Tag: Assembly by-election

  • ಚಿಂಚೋಳಿ ಉಪಚುನಾವಣೆ – 10 ಮಂದಿ ಪಕ್ಷೇತರರಿಂದ ನಾಮಪತ್ರ ವಾಪಸ್

    ಚಿಂಚೋಳಿ ಉಪಚುನಾವಣೆ – 10 ಮಂದಿ ಪಕ್ಷೇತರರಿಂದ ನಾಮಪತ್ರ ವಾಪಸ್

    ಕಲಬುರಗಿ: ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರ ಚಿಂಚೋಳಿ ಉಪ ಚುನಾವಣೆಯಲ್ಲಿ 10 ಮಂದಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

    ನಾಮಪತ್ರ ವಾಪಸ್ ಪಡೆದುಕೊಳ್ಳಲು ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ, ನೋಂದಾಯಿತ ಮತ್ತು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಪಕ್ಷೇತರ 10 ಜನ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ್ದಾರೆ.

    ಸದ್ಯ ಕಣದಲ್ಲಿ 17 ಅಭ್ಯರ್ಥಿಗಳು ಉಳಿದುಕೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಈ ಬಾರಿ ಒಟ್ಟು 27 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 10 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದದ್ದು ಬಿಟ್ಟರೆ ಯಾವುದೇ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿಲ್ಲ.

    ಬಿಜೆಪಿಯ ಮುಖಂಡ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಚುನಾವಣೆ ಘೋಷಣೆ ಬಳಿಕ ಎರಡೂ ಪಕ್ಷಗಳ ರಾಜ್ಯದ ಪ್ರಮುಖ ನಾಯಕರು ಪ್ರಚಾರ ಕಾರ್ಯಕ್ರಮದ ಪಾಲ್ಗೊಂಡಿಲ್ಲ. ಆದರೆ ಇಂದು ನಾಮಪತ್ರದ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯಿಂದ ಎರಡೂ ಪಕ್ಷಗಳ ಪ್ರಮುಖ ನಾಯಕರು ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆಯಿದೆ.

  • ವಿಧಾನಸಭಾ ಚುನಾವಣೆ ಉಪಕದನ – ಕಾಂಗ್ರೆಸ್ ಪಟ್ಟಿ ಬಿಡುಗಡೆ

    ವಿಧಾನಸಭಾ ಚುನಾವಣೆ ಉಪಕದನ – ಕಾಂಗ್ರೆಸ್ ಪಟ್ಟಿ ಬಿಡುಗಡೆ

    ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯದ ಚಿಂಚೋಳಿ, ಕುಂದಗೋಳ ಉಪಚುನಾವಣೆ ಸಿದ್ಧತೆ ನಡೆದಿದ್ದು, ಕಾಂಗ್ರೆಸ್ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

    ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಸುಭಾಷ್ ರಾಥೋಡ್ ಅವರಿಗೆ ಟಿಕೆಟ್ ನೀಡಲಾಗಿದೆ. ಸುಭಾಷ್ ರಾಥೋಡ್ ಅವರು ಕಲಬುರಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಅವರಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಇದೆ. ಅಲ್ಲದೇ ಚಿಂಚೋಳಿ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿಯನ್ನು ಡಿಸಿಎಂ ಪರಮೇಶ್ವರ್ ಅವರಿಗೆ ನೀಡಲಾಗಿದೆ. ಕ್ಷೇತ್ರದಲ್ಲಿ ಲಂಬಾಣಿ, ದಲಿತ, ಲಿಂಗಾಯತ ಸಚಿವರಿಗೆ ಸಾರಥ್ಯ ನೀಡಲಾಗಿದ್ದು, ಪ್ರಿಯಾಂಕ್ ಖರ್ಗೆ, ರಾಜಶೇಖರ್ ಪಾಟೀಲ್, ತುಕಾರಾಂ, ಈಶ್ವರ್ ಖಂಡ್ರೆ, ಪಿ.ಟಿ.ಪರಮೇಶ್ವರ್ ನಾಯಕ್, ರಹೀಂಖಾನ್ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

    ಸಚಿವ ಶಿವಳ್ಳಿ ಅವರ ಆಕಾಲಿಕ ನಿಧನದಿಂದ ತೆರವಾಗಿದ್ದ ಕುಂದಗೋಳ ಕ್ಷೇತ್ರಕ್ಕೆ ಅವರ ಧರ್ಮಪತ್ನಿ ಕುಸುಮಾವತಿ ಶಿವಳ್ಳಿ ಅವರಿಗೆ ನಿರೀಕ್ಷೆಯಂತೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕೆಲ ದಿನಗಳ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕುಸುಮಾವತಿ ಅವರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ತಮ್ಮನ್ನು ಚುನಾವಣೆಗೆ ನಿಲ್ಲುವಂತೆ ಒತ್ತಾಯಿಸುತ್ತಿದ್ದು, ಅವರ ಆಸೆಯಂತೆ ಸ್ಪರ್ಧೆ ನಡೆಸಲು ಸಿದ್ಧ ಎಂದಿದ್ದರು. ಕುಂದಗೋಳ ಕ್ಷೇತ್ರದ ಉಸ್ತುವಾರಿಯನ್ನು ಕುರುಬ, ಲಿಂಗಾಯತ ಸಚಿವರಾದ ಎಂಟಿಬಿ ನಾಗರಾಜು, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಅವರಿಗೆ ನೀಡಲಾಗಿದೆ. ಈ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ಕಾಂಗ್ರೆಸ್ ಟ್ರಬಲ್ ಶೂಟರ್, ಸಚಿವ ಡಿಕೆ ಶಿವಕುಮಾರ್ ಅವರಿಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಉಪ ಚುನಾವಣೆ ನಡೆಯುವ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ಮೈತ್ರಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

  • ಚಿಂಚೋಳಿಗೆ ಮೇ 19ರಂದು ಉಪಚುನಾವಣೆ

    ಚಿಂಚೋಳಿಗೆ ಮೇ 19ರಂದು ಉಪಚುನಾವಣೆ

    ಬೆಂಗಳೂರು: ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾದ ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಮೇ 19ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

    ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮೇ 19 ರಂದು ನಡೆಯಲಿದೆ. ಅದೇ ದಿನವೇ ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈಗಾಗಲೇ ಕುಂದಗೋಳ ಉಪ ಚುನಾವಣೆ ಕೂಡ ಮೇ 19ರಂದು ನಿಗದಿಯಾಗಿದೆ.

    ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ ಏಪ್ರಿಲ್ 22ರಂದು ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 29ರಂದು ಕಡೆಯ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಮೇ 2 ರಂದು ಕೊನೆಯ ದಿನ. ಈ ಮೂಲಕ ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

    ಚಿಂಚೋಳಿ ವಿಧಾನಸಭೆ ಕ್ಷೇತ್ರದಿಂದ 2018ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಜಾಧವ್ ಅವರು ಜಯಗಳಿಸಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ಬಿಜೆಪಿ ಸೇರ್ಪಡೆಯಾಗಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

  • ರಂಗೇರಿದ ಜಮಖಂಡಿ ಉಪಚುನಾವಣೆ ಕದನ – ಕೈ, ಕಮಲದಲ್ಲಿ ಬಂಡಾಯ ಭೀತಿ

    ರಂಗೇರಿದ ಜಮಖಂಡಿ ಉಪಚುನಾವಣೆ ಕದನ – ಕೈ, ಕಮಲದಲ್ಲಿ ಬಂಡಾಯ ಭೀತಿ

    ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಹೇಳಲಾಗುತ್ತಿರುವ ವಿಧಾನಸಭೆಯ ಉಪ ಚುನಾವಣೆಗಳ ಅಖಾಡ ರಂಗೇರುತ್ತಿದೆ. ಅದೇ ರೀತಿ ಜಮಖಂಡಿಯಲ್ಲೂ ಚುನಾವಣಾ ಜ್ವರ ಏರುತ್ತಿದ್ದು, ಅದಾಗಲೇ ಕೈ, ಕಮಲ ಪಕ್ಷಗಳ ಅಭ್ಯರ್ಥಿಗಳು ಪ್ರಚಾರದ ಅಂಗಳಕ್ಕೆ ಇಳಿದಿದ್ದಾರೆ. ಆದರೆ, ಅಭ್ಯರ್ಥಿಗಳನ್ನು ಎರಡು ಪಕ್ಷಗಳು ಫೈನಲ್ ಮಾಡುತ್ತಿದ್ದಂತೆ ಅಸಮಾಧಾನ ಹೊಗೆ ಕಾಣಿಸಿಕೊಂಡಿದೆ.

    ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ ಭೀತಿ ಎದುರಾದರೆ, ಬಿಜೆಪಿಯ ಪ್ರಮುಖ ನಾಯಕ ಪಕ್ಷ ತೊರೆಯುವ ಆತಂಕ ಎದುರಾಗಿದೆ. ಇದರ ನಡುವೆಯೇ ಕೈ, ಕಮಲ ಅಭ್ಯರ್ಥಿಗಳು ಪ್ರಚಾರವನ್ನು ಆರಂಭಿಸಿದ್ದಾರೆ.

    ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ದಿವಂಗತ ಶಾಸಕ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ನ.3ರಂದು ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡರನ್ನ ಈ ಬಾರಿ ಕಾಂಗ್ರೆಸ್ ಅಖಾಡಕ್ಕಿಳಿಸಲಿದೆ. ಇದಕ್ಕೆ ಜೆಡಿಎಸ್ ಬೆಂಬಲ ಕೂಡ ನೀಡಿದೆ. ಆದರೆ ಜಮಖಂಡಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಕೆಲ ಮುಖಂಡರು, ಕ್ಷೇತ್ರದಲ್ಲಿ ಹೆಚ್ಚಿನ ಮತದಾರರು ಇರುವ ಜೈನ ಸಮುದಾಯದ ಮುಖಂಡ ಸುಶೀಲಕುಮಾರ ಬೆಳಗಲಿ ಅವರಿಗೆ ಟಿಕೆಟ್ ನೀಡುವಂತೆ ರಾಜ್ಯ ನಾಯಕರಿಗೆ ಒತ್ತಡ ತಂದಿದ್ದರು. ಆದರೆ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅ. 13ರಂದು ಕಾರ್ಯಕರ್ತರೊಂದಿಗೆ ಚರ್ಚಿಸಿ ಬಂಡಾಯವಾಗಿ ಕಣಕ್ಕಿಳಿಯುವ ಬಗ್ಗೆ ಚಿಂತನೆಯಲ್ಲಿದ್ದಾರೆ.

    ಕಾಂಗ್ರೆಸ್ ಪಕ್ಷದ ಆನಂದ ನ್ಯಾಮಗೌಡರಿಗೆ ಸಹಜವಾಗಿ ಅನುಕಂಪದ ಅಲೆ ಇದ್ದು, ತಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ನನಗೆ ಶ್ರೀ ರಕ್ಷೆ ಎಂದಿದ್ದಾರೆ. ಅ.16ರಂದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

    ಬಿಜೆಪಿ ಪಕ್ಷದಲ್ಲೂ ಹಲವು ಸುತ್ತಿನ ಮಾತುಕತೆ, ಸಭೆಗಳ ಬಳಿಕ ಕೊನೆಗೂ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿಯವರನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಸಹೋದರ ಸಂಗಮೇಶ ನಿರಾಣಿ ಹಾರಿಸಿದ ಬಂಡಾಯದ ಬಾವುಟದಿಂದಾಗಿ ಶ್ರೀಕಾಂತ ಕುಲಕರ್ಣಿ ಅವರು ಕೆಲವೇ ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಬೇಕಾಯಿತು. ಆದರೆ ಈ ಬಾರಿ ನಿರಾಣಿ ಕುಟುಂಬದಿಂದ ಬಂಡಾಯ ಕಾಣಿಸುತ್ತಿಲ್ಲವಾದರೂ ಬಿಜೆಪಿಯ ಸಹ ಸಂಚಾಲಕ ಬಿಎಸ್ ಸಿಂಧೂರ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪಕ್ಷದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಕ್ಷ ತೊರೆಯುವ ಬಗ್ಗೆ ಬೆಂಬಲಿಗರ ಅಭಿಪ್ರಾಯ ಸಂಗ್ರಹಕ್ಕೂ ಮುಂದಾಗಿದ್ದು, ಮಾನಸಿಕವಾಗಿ ಬಿಜೆಪಿಯಿಂದ ದೂರ ಉಳಿದಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಜಮಖಂಡಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ಮಾಜಿ ಸಚಿವ ಮುರುಗೇಶ ನಿರಾಣಿ ತಮ್ಮ ಪರಿವಾರದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇನ್ನುಳಿದ ಮುಖಂಡರ ಜೊತೆ ರಾಜ್ಯ ನಾಯಕರು ಮಾತನಾಡಿದ್ದಾರೆ. ಕಾಂಗ್ರೆಸ್ ಅನುಕಂಪದ ಅಲೆ ನಂಬಿ ಕುಳಿತಿದೆ. ಅದು ಪ್ರಯೋಜನಕ್ಕೆ ಬರುವುದಿಲ್ಲ. ನನ್ನ ಅನುಭವ ಕೆಲಸ ಮಾಡುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ರಾಜ್ಯ ನಾಯಕರೊಂದಿಗೆ ಚರ್ಚಿಸಿ ನಾಮಪತ್ರ ಸಲ್ಲಿಕೆಯ ದಿನಾಂಕ ಘೋಷಿಸುವುದಾಗಿ ಹೇಳಿದ್ದಾರೆ.  ಇದನ್ನು ಓದಿ: ರಾಮನಗರ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ – ಕೈ ಎಂಎಲ್‍ಸಿ ಲಿಂಗಪ್ಪ ಪುತ್ರ ಬಿಜೆಪಿಗೆ ಸೇರ್ಪಡೆ

    ಜಮಖಂಡಿ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಲಿದ್ದು, ಎರಡು ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳು ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಇದೇ ವೇಳೆ ಎರಡು ಕಡೆಯಲ್ಲೂ ಅಸಮಾಧಾನದ ಹೊಗೆ ಕಾಣಿಸುತ್ತಿದ್ದು, ಇದು ಫಲಿತಾಂಶದ ಮೇಲೆ ಪರಿಣಾಮ ಬೀರತ್ತಾ ಎನ್ನುವ ಪ್ರಶ್ನೆಗೆ ನವೆಂಬರ್ 6 ರಂದು ಮತ ಎಣಿಕೆಯ ದಿನ ಉತ್ತರ ಸಿಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv