Tag: ಮ್ಯಾಜಿಸ್ಟ್ರೇಟ್ ತನಿಖೆ

  • ಮಂಗಳೂರು ಗೋಲಿಬಾರ್ – ಮ್ಯಾಜಿಸ್ಟ್ರೇಟ್ ತನಿಖೆ ನಿರ್ಣಾಯಕ ಹಂತಕ್ಕೆ

    ಮಂಗಳೂರು ಗೋಲಿಬಾರ್ – ಮ್ಯಾಜಿಸ್ಟ್ರೇಟ್ ತನಿಖೆ ನಿರ್ಣಾಯಕ ಹಂತಕ್ಕೆ

    ಮಂಗಳೂರು: ಡಿಸೆಂಬರ್19 ರಂದು ನಡೆದ ಮಂಗಳೂರು ಗೋಲಿಬಾರ್ ಪ್ರಕರಣ ತನಿಖೆ ವೇಗ ಪಡೆದಿದೆ. ಮ್ಯಾಜಿಸ್ಟ್ರೇಟ್ ತನಿಖೆ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಈವರೆಗೆ 201 ಮಂದಿಯ ಸಾಕ್ಷ್ಯ ನುಡಿದಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆಯಾಗುತ್ತಿದ್ದು, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

    ಒಟ್ಟು ಎರಡು ಬಾರಿ ಸಾರ್ವಜನಿಕರಿಗೆ ಸಾಕ್ಷ್ಯ ನುಡಿಯಲು ಅವಕಾಶ ನೀಡಿದ್ದು, ಇಂದು ಕೂಡಾ 75 ಕ್ಕೂ ಹೆಚ್ಚು ಮಂದಿ ತನಿಖಾಧಿಕಾರಿಗಳ ಮುಂದೆ ಸಾಕ್ಷ್ಯ ನುಡಿದಿದ್ದಾರೆ. ಫೆಬ್ರವರಿ 13 ರಂದು ಮತ್ತೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಸಾಕ್ಷ್ಯ ಜೊತೆಗೆ ಘಟನೆಯ ವಿಡಿಯೋ ದೃಶ್ಯಾವಳಿಗಳನ್ನು ನೀಡುವಂತೆ ಮ್ಯಾಜಿಸ್ಟ್ರೀಯಲ್ ಜಗದೀಶ್ ಮನವಿ ಮಾಡಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರ್ ಡಾ.ಪಿಎಸ್ ಹರ್ಷರವರಿಗೂ ನೋಟಿಸ್ ನೀಡಲಾಗಿದ್ದು, ಪೊಲೀಸರ ಬಳಿ ಇರುವ ವಿಡಿಯೋವನ್ನೂ ಫೆಬ್ರವರಿ 13 ರಂದು ಒಪ್ಪಿಸುವಂತೆ ಸೂಚನೆ ನೀಡಲಾಗಿದೆ.

    ಈ ನಡುವೆ ತನಿಖೆಯಲ್ಲಿ ಪೊಲೀಸ್ ಹಸ್ತಕ್ಷೇಪವಾಗುತ್ತಿದೆ ಎಂದು ಸಾಕ್ಷ್ಯ ನುಡಿಯಲು ಬಂದವರು ಆರೋಪಿಸಿದ್ದಾರೆ. ಈವರೆಗೆ ಒಟ್ಟು 30 ಮಂದಿಯನ್ನು ಬಂಧನ ಮಾಡಲಾಗಿದ್ದು, ಜಾಮೀನು ಸಿಗದಂತೆ ಪೊಲೀಸರು ವರ್ತಿಸುತ್ತಿರೋದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರಾಪರಾಧಿಗಳಿಗೆ ಪ್ರಕರಣದಲ್ಲಿ ಶಿಕ್ಷೆಯಾಗುತ್ತಿದ್ದು, ಕೇಸ್ ಮೇಲೆ ಕೇಸ್ ಹಾಕಲಾಗುತ್ತಿದೆ ಎಂದು ದೂರಿದ್ದಾರೆ.

    ಈ ಮಧ್ಯೆ ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಪೊಲೀಸರ ಮೇಲೆ ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯ ಕೇಳಿಬಂದಿದೆ. ಗೋಲಿಬಾರ್ ಜಸ್ಟಿಸ್ ಫಾರಂ, ಗೋಲಿಬಾರ್ ನಡೆಸಿದ ತಪ್ಪಿತಸ್ಥ ಪೊಲೀಸರ ಮೇಲೆ ಕೊಲೆ ಪ್ರಕರಣ ಮತ್ತು ಲಾಠಿ ಚಾರ್ಜ್ ನಡೆಸಿದ ಪೊಲೀಸರ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದೆ. ಇದಲ್ಲದೆ ಗೋಲಿಬಾರ್ ನಲ್ಲಿ ಸಾವಿಗೀಡಾದ ಅಬ್ದುಲ್ ಜಲೀಲ್ ಮತ್ತು ನೌಸೀನ್ ಮೇಲಿನ ಪ್ರಕರಣ ಕೈಬಿಡಬೇಕು, ಜಲೀಲ್ ಮತ್ತು ನೌಸೀಬ್ ಕುಟುಂಬಕ್ಕೆ ತಲಾ 25 ಲಕ್ಷ ಮತ್ತು ಗಂಭೀರ ಗಾಯಗೊಂಡವರಿಗೆ 15 ಲಕ್ಷ ಪರಿಹಾರ ನೀಡಬೇಕೆಂದು ವೇದಿಕೆ ಆಗ್ರಹಿಸಿದೆ. ತನಿಖೆಯ ನೆಪದಲ್ಲಿ, ಘಟನಾ ಸ್ಥಳದಲ್ಲಿದ್ದ ಕೇರಳ ನಾಗರಿಕರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದ್ದು, ಪೊಲೀಸರು ತಕ್ಷಣ ಈ ಕ್ರಮವನ್ನು ನಿಲ್ಲಿಸಬೇಕೆಂದು ಗೋಲಿಬಾರ್ ಜಸ್ಟಿಸ್ ಫಾರಂ ಒತ್ತಾಯಿಸಿದೆ.

    ಮಂಗಳೂರನ್ನು ಬೆಚ್ಚಿಬೀಳಿಸಿದ್ದ ಪ್ರಕರಣ ಮ್ಯಾಜಿಸ್ಟ್ರೇಟ್ ತನಿಖೆ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಪೊಲೀಸರ ಮೇಲೆ ಆರೋಪಗಳು ನಿರಂತರವಾಗಿ ಕೇಳಿ ಬರುತ್ತಿದ್ದು, ಕಾನೂನು ಹೋರಾಟದಲ್ಲಿ ತಪ್ಪು ಒಪ್ಪುಗಳು ನಿರ್ಣಯವಾಗಲಿದೆ.

  • ಮಂಗಳೂರು ಗೋಲಿಬಾರ್ – ಮ್ಯಾಜಿಸ್ಟ್ರೇಟ್ ತನಿಖೆ ಆರಂಭ

    ಮಂಗಳೂರು ಗೋಲಿಬಾರ್ – ಮ್ಯಾಜಿಸ್ಟ್ರೇಟ್ ತನಿಖೆ ಆರಂಭ

    ಮಂಗಳೂರು: ಪೌರತ್ವ ಮಸೂದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಡಿಸೆಂಬರ್ 19 ರಂದು ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಗೊಲೀಬಾರ್ ನಲ್ಲಿ ಸಾವನ್ನಪ್ಪಿದ್ದರು. ಈ ಗೋಲಿಬಾರ್ ನ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದ್ದು ಇದೀಗ ಘಟನೆಯ ತನಿಖೆ ಚುರುಕು ಪಡೆದಿದೆ.

    ಮ್ಯಾಜಿಸ್ಟ್ರೇಟ್ ತನಿಖೆಗೆ ಸರ್ಕಾರದಿಂದ ನೇಮಕಗೊಂಡ ಉಡುಪಿ ಜಿಲ್ಲಾಧಿಕಾರಿ ಡಾ.ಜಿ. ಜಗದೀಶ್ ಇಂದು ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಗದೀಶ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಬಳಿ ಮೊದಲು ಘಟನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಬಳಿಕ ಹಿಂಸಾಚಾರ ಹಾಗೂ ಗೊಲೀಬಾರ್ ನಡೆದ ನಗರದ ಸ್ಟೇಟ್ ಬ್ಯಾಂಕ್ ವೃತ್ತ, ಬಸ್ ನಿಲ್ದಾಣ ಆವರಣ, ಬಂದರು ಪೊಲೀಸ್ ಠಾಣೆ ಆವರಣದ ನೆಲ್ಲಿಕಾಯಿ ರಸ್ತೆಯಲ್ಲಿ ಪರಿಶೀಲನೆ ನಡೆಸಿದರು.

    ಸ್ಥಳೀಯ ವರ್ತಕರು ಹಾಗೂ ಜನರ ಜೊತೆ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ಸಂದರ್ಭ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಜೊತೆಗೆ 2020ರ ಜನವರಿ 7ರಂದು ಮಂಗಳೂರಿನ ಮಿನಿ ವಿಧಾನಸೌಧದಲ್ಲಿರುವ ಸಹಾಯಕ ಆಯುಕ್ತರ ಕಛೇರಿಯ ನ್ಯಾಯಾಲಯ ಸಭಾಂಗಣದಲ್ಲಿ ತನಿಖಾಧಿಕಾರಿಯಾದ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಅವರು ಪ್ರಕರಣದ ತನಿಖೆ ನಡೆಸಲಿದ್ದು, ಈ ವೇಳೆ ಘಟನೆಯ ಬಗ್ಗೆ ಮಾಹಿತಿಯುಳ್ಳ ಅಥವಾ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾರೇ ಆಗಲಿ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಬಹುದಾಗಿದೆ ಎಂದು ತನಿಖಾಧಿಕಾರಿ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

    ಇದೇ ವೇಳೆ, ಸಿಐಡಿ ಅಧಿಕಾರಿಗಳ ತಂಡವೂ ಮಂಗಳೂರಿನಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ. ಹಿಂಸಾಚಾರ ಘಟನೆ ತನಿಖೆ ನಡೆಸುತ್ತಿರುವ ಪೊಲೀಸರು ಈವರೆಗೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.