Tag: ಲಕ್ಷ್ಮಿ ಅಶ್ವಿನ್ ಗೌಡ

  • ಲಕ್ಷ್ಮಿ ಅಶ್ವಿನ್ ಗೌಡ ಬಿಜೆಪಿಗೆ ಸೇರ್ಪಡೆ – ದಳಕ್ಕೆ ಕಮಲ ಶಾಕ್

    ಲಕ್ಷ್ಮಿ ಅಶ್ವಿನ್ ಗೌಡ ಬಿಜೆಪಿಗೆ ಸೇರ್ಪಡೆ – ದಳಕ್ಕೆ ಕಮಲ ಶಾಕ್

    ಬೆಂಗಳೂರು: ಮಾಜಿ ಐಆರ್‍ಎಸ್ ಅಧಿಕಾರಿ, ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಿ ಆಶ್ವಿನ್ ಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಇಂದು ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ.

    ಲಕ್ಷ್ಮಿ ಅಶ್ವಿನ್ ಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಲಕ್ಷಿ ಅವರಿಗೆ ಬದಲಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕಟ್ ನೀಡಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿಯೂ ನಾಗಮಂಗಲದ ಕ್ಷೇತ್ರದ ಟೆಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಬಾರಿ ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಿ ಅಶ್ವಿನ್ ಗೌಡ ತೆನೆಯ ಹೊರೆ ಇಳಿಸಿ ಕಮಲ ಮುಡಿಯಲಿದ್ದಾರೆ. ಲಕ್ಷ್ಮಿ ಅಶ್ವಿನ್ ಗೌಡ ಜೊತೆಯಲ್ಲಿ ಅಕ್ಷಯ ಗೋಲ್ಡ್ ಸಂಸ್ಥೆಯ ಮಾಲೀಕರಾದ ಸತೀಶ್ ಕೂಡ ಸೇರ್ಪಡೆಯಾಗಲಿದ್ದಾರೆ.

    ಲಕ್ಷ್ಮಿ ಅಶ್ವಿನ್ ಗೌಡರ ನೇತೃತ್ವದಲ್ಲಿಯೇ ಮಂಡ್ಯ ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಲು ಪ್ಲಾನ್ ಮಾಡಿಕೊಂಡಿದೆ. ಮುಂದಿನ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಬಿಜೆಪಿ ಲಕ್ಷ್ಮಿ ಅಶ್ವಿನ್ ಗೌಡರನ್ನ ಬರಮಾಡಿಕೊಳ್ಳಲು ಎಲ್ಲ ಸಿದ್ಧತೆ ನಡೆಸಿದೆ.

  • ನಿಖಿಲ್ ಸ್ಪರ್ಧೆಯಿಂದ ಲಕ್ಷ್ಮಿ ಅಶ್ವಿನ್ ಗೌಡಗೆ ಅನ್ಯಾಯವಾಗಿಲ್ಲ: ಸಿಎಂ

    ನಿಖಿಲ್ ಸ್ಪರ್ಧೆಯಿಂದ ಲಕ್ಷ್ಮಿ ಅಶ್ವಿನ್ ಗೌಡಗೆ ಅನ್ಯಾಯವಾಗಿಲ್ಲ: ಸಿಎಂ

    ಮಂಡ್ಯ: ನಿಖಿಲ್ ಸ್ಪರ್ಧೆಯಿಂದ ಲಕ್ಷ್ಮಿ ಅಶ್ವಿನ್ ಗೌಡರಿಗೆ ಅನ್ಯಾಯವಾಗಿಲ್ಲ. ಐಆರ್‍ಎಸ್‍ನಿಂದ ಸ್ವಯಂ ನಿವೃತ್ತಿ ಪಡೆದಿದ್ದ ಲಕ್ಷ್ಮಿ ಅವರು ತಮ್ಮ ವೃತ್ತಿಗೆ ಮರಳುತ್ತಿದ್ದಾರೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

    ಲಕ್ಷ್ಮಿ ಅಶ್ವಿನ್ ಗೌಡರಿಗೆ ಮೋಸ ಮಾಡಿ ನಿಖಿಲ್‍ಗೆ ಟಿಕೆಟ್ ನೀಡಲಾಗಿದೆ ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಬಂದಿರೋದು ನನ್ನ ಗಮನಕ್ಕೆ ಬಂದಿದೆ. ಆದ್ರೆ ಹೆಚ್ಚಿನ ಜನರಿಗೆ ಹಿಂದಿನ ವಿಷಯ ಗೊತ್ತಿಲ್ಲ. ಮಳವಳ್ಳಿಯ ಜೆಡಿಎಸ್ ಅಧ್ಯಕ್ಷ ಕೆಂಚಪ್ಪನವರ ಪುತ್ರಿ, ನಾಗಮಂಗಲದ ಸೊಸೆ ಲಕ್ಷ್ಮಿ ಅಶ್ವಿನ್ ಗೌಡ ವಿಧಾನಸಭಾ ಚುನಾವಣಾ ಅಭ್ಯರ್ಥಿ ಆಗಬೇಕೆಂದು ಭೇಟಿ ಮಾಡಿದ್ದರು. ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ನೀಡಬೇಕೆಂದು ಮೊದಲ ಭೇಟಿಯಲ್ಲಿ ಮನವಿ ಮಾಡಿಕೊಂಡಿದ್ದರು. ಅಲ್ಲಿಂದಲೇ ನಮ್ಮ ಪರಿಚಯವಾಗಿತ್ತು ಎಂದರು.

    ದೇವೇಗೌಡರ ಕುಟುಂಬ ಲಕ್ಷ್ಮಿ ಅಶ್ವಿನ್ ಗೌಡರಿಗೆ ಮೋಸ ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನಾವು ದೇವರನ್ನು ನಂಬಿಕೊಂಡು ಬದುಕುವ ಜೀವಿಗಳು. ಲಕ್ಷ್ಮಿ ಅವರ ಪತಿ ಐಆರ್‍ಎಸ್ ಅಧಿಕಾರಿಯಾಗಿದ್ದು, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬರುವಂತಹ ಕೆಲ ಸುದ್ದಿಗಳು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

    ಸ್ವಯಂ ನಿವೃತ್ತಿ ಪಡೆದಿದ್ದ ಲಕ್ಷ್ಮಿ ಅಶ್ವಿನ್ ಗೌಡ ಮತ್ತೆ ತಮ್ಮ ಉದ್ಯೋಗಕ್ಕೆ ಹಾಜರಾಗಲು ಇಚ್ಛಿಸಿದ್ದಾರೆ. ಕಳೆದ ವಾರ ದೆಹಲಿಗೆ ಹೋದಾಗ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇನೆ. ಮತ್ತೊಮ್ಮೆ ಕೆಲಸಕ್ಕೆ ಸೇರಬೇಕೆಂದು ಕೇಳುತ್ತಿದ್ದು, ಅವಕಾಶ ನೀಡಿ ಎಂದು ಕೇಳಿಕೊಂಡಿದ್ದೇನೆ. ಆರು ತಿಂಗಳ ಹಿಂದೆ ನಾಲ್ಕು ವರ್ಷದ ಅವಧಿಗೆ ಲಕ್ಷ್ಮಿ ಅಶ್ವಿನ್ ಗೌಡರನ್ನು ನೇಮಿಸಲು ಪಕ್ಷ ಮುಂದಾಗಿತ್ತು. ರಾಜಕೀಯ ಅನುಭವದ ಆಗಬೇಕಾದ್ರೆ ಎಂಎಲ್‍ಸಿ ಗೆ ಅರ್ಜಿ ಸಲ್ಲಿಸಲು ತಂಗಿಗೆ ಹೇಳಿದ್ದಂತೆ ಸಲಹೆ ನೀಡಿದ್ದೆ. ನಮ್ಮ ಕುಟುಂಬದಿಂದ ಯಾವ ಮಹಿಳೆಗೂ ಅನ್ಯಾಯವಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

    ಕಳೆದ ಎರಡೂವರೆ ತಿಂಗಳಿನಿಂದ ಮಾಧ್ಯಮಗಳಲ್ಲಿ ಸುದ್ದಿಯನ್ನು ನೋಡಿ ಮನಸ್ಸಿಗೆ ತುಂಬಾ ನೋವಾಗಿದೆ. ಮಂಡ್ಯದಲ್ಲಿಯೇ ಈ ರೀತಿಯ ವಾತಾವರಣ ನಿರ್ಮಾಣ ಆಗುತ್ತೆ ಅಂದುಕೊಂಡಿರಲಿಲ್ಲ. ನಿಖಿಲ್ ಕುಮಾರಸ್ವಾಮಿಯನ್ನು ಉಪಚುನಾವಣೆ ನಿಲ್ಲಿಸಬೇಕೆಂದು ರವೀಂದ್ರ ಶ್ರೀಕಂಠಯ್ಯ ಎಂದು ಹೇಳಿದಾಗ ನನಗೆ ಒಂದು ಕ್ಷಣ ನಡುಕ ಉಂಟಾಯಿತು. ಇಂದು ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಮನಸ್ಸು ನನಗಿರಲಿಲ್ಲ. ಆದ್ರೆ ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ ಚುನಾವಣೆಗೆ ನಿಂತಿದ್ದಾನೆ. ಮಾಧ್ಯಮಗಳಲ್ಲಿ ಕಳೆದ ಎರಡ್ಮೂರು ತಿಂಗಳಿನಿಂದ ಮಂಡ್ಯ ಕ್ಷೇತ್ರದ ಸಂಚಿಕೆಗಳನ್ನು ಪ್ರಸಾರ ಮಾಡಲಾಗುತ್ತಿದ್ದು, ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಂಡ್ಯದ ನಿಜವಾದ ಮನೆಮಗಳು ಯಾರು? – ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

    ಮಂಡ್ಯದ ನಿಜವಾದ ಮನೆಮಗಳು ಯಾರು? – ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

    ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಅನ್ನೋ ವಿಚಾರ ಕೇಳಿ ಬಂದ ಬೆನ್ನಲ್ಲೆ ವಾಟ್ಸಪ್ ನಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಹರಿದಾಡ್ತಿದೆ.

    ಮಂಡ್ಯದ ನಿಜವಾದ ಮನೆ ಮಗಳು ಯಾರು? ಲಕ್ಷ್ಮಿ ಅಶ್ವಿನ್ ಗೌಡ ಅಥವಾ ಸುಮಲತಾ ಎಂಬ ಚರ್ಚೆ ಎದ್ದಿದೆ. ಕಾಂಗ್ರೆಸ್‍ನಿಂದ ಸುಮಲತಾರನ್ನು ಕಣಕ್ಕಿಳಿಸಲು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಜೆಡಿಎಸ್‍ನಿಂದ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಚಾಲ್ತಿಗೆ ಬಂದಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.

    ಲಕ್ಷ್ಮಿ ಅಶ್ವಿನ್ ಗೌಡ ಅವರು ಕಳೆದ ವರ್ಷ ನವಂಬರ್‍ನಲ್ಲಿ ನಡೆದ ಲೋಕಸಭಾ ಉಪಚುನಾವಣೆಯ ಆಕಾಂಕ್ಷಿಯಾಗಿದ್ದರು. ಆದ್ರೆ ವರಿಷ್ಠರು ಎಲ್‍ಆರ್ ಶಿವರಾಮೇಗೌಡರಿಗೆ ಟಿಕೆಟ್ ನೀಡಿದ್ದರು. ಇದೀಗ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದಾದ್ರೆ ಅವರ ವಿರುದ್ಧ ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್ ಗೌಡರನ್ನ ನಿಲ್ಲಿಸುತ್ತಾರೆ. ಆ ಮೂಲಕ ಮಂಡ್ಯದ ನಿಜವಾದ ಮಗಳು ಎಂದು ಅಂಬಿ ಅಭಿಮಾನಿಗಳಿಗೆ ಸೆಡ್ಡು ಹೊಡೆಯುತ್ತಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ

    ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರು ಸುಮಲತಾ ಅವರು ಮಂಡ್ಯದ ಗೌಡ್ತಿ ಅಲ್ಲ ಎಂಬ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯಿಂದ ಈ ಮನೆ ಮಗಳ ವಾದ ವಿವಾದ ಹುಟ್ಟಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಮನೆಮಗಳು ಯಾರು ಎನ್ನುವುದರ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ಬಿಜೆಪಿಯಿಂದ ಸ್ಪರ್ಧಿಸಲು ಸುಮಲತಾ ಅವರಿಗೇನು ಹುಚ್ಚು ಇದೆಯಾ: ಡಾ. ಸಿದ್ದರಾಮಯ್ಯ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಇಬ್ಬರು ಮಹಿಳಾಮಣಿಯರ ಕಾರಣಕ್ಕೆ ಚರ್ಚೆಯಾಗುತ್ತಿದೆ ಮಂಡ್ಯ ಲೋಕಸಭೆ ಉಪಚುನಾವಣೆ!

    ಇಬ್ಬರು ಮಹಿಳಾಮಣಿಯರ ಕಾರಣಕ್ಕೆ ಚರ್ಚೆಯಾಗುತ್ತಿದೆ ಮಂಡ್ಯ ಲೋಕಸಭೆ ಉಪಚುನಾವಣೆ!

    ಮಂಡ್ಯ: ಜಿಲ್ಲೆಯ ಲೋಕಸಭೆ ಉಪಚುನಾವಣೆ ದಿನಾಂಕ ಸದ್ಯದಲ್ಲೇ ಪ್ರಕಟವಾಗುವ ಸಾಧ್ಯತೆಯಿದ್ದು, ಮಂಡ್ಯ ರಾಜಕಾರಣ ಇಬ್ಬರು ಮಹಿಳೆಯರ ಕಾರಣಕ್ಕೆ ಕುತೂಹಲ ಮೂಡಿಸುತ್ತಿದೆ.

    ಒಬ್ಬರು ಮಾಜಿ ಸಂಸದೆ ರಮ್ಯಾ, ಮತ್ತೊಬ್ಬರು ರಾಜಕೀಯದಲ್ಲಿ ಸಕ್ರಿಯರಾಗಲು ತಮ್ಮ ಐಆರ್ ಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಂದಿರುವ ಲಕ್ಷ್ಮಿ ಅಶ್ವಿನ್ ಗೌಡ. ಇಬ್ಬರು ಮಹಿಳಾಮಣಿಯರಿಗೆ ಮಂಡ್ಯ ಲೋಕಸಭಾ ಉಪಚುನಾವಣೆ ವರವಾಗುತ್ತಾ? ಇಲ್ಲವೇ ಶಾಪವಾಗುತ್ತಾ? ಈ ಬಗ್ಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

    ಸಚಿವ ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿರುವ ಮಂಡ್ಯ ಸಂಸದ ಸ್ಥಾನಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ಉಪಚುನಾವಣೆ ಕಾಂಗ್ರೆಸ್ ಮುಖಂಡೆ, ಮಾಜಿ ಸಂಸದೆ ರಮ್ಯಾ ಹಾಗೂ ಇತ್ತೀಚೆಗಷ್ಟೇ ಜೆಡಿಎಸ್ ಪಕ್ಷಕ್ಕೆ ಸೇರಿರುವ ಲಕ್ಷ್ಮಿ ಅಶ್ವಿನ್ ಗೌಡ ಅವರ ರಾಜಕೀಯ ಅಳಿವು ಉಳಿವಿನ ಪ್ರಶ್ನೆಯಾಗಿದೆ.

    ರಮ್ಯಾ ಈ ಬಾರಿಯೂ ಮಂಡ್ಯದಿಂದಲೇ ಸ್ಪರ್ಧಿಸುವ ಆಸೆಯಿಟ್ಟುಕೊಂಡಿದ್ದಾರೆ. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡು ಒಟ್ಟಾಗಿ ಚುನಾವಣೆ ಎದುರಿಸಲಿವೆ ಎಂಬ ಮಾತು ಕೇಳಿ ಬರುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ತನಗೆ ಬಿಟ್ಟು ಕೊಡಿ ಅಂತಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಹಾಗೇನಾದರು ಆದರೆ ಮಂಡ್ಯದಿಂದಲೇ ಸ್ಪರ್ಧಿಸಬೇಕು ಎಂದು ಆಶಾಭಾವನೆಯಿಂದ ಕಾಯುತ್ತಿರುವ ರಮ್ಯಾಗೆ ರಾಜಕೀಯವಾಗಿ ಹಿನ್ನಡೆಯಾಗೋದಂತೂ ಗ್ಯಾರಂಟಿ. ಹೀಗಾಗಿ ರಮ್ಯಾ ತಾಯಿ ರಂಜಿತಾ ಸೇರಿದಂತೆ ರಮ್ಯಾ ಅವರ ಬೆಂಬಲಿಗರು ಮಂಡ್ಯದಲ್ಲಿ ಮೈತ್ರಿಯೇ ಬೇಡ ಅಂತಿದ್ದಾರೆ.

    ಮತ್ತೊಂದು ಕಡೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವ ಆಶಾಭಾವನೆಯಿಂದ ಜಿಲ್ಲೆಯಾದ್ಯಂತ ಓಡಾಡುತ್ತಿದ್ದಾರೆ. ಮಂಡ್ಯದಲ್ಲಿ ರಮ್ಯಾಗೆ ಟಾಂಗ್ ಕೊಡಲು ಜೆಡಿಎಸ್ ವರಿಷ್ಠರೇ ಲಕ್ಷ್ಮಿ ಅಶ್ವಿನ್ ಗೌಡ ಅವರನ್ನು ರಾಜಕೀಯಕ್ಕೆ ಕರೆತಂದ್ರು ಎಂಬ ಮಾತು ಕೂಡ ಕೇಳಿ ಬಂದಿತ್ತು. ಆದರೆ ಇದೀಗ ಲಕ್ಷ್ಮಿ ಅಶ್ವಿನ್‍ಗೌಡ ಅವರಿಗೆ ಸ್ವಪಕ್ಷದಲ್ಲೇ ವಿರೋಧಿಗಳು ಹುಟ್ಟಿಕೊಂಡಿದ್ದಾರೆ.

    ಲಕ್ಷ್ಮಿ ಅಶ್ವಿನ್‍ಗೌಡ ಅವರಿಗೆ ಟಿಕೆಟ್ ತಪ್ಪಿಸುವ ಸಲುವಾಗೇ ಮಾಜಿ ಪ್ರಧಾನಿ ದೇವೇಗೌಡರು, ಪ್ರಜ್ವಲ್ ರೇವಣ್ಣ ಅವರನ್ನು ಮಂಡ್ಯಕ್ಕೆ ಕರೆತರುವ ಪ್ರಯತ್ನ ಸದ್ದಿಲ್ಲದೆ ಸಾಗುತ್ತಿದೆ. ಮತ್ತೊಂದು ಕಡೆ ಸೋಲಿನ ಮೇಲೆ ಸೋಲು ಕಂಡು ನಿರಾಶರಾಗಿರುವ ಮಾಜಿ ಶಾಸಕ ಶಿವರಾಮೇಗೌಡ ಕೂಡ, ಜೆಡಿಎಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇಷ್ಟೆಲ್ಲ ಸವಾಲುಗಳ ನಡುವೆಯೂ ಲಕ್ಷ್ಮಿ ಅಶ್ವಿನ್‍ ಗೌಡ ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಹರಸಾಹಸ ಪಡುತ್ತಿದ್ದಾರೆ.

    ಈ ಬಾರಿ ಮಂಡ್ಯ ಲೋಕಸಭೆ ಉಪಚುನಾವಣೆ ಇಬ್ಬರು ಮಹಿಳಾ ಮಣಿಯರಾದ ಮಾಜಿ ಸಂಸದೆ ರಮ್ಯಾ ಮತ್ತು ಲಕ್ಷ್ಮಿ ಅಶ್ವಿನ್ ಗೌಡ ಅವರಿಗೆ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಆದರೆ ಇವರಿಬ್ಬರಿಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುತ್ತಾ? ಅಥವಾ ಇಬ್ಬರು ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿತಾರ? ಎಂಬುದನ್ನು ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಂಡ್ಯ ಲೋಕಸಭಾ ಉಪಚುನಾವಣೆ: ಲಕ್ಷ್ಮಿ ಅಶ್ವಿನ್ ಗೌಡ ಜೆಡಿಎಸ್‍ನಿಂದ ಸ್ಪರ್ಧೆ!

    ಮಂಡ್ಯ ಲೋಕಸಭಾ ಉಪಚುನಾವಣೆ: ಲಕ್ಷ್ಮಿ ಅಶ್ವಿನ್ ಗೌಡ ಜೆಡಿಎಸ್‍ನಿಂದ ಸ್ಪರ್ಧೆ!

    ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಲಕ್ಷ್ಮಿ ಅಶ್ವಿನ್‍ಗೌಡ ಸ್ಪರ್ಧಿಸುತ್ತಿದ್ದು, ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ರಮ್ಯಾ ಸ್ಪರ್ಧಿಸುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಜಿಲ್ಲೆಯ ರಾಜಕೀಯದಲ್ಲಿ ವಿಶೇಷವಾಗಿ ಚರ್ಚೆಯಾಗುತ್ತಿದೆ.

    ಇತ್ತೀಚೆಗಷ್ಟೇ ತಮ್ಮ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್‍ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಉಪಚುನಾವಣೆ ಮತ್ತು ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಲಕ್ಷ್ಮಿ ಅಶ್ವಿನ್‍ಗೌಡ ಈ ಬಗ್ಗೆ ಪಕ್ಷದ ವರಿಷ್ಠರ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಅಂತ ಹೇಳಿದ್ದಾರೆ.

    ಇನ್ನು ಕಳೆದೆರೆಡು ಬಾರಿಯಿಂದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ರಮ್ಯಾ, ಜೆಡಿಎಸ್‍ನಿಂದ ಪುಟ್ಟರಾಜು ಎದುರಾಳಿಗಳಾಗಿದ್ದರು. ಆದರೆ ಪುಟ್ಟರಾಜು ಶಾಸಕರಾಗಿ ಆಯ್ಕೆಯಾಗಿದ್ದು, ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಉಪಚುನಾವಣೆ ಮುಖಾಂತರವೇ ರಾಜಕೀಯ ಪ್ರವೇಶಿಸಿದ್ದ ರಮ್ಯಾ ಕಳೆದ ಒಂದೂವರೆ ವರ್ಷದಿಂದ ಮಂಡ್ಯ ಕಡೆ ತಲೆ ಹಾಕಿಲ್ಲ.

    ಅಷ್ಟೇ ಅಲ್ಲದೇ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ರಮ್ಯಾ ಅವರು ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಧೈರ್ಯ ಮಾಡುತ್ತಾರಾ ಎನ್ನುವ ಚರ್ಚೆ ಜಿಲ್ಲೆಯಲ್ಲಿ ಶುರುವಾಗಿದೆ.

    ಇನ್ನು ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲೂ ಒಮ್ಮತದ ಅಭ್ಯರ್ಥಿ ನಿಲ್ಲಿಸಲಿದ್ದಾರೆ ಎನ್ನುವ ಚರ್ಚೆ ಕೂಡ ನಡೆಯುತ್ತಿದೆ.

  • ರಮ್ಯಾ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ರಾ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ?

    ರಮ್ಯಾ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ರಾ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ?

