Tag: ಸಹಕಾರ ಸಂಸ್ಥೆ

  • ಏಷ್ಯಾದ ಹೆಗ್ಗಳಿಕೆ, ಕಾಫಿನಾಡ ಕಾರ್ಮಿಕರ ಸಾರಿಗೆ ಸಂಸ್ಥೆಯ ಯುಗಾಂತ್ಯ

    ಏಷ್ಯಾದ ಹೆಗ್ಗಳಿಕೆ, ಕಾಫಿನಾಡ ಕಾರ್ಮಿಕರ ಸಾರಿಗೆ ಸಂಸ್ಥೆಯ ಯುಗಾಂತ್ಯ

    ಚಿಕ್ಕಮಗಳೂರು: ಕಾಫಿನಾಡಿನ ಹೆಗ್ಗಳಿಕೆ, ಹಳ್ಳಿಗರ ಜೀವನಾಡಿಯಾಗಿದ್ದ ಜಿಲ್ಲೆಯ ಕೊಪ್ಪ ತಾಲೂಕಿನ ಸಹಕಾರಿ ಸಾರಿಗೆ ಸಂಸ್ಥೆಗೆ ಬೀಗ ಬಿದ್ದಿದೆ. ಆಡಳಿತ ಮಂಡಳಿ ಸಾಲ ಮರುಪಾವತಿ ಮಾಡದ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಕಂಪನಿಯೂ ಸಾರಿಗೆ ಸಂಸ್ಥೆಗೆ ಸೇರಿದ 1 ಎಕೆರೆ 10 ಗುಂಟೆ ಜಾಗವನ್ನ ಮುಟ್ಟುಗೋಲು ಹಾಕಿಕೊಂಡಿದೆ.

    ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಹಾಗೂ ಆಡಳಿತ ನಿರ್ದೆಶಕರಾಗಿದ್ದ ಜಯಪ್ರಕಾಶ್ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಂಪನಿಗೆ ಸೇರಿದ ಆಸ್ತಿಯನ್ನು ಆಧಾರವಾಗಿ ನೀಡಿ 1.20 ಕೋಟಿ ರೂ. ಸಾಲ ಪಡೆದಿದ್ದರು. 2019ರ ಬಳಿಕ ಸಾಲವನ್ನು ಮರುಪಾವತಿ ಮಾಡಿರಲಿಲ್ಲ. ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಂಪನಿ ಅವರಿಗೆ ನೋಟಿಸ್ ಕೂಡ ನೀಡಿದ್ದರು. ಬಡ್ಡಿ ಸಹಿತ 1,31,41,210 ರೂ. ಮೊತ್ತವನ್ನು ನೀಡಲು ನಿರಾಕರಿಸಿದ ಕಾರಣ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಂಪನಿ ವಿರುದ್ಧ ಜಿಲ್ಲಾಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದರು. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶದ ಅನ್ವಯ ಸೋಮವಾರ ತಾಲೂಕು ದಂಡಧಿಕಾರಿ ಪರಮೇಶ್ ನೇತೃತ್ವದಲ್ಲಿ ಸರ್ವೇ ನಂ 97ರಲ್ಲಿರುವ ಸಹಕಾರಿ ಸಾರಿಗೆ ಸಂಸ್ಥೆಗೆ ಸೇರಿದ 1 ಎಕರೆ 10 ಗುಂಟೆ ಆಸ್ತಿಯನ್ನ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಕಚೇರಿಗೆ ಬಾರದಂತೆ ಬೀಗ ಹಾಕಿದೆ.

    ಈ ಸಹಕಾರ ಸಾರಿಗೆ ಬಸ್ಸಿನ ಚಕ್ರಗಳು ಚಿಕ್ಕಮಗಳೂರು ಸೇರಿ ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಯ ಬೆಟ್ಟ-ಗುಡ್ಡಗಳ ಬಹುತೇಕ ಗ್ರಾಮವನ್ನ ಕಂಡಿವೆ. ಮಲೆನಾಡ ಕುಗ್ರಾಮಗಳ ಮನೆ-ಮನ ಬೆಸೆದ ಪರಿಗೆ ಏಷ್ಯಾದಲ್ಲೇ ಅತ್ಯುತ್ತಮ ಸಹಕಾರ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಕಾರ್ಮಿಕರೇ ಕಟ್ಟಿ, ಕಾರ್ಮಿಕರೇ ಮಾಲೀಕರಾಗಿ 6 ಬಸ್‍ನಿಂದ 76 ಬಸ್‍ಗೆ ಸಂಸ್ಥೆಯನ್ನ ತಂದಿದ್ದರು. ರಾಜ್ಯಕ್ಕೆ ಕೆಎಸ್‍ಆರ್‍ಟಿಸಿ ಮಲೆನಾಡಿಗೆ ಸಹಕಾರ ಸಾರಿಗೆ ಎಂಬ ನಾಣ್ಣುಡಿಯನ್ನ ಸ್ಥಳಿಯರೇ ಹುಟ್ಟುಹಾಕಿದ್ದರು. ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರು, ವಿಧ್ಯಾರ್ಥಿಗಳು, ಸಂಸ್ಥೆಯ ಕಾರ್ಮಿಕ ಮಕ್ಕಳು, ವಿಕಲಚೇತನರು, ಹಿರಿಯ ನಾಗರಿಕರಿಗೆ ಶೇ.50 ರಿಯಾಯಿತಿ ಕೊಟ್ಟು, ದಟ್ಟಕಾನನದ ಕಲ್ಲು-ಮಣ್ಣಿನ ದುರ್ಗಮ ಹಾದಿಯಲ್ಲೂ ಲಕ್ಷಾಂತರ ಮಕ್ಕಳ ಭವಿಷ್ಯ ರೂಪಿಸಿದ ಹೆಗ್ಗಳಿಕೆ ಈ ಸಂಸ್ಥೆಗಿದೆ. ಅಂತಹ ಸಂಸ್ಥೆ ಸರ್ಕಾರದ ರೀತಿ-ನೀತಿ-ನಿರ್ಧಾರಗಳಿಂದ ತೀವ್ರ ಸಂಕಷ್ಟಕ್ಕೀಡಾಗಿ ಬಾಗಿಲು ಹಾಕುವ ಹೊಸ್ತಿಲಿಗೆ ಬಂದು ನಿಂತಿತ್ತು. ಇಂದು ಅಧಿಕೃತವಾಗಿ ಬೀಗ ಬಿದ್ದಂತಾಗಿದೆ.

