Tag: ಮಾಜಿ ಐಪಿಎಸ್ ಅಧಿಕಾರಿ

  • ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಇನ್ನಿಲ್ಲ

    ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಇನ್ನಿಲ್ಲ

    ಮುಂಬೈ: ನಗರದಲ್ಲಿ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳವನ್ನು ಸ್ಥಾಪಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಅಫ್ತಾಬ್ ಅಹ್ಮದ್ ಖಾನ್ ಶುಕ್ರವಾರ ನಿಧನರಾಗಿದ್ದಾರೆ.

    ಮೂರು ದಶಕಗಳ ಹಿಂದೆ ಮುಂಬೈ ಪೊಲೀಸ್ ಇಲಾಖೆಯಲ್ಲಿ ಭಯೋತ್ಪಾದನಾ ನಿಗ್ರಹ ದಳವನ್ನು ಸ್ಥಾಪಿಸಿದ ಕೀರ್ತಿ ಹೊಂದಿರುವ ಅಫ್ತಾಬ್ ಅಹ್ಮದ್ ಖಾನ್ ತಮ್ಮ 81ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

    ಅಫ್ತಾಬ್ ಒಬ್ಬ ಹೆಸರಾಂತ ಪೊಲೀಸ್ ಅಧಿಕಾರಿಯಾಗಿದ್ದು, ತಮ್ಮ ಅಧಿಕಾರ ಅವಧಿಯಲ್ಲಿ ಮುಂಬೈನ ದರೋಡೆಕೋರರು ಹಾಗೂ ಭಯೋತ್ಪಾದಕರ ವಿರುದ್ಧ ಹಲವಾರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಅಫ್ತಾಬ್ ತಮ್ಮ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇದನ್ನೂ ಓದಿ: ವಿಮಾನ ಪ್ರಯಾಣಿಕರು ಇನ್ಮುಂದೆ ಒಬ್ಬರು ಒಂದೇ ಹ್ಯಾಂಡ್ ಬ್ಯಾಗ್ ಒಯ್ಯಬೇಕು!

    ಕೆಲವು ದಿನಗಳ ಹಿಂದೆ ಖಾನ್‌ರಿಗೆ ಕೋವಿಡ್ ಸೋಂಕು ತಗುಲಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯೂ ಹೊಂದಿದ್ದರು. ಶುಕ್ರವಾರ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    1963ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಖಾನ್, 1995ರಲ್ಲಿ ಮಹಾರಾಷ್ಟ್ರದ ಪೊಲೀಸ್ ಇನ್‌ಸ್ಪೆಕ್ಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು. 1990ರಲ್ಲಿ ಖಾನ್ ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆಯನ್ನು ಸ್ಥಾಪಿಸಿದ್ದು, ಅದು ದೇಶದಲ್ಲೇ ಸ್ಥಾಪಿತವಾದ ಮೊದಲ ಭಯೋತ್ಪಾದನಾ ನಿಗ್ರಹ ಸಂಘಟನೆಯಾಗಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಐಎಸ್‌ಐ ಮಾರ್ಕ್ ಇಲ್ಲದ 70 ಲಕ್ಷ ಮೌಲ್ಯದ ಚೀನಾ ಆಟಿಕೆ ವಶ

  • ಬಿಜೆಪಿ ಸೇರಿದ ಅಣ್ಣಾಮಲೈ ವಿರುದ್ಧ ದೂರು ದಾಖಲು

    ಬಿಜೆಪಿ ಸೇರಿದ ಅಣ್ಣಾಮಲೈ ವಿರುದ್ಧ ದೂರು ದಾಖಲು

    – ನಾಲ್ವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು

    ಚೆನ್ನೈ: ಇತ್ತೀಚೆಗಷ್ಟೆ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ನಡೆಸಿದ ಕಾರಣ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ನಿಷ್ಠೆಯಿಂದ ಯೋಧನಾಗಿ ಬಿಜೆಪಿಗೆ ದುಡಿಯುತ್ತೇನೆ- ಅಣ್ಣಾಮಲೈ

    ಅಣ್ಣಾಮಲೈ ಜೊತೆಗೆ ಇತರ ನಾಲ್ಕು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು ದಾಖಲಾಗಿದೆ. ಜಿಜೆಪಿ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ಸೆಲ್ವಕುಮಾರ್, ರಾಜ್ಯ ಖಜಾಂಚಿ ಎಸ್.ಆರ್.ಶೇಖರ್ ಮತ್ತು ರಾಜ್ಯ ಉಪಾಧ್ಯಕ್ಷ ಕನಗಸಬಪತಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊಯಮತ್ತೂರು ನಗರದ ಕಟೂರ್ ಪೊಲೀಸ್ ಠಾಣೆ ಐಪಿಸಿಯ ಸೆಕ್ಷನ್ ಮತ್ತು ಕೋವಿಡ್ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಐವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ.

    ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ, ತಮ್ಮ ಖಡಕ್ ನಿರ್ಧಾರಗಳು ಮತ್ತು ಅಡಳಿತದಿಂದ ‘ಸಿಂಗಂ’ ಎಂಬ ಹೆಸರು ಪಡೆದುಕೊಂಡಿದ್ದರು. ನಂತರ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ಹೋಗಿದ್ದರು. ಸೋಮವಾರ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಗುರುವಾರ ಅಣ್ಣಾಮಲೈ ಅವರು ಕೊಯಮತ್ತೂರಿನ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಸೇರಿದಂತೆ 50ಕ್ಕೂ ಹೆಚ್ಚಿನ ಜನರು ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿದ್ದರು. ಅಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಈ ವೇಳೆ ಅಣ್ಣಾಮಲೈ ಕೂಡ ವಾಹನದಲ್ಲಿ ನಿಂತುಕೊಂಡೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಮೂಲಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹೇರಿದ್ದ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿದಂತಾಗಿತ್ತು.

    ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಕಾರ್ಯಕರ್ತರರ ವಿರುದ್ಧ ನಗರ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಜನಸಮೂಹವನ್ನು ಒಟ್ಟುಗೂಡಿಸುವ ಮೂಲಕ ಸಮಾರಂಭವನ್ನು ನಡೆಸಿದ್ದಾರೆ ಎಂದು ಗಣನೆಗೆ ತೆಗೆದುಕೊಂಡಿದ್ದಾರೆ. ಆದರೆ ನಗರದಲ್ಲಿ ಲಾಕ್‍ಡೌನ್ ಪ್ರೋಟೋಕಾಲ್ ಜಾರಿಯಲ್ಲಿದೆ. ಆದ್ದರಿಂದ ಅಣ್ಣಾಮಲೈ, ನಂದಕುಮಾರ್, ಸೆಲ್ವಕುಮಾರ್, ಶೇಖರ್ ಮತ್ತು ಕನಗಸಬಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.