    ಮಂಡ್ಯ: ಮಾಜಿ ಸಂಸದೆ ರಮ್ಯಾ ವಿರುದ್ಧ ಮುಂಬರುವ ಚುನಾವಣೆಯಲ್ಲಿ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ ಸ್ಪರ್ಧೆ ಮಾಡುತ್ತಾರೆ ಎಂಬ ಊಹಾಪೋಹಕ್ಕೆ ಪುಷ್ಟಿ ನೀಡುವಂತೆ ಲಕ್ಷ್ಮಿ ಅಶ್ವಿನ್‍ಗೌಡ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದ್ದಾರೆ.

    ಮುಂಬರುವ ವಿಧಾಸಭೆ ಚುನಾವಣೆಯಲ್ಲಿ ರಮ್ಯಾ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಗುಸುಗುಸು ಜಿಲ್ಲೆಯಲ್ಲಿ ಶುರುವಾಗಿತ್ತು. ಹೀಗಾಗಿ ಮಂಡ್ಯ ಕ್ಷೇತ್ರದ ಶಾಸಕರಾಗಿದ್ದ ಅಂಬರೀಷ್ ಮತ್ತು ರಮ್ಯಾ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಇದೆಲ್ಲದರ ನಡುವೆಯೇ ಒಂದು ವೇಳೆ ರಮ್ಯಾ ಮಂಡ್ಯ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ರೆ ಅವರಿಗೆ ಪ್ರತಿಸ್ಪರ್ಧಿಯಾಗಿ ಪ್ರಬಲ ಮಹಿಳಾ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಜೆಡಿಎಸ್ ವಲಯದಲ್ಲೂ ಚರ್ಚೆ ಶುರುವಾಗಿತ್ತು.

    ಐಆರ್‍ಎಸ್ ಅಧಿಕಾರಿಯಾಗಿದ್ದ ಲಕ್ಷ್ಮಿ ಅಶ್ವಿನ್ ಗೌಡ ಅವರು ರಮ್ಯಾ ಅವರಿಗೆ ಪ್ರಬಲ ಪೈಪೋಟಿ ನೀಡಬಲ್ಲ ಮಹಿಳಾ ಅಭ್ಯರ್ಥಿ ಎಂದು ಜಿಲ್ಲೆಯಲ್ಲಿ ಚರ್ಚೆ ಶುರುವಾಗಿತ್ತು. ಪರೋಕ್ಷವಾಗಿ ಜೆಡಿಎಸ್ ವರಿಷ್ಠರ ಜೊತೆ ಸಂಪರ್ಕದಲ್ಲಿದ್ದ ಲಕ್ಷ್ಮಿ ಅಶ್ವಿನ್ ಗೌಡ ಸರ್ಕಾರಿ ಕೆಲಸದಲ್ಲಿದ್ದರಿಂದ ಅವರು ಮಾಜಿ ಸಂಸದೆ ರಮ್ಯಾ ವಿರುದ್ಧ ಸ್ಪರ್ಧಿಸೋದು ಅನುಮಾನ ಎಂಬಂತಾಗಿತ್ತು. ಆದರೆ ಈ ಊಹಾಪೋಹಕ್ಕೆ ತೆರೆ ಎಂಬಂತೆ ಲಕ್ಷ್ಮಿ ಅಶ್ವಿನ್‍ಗೌಡ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

    ಇಂದು ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದ ಜೆಡಿಎಸ್‍ನ ಕುಮಾರಪರ್ವ ಕಾರ್ಯಕ್ರಮದಲ್ಲಿ ಲಕ್ಷ್ಮಿ ಅಶ್ವಿನ್‍ಗೌಡ ಅವರು ಭಾಗವಹಿಸಿದ್ದರು. ಸ್ವತಃ ಅವರೇ ಮಾತನಾಡಿ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಾಗಿದೆ. ಮುಂದೆ ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

     

  • ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

    ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

    ಮಂಡ್ಯ: ಜಿಲ್ಲೆಯಲ್ಲಿ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ ಕೊಡಲಿದ್ದಾರೆ ಅಂತ ಹೇಳಲಾಗಿದೆ. ಮಾಜಿ ಸಂಸದೆ ರಮ್ಯಾ ಬಳಿಕ ಈಗ ಜೆಡಿಎಸ್ ಪಾಳಯದಲ್ಲಿ ಮತ್ತೊಬ್ಬ ಗೌಡ್ತಿ ಕಾಣಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

    ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಮಂಡ್ಯದ ನಾಗಮಂಗಲದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಬಂಡಾಯ ಶಾಸಕ ಚೆಲುರಾಯಸ್ವಾಮಿ ಕಾಂಗ್ರೆಸ್ ಕದ ತಟ್ಟಿದ್ದು, ಅವರ ಎದುರಾಳಿಗಳು, ಮಾಜಿ ಶಾಸಕರು ಆದ ಎಲ್‍ಆರ್ ಶಿವರಾಮೇಗೌಡ ಮತ್ತು ಸುರೇಶ್‍ಗೌಡ ಜೆಡಿಎಸ್ ಟಿಕೆಟ್‍ಗಾಗಿ ಪೈಪೋಟಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮಹಿಳಾ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ. ಅವರೇ ಐಆರ್‍ಎಸ್ ಆಫೀಸರ್ ಲಕ್ಷ್ಮಿ ಅಶ್ವಿನ್ ಗೌಡ.

    2012ರ ಬ್ಯಾಚ್‍ನ ಐಆರ್‍ಎಸ್ ಆಫೀಸರ್ ಲಕ್ಷ್ಮಿ ಅಶ್ವಿನ್ ಗೌಡ, ಸದ್ಯ ರೈಲ್ವೆ ಇಲಾಖೆಯಲ್ಲಿ ಸಹಾಯಕ ಹಣಕಾಸು ಅಧಿಕಾರಿ. ಇವರು ನಾಗಮಂಗಲ ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ತಾಲೂಕಿನ ಸೊಸೆಯೂ ಆಗಿರೋ ಲಕ್ಷ್ಮಿ ಅಶ್ವಿನ್ ಗೌಡ, ತಮ್ಮ ಎನ್‍ಜಿಓ ಮೂಲಕ ಎಲ್ಲಾ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಸ್ತಿದ್ದಾರೆ. ಹೀಗಾಗಿ ಇವರೇ ಜೆಡಿಎಸ್ ಅಭ್ಯರ್ಥಿ ಆಗ್ತಾರೆ ಅಂತಾ ಜನ ಮಾತಾಡಿಕೊಳ್ತಿದ್ದಾರೆ.

    ಈ ತಾಲೂಕು ಅತ್ಯಂತ ಬರಪೀಡಿತವಾಗಿದೆ. ಜೀವನಾಧಾರ ಒದಗಿಸುತ್ತಿದ್ದೇವೆ. ನನ್ನದೇ ಆದ ಸೇವೆ ಮಾಡಬೇಕು ಅಂತ ಬಂದಿದ್ದೇನೆ ಅಂತಾರೆ ಲಕ್ಷ್ಮಿ ಅಶ್ವಿನ್ ಗೌಡ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‍ನ ಮಾಜಿ ಶಾಸಕ ಸುರೇಶ್ ಗೌಡ, ಇದು ಪ್ರಜಾಪ್ರಭುತ್ವ. ಇಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು ಅಂತಾರೆ. ಅಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಲು ನಾನೂ ಪ್ರಯತ್ನ ಮಾಡ್ತಿದ್ದೀನಿ ಅಂತ ಹೇಳಿಕೊಂಡಿದ್ದಾರೆ.

    ಒಟ್ಟಾರೆ ನಾಗಮಂಗಲದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲು ಪೈಪೋಟಿ ಹೆಚ್ಚಿದೆ. ಇವರಲ್ಲಿ ಯಾರಿಗೆ ಟಿಕೆಟ್ ಸಿಗುತ್ತೆ ಅನ್ನೋದು ಇನ್ನೂ ಕೆಲವೇ ದಿನಗಳಲ್ಲಿ ಪಕ್ಕಾ ಆಗುವ ನಿರೀಕ್ಷೆಯಿದೆ.