುತ. ಹಸಿರು ಬೆಟ್ಟಗುಡ್ಡಗಳ ನಡುವೆ ಹಾಲ್ನೊರೆಯಂತೆ ಹರಿಯುವ ಕಾವೇರಿಯ ಐಸಿರಿ ನಯನ ಮನೋಹರವಾಗಿದೆ. ಈ ದೃಶ್ಯವೈಭವಕ್ಕೆ ಮನಸೋಲದ ಜನರೇ ಇಲ್ಲ ಎಂದು ಪ್ರವಾಸಿಗರಾದ ಸುಗುಣ ಮತ್ತು ಶಿವಕುಮಾರ್ ಹೇಳಿದರು.

    ಕಾವೇರಿಯ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳಲು ಭರಚುಕ್ಕಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಮರಗಿಡಗಳು ಹಸಿರಿನಿಂದ ಕಂಗೊಳಿಸುತ್ತಾ ಕಾವೇರಿಯ ಸೊಬಗನ್ನು ಇಮ್ಮಡಿಗೊಳಿಸಿವೆ.