    1990ರಲ್ಲಿದ್ದ ಶಂಕರ್ ಟ್ರಾನ್ಸ್‍ಪೋರ್ಟ್ ಮುಚ್ಚಿದ ಬಳಿಕ ಅಲ್ಲಿದ್ದ ಕಾರ್ಮಿಕರು ತಮಗೆ ಬಂದ ಪರಿಹಾರದ ಹಣದಿಂದಲೇ ಕಟ್ಟಿಕೊಂಡ ಸಂಸ್ಥೆ ಇದು. ಅಂದಿನಿಂದ ಈ ಬಸ್ ಮಲೆನಾಡ ಮನೆ-ಮನಗಳ ಮಧ್ಯೆ ಭಾಂದವ್ಯ ಬೆಸೆದಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಸಂಸ್ಥೆ ತನ್ನ ಸೇವೆಯನ್ನು ಸಂಪೂರ್ಣ ನಿಲ್ಲಿಸಿತ್ತು. ಪರಿಹಾರ ಹಾಗೂ ಸಹಕಾರಕ್ಕಾಗಿ ಸರ್ಕಾರದ ಕದ ಬಡಿದರೂ ಯಾವುದೇ ಉಪಯೋಗವಿಲ್ಲದಂತಾಗಿತ್ತು. ವರ್ಷಕ್ಕೆ ಒಂದೂವರೆ ಕೋಟಿ ಟ್ಯಾಕ್ಸ್, ಜೊತೆಗೆ, ರಿಯಾಯಿತಿ ಪಾಸ್ ಹೊರೆ. ಆದ್ದರಿಂದ ಡೀಸೆಲ್ ಸಬ್ಸಿಡಿ, ಟ್ಯಾಕ್ಸ್ ಕಡಿತ ಹಾಗೂ ಪಾಸ್‍ಗಳ ಉಳಿಕೆ ಹಣವನ್ನು ನೀಡುವಂತೆ ಸರ್ಕಾರದ ಸಹಕಾರದ ದಾರಿ ನೋಡುತ್ತಿತ್ತು. ಆದರೆ ಈ ಕಾರ್ಮಿಕರ ಸಹಕಾರ ಸಂಸ್ಥೆಗೆ ಸರ್ಕಾರದಿಂದ ಯಾವುದೇ ನೆರವು ಸಿಗಲಿಲ್ಲ. ಆದ್ದರಿಂದ ಸಂಸ್ಥೆ ಮಾಡಿದ ಸಾಲ ತೀರಿಸದ ಕಾರಣ ಇಂದು ಸಂಸ್ಥೆಗೆ ಬೀಗ ಬಿದ್ದಿದ್ದು, ಏಷ್ಯಾ ಖಂಡದಲ್ಲೇ ಮೊದಲ ಸಹಕಾರ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಈ ಸಂಸ್ಥೆ ತನ್ನ ಸಂಚಾರವನ್ನ ನಿಲ್ಲಿಸಿದೆ. ಸಂಸ್ಥೆಯಲ್ಲಿ ಕಾರ್ಮಿಕರಾಗಿದ್ದ ಸುಮಾರು 200ಕ್ಕೂ ಹೆಚ್ಚು ಜನ ಬೀದಿಗೆ ಬಿದ್ದಂತಾಗಿದೆ.

  • ನಷ್ಟದ ಸುಳಿಗೆ ಸಿಲುಕಿ ಬೀಗ ಹಾಕುವ ಹಂತ ತಲುಪಿದ ದೇಶದ ಮೊದಲ ಸಹಕಾರ ಸಾರಿಗೆ

    ನಷ್ಟದ ಸುಳಿಗೆ ಸಿಲುಕಿ ಬೀಗ ಹಾಕುವ ಹಂತ ತಲುಪಿದ ದೇಶದ ಮೊದಲ ಸಹಕಾರ ಸಾರಿಗೆ

    ಚಿಕ್ಕಮಗಳೂರು: ಮಲೆನಾಡ ಮನೆ-ಮನಗಳಲ್ಲಿ ಆತ್ಮೀಯತೆಯ ಭಾವನಾತ್ಮಕ ಕೊಂಡಿ ಬೆಸೆದಿದ್ದ ದೇಶದ ಮೊದಲ ಸಹಕಾರ ಸಾರಿಗೆ ಸಂಸ್ಥೆ ಕಷ್ಟದ ಸುಳಿಗೆ ಸಿಲುಕಿ ಬೀಗ ಹಾಕುವ ಹಂತ ತಲುಪಿದೆ. ಮಾಲೀಕರೇ ಇಲ್ಲದೆ ಕಾರ್ಮಿಕರೇ ನಡೆಸುತ್ತಿದ್ದ ಈ ಸಹಕಾರ ಸಾರಿಗೆ ಸಂಸ್ಥೆಯ ಬೆನ್ನಿಗೆ ಸರ್ಕಾರ ನಿಲ್ಲದಿದ್ದರೆ ಈ ಸಾರಿಗೆ ಸಂಸ್ಥೆ ಇನ್ನು ನೆನಪಾಗಿ ಮಾತ್ರ ಉಳಿಯುತ್ತೆ.

    ಕೆಲಸಗಾರರೆಲ್ಲರೂ ಮಾಲೀಕರೇ ಆಗಿದ್ದ ಈ ಸಂಸ್ಥೆಯಲ್ಲಿ 65ಕ್ಕೂ ಹೆಚ್ಚು ಬಸ್‍ಗಳು ಮಲೆನಾಡಿಗರ ಜೀವನದ ಅವಿಭಾಜ್ಯ ಅಂಗವಾಗಿದ್ದವು. ಪ್ರತಿ ನಿತ್ಯ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, 60-70 ಸಾವಿರ ಜನ ನಿತ್ಯ ಪ್ರಯಾಣಿಸುತ್ತಿದ್ದರು. ಆದರೆ, ಬರುತ್ತಿದ್ದ ಹಣ ನಿತ್ಯದ ಡಿಸೇಲ್‍ಗೂ ಆಗಾದ ಕಾರಣ 30 ವರ್ಷಗಳಿಂದ ದಣಿವರಿಯದೆ ಓಡಿದ ಬಸ್ಸಿನ ಚಕ್ರಗಳು ಚಿರನಿದ್ರೆಯತ್ತ ಧಾವಿಸಿವೆ. ಸಹಾಯಕ್ಕಾಗಿ ಸರ್ಕಾರದ ಕದ ಬಡಿದರೂ ಆಶ್ವಾಸನೆ ಸಿಕ್ಕಿತೇ ವಿನಃ, ಸ್ಪಂದನೆ ಸಿಕ್ಕಲಿಲ್ಲ. ಹಾಗಾಗಿ, ನಿಸ್ವಾರ್ಥ ಸಾರಿಗೆ ಸಂಸ್ಥೆ ತನ್ನ ಸಂಚಾರವನ್ನ ಸ್ಥಗಿತಗೊಳಿಸಿದೆ.

    ಜನವರಿ 3, 2017ರಂದು ಬೆಳ್ಳಿಹಬ್ಬ ಆಚರಿಸಿಕೊಂಡ ಸಾರಿಗೆ ಸಂಸ್ಥೆ ನಷ್ಟವನ್ನ ಸರಿದೂಗಿಸಲಾಗದೆ ವೇತನ ಹೆಚ್ಚಳ, ಬೋನಸ್ ಯಾವೂದನ್ನೂ ನೀಡದೆ ವರ್ಷಗಳೇ ಕಳೆದಿದೆ. ವಿಮೆ ಕಟ್ಟಲೂ ಕೂಡ ಸಂಸ್ಥೆ ಪರದಾಡಿತ್ತು. ಈ ಸಾರಿಗೆ ಸಂಸ್ಥೆಯ ನೆರವಿಗೆ ಸರ್ಕಾರ ಬರದಿದ್ದರೆ ಏಷ್ಯಾ ಖಂಡದಲ್ಲೇ ಮೊದಲ ಹಾಗೂ ಮಾದರಿಯಾದ ಸಂಸ್ಥೆ ಶೀಘ್ರವೇ ಬಾಗಿಲು ಹಾಕಲಿದೆ. 300ಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುತ್ತಾರೆ. ಹಾಗಾಗಿ ಇಂದು ಕಾರ್ಮಿಕರು ಸಂಚಾರವನ್ನ ಸ್ಥಗಿತಗೊಳಿಸಿ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹಾಗೂ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಕೂಡ ಭಾಗವಹಿಸುವ ಸಾಧ್ಯತೆ ಇದ್ದು, ಸ್ಥಳೀಯ ನಾಯಕರು ಸಮಾಲೋಚನೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

    ಸರ್ಕಾರದ ನೆರವಿಗಾಗಿ ಸಂಸ್ಥೆಯವರು ಸಿಎಂ ಬಿ.ಎಸ್.ವೈ ಅವರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅಂದು ಯಡಿಯೂರಪ್ಪ ಕೂಡ ಟ್ಯಾಕ್ಸ್ ವಿಚಾರದಲ್ಲಿ ನೆರವಿಗೆ ನಿಲ್ಲೋ ಭರವಸೆ ನೀಡಿದ್ದರು. ಆದ್ರೆ ಯಾವುದೂ ಈಡೇರಲಿಲ್ಲ. ದಿನದಿಂದ ದಿನಕ್ಕೆ ಸಮಸ್ಯೆ ಜಟಿಲವಾಗ್ತಿರುವುದರಿಂದ ಕಾರ್ಮಿಕರು ಸಂಚಾರವನ್ನ ಸ್ಥಗಿತಗೊಳಿಸೋ ತೀರ್ಮಾನಕ್ಕೆ ಬಂದಿದ್ದಾರೆ. ಸರ್ಕಾರ ಶೀಘ್ರವೇ 6.50 ಕೋಟಿ ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತೆ. ಆ ಕ್ಷಣದಿಂದಲೇ ಮತ್ತೆ ಕಾರ್ಯಾರಂಭ ಮಾಡುತ್ತೇವೆ ಅಂತಿದ್ದಾರೆ ಕಾರ್ಮಿಕರು. ಸರ್ಕಾರದ ನಡೆ ಮೇಲೆ ಒಂದು ಸಂಸ್ಥೆಯ ಭವಿಷ್ಯವಂತೂ ನಿಂತಿದೆ.

    ಸಹಕಾರ ಸಾರಿಗೆ ನಡೆದು ಬಂದ ಹಾದಿ:
    90ರ ದಶಕದಲ್ಲಿ ಲಾಭದಲ್ಲಿದ್ದ ಶಂಕರ್ ಟ್ರಾನ್ಸ್‌ಪೋರ್ಟ್‌ನ ಸಿಬ್ಬಂದಿಗಳು ಮಾಲೀಕರ ಬಳಿ ಸಂಬಳ ಹೆಚ್ಚಳಕ್ಕೆ ಬೇಡಿಕೆ ಇಟ್ಟು 2 ತಿಂಗಳಿಗೂ ಹೆಚ್ಚು ಕಾಲ ಮುಷ್ಕರ ಕೈಗೊಂಡಿದ್ರು. ಕಾರ್ಮಿಕರ ಬೇಡಿಕೆ ಈಡೇರಿಸಲು ಒಪ್ಪದ ಮಾಲೀಕರು ಸಂಸ್ಥೆಯನ್ನ ಮುಚ್ಚಿದರು. ಕೆಲಸವಿಲ್ಲದೆ ಅತಂತ್ರರಾದ 123 ಕಾರ್ಮಿಕರು ಶಂಕರ್ ಟ್ರಾನ್ಸ್‌ಪೋರ್ಟ್‌ನವರು ಕೊಟ್ಟ ಪರಿಹಾರ 12 ಲಕ್ಷ ಹಣವನ್ನೇ ಬಂಡವಾಳವನ್ನಾಗಿಸಿಕೊಂಡು, ಅದೇ ಸಂಸ್ಥೆಯ 6 ಹಳೇ ಬಸ್‍ಗಳನ್ನ ಕೊಂಡು 1991 ಮಾರ್ಚ್‍ನಲ್ಲಿ 8 ರಂದು ಸಹಕಾರ ಸಾರಿಗೆ ಆರಂಭಿಸಿದ್ದರು. ಅಂದು ಕಾರ್ಮಿಕ ಮುಖಂಡ ಬಿ.ಕೆ.ಸುಂದರೇಶ್ ಕಾರ್ಮಿಕರ ಬೆನ್ನಿಗೆ ನಿಂತಿದ್ದರು.

    ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಯ ದಟ್ಟಕಾನನದ ಕುಗ್ರಾಮದಲ್ಲೂ ಸಾರಿಗೆ ಬಸ್ ಸಂಚರಿಸಿತ್ತು. 6 ಬಸ್ಸುಗಳಿಂದ ಆರಂಭವಾದ ಸಂಸ್ಥೆಯಲ್ಲೀಗ 75 ಬಸ್‍ಗಳಿವೆ. 1998ರಲ್ಲಿ ಕೊಪ್ಪದಲ್ಲಿ ಕಚೇರಿ ನಿರ್ಮಿಸಿದ್ದಲ್ಲದೆ ಕಂಪ್ಯೂಟರ್ ಬಳಸಿದ ಹೆಗ್ಗಳಿಕೆಯೂ ಈ ಸಂಸ್ಥೆಗಿದೆ. ಈ ಸಂಸ್ಥೆಯ ಸಾಹಸಕ್ಕೆ ನಿಬ್ಬೆರಗಾದ ಜಪಾನಿನ ಕ್ಯೊಟೊ ನಗರದ ರಿಟ್ಸುಮೆಕಿನ್ ಯುನಿರ್ವಸಿಟಿಯ ತಂಡ ಇಲ್ಲಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ತನ್ನ ದೇಶದ ಸಹಕಾರ ಸಂಸ್ಥೆಯಲ್ಲಿ ಅಳವಡಿಸಿಕೊಂಡಿತು. ಮಂಗಳೂರು ವಿವಿಯ ಪ್ರಾಧ್ಯಾಪಕರು ಇದೇ ಸಾರಿಗೆ ಸಂಸ್ಥೆ ಬಗ್ಗೆ ಅಧ್ಯಯನ ನಡೆಸಿ ಪಿಎಚ್‍ಡಿ ಪಡೆದರು. ಮಣಿಪಾಲ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ಸಹಕಾರ ಸಾರಿಗೆಯ ಯಶೋಗಾಥೆ ಪಠ್ಯವಾಯ್ತು. ಕಾಲೇಜಿನ ಪ್ರಾಧ್ಯಾಪಕರೊಬ್ಬರು ಮಂಡಿಸಿದ ಪ್ರಬಂಧಕ್ಕೆ ಕೊಲ್ಲಾಪುರದ ಶಿವಾಜಿ ವಿವಿ ಪಿಎಚ್‍ಡಿಯನ್ನೇ ನೀಡಿ ಗೌರವಿಸಿದೆ.

    ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರು, ವಿದ್ಯಾರ್ಥಿಗಳು, ಸಂಸ್ಥೆಯ ಕಾರ್ಮಿಕ ಮಕ್ಕಳು, ವಿಕಲಚೇತನರು, ಹಿರಿಯ ನಾಗರಿಕರಿಗೆ ಶೇ.50 ರಿಯಾಯಿತಿ ಕೊಟ್ಟು, ದಟ್ಟಕಾನನ, ಕಲ್ಲು-ಮಣ್ಣಿನ ದುರ್ಗಮ ಹಾದಿಯಲ್ಲೂ ಲಕ್ಷಾಂತರ ಮಕ್ಕಳ ಭವಿಷ್ಯ ರೂಪಿಸಿದ ಹೆಗ್ಗಳಿಕೆ ಈ ಸಂಸ್ಥೆಯದ್ದು. ಅಂತಹಾ ಸಂಸ್ಥೆ ಈಗ, ಸರ್ಕಾರದ ರೀತಿ-ರಿವಾಜುಗಳಿಂದ ಬೀಗ ಹಾಕುವ ಹೊಸ್ತಿಲಲ್ಲಿದೆ. ಸರ್ಕಾರ ಈ ಸಂಸ್ಥೆಗೆ ನೆರವು ನೀಡಿದ್ದೇ ಆದಲ್ಲಿ ಇದರ ಗತವೈಭವದ ದಿನ ಮತ್ತೆ ಆರಂಭಗೊಳ್ಳುತ್ತೆ ಎಂದು ಕಾರ್ಮಿಕರು ಹೇಳುತ್ತಿದ್ದಾರೆ.