Tag: Buddhivantha-2

  • ಸೋನಲ್ ಬಣ್ಣದ ಹೆಜ್ಜೆಗೆ ಐದು ವಸಂತದ ಸಂಭ್ರಮ!

    ಸೋನಲ್ ಬಣ್ಣದ ಹೆಜ್ಜೆಗೆ ಐದು ವಸಂತದ ಸಂಭ್ರಮ!

    ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಚಿತ್ರದ ಮೂಲಕವೇ ನಾಯಕಿಯಾಗಿ ಗುರುತಾದವರು ಸೋನಲ್ ಮೊಂತೆರೋ. ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಹಲವಾರು ಪ್ರತಿಭೆಗಳನ್ನು ಕೊಡುಗೆಯಾಗಿ ಕೊಡಮಾಡಿರುವ ಮಂಗಳೂರಿನ ಹುಡುಗಿ ಸೋನಲ್. ಹೊರ ಜಗತ್ತಿನ ಪಾಲಿಗೆ ಪಂಚತಂತ್ರದ ಪ್ರಭೆ ಮಾತ್ರವೇ ಸೋನಲ್ ಸುತ್ತ ಗೋಚರಿಸುತ್ತೆ. ನಟಿಸಿದ ಮೊದಲ ಚಿತ್ರದಿಂದಲೇ ಟೇಕಾಫ್ ಆದ ಬಗ್ಗೆ ಹಲವರಲ್ಲೊಂದು ಅಚ್ಚರಿಯೂ ಇದೆ. ವಾಸ್ತವವಾಗಿ ಮಾಡೆಲಿಂಗ್ ಲೋಕದಿಂದ ತುಳು ಚಿತ್ರರಂಗವನ್ನು ಹಾದು ಬಂದು ಕನ್ನಡದಲ್ಲಿ ನೆಲೆ ಕಂಡುಕೊಂಡಿರುವ ಸೋನಲ್ ಈ ಹಂತ ತಲುಪಿಕೊಳ್ಳಲು ಒಂದಷ್ಟು ಸರ್ಕಸ್ಸು ನಡೆಸಿದ್ದಾರೆ. ಅಷ್ಟೆಲ್ಲ ಪರಿಶ್ರಮ ಮತ್ತು ತುಂಬು ಆಹ್ಲಾದವನ್ನು ಮೆತ್ತಿಕೊಂಡಂತಿರೋ ಸೋನಲ್‍ರ ಬಣ್ಣದ ಹೆಜ್ಜೆಗೀಗ ಭರ್ತಿ ಐದು ವರ್ಷ ತುಂಬಿದೆ.

    ಸೋನಲ್ ಮೊಂತೆರೋ ಈಗ ಕನ್ನಡ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದಾಗ ತುಳು ಚಿತ್ರಪ್ರೇಮಿಗಳಿಗೆ ಬಿಟ್ಟರೆ ಬೇರೆಲ್ಲರಿಗೂ ಈಕೆ ಅಪರಿಚಿತೆಯಾಗಿದ್ದರು. ಆದರೆ ಅದರಲ್ಲಿನ ಪಾತ್ರ ಮತ್ತು ಅದನ್ನವರು ನಿರ್ವಹಿಸಿದ್ದ ರೀತಿಗಳನ್ನೆಲ್ಲ ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದರು. ಕೆಲವೊಮ್ಮೆ ಕೆಲ ನಟ ನಟಿಯರು ಹಲವಾರು ವರ್ಷಗಳ ಕಾಲ ಸೈಕಲ್ಲು ಹೊಡೆದರೂ ದಕ್ಕಿಸಿಕೊಳ್ಳಲಾಗದಂಥಾ ಗೆಲುವನ್ನು ಸೋನಲ್ ಪಂಚತಂತ್ರದ ಮೂಲಕ ಗಿಟ್ಟಿಸಿಕೊಂಡಿದ್ದರು.

    ಇದೊಂದೇ ಸಿನಿಮಾದ ನಂತರದಲ್ಲಿ ಅವರು ಪಡೆದುಕೊಳ್ಳುತ್ತಾ ಸಾಗಿ ಬರುತ್ತಿರೋ ಅವಕಾಶಗಳನ್ನು ಕಂಡರೆ ಯಾರೇ ಆದರೂ ಚಕಿತರಾಗುವಂತಿದೆ. ಯಾಕೆಂದರೆ, ದೊಡ್ಡ ಸಿನಿಮಾಗಳಲ್ಲಿ, ಸ್ಟಾರ್ ನಟರ ಜೊತೆ ನಟಿಸೋ ಅವಕಾಶಗಳನ್ನು ಸೋನಲ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿಯೂ ಅವರು ನಾಯಕಿಯರಲ್ಲೊಬ್ಬರಾಗಿದ್ದಾರೆ. ಅದೇ ಹೊತ್ತಿನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆ ಬುದ್ಧಿವಂತ-2 ಚಿತ್ರದಲ್ಲಿಯೂ ನಟಿಸುತ್ತಿದ್ದಾರೆ. ಇದೆಲ್ಲದರ ನಡುವೆ ಪರಭಾಷೆಗಳಿಂದಲೂ ಕೂಡಾ ಸೋನಲ್‍ಗೆ ಬಿಗ್ ಆಫರ್‌ಗಳು ಬರಲಾರಂಭಿಸಿವೆ. ಇಂಥಾದ್ದೊಂದು ಸಂಕ್ರಮಣ ಕಾಲದಲ್ಲಿಯೇ ತಮ್ಮ ಸಿನಿಮಾ ಯಾನಕ್ಕೆ ಐದು ವರ್ಷ ತುಂಬಿದ ಖುಷಿಯೂ ಅವರನ್ನಾವರಿಸಿಕೊಂಡಿದೆ.

