Tag: ಹೈದರಾಬಾದ್ ಚುನಾವಣೆ

  • ಹಿಂದೂ ವಿರೋಧಿ ರಾಜನೀತಿ ವಿರುದ್ಧ ಜನ ವೋಟ್ ಹಾಕುತ್ತಿದ್ದಾರೆ: ತೇಜಸ್ವಿ ಸೂರ್ಯ

    ಹಿಂದೂ ವಿರೋಧಿ ರಾಜನೀತಿ ವಿರುದ್ಧ ಜನ ವೋಟ್ ಹಾಕುತ್ತಿದ್ದಾರೆ: ತೇಜಸ್ವಿ ಸೂರ್ಯ

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಜನ ಹಿಂದೂ ವಿರೋಧಿ ರಾಜನೀತಿ ವಿರುದ್ಧ ವೋಟ್ ಹಾಕುತ್ತಿದ್ದಾರೆ ಎಂದು ಸಂಸದ ಮತ್ತು ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.

    ಹೈದರಾಬಾದ್ ಮಹಾನಗರ ಪಾಲಿಕೆ ಫಲಿತಾಂಶದಲ್ಲಿ ಬಿಜೆಪಿ ಸಾಧನೆಯ ಬಗ್ಗೆ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಅವರು, ಜನರ ಇತ್ತೀಚಿನ ದಿನಗಳಲ್ಲಿ ಮೂರು ವಿಚಾರಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ವೋಟ್ ಮಾಡುತ್ತಿದ್ದಾರೆ. ಜನರು ಕುಟುಂಬ ಆಧಾರಿತ ರಾಜಕಾರಣ, ಭ್ರಷ್ಟ ಆಡಳಿತ ಮತ್ತು ಹಿಂದೂ ವಿರೋಧಿ ರಾಜನೀತಿ ವಿರುದ್ಧ ವೋಟ್ ಮಾಡುತ್ತಾರೆ ಎಂದು ಹೇಳಿದ್ದಾರೆ.

    ಈ ಚುನಾವಣೆಯ ಫಲಿತಾಂಶ ನನಗೆ ಸಂತೋಷ ನೀಡಿದೆ. 4 ಸ್ಥಾನದಿಂದ 40 ಸ್ಥಾನ ದಾಟಿದ್ದೇವೆ. ಹತ್ತು ಪಟ್ಟು ಫಲಿತಾಂಶ ಹೆಚ್ಚಾಗಿದೆ. ಈ ಸಾಧನೆ ಬಿಜೆಪಿ ಮೇಲೆ, ಮೋದಿಯವರ ಅಭಿವೃದ್ಧಿ ಕಾರ್ಯಗಳ ಮೇಲೆ ಜನ ನಂಬಿಕೆ ಇಟ್ಕೊಂಡಿರೋದನ್ನು ತೋರಿಸುತ್ತೆ. ಈ ಹೈದರಾಬಾದ್ ಮಹಾನಗರ ಪಾಲಿಕೆಯ ಫಲಿತಾಂಶ ಮುಂಬರುವ ದಿನಗಳಲ್ಲಿ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂಬ ಸುಳಿವು ಕೊಟ್ಟಿದೆ ಎಂದು ತಿಳಿಸಿದರು.

    ಇದು ಪಕ್ಷದ ಕಾರ್ಯಕರ್ತರ ಜಯ. ಕೆಸಿಆರ್ ಸಾಕಷ್ಟು ಕೇಸ್‍ಗಳನ್ನು ಹಾಕಿದರೂ ನಮ್ಮ ಕಾರ್ಯಕರ್ತರು ಶ್ರಮ ಹಾಕಿ ಕೆಲಸ ಮಾಡಿದ್ದಾರೆ. ಪ್ರತೀ ಚುನಾವಣೆಯಲ್ಲೂ ನಮ್ಮ ಪರ ಜನಬೆಂಬಲ ಹೆಚ್ಚಾಗುತ್ತಿದೆ. ಹೈದರಾಬಾದ್‍ಗೆ ಭಾಗ್ಯನಗರ ಎಂದು ಹೆಸರಿಡುವ ಮತ್ತು ನಿಜಾಮ ಸಂಸ್ಕೃತಿ ಅಂತ್ಯ ಮಾಡುವ ನಮ್ಮ ಭರವಸೆಗಳನ್ನು ಅಲ್ಲಿನ ಜನ ಬೆಂಬಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ನಮಗೆ ಸಹಾಯಕವಾಗಲಿದೆ ಎಂದು ಸೂರ್ಯ ಭವಿಷ್ಯ ನುಡಿದಿದ್ದಾರೆ.

    ಇದೇ ವೇಳೆ ಬಿಬಿಎಂಪಿ ಚುನಾವಣೆಗೆ ವೇಳಾಪಟ್ಟಿ ಹೊರಡಿಸಲು ಹೈಕೋರ್ಟ್ ನಿರ್ದೇಶನ ವಿಚಾರವಾಗಿ ಮಾತನಾಡಿ, ಬೆಂಗಳೂರಿಗೆ ವಿಶೇಷ ಕಾನೂನು ಬೇಕು. ಎಲ್ಲ ಸಮಸ್ಯೆಗಳಿಗೂ ವಿಶೇಷ ಕಾನೂನಿನಿಂದ ಪರಿಹಾರ ಸಿಗಬೇಕು. ಬಿಬಿಎಂಪಿಗೆ ಚುನಾವಣೆ ಯಾವಾಗ ಬಂದರೂ ಸರ್ಕಾರ ಸಿದ್ಧವಿದೆ. ಚುನಾವಣೆಯಲ್ಲಿ ಗೆಲ್ಲೋದು ಬಿಜೆಪಿಯೇ. ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡುವ ಬಗ್ಗೆ ಸಿಎಂ ಮತ್ತು ಸಚಿವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಚುನಾವಣೆ ಯಾವಾಗ ಬಂದರೂ ನಾವು ಸಿದ್ಧ ಎಂದರು.

    ಹೈದರಾಬಾದಿಗೆ ತೆರಳಿ ಪ್ರಚಾರ ನಡೆಸಿದ್ದ ತೇಜಸ್ವಿ ಸೂರ್ಯ, ಅಸಾದುದ್ದಿನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾನ ಅವತಾರವಾಗಿದ್ದು, ಅವರ ಪಕ್ಷಕ್ಕೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದು ಗುಡುಗಿದ್ದರು.

  • ಟಿಆರ್‌ಎಸ್‌, ಓವೈಸಿಯ ಕೋಟೆ ಛಿದ್ರ – ಹೈದರಾಬಾದ್‌ನಲ್ಲಿ ಬಿಜೆಪಿ ಮುನ್ನಡೆ

    ಟಿಆರ್‌ಎಸ್‌, ಓವೈಸಿಯ ಕೋಟೆ ಛಿದ್ರ – ಹೈದರಾಬಾದ್‌ನಲ್ಲಿ ಬಿಜೆಪಿ ಮುನ್ನಡೆ

    ಹೈದರಾಬಾದ್‌: ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ (ಜಿಎಚ್‌ಎಂಸಿ) ಚುನಾವಣೆಯಲ್ಲಿ ಸಿಎಂ ಚಂದ್ರಶೇಖರ್‌ ರಾವ್‌ ಮತ್ತು ಅಸಾದುದ್ದೀನ್ ಒವೈಸಿಯ ಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಮೊದಲ ಬಾರಿಗೆ ಎರಡಂಕಿಯನ್ನು ದಾಟಿ  ಮುನ್ನಡೆಯುತ್ತಿದೆ.

    ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಒಟ್ಟು 150 ಸ್ಥಾನಗಳ ಪೈಕಿ ಟಿಆರ್‌ಎಸ್‌ 71ರಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 40, ಎಐಎಂಎಂ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್‌ 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

    ವಿಶೇಷ ಏನೆಂದರೆ 2016ರ ಚುನಾವಣೆಯಲ್ಲಿ ಟಿಆರ್‌ಎಸ್‌ 99, ಎಐಎಂಎಂ 44, ಕಾಂಗ್ರೆಸ್‌ 3 ವಾರ್ಡ್‌ಗಳನ್ನು ಗೆದ್ದುಕೊಂಡಿದ್ದರೆ ಬಿಜೆಪಿ ಕೇವಲ 4 ವಾರ್ಡ್‌ಗಳನ್ನು ಮಾತ್ರ ಗೆದ್ದುಕೊಂಡಿತ್ತು. ಆದರೆ ಈ ಬಾರಿ ಬಿಜೆಪಿ ಈ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿತ್ತು. ಪರಿಣಾಮ ಗೃಹ ಸಚಿವ ಅಮಿತ್‌ ಶಾ ಆದಿಯಾಗಿ ಕೇಂದ್ರದ ಬಿಜೆಪಿ ನಾಯಕರು ವ್ಯಾಪಕ ಪ್ರಚಾರ ಕೈಗೊಂಡಿದ್ದರು.

    ಈ ಬಾರಿ ಕೊರೊನಾ ಸುರಕ್ಷಾ ಕ್ರಮಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸಿದ ಕಾರಣ ಮತಗಟ್ಟೆಯ ಸಂಖ್ಯೆಯನ್ನು ಹೆಚ್ಚಿಸಲಾಗಿತ್ತು. ಅಷ್ಟೇ ಅಲ್ಲದೇ ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆದಿರುವ ಕಾರಣ ಅಂತಿಮ ಫಲಿತಾಂಶಗಳು ರಾತ್ರಿ ಪ್ರಕಟವಾಗುವ ಸಾಧ್ಯತೆಯಿದೆ. ಕೆಲವು ವಾರ್ಡ್‌ಗಳಲ್ಲಿ ಭಾರೀ ಪೈಪೋಟಿ ಇದ್ದು ಈಗ ಮುನ್ನಡೆಯಲ್ಲಿದ್ದರೂ ಅಂತಿಮ ಫಲಿತಾಂಶದಲ್ಲಿ ಬದಲಾಗುವ ಸಾಧ್ಯತೆಯಿದೆ.

    ಸಂಜೆ 4:30ರ ವೇಳೆಗೆ ಒಟ್ಟು 34 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಟಿಆರ್‌ಎಸ್‌ 15, ಎಐಎಂಎಂ 13, ಬಿಜೆಪಿ 4, ಕಾಂಗ್ರೆಸ್‌ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ.

  • ಓವೈಸಿಗೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧ – ಹೈದರಾಬಾದ್‍ನಲ್ಲಿ ತೇಜಸ್ವಿ ಘರ್ಜನೆ

    ಓವೈಸಿಗೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧ – ಹೈದರಾಬಾದ್‍ನಲ್ಲಿ ತೇಜಸ್ವಿ ಘರ್ಜನೆ

    ಹೈದರಾಬಾದ್: ಅಸಾದುದ್ದಿನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾನ ಅವತಾರವಾಗಿದ್ದು, ಅವರ ಪಕ್ಷಕ್ಕೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಗುಡುಗಿದ್ದಾರೆ.

    ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದ ತೇಜಸ್ವಿ ಸೂರ್ಯ, ಇದೀಗ ಹೈದಾರಾಬಾದ್‍ನಲ್ಲಿ ಅಸಾದುದ್ದಿನ್ ಓವೈಸಿ ವಿರುದ್ಧ ಹರಿಹಾಯ್ದಿದ್ದಾರೆ. ಮುಂದಿನ ತಿಂಗಳು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಇರುವ ಹಿನ್ನೆಲೆ ಬಿಜೆಪಿ ಪರ ತೇಜಸ್ವಿ ಸೂರ್ಯ ಪ್ರಚಾರ ನಡೆಸುತ್ತಿದ್ದಾರೆ.

    ಸದಾ ವಿಭಜನೆಯ ಹಾಗೂ ವಿವಾದಾತ್ಮಕ ಹೇಳಿಕೆ ನೀಡುವ ಅಸಾದುದ್ದಿನ್ ಓವೈಸಿ ವಿರುದ್ಧ ಗುಡುಗಿರುವ ತೇಜಸ್ವಿ ಸೂರ್ಯ, ಅವರಿಗೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದಿದ್ದಾರೆ. ಅಸಾದುದ್ದಿನ್ ಓವೈಸಿ ಹಾಗೂ ಸಹೋದರ ಅಕ್ಬರುದ್ದಿನ್ ಓವೈಸಿ ವಿಭಜನೆ ಹಾಗೂ ಕೋಮುವಾದಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಬದಲಿಗೆ ರೊಹಿಂಗ್ಯಾ ಮುಸ್ಲಿಮರಿಗೆ ಮಾತ್ರ ಆಶ್ರಯ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

    ನೀವು ಇಲ್ಲಿ ಓವೈಸಿಗೆ ಮತ ಹಾಕಿದರೆ ಮುಂದೆ ಅವರು ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಮುಸ್ಲಿಂ ಪ್ರದೇಶಗಳಲ್ಲಿ ಬಲಶಾಲಿಯಾಗುತ್ತಾರೆ. ಓವೈಸಿ ಜಿನ್ನಾನ ಹೊಸ ಅವತಾರ. ಹೀಗಾಗಿ ಅವರನ್ನು ಸೋಲಿಸಲೇಬೇಕು. ನೀವು ಬಿಜೆಪಿಗೆ ಹಾಕುವ ಪ್ರತಿ ಮತ ಭಾರತ, ಹಿಂದುತ್ವಕ್ಕೆ, ಇದರಿಂದ ದೇಶ ಬಲಗೊಳ್ಳಲಿದೆ ಎಂದು ಕರೆ ನೀಡಿದರು.

    ಇದು ನಿಜಾಮರ ಕಾಲಾವಧಿಯಲ್ಲ ಎಂಬುದನ್ನು ನಾನು ಅಸಾದುದ್ದಿನ್ ಹಾಗೂ ಅಕ್ಬರುದ್ದಿನ್ ಅವರಿಗೆ ತಿಳಿಸಲು ಬಯಸುತ್ತೇನೆ. ಇದು ಹಿಂದೂ ಹೃದಯ ಸಾಮ್ರಾಟರಾದ ಪ್ರಧಾನಿ ನರೇಂದ್ರ ಮೋದಿಯವರ ಕಾಲಾವಧಿ. ನೀವಿಲ್ಲಿ ಏನೂ ಅಲ್ಲ ಎಂದು ಕಿಡಿಕಾರಿದರು.

    ಪ್ರಚಾರದುದ್ದಕ್ಕೂ ಹೈದರಾಬಾದ್‍ಗೆ ಭಾಗ್ಯ ನಗರವೆಂದೇ ಸಂಬೋಧಿಸಿದ ತೇಜಸ್ವಿ, ಹೈದರಾಬಾದ್‍ನ್ನು ಭಾಗ್ಯಾನಗರವಾಗಿ ಬದಲಿಸಬೇಕಿದೆ ಎಂದರು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾಪೋರೇಷನ್ ಚುನಾವಣೆ ಡಿಸೆಂಬರ್ 1ರಂದು ನಡೆಯುತ್ತಿದ್ದು, ಇದು ದಕ್ಷಿಣ ಭಾರತದ ಗೇಟ್‍ವೇಯಾಗಿದೆ. ಹೀಗಾಗಿ ಇಂದು ಹೈದರಾಬಾದನ್ನು ಬದಲಿಸೋಣ, ನಾಳೆ ತೆಲಂಗಾಣ, ನಾಡಿದ್ದು ದಕ್ಷಿಣ ಭಾರತವನ್ನು ಬದಲಿಸೋಣ. ಹೈದರಾಬಾದ್ ಚುನಾವಣೆಯನ್ನು ಇಡೀ ದೇಶವೇ ಬೆರಗುಗಣ್ಣಿನಿಂದ ನೋಡುತ್ತಿದೆ ಎಂದರು.