Tag: ಮೆಡಿಕಲ್ ಕಾಲೇಜು

  • ಮೆಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡಿದ ಗಜರಾಜ – ಅರಣ್ಯಾಧಿಕಾರಿಗಳಿಂದ ಆನೆಯ ರಕ್ಷಣೆ

    ಮೆಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡಿದ ಗಜರಾಜ – ಅರಣ್ಯಾಧಿಕಾರಿಗಳಿಂದ ಆನೆಯ ರಕ್ಷಣೆ

    ಕೋಲ್ಕತ್ತಾ: ಮೇಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡುತ್ತಿದ್ದ ಆನೆಯನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

    ಪಶ್ಚಿಮ ಬಂಗಾಳದ ಮಿಡ್ನಾಪುರದ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ರಾತ್ರಿ ಕಾಡಾನೆ ಆವರಣದ ತುಂಬಾ ಓಡಾಡಿದೆ. ವಿದ್ಯಾರ್ಥಿಗಳು ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿಯನ್ನೂ ನೀಡಿದ್ದರು. ಈ ವಿಚಾರ ತಿಳಿದ ಹಲವರು ಆನೆಯನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಜನ ಕೂಡಾ ಕಾಲೇಜು ಆವರಣದಲ್ಲಿ ಜಮಾಯಿಸಿದ್ದರು. ಆನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸದ್ಯ ಈ ಕಾರ್ಯಾಚರಣೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಆನೆಯನ್ನು ಕ್ರೇನ್ ಮೂಲಕ ಟ್ರಕ್‍ಗೆ ತರುವ ದೃಶ್ಯವಿದೆ. ಹೀಗೆ ಅತ್ಯಂತ ಸುರಕ್ಷಿತವಾಗಿ ಆನೆಯನ್ನು ಹಿಡಿದ ಅರಣ್ಯ ಸಿಬ್ಬಂದಿ ಆನೆಯನ್ನು ಅರಣ್ಯಕ್ಕೆ ಕರೆತಂದಿದ್ದಾರೆ. ಇಲ್ಲಿ ಆನೆಗೆ ಸೂಕ್ತ ಆರೈಕೆ ಮಾಡಿ ಬಳಿಕ ಕಾಡಿಗೆ ಬಿಡಲು ನಿರ್ಧರಿಸಲಾಗಿದೆ ಎಂದು ಬರೆದು ಕೊಂಡು ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅರಣ್ಯ ಅಧಿಕಾರಿ ರಮೇಶ್ ಪಾಂಡೆ ಅವರು ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ನಗರ ಪ್ರದೇಶಗಳಲ್ಲಿ ಆನೆಗಳನ್ನು ರಕ್ಷಿಸುವುದು ನಿಜವಾಗಿಯೂ ಕಷ್ಟ ಮತ್ತು ಸವಾಲಿನ ಕೆಲಸ. ಪಶ್ಚಿಮ ಬಂಗಾಳದ ಮಿಡ್ನಾಪುರದ ಅರಣ್ಯ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಆನೆಯನ್ನು ಮರಳಿ ಕಾಡಿಗೆ ಬಿಡುಗಡೆ ಮಾಡಿದ ನಂತರ ಅದರ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ರಮೇಶ್ ಪಾಂಡೆ ಹೇಳಿದ್ದಾರೆ.

  • ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ ಚಿರತೆ ರೌಂಡ್ಸ್

    ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ ಚಿರತೆ ರೌಂಡ್ಸ್

    ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಹಾಸ್ಟೇಲ್‍ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಕಾಲೇಜಿನ ಕ್ಯಾಂಪಸ್‍ನಲ್ಲಿ ನಡೆದಾಡುತ್ತಿರು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

    ಮುಖ್ಯ ದ್ವಾರದ ಮೂಲಕ ಹಾಸ್ಟೆಲ್ ಗೆ ಚಿರತೆ ಪ್ರವೇಶ ಪಡೆದಿದೆ. ಹಾಸ್ಟೆಲ್ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆಯ ಓಡಾಟದ ದೃಶ್ಯ ಸೆರೆಯಾಗಿದೆ.

    ಹಾಸ್ಟೆಲ್ ಒಳನುಗ್ಗಿದ ಚಿರತೆ ಸಿಬ್ಬಂದಿಯ ಶಬ್ದ ಕೇಳಿ ಮತ್ತೆ ಹೊರಹೋಗಿದೆ. ಇದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಮೆಡಿಕಲ್ ಕಾಲೇಜಿನ ಪಕ್ಕದಲ್ಲಿ ಯಡಬೆಟ್ಟವಿದ್ದು ಬೆಟ್ಟದಿಂದ ಚಿರತೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಚಿರತೆ ಸೆರೆಹಿಡಿಯುವಂತೆ ಜನ ಆಗ್ರಹಿಸಿದ್ದಾರೆ.

    ಚಿರತೆ ಹಾಸ್ಟೆಲ್ ಕಟ್ಟಡದಲ್ಲಿ ಓಡಾಡುತ್ತಿರುವ ವಿಡಿಯೋ ತುಣುಕನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಪರ್ವೀನ್ ಕಸ್ವಾನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಸುಮಾರು 8,000 ಜನ ವೀಕ್ಷಿಸಿದ್ದಾರೆ.

  • ಡಿಸೆಂಬರ್ 1ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳು ಪ್ರಾರಂಭ

    ಡಿಸೆಂಬರ್ 1ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳು ಪ್ರಾರಂಭ

    ಬೆಂಗಳೂರು: ಡಿಸೆಂಬರ್ 1ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜು ಆರಂಭ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

    ಕೊರೊನಾ ಕಾರಣದಿಂದ ಬಾಗಿಲು ಮುಚ್ಚಿದ್ದ ರಾಜ್ಯದ ವೈದ್ಯಕೀಯ ಕಾಲೇಜುಗಳು ಮತ್ತೆ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ. ಮೆಡಿಕಲ್, ಡೆಂಟಲ್, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುಧಾಕರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.

    ಮಾರ್ಗಸೂಚಿ ಏನಿದೆ?
    * ನಿತ್ಯ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು ಕಡ್ಡಾಯ.
    * ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
    * ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು.
    * ತರಗತಿ ಮುಗಿದ ಬಳಿಕ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
    * ಪ್ರತಿ ಕ್ಯಾಂಪಸ್‍ಗಳಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭಿಸಬೇಕು.

    * ಬೋಧಕ-ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್, ಗ್ಲೌಸ್ ಧರಿಸಬೇಕು.
    * ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದ ಬಗ್ಗೆ ಅಗತ್ಯ ಜಾಗೃತಿ ಮೂಡಿಸಬೇಕು.
    * ಕನಿಷ್ಠ ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಬೇಕು.
    * ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ಶುಚಿತ್ವ ಕಾಪಾಡಬೇಕು.
    * ವಾಹನ ವ್ಯವಸ್ಥೆ ಇರೋ ಕಾಲೇಜುಗಳು ನಿತ್ಯ ವಾಹನಗಳನ್ನು ಸ್ಯಾನಿಟೈಸ್ ಮಾಡಬೇಕು.

    * ಶೈಕ್ಷಣಿಕ ವರ್ಷ ತಡವಾಗಿರೋದ್ರಿಂದ ಶನಿವಾರ ಪೂರ್ತಿ ತರಗತಿ, ರಜೆಗಳಿಗೆ ಬ್ರೇಕ್ ಹಾಕಲು ನಿರ್ಧಾರ.
    * ಶನಿವಾರ-ಭಾನುವಾರ ಆನ್‍ಲೈನ್ ತರಗತಿಗೆ ಹೆಚ್ಚು ಒತ್ತು ನೀಡುವುದು.
    * ಶಿಫ್ಟ್ ಪ್ರಕಾರ ತರಗತಿ ನಡೆಸಲು ನಿರ್ಧಾರ.
    * ಒಂದು ತರಗತಿಯಲ್ಲಿ 30 ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಮಾಡಲು ಅವಕಾಶ.
    * ಮಾರ್ಗಸೂಚಿ ಅನುಷ್ಠಾನಕ್ಕೆ ಪ್ರಾಂಶುಪಾಲರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ.

  • ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ: ಸುಧಾಕರ್

    ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ: ಸುಧಾಕರ್

    – 400ಕ್ಕೂ ಹೆಚ್ಚು ಹಾಸಿಗೆಗಳ ಸುಸಜ್ಜಿತ ಕಾಲೇಜು
    – ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ

    ಬೆಂಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ 24ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರಿನಲ್ಲಿ ದಿನ ಗೊತ್ತುಪಡಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಕೆಲ ಬದಲಾವಣೆ ಸೂಚಿಸಲಾಗಿದೆ. 400ಕ್ಕೂ ಹೆಚ್ಚು ಹಾಸಿಗೆ ಇರುವ ಈ ವೈದ್ಯಕೀಯ ಕಾಲೇಜಿನ ಜೊತೆಗೆ 200 ಹಾಸಿಗೆಯ ತಾಯಿ-ಶಿಶುವಿನ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

    ಮುಂದಿನ ಜೂನ್ ವೇಳೆಗೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಅದಕ್ಕಾಗಿ ತಾತ್ಕಾಲಿಕ ಕಟ್ಟಡ ಗುರುತಿಸಿದ್ದು, ಹೊಸ ಕಟ್ಟಡ ನಿರ್ಮಾಣ ಬಳಿಕ ಸ್ಥಳಾಂತರಿಸಲಾಗುತ್ತದೆ. ಜೊತೆಗೆ ಎನ್‍ಎಂಸಿ ನಿಯಮದಂತೆ, 3 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಒಂದು ನಗರ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು. 69 ಬೋಧಕ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ಪರವಾನಗಿ ನೀಡಿದ್ದು, 91 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ನಾಲ್ಕರಲ್ಲಿ ವೈದ್ಯ ಹುದ್ದೆ ಭರ್ತಿ ಮಾಡಲಾಗುವುದು ಎಂದು ವಿವರಿಸಿದರು.

    ಚಿಕ್ಕಮಗಳೂರಿನಲ್ಲಿ ದಿನಕ್ಕೆ 1,900 ಕೋವಿಡ್ ಪರೀಕ್ಷೆ ನಿಗದಿಪಡಿಸಿದ್ದು, ಇದಕ್ಕೂ ಹೆಚ್ಚಿನ ಪರೀಕ್ಷೆ ನಡೆಯುತ್ತಿದೆ. ಇದರಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.08 ರಷ್ಟಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ಹೆಚ್ಚು ಜನರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

    ಪ್ರತಿ ತಿಂಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಸ್ಥಳೀಯ ಆರೋಗ್ಯಾಧಿಕಾರಿಗಳ ಮೇಲೆ ನಿಗಾ ಇರಿಸಿ, ಸೌಲಭ್ಯಗಳು ಜನರಿಗೆ ತಲುಪಲು ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ. ಜನೌಷಧಿ ಮಳಿಗೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆರಂಭಿಸಲು ತೀರ್ಮಾನಿಸಿದ್ದು, ಈ ಬಗ್ಗೆಯೂ ಚರ್ಚೆಯಾಗಿದೆ ಎಂದು ವಿವರಿಸಿದರು.

    2,500 ವೈದ್ಯರ ನೇಮಕ
    ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಕ್ರಿಯೆ ಮುಗಿಯಲಿದೆ. ವೈದ್ಯರ ಕೊರತೆ ಆಗಬಾರದು ಎಂಬ ದೃಢ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಸಚಿವರು ಹೇಳಿದ ಇತರೆ ಅಂಶಗಳು
    1. ನವೆಂಬರ್ ಅಂತ್ಯದೊಳಗೆ ಹೋಮ್ ಸ್ಟೇಗಳ ಮಾಹಿತಿ ಪಡೆದು ಅಲ್ಲಿ ಇರುವವರ ಮೇಲೆ ನಿಗಾ ಇರಿಸಲಾಗುತ್ತದೆ. ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುವುದು.
    2. ಚಿಕ್ಕಮಗಳೂರು ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ.
    3. ಖಾಸಗಿ ಆಸ್ಪತ್ರೆಗಳು ಹೆಚ್ಚು ಶುಲ್ಕ ವಸೂಲಿ ಮಾಡಿದರೆ, ಪರವಾನಗಿ ರದ್ದು ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು.
    4. ಸರ್ಕಾರಕ್ಕೆ ಕಠಿಣ ಸವಾಲುಗಳಿವೆ. ಕೋವಿಡ್ ನಿಂದಾದ ಆರ್ಥಿಕ ಸಂಕಷ್ಟ, ಅತಿವೃಷ್ಟಿ ಮೊದಲಾದ ಸವಾಲುಗಳು ಬಂದಿವೆ. ಸರ್ಕಾರ ಎಂದರೆ ಅಕ್ಷಯಪಾತ್ರೆ ಅಲ್ಲ. ಇಂತಹ ಸಂದರ್ಭದಲ್ಲಿ ಅನಿವಾರ್ಯವಾಗಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ.
    5. ಪರಿಸರ ಸ್ನೇಹಿ ಪಟಾಕಿ ಸಿಡಿಸಲು ಅವಕಾಶವಿದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವೇ ಹೊರತು ಯಾರದ್ದೇ ಲಾಭವಲ್ಲ.
    6. ಕೆಲ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯನ್ನು ಪಿಪಿಪಿ ಮಾದರಿಯಲ್ಲಿ ಮಾಡಲಾಗಿದೆ. ಆದರೆ ನಿರ್ವಹಣೆ ಮಾಡುತ್ತಿದ್ದ ಕಂಪನಿ ಆರ್ಥಿಕ ಸಂಕಷ್ಟಕ್ಕೊಳಗಾಗಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು.

  • ದಿನಕ್ಕೆ 1 ಸಾವಿರ ಕೋವಿಡ್-19 ಟೆಸ್ಟ್ ಗುರಿ- ಸಚಿವ ಸುಧಾಕರ್

    ದಿನಕ್ಕೆ 1 ಸಾವಿರ ಕೋವಿಡ್-19 ಟೆಸ್ಟ್ ಗುರಿ- ಸಚಿವ ಸುಧಾಕರ್

    – ಟೆಸ್ಟ್ ಹೆಚ್ಚಿಸುವಂತೆ ಮೆಡಿಕಲ್ ಕಾಲೇಜು, ಖಾಸಗಿ ಸಂಸ್ಥೆಗಳಿಗೆ ಸೂಚನೆ
    – 10- 15 ದಿನಗಳಲ್ಲಿ ಟೆಸ್ಟ್ ಹೆಚ್ಚಿಸಲು ಗಡುವು

    ಬೆಂಗಳೂರು: ಕೋವಿಡ್-19 ಪರೀಕ್ಷೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಮುಂದಿನ 10-15 ದಿನಗಳಲ್ಲಿ ಪ್ರತಿ ದಿನ 500ರಿಂದ 1 ಸಾವಿರ ಟೆಸ್ಟ್ ಗಳವರೆಗೆ ಗುರಿ ತಲುಪಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಸರ್ಕಾರ ಕಳೆದ ನಾಲ್ಕು ತಿಂಗಳಿಂದ ಅನೇಕ ಸೂಚನೆಗಳನ್ನು ನೀಡಿದೆ. ಲ್ಯಾಬ್ ಸ್ಥಾಪನೆಗೆ ಅಗತ್ಯವಿರುವ ನೆರವು ನೀಡಲಾಗಿದೆ. ಸಿಬ್ಬಂದಿಗೆ ನಿಮ್ಹಾನ್ಸ್ ಮೂಲಕ ತರಬೇತಿ ನೀಡಲಾಗಿದೆ. ಆದರೂ ಸರ್ಕಾರದ ಜೊತೆ ಕೈಜೋಡಿಸುತ್ತಿಲ್ಲ. ಇಂತಹ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮೆಡಿಕಲ್ ಕಾಲೇಜುಗಳಲ್ಲಿ ಪ್ರಯೋಗಾಲಯ ಸ್ಥಾಪನೆ ಮಾಡುವುದು ಕಡ್ಡಾಯ. ಎಂಸಿಐನಿಂದ ಸ್ಪಷ್ಟ ನಿದರ್ಶನಗಳಿವೆ. ಆದರೂ ಕೆಲವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇನ್ನು ಇಂತಹ ಮೀನಮೇಷ ವರ್ತನೆಯನ್ನು ಸಹಿಸುವುದಿಲ್ಲ ಎಂದರು.

    ರಾಜ್ಯದಲ್ಲಿ ಸೋಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಟೆಸ್ಟ್ ಫಲಿತಾಂಶ ವಾರಗಳವರೆಗೆ ಬರುತ್ತಿಲ್ಲ ಎಂಬ ದೂರುಗಳಿವೆ. ಇನ್ನು ಮುಂದೆ 24 ರಿಂದ 30 ಗಂಟೆಗಳಲ್ಲಿ ವರದಿ ಕೈಸೇರಬೇಕು. ಈ ಉದ್ದೇಶದಿಂದ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅವರಿಗೆ ಇದರ ಉಸ್ತುವಾರಿಗೆ ನಿಯೋಜಿಸಲಾಗಿದೆ ಎಂದರು.

    ಕೊಪ್ಪಳ ಆಸ್ಪತ್ರೆಯಲ್ಲಿ ಕನಿಷ್ಠ ಸಿಬ್ಬಂದಿ ಇಟ್ಟುಕೊಂಡು 1200 ಟೆಸ್ಟ್‍ಗಳನ್ನು ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ. ಉಳಿದ ಸಂಸ್ಥೆಗಳು ಈ ಗುರಿ ತಲುಪಬೇಕು. ಅದಕ್ಕಾಗಿ ಅಗತ್ಯ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಬೇಕು. ಪ್ರತಿದಿನ ಮಾಡುವ ಟೆಸ್ಟ್ ಮತ್ತು ಬಾಕಿ ಉಳಿದ ಸ್ಯಾಂಪಲ್ ವಿವರಗಳನ್ನು ರಾಜ್ಯದ ಡ್ಯಾಷ್ ಬೋಡ್9ನಲ್ಲಿ ಸಿಗುವಂತೆ ಎಲ್ಲರೂ ಮಾಹಿತಿ ಒದಗಿಸಬೇಕು. ಇದಕ್ಕಾಗಿಯೇ ಡಾಟಾ ಆಪರೇಟರ್ ಗಳನ್ನು ನೇಮಕ ಮಾಡಬೇಕು. ಇನ್ನು ಮುಂದೆ ನೆಪಗಳನ್ನು ಹೇಳುವಂತಿಲ್ಲ ಎಂದರು.

    ರೋಗ ಲಕ್ಷಣ ಇದ್ದವರು ಮತ್ತು ಇಲ್ಲದವರ ಸ್ಯಾಂಪಲ್ ಗಳನ್ನು ಸರ್ಕಾರ ನೀಡಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಟೆಸ್ಟ್ ಮಾಡಬೇಕು. ಚೌಕಾಸಿ ಪ್ರಶ್ನೆಯೇ ಇಲ್ಲ. ಮೆಡಿಕಲ್ ಕಾಲೇಜು ಹೊರತು ಪಡಿಸಿ ಇರುವ ಖಾಸಗಿ ಪ್ರಯೋಗಾಲಯಗಳ ಜೊತೆ ಬುಧವಾರ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಾಮರ್ಶೆ ಮಾಡಲಾಗುತ್ತದೆ ಎಂದು ಸಚಿವರು ಎಂದು ತಿಳಿಸಿದರು.

    ಪ್ರಯೋಗಾಲಯ ಸ್ಥಾಪನೆ, ಸಿಬ್ಬಂದಿ ತರಬೇತಿ ಹಾಗೂ ನಾನಾ ಸಂಸ್ಥೆಗಳ ಅಕ್ರಡೇಶನ್ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿತ್ತಿರುವ ನಿಮ್ಹಾನ್ಸ್ ನ ಡಾ.ರವಿ ಅವರನ್ನು ಸಚಿವರು ಅಭಿನಂದಿಸಿದರು. ಮುಂದಿನ ಹತ್ತು ದಿನಗಳಲ್ಲಿ ಬಾಕಿ ಇರುವ 25 ರಿಂದ 30 ಪ್ರಯೋಗಾಲಯಗಳನ್ನು ಸ್ಥಾಪಿಸಿ ಟೆಸ್ಟ್ ಗಳ ವಿಷಯದಲ್ಲಿ ಗೊಂದಲ ಉದ್ಭವಿಸದಂತೆ ನೋಡಿಕೊಳ್ಳಬೇಕು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದರು.

  • ಯಾದಗಿರಿ ಮೆಡಿಕಲ್ ಕಾಲೇಜು ರಸ್ತೆ ನಿರ್ಮಾಣದಲ್ಲಿ ಪ್ರಭಾವಿಗಳ ಹಿಂಬದಿಯಾಟ – ಭೂಮಿ ಕೊಟ್ಟವರ ಕಣ್ಣೀರು

    ಯಾದಗಿರಿ ಮೆಡಿಕಲ್ ಕಾಲೇಜು ರಸ್ತೆ ನಿರ್ಮಾಣದಲ್ಲಿ ಪ್ರಭಾವಿಗಳ ಹಿಂಬದಿಯಾಟ – ಭೂಮಿ ಕೊಟ್ಟವರ ಕಣ್ಣೀರು

    ಯಾದಗಿರಿ: 2018ರಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ದೃಷ್ಟಿಕೋನ ಇಟ್ಟುಕೊಂಡು ನಗರದ ಹೊರವಲಯದ ಮುದ್ನಾಳ್ ತಾಂಡಾದ ಬಳಿ 300 ಹಾಸಿಗೆಯ ಸಾಮರ್ಥ್ಯದ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಿಸಲಾಗಿದೆ. ನಿರೀಕ್ಷೆಯಂತೆ ಕಳೆದ ವರ್ಷ ಕೇಂದ್ರ ಸರ್ಕಾರ ಮೆಡಿಕಲ್ ಕಾಲೇಜು ಸಹ ಮಂಜೂರು ಮಾಡಿದೆ. ವಿಪರ್ಯಾಸ ಎಂದರೆ ಕಟ್ಟಡ ಕಾಮಗಾರಿ ಪೂರ್ಣವಾಗಿದ್ದರೂ ರಸ್ತೆಗೆ ಜಾಗ ಕೊಟ್ಟವರಿಗೆ ಸಂಕಷ್ಟ ಮಾತ್ರ ತಪ್ಪಿಲ್ಲ.

    ಆಸ್ಪತ್ರೆಗೆ 2017ರಲ್ಲಿ ನಿಗದಿಯಾಗಿದ್ದ ಜಾಗ ಬಿಟ್ಟು, ಈಗ ಬೆರೆಡೆ ಮಾರ್ಗ ಬದಲಿಸಿದ ಜಿಲ್ಲಾಡಳಿತ ಜಮೀನು ಮಾಲೀಕರ ಅನುಮತಿ ಇಲ್ಲದೆ, ರಸ್ತೆ ನಿರ್ಮಾಣ ಮಾಡುತ್ತಿದೆ. ಚಿತ್ತಾಪುರ ಮುಖ್ಯ ರಸ್ತೆಯಿಂದ ಸುಮಾರು 7 ಎಕ್ರೆ ಉದ್ದ ಮತ್ತು 100 ಅಡಿ ಅಗಲವಾದ ರಸ್ತೆ ನಿರ್ಮಿಸಲು 2017ರಲ್ಲಿ ಆಸ್ಪತ್ರೆ ಬ್ಲೂ ಪ್ರಿಂಟ್ ತಯಾರಿಸಲಾಗಿತ್ತು. ಅದರಂತೆ ಸುಮಾರು 21 ರೈತರ ಜಮೀನಲ್ಲಿ ಈ ರಸ್ತೆ ಹಾದು ಹೋಗುತ್ತದೆ. ಇದಕ್ಕೆ ಈಗಾಗಲೇ ರೈತರು ಸಹ ಸಮ್ಮತಿ ನೀಡಿ ಕೆಲವೊಬ್ಬರು ಪರಿಹಾರ ಸಹ ಪಡೆದಿದ್ದರು. ಇನ್ನೂ ಕೆಲವರು ಭೂಮಿ ಕೊಡುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂತಹ ಹೊತ್ತಿನಲ್ಲಿ ಜಿಲ್ಲಾಡಳಿತ ತನ್ನ ವರಸೆ ಬದಲಾಯಿಸಿದ್ದು, ಮೊದಲು ನಿಗದಿ ಮಾಡಿದ ಸ್ಥಳವನ್ನು ಬಿಟ್ಟು ಬೆರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದೆ.

    ಅಲ್ಲದೇ ಇದಕ್ಕೆ ರೈತರಿಂದ ಯಾವುದೇ ಅನುಮತಿ ಕೂಡ ಜಿಲ್ಲಾಡಳಿತ ಪಡೆದಿಲ್ಲ. ಹೀಗಾಗಿ ಕೆಲ ರೈತರ ಅರ್ಧ ಜಮೀನು ಈ ರಸ್ತೆಯ ಪಾಲಾಗುತ್ತಿದೆ. ಇದು ಭೂಮಿ ಮಾಲೀಕರ ನೋವಿಗೆ ಕಾರಣವಾಗಿದೆ. ರುಕ್ಮಿಣಿ ಬಾಯಿ ಮತ್ತು ತಾರಾಬಾಯಿ ಚವ್ಹಾಣ ಅವರಿಗೆ ಸೇರಿದ ಜಾಗ ಸರ್ವೆ ನಂಬರ್ 2/2ರಲ್ಲಿ ಈ ಹಿಂದೆ ಗುರುತಿಸಿದ್ದಕ್ಕಿಂತ ಹೆಚ್ಚಿಗೆ ಜಾಗವನ್ನು ರಸ್ತೆ ಕಾಮಗಾರಿಗೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇದರ ಪರಿಣಾಮ ಈ ಮಹಿಳೆಯರ ಬಳಿ ಇರುವ ಹೊಲದಲ್ಲಿ ಶೇ. 95ರಷ್ಟು ಜಾಗ ರಸ್ತೆಗೆ ಹೋಗುತ್ತದೆ. ಇದರಿಂದ ಈ ಕುಟುಂಬಕ್ಕೆ ತಾವು ಬೀದಿಗೆ ಬೀಳುವ ಆತಂಕ ಎದುರಾಗಿದೆ.

    2017ರಲ್ಲಿ ಸಿದ್ಧವಾಗಿದ್ದ ರಸ್ತೆ ಕಾಮಾಗರಿ ನಕ್ಷೆಯಲ್ಲಿ ಸರ್ವೆ ನಂಬರ್ 2/2ರ 2 ಗುಂಟೆ ಜಾಗವನ್ನ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದರೆ ಪರಿಷ್ಕೃತ ರಸ್ತೆ ನಕ್ಷೆಯಲ್ಲಿ 14 ಗುಂಟೆ ಜಾಗವನ್ನ ಸ್ವಾಧೀನ ಪಡಿಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಹೆಚ್ಚುವರಿ ಜಾಗ ಪಡೆದುಕೊಳ್ತಿರುವ ಬಗ್ಗೆ ಮಾಲೀಕರಿಗೆ ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡಿಲ್ಲ. ಇತ್ತ ಕಂದಾಯ ಇಲಾಖೆ ಅಧಿಕಾರಿಗಳು ರಾತ್ರೋರಾತ್ರಿ ಸರ್ವೆ ಮಾಡಿ, ಯಾವುದೇ ಮುನ್ಸೂಚನೆ ನೀಡದೆ ಜಾಗದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ.

    ಇದರ ಹಿಂದೆ ಕೆಲ ಕಾಣದ ಕೈಗಳಿದ್ದು, ಪ್ರಭಾವಿಯೊಬ್ಬರ ಜಮೀನು ಉಳಿಸಲು ಕೆಲ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಅನ್ನುವ ಆರೋಪ ಕೇಳಿ ಬಂದಿದೆ. ಆಸ್ಪತ್ರೆ ಮತ್ತು ಕಾಲೇಜು ನಿರ್ಮಾಣವಾಗುತ್ತಿರುವ ಹಿನ್ನೆಲೆ ಈ ಭೂಮಿಗೆ ಈಗ ಬಂಗಾರದ ಬೆಲೆ ಬಂದಿದ್ದು, ಇದರ ಹಿಂದೆ ರಿಯಲ್ ಎಸ್ಟೇಟ್ ಮಾಫಿಯಾದ ಕೈವಾಡಯಿದೆ ಎಂಬ ಆರೋಪವೂ ಕೇಳಿಬರುತ್ತಿದೆ.

  • ಶೀಘ್ರವೇ ಸಂಪುಟ ವಿಸ್ತರಣೆ- ಮಂತ್ರಿ ಸ್ಥಾನ ಸಿಗೋ ನಂಬಿಕೆ ಇದೆ: ಸುಧಾಕರ್

    ಶೀಘ್ರವೇ ಸಂಪುಟ ವಿಸ್ತರಣೆ- ಮಂತ್ರಿ ಸ್ಥಾನ ಸಿಗೋ ನಂಬಿಕೆ ಇದೆ: ಸುಧಾಕರ್

    -ಮೆಡಿಕಲ್ ಕಾಲೇಜಿಗೆ ಭೂಮಿ ಪೂಜೆ

    ಚಿಕ್ಕಬಳ್ಳಾಪುರ: ಕೆಲವೇ ದಿನಗಳಲ್ಲಿ ಸುಧಾಕರ್ ಮಂತ್ರಿಯಾಗುತ್ತಾರೆ ಎಂದು ಮಾನ್ಯ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದು. ಹೀಗಾಗಿ ಬಿಎಸ್‍ವೈ ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಅದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ಕೆ ಸುಧಾಕರ್ ಹೇಳಿದರು.

    ಚಿಕ್ಕಬಳ್ಳಾಪುರ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಆರೂರು ಗ್ರಾಮದ ಬಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಉಪಚುನಾವಣೆಗೆ ಮುನ್ನವೂ ಸಿಎಂ ಬಿಎಸ್‍ವೈ ಮೆಡಿಕಲ್ ಕಾಲೇಜಿಗೆ ಶಂಕುಸ್ಥಾಪನೆ ಮಾಡಿದ್ದರು. ಈಗ 525 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ಸಚಿವ ಸಂಪುಟ ವಿಳಂಬಕ್ಕೆ ತಮ್ಮ ಬೆಂಬಲಿಗರು ಬೇಸರ ಪಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ಸಿಎಂ ಅವರು ನಮಗಾಗಿ 525 ಕೋಟಿ ರೂ. ಮೆಡಿಕಲ್ ಕಾಲೇಜು ಮಂಜೂರು ಮಾಡಿದ್ದಾರೆ. ದಿನಗಳು ಚೆನ್ನಾಗಿಲ್ಲ ಎಂದು ಇಷ್ಟು ದಿನ ಮಾಡಲಿಲ್ಲ, ಈಗ ಎಲ್ಲವೂ ಪರಿಪಕ್ವವಾಗಿದೆ. ನೂರಕ್ಕೆ ನೂರು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು ಆತ್ಮವಿಶ್ವಾಸದ ವ್ಯಕ್ತಪಡಿಸಿದರು.

    ಹಿರಿಯ ಶಾಸಕರು, ಕಿರಿಯ ನೂತನ ಶಾಸಕರಿಗೆ ತಮ್ಮ ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳ ಪಕ್ಷ ಹಾಗೂ ಹೈಕಮಾಂಡ್‍ಗೆ ನಾಯಕರು ಕೊಡುವ ಬೆಲೆಗೆ ಸಾಕ್ಷಿಯಾಗಿದೆ ಎಂದರು. ಪದವಿ ಮುಖ್ಯ ಅಲ್ಲ, ಪಕ್ಷ ಹಾಗೂ ಸರ್ಕಾರಕ್ಕೆ ಒಳ್ಳೆಯಾಗಲಿ ಎಂದು ಅಧಿಕಾರ ಮುಖ್ಯ ಅಲ್ಲ ಅಂತ ತ್ಯಾಗ ಮಾಡ್ತೀವಿ ಎಂದಿರುವುದು ಅವರ ಹೃದಯ ವೈಶಾಲ್ಯತೆಯ ಗುಣ ಎಂದರು.

    ಬುಧವಾರ ಅಥವಾ ಗುರುವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂಬ ಮಾಹಿತಿ ಇದೆ. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿಯವರು ಪದೇ ಪದೇ ಯಡಿಯೂರಪ್ಪನವರ ಬಗ್ಗೆ ಟೀಕೆ ಮಾಡುತ್ತಿದ್ದು, ಅವರಿಗೆ ಸಿಎಂ ಕುರ್ಚಿ ಮೇಲಿನ ಮೋಹಕ್ಕೆ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

  • ಸಮಾಜಘಾತುಕ ಶಕ್ತಿಗಳ ಬಲ ಹೆಚ್ಚಾಗಲು ಹಿಂದಿನ ಸರ್ಕಾರ ಕಾರಣ: ಡಿಸಿಎಂ ಅಶ್ವಥ್

    ಸಮಾಜಘಾತುಕ ಶಕ್ತಿಗಳ ಬಲ ಹೆಚ್ಚಾಗಲು ಹಿಂದಿನ ಸರ್ಕಾರ ಕಾರಣ: ಡಿಸಿಎಂ ಅಶ್ವಥ್

    – ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜಿಲ್ಲ

    ಮೈಸೂರು: ರಾಜ್ಯದಲ್ಲಿ ಬಾಂಬ್ ಪತ್ತೆಯಂತಹ ಪ್ರಕರಣಗಳಿಗೆ ಹಿಂದಿನ ಸರ್ಕಾರಗಳೇ ಕಾರಣ. ಸಮಾಜಘಾತುಕ ಶಕ್ತಿಗೆ ಕಡಿವಾಣ ಹಾಕೋದು ಬಿಟ್ಟು ಪ್ರೋತ್ಸಾಹ ಕೊಟ್ಟ ಪರಿಣಾಮ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಡಿಸಿಎಂ, ಹಿಂದಿನ ಸರ್ಕಾರ ಸಮಾಜಘಾತುಕ ಕೆಲಸ ಮಾಡುತ್ತಿದ್ದವರ ಮೇಲಿನ ಕೇಸ್‍ಗಳನ್ನ ವಾಪಸ್ ತೆಗೆದುಕೊಂಡಿದ್ದಾರೆ. ಅದಕ್ಕೆ ಅವರೆಲ್ಲಾ ಕಾನೂನು ಮೀರಿ ದೊಡ್ಡ ಶಕ್ತಿಯಾಗಿ ನಿಂತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಇಂದು ಈ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದರು.

    ನಮ್ಮ ಸರ್ಕಾರ ಎಲ್ಲವನ್ನು ನಿಯಂತ್ರಣ ಮಾಡುವ ಪ್ರಯತ್ನ ಮಾಡಿದೆ. ಆದಷ್ಟು ಘಟನೆಗಳು ನಡೆಯುವ ಮುನ್ನವೇ ತಡೆಹಿಡಿಯಲಾಗಿದೆ. ಬಾಂಬ್ ತಯಾರಿಕೆಯ ಕೆಲ ವಸ್ತುಗಳು ಕಾರ್ಖಾನೆ ಉಪಯೋಗಕ್ಕೆ ಸಿಗುತ್ತೆ. ಅವುಗಳನ್ನ ಬಳಸಿಕೊಂಡು ಈ ಕೃತ್ಯ ಎಸಗುತ್ತಿದ್ದಾರೆ. ಇಂತಹ ವಸ್ತುಗಳನ್ನು ಅವರ ಕೈಗೆ ಸಿಗದಂತೆ ನೋಡಿಕೊಳ್ಳುತ್ತೇವೆ ಎಂದರು.

    ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜಿಲ್ಲ ಎಂದು ಅಶ್ವಥ್ ನಾರಾಯಣ್ ಪರೋಕ್ಷವಾಗಿ ಹೇಳಿದ್ದಾರೆ. ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಮಾಡುತ್ತಿದ್ದೇವೆ. ರಾಮನಗರದಲ್ಲಿ ಮೆಡಿಕಲ್ ಕಾಲೇಜು ಜೊತೆ ಹೆಲ್ತಿ ಸಿಟಿ ಮಾಡಲಾಗುತ್ತೆ. ರಾಮನಗರದಲ್ಲಿ ಮೆಡಿಕಲ್ ಕಾಲೇಜು ಮಾಡುತ್ತಿರುವುದರಿಂದ ತಾಲೂಕು ಕೇಂದ್ರದಲ್ಲಿ ಮೆಡಿಕಲ್ ಕಾಲೇಜಿನ ಅಗತ್ಯ ಇರಲ್ಲ ಎಂದರು. ರಾಜ್ಯದಲ್ಲಿ ಮಂಜೂರಾಗಿರುವ ನಾಲ್ಕು ಮೆಡಿಕಲ್ ಕಾಲೇಜಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

  • ಯಾದಗಿರಿಗೆ ಮೆಡಿಕಲ್ ಕಾಲೇಜು ಮಂಜೂರು

    ಯಾದಗಿರಿಗೆ ಮೆಡಿಕಲ್ ಕಾಲೇಜು ಮಂಜೂರು

    ಯಾದಗಿರಿ: ಜಿಲ್ಲೆಯ ಜನರ ಬಹು ದಿನ ಕನಸು ಕೊನೆಗೂ ನನಸಾಗಿದೆ. ಹೈದರಾಬಾದ್ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶ ಎನ್ನಲಾಗುತ್ತಿದ್ದ ಯಾದಗಿರಿ ಜಿಲ್ಲೆಗೆ ಅಗತ್ಯವಿದ್ದ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗಿದೆ.

    ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೇಂದ್ರ ಸರ್ಕಾರದಿಂದ ಅಧಿಕೃತ ಘೋಷಣೆ ಮಾಡಿದ್ದಾರೆ.ಸಂಸದ ರಾಜಾ ಅಮರೇಶ್ ನಾಯಕ್ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ನಿಮ್ಮ ನಾಯಕತ್ವದಲ್ಲಿ ಕಾರ್ಯ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.

    ಗ್ರಾಮ ವಾಸ್ತವ್ಯ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೆಡಿಕಲ್ ಕಾಲೇಜು ಮಂಜೂರಾತಿಗೆ ತಡೆ ನೀಡಿದ್ದರು. ಇದರಿಂದ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿ ಯಾದಗಿರಿ ಬಂದ್ ಸಹ ಮಾಡಲಾಗಿತ್ತು. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ನಾನು ಮುಖ್ಯಮಂತ್ರಿಯಾದರೆ ಮೆಡಿಕಲ್ ಕಾಲೇಜು ಮಂಜೂರು ಮಾಡುತ್ತೇನೆ ಎಂದು ಬಿಜೆಪಿ ನಾಯಕರು ಹಾಗೂ ಜಿಲ್ಲೆಯ ಜನರಿಗೆ ಮಾತು ಕೊಟ್ಟಿದ್ದರು. ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು ಜಿಲ್ಲೆಯ ಜನರಿಗೆ ಖುಷಿ ತಂದಿದೆ.

    ರಾಜ್ಯ ಸಂಪುಟ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಅವರು, ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ 525 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

  • ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ: ಡಿಕೆಶಿ

    ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ: ಡಿಕೆಶಿ

    ರಾಮನಗರ: ಉಪಚುನಾವಣೆಗೂ ಮೊದಲು ಭಾರೀ ಸುದ್ದಿಯಾಗಿದ್ದ ಕನಕಪುರ ಮೆಡಿಕಲ್ ಕಾಲೇಜು ವಿಚಾರ, ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬರುತ್ತಿದಂತೆ ಕನಕಪುರ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಡಾ.ಸುಧಾಕರ್ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ನಡುವಿನ ಕಾಳಗಕ್ಕೂ ಕಾರಣವಾಗಿತ್ತು. ಆದರೆ ಇದೀಗ ಡಿಕೆ ಶಿವಕುಮಾರ್ ಮತ್ತೆ ಮೆಡಿಕಲ್ ವಿಚಾರವಾಗಿ ಸಿಡಿದೆದ್ದಿದ್ದು, ಕನಕಪುರ ಮೆಡಿಕಲ್ ಕಾಲೇಜು ರದ್ದುಗೊಳಿಸಿದ ಬಗ್ಗೆ ಮರು ಪರಿಶೀಲನೆ ನಡೆಸಿ ಮರು ಆದೇಶಕ್ಕಾಗಿ ಪಟ್ಟು ಹಿಡಿದು ಶನಿವಾರ ಸಿಎಂಗೆ ಪತ್ರ ಬರೆದಿದ್ದಾರೆ.

    ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆ ಮರು ಆದೇಶ ಹೊರಡಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಹೋರಾಟಕ್ಕೆ ಆಸ್ಪದ ನೀಡುವುದಿಲ್ಲವೆಂದು ಸಿಎಂ ಯಡಿಯೂರಪ್ಪರನ್ನ ನಂಬಿರುವುದಾಗಿ ಎಂದು ಶಿವಕುಮಾರ್ ಅವರು ಯಡಿಯೂರಪ್ಪನವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಮೆಡಿಕಲ್ ಕಾಲೇಜಿಗೆ ಒತ್ತಾಯಿಸಿ ಶನಿವಾರ ಬರೆದ ಪತ್ರದಲ್ಲಿ ಡಿಕೆ ಶಿವಕುಮಾರ್, ಯಡಿಯೂರಪ್ಪನವರಿಗೆ ಅವರ ದಾಟಿಯಲ್ಲಿದೇ ತಿವಿಯುವುದರ ಮೂಲಕ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಕನಕಪುರದ ಜನತೆಗಾಗಿ ಸರ್ಕಾರ ಕೂಡಲೇ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ಮರು ಮಂಜೂರು ಮಾಡಬೇಕು. ಕಾಲೇಜು ಕಟ್ಟಡ ನಿರ್ಮಾಣದ ಭೂಮಿ ಪೂಜೆಗೆ ದಿನಾಂಕ ನಿಗದಿಪಡಿಸಬೇಕು. ಒಂದು ವೇಳೆ ನಿಮ್ಮ ಸರ್ಕಾರ ಈ ವಿಚಾರದಲ್ಲಿ ದ್ವೇಷದ ರಾಜಕಾರಣ ಮುಂದುವರಿಸಿದರೆ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು. ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ. ಇದಕ್ಕೆ ನೀವು ಅವಕಾಶ ನೀಡುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ‘ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗ ತಾವು ದ್ವೇಷದ ರಾಜಕಾರಣ ಮಾಡುವುದಿಲ್ಲ, ಜನರ ಹಿತದೃಷ್ಟಿ ಹಾಗೂ ಅಭಿವೃದ್ಧಿ ವಿಚಾರವಾಗಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಯಡಿಯೂರಪ್ಪನವರು ಬಸವ ತತ್ವಗಳನ್ನು ಪಾಲಿಸುವುದಾಗಿ ಹೇಳಿಕೊಳ್ಳುವ ಅವರು ಈ ಹಿಂದೆ ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೆ. ಆದರೆ ನಂತರದ ದಿನಗಳಲ್ಲಿ ಅವರು ತಮ್ಮ ಮಾತಿಗೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕನಕಪುರ ವೈದ್ಯಕೀಯ ವಿಜ್ಞಾನ ಕಾಲೇಜು ಆದೇಶವನ್ನು ರದ್ದುಗೊಳಿಸಿರುವುದು ಮುಖ್ಯಮಂತ್ರಿಗಳು ತಮ್ಮ ಮಾತು ತಪ್ಪಿರುವುದಕ್ಕೆ ಸಾಕ್ಷಿಯಾಗಿದೆ.

    ಕಳೆದ ಸರ್ಕಾರ 2018-19ನೇ ಸಾಲಿನ ಬಜೆಟ್‍ನಲ್ಲಿ ಕನಕಪುರ ವೈದ್ಯಕೀಯ ಕಾಲೇಜಿಗೆ ಅನುಮೋದನೆ ನೀಡಿತ್ತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ನೀವು ನಿಮ್ಮ ಅಭಿಪ್ರಾಯ ಹಾಗೂ ಒಪ್ಪಿಗೆಯನ್ನೂ ಸೂಚಿಸಿದ್ದಿರಿ. ನಂತರ ಯೋಜನಾ ಇಲಾಖೆ, ಆರ್ಥಿಕ ಇಲಾಖೆ, ಕಾನೂನು ಮತ್ತು ಸಂಸದೀಯ ಇಲಾಖೆ ಈ ಪ್ರಸ್ತಾವನೆ ಪರಿಶೀಲಿಸಿ 2018ರ ಡಿಸೆಂಬರ್ 13 ರಂದು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದಾದ ನಂತರ ಮೆಡಿಕಲ್ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಕನಕಪುರದ ರಾಯಸಂಧ್ರ ಹಳ್ಳಿಯಲ್ಲಿ 25 ಎಕರೆ ಜಮೀನು ನಿಗದಿ ಮಾಡಲಾಗಿತ್ತು. ನಂತರ ಟೆಂಡರ್ ಕರೆದು ಗುದ್ದಲಿ ಪೂಜೆ ಮಾತ್ರ ಬಾಕಿ ಉಳಿದಿತ್ತು.

    ಟೆಂಡರ್ ಕರೆದು ಗುದ್ದಲಿ ಪೂಜೆ ನಡೆಸುವ ಹಂತದಲ್ಲಿರುವ ಯೋಜನೆಯನ್ನು ನಿಮ್ಮ ಏಕವ್ಯಕ್ತಿ ಸಂಪುಟ ಹಿಂಪಡೆದು ಹಿಂದಿನ ಸರ್ಕಾರದ ಆದೇಶ ರದ್ದುಗೊಳಿಸಿ ಯೋಜನೆಯನ್ನು ರಾತ್ರೋರಾತ್ರಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದು ನನಗೆ ಅಚ್ಚರಿ ತಂದಿದೆ. ನೀವು ಇಂತಹ ನಿರ್ಧಾರ ಕೈಗೊಂಡಿರುವುದು ನನ್ನ ಮನಸ್ಸಿಗೆ ನೋವು ತಂದಿದೆ. ಯಾವುದೇ ಬೇರೆ ಕ್ಷೇತ್ರಕ್ಕೆ ನೀಡಿದ್ದ ಕಾಲೇಜನ್ನು ರದ್ದುಗೊಳಿಸಿ ಕನಕಪುರಕ್ಕೆ ಕಾಲೇಜು ಅನುಮೋದನೆ ನೀಡಿರಲಿಲ್ಲ ಎಂದು ನಿಮಗೆ ನೆನಪಿಸಲು ಇಚ್ಚಿಸುತ್ತೇನೆ. ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ನೀಡಿರುವ ಬಗ್ಗೆ ನಾನು ಯಾವುದೇ ಪ್ರಶ್ನೆ ಮಾಡುವುದಿಲ್ಲ.

    ಸರ್ಕಾರ ತನಗೆ ಇಚ್ಛೆ ಬಂದ ಪ್ರದೇಶಗಳಿಗೆ ಎಷ್ಟು ಕಾಲೇಜುಗಳನ್ನು ಬೇಕಾದರೂ ನೀಡಲಿ. ಆದರೆ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂಬುದು ನಮ್ಮ ವಾದ. ಇತ್ತೀಚೆಗೆ ನೀವು ಮಾಗಡಿಯಲ್ಲಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ನೀಡುವುದಾಗಿ ಕೊಟ್ಟಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಕೂಡಲೇ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ಮರು ಮಂಜೂರು ಮಾಡಬೇಕು. ಅಲ್ಲದೆ ಕಾಲೇಜು ಕಟ್ಟಡ ನಿರ್ಮಾಣದ ಭೂಮಿ ಪೂಜೆಗೆ ದಿನಾಂಕ ನಿಗದಿಪಡಿಸಬೇಕು. ಒಂದು ವೇಳೆ ನಿಮ್ಮ ಸರ್ಕಾರ ಈ ವಿಚಾರದಲ್ಲಿ ದ್ವೇಷದ ರಾಜಕಾರಣ ಮುಂದುವರಿಸಿದೆ. ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    ಒಂದು ವೇಳೆ ಸಿಎಂ ಯಡಿಯೂರಪ್ಪನವರು ಏನಾದ್ರೂ ಕನಕಪುರ ಮೆಡಿಕಲ್ ಕಾಲೇಜನ್ನು ಮರು ಪರಿಶೀಲಿಸಿ ಮರು ಆದೇಶ ಹೊರಡಿಸದೇ ಇದ್ದರೆ, ಡಿಕೆ ಶಿವಕುಮಾರ್ ತಮ್ಮ ಹೋರಾಟ ಶುರು ಮಾಡುವುದು ಪಕ್ಕಾ ಆದಂತಿದೆ. ಅದು ಯಾವ ರೀತಿ ಅನ್ನೋದನ್ನ ಕೂಡಾ ತಿಳಿಸಿರುವುದು ಇದೀಗ ಜಿಲ್ಲೆಯ ಜನರಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.