    ಮಂಗಳೂರಿನ ಚೆಲುವೆ ಸೋನಲ್ ಮೊಂತೇರೋ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದೇ ಮಾಡೆಲಿಂಗ್ ಲೋಕದ ಮುಖಾಂತರ. ಮಂಗಳೂರು ಮಂದಿಗೆ ಯಕ್ಷಗಾನ, ನಾಟಕ ಮತ್ತು ಸಿನಿಮಾ ಗೀಳು ಇದ್ದೇ ಇರುತ್ತದೆ. ಅಂಥಾ ವಾತಾವರಣದಲ್ಲಿಯೇ ಬೆಳೆದು ಬಂದಿದ್ದ ಸೋನಲ್ ಮನಸು ಕಲಿಕೆಯ ದಿನಗಳಲ್ಲಿಯೇ ಬಣ್ಣದ ಲೋಕದತ್ತ ವಾಲಿಕೊಂಡಿತ್ತು. ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದವರು ತುಳುವಿನ ಚಿತ್ರದಲ್ಲಿ ನಾಯಕಿಯಾಗೋ ಅವಕಾಶ ಪಡೆದುಕೊಂಡಿದ್ದರು. ಆ ಮೊದಲ ಚಿತ್ರವೇ ನೂರು ದಿನ ಯಶಸ್ವೀ ಪ್ರದರ್ಶನ ಕಾಣುವ ಮೂಲಕ ತುಳು ನಾಡಿನ ತುಂಬ ಸೋನಲ್ ಹೆಸರುವಾಸಿಯಾಗಿದ್ದರು.

    ಆ ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ನಟಿಸಬೇಕೆಂಬುದು ಸೋನಲ್ ಅವರ ಮಹಾ ಕನಸಾಗಿತ್ತು. ಅದೇ ಗುಂಗಿನಲ್ಲಿ ಚಿತ್ರರಂಗದೊಳಕ್ಕೆ ಪ್ರವೇಶ ಪಡೆಯಲು ಪ್ರಯತ್ನಿಸಿದರೂ ಆರಂಭದಲ್ಲಿ ದೊರೆತದ್ದು ಸಣ್ಣ ಪುಟ್ಟ ಅವಕಾಶಗಳು ಮಾತ್ರ. ಅದರ ನಡುವೆಯೂ ಅಭಿಸಾರಿಕೆ, ಎಂಎಲ್‍ಎ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರಾದರೂ ಹೇಳಿಕೊಳ್ಳುವಂಥ ಗೆಲುವೇನೂ ಸಿಕ್ಕಿರಲಿಲ್ಲ. ಆದರೆ ಒಂದಷ್ಟು ಕಾಲದ ಸರ್ಕಸ್ಸುಗಳೆಲ್ಲವೂ ಸಾರ್ಥಕವಾಗುವಂಥ ಗೆಲುವನ್ನು ಪಂಚತಂತ್ರ ತಂದುಕೊಟ್ಟಿದೆ. ಸದ್ಯ ಲಾಕ್‍ಡೌನ್ ಸಮಯವನ್ನು ಬಹು ಕಾಲದ ನಂತರ ಕುಟುಂಬಿಕರ ಜೊತೆ ಕಳೆಯುತ್ತಿರೋ ಸೋನಲ್ ಅದರ ನಡುವೆಯೇ ಮುಂದಿನ ಸಿನಿಮಾಗಳಿಗೆ ತಯಾರಿ ನಡೆಸುತ್ತಿದ್ದಾರೆ. ಈ ಔದರ ಸಂಭ್ರಮವನ್ನವರು ಮುಂದಿನ ದಿನಗಳಲ್ಲಿ ಮತ್ತೊಂದಷ್ಟು ಚಿತ್ರಗಳೊಂದಿಗೆ ಸಂಪನ್ನಗೊಳಿಸಿಕೊಳ್ಳಲಿದ್ದಾರೆ.

  • ಜನ ಈವರೆಗೆ ನೋಡಿರದ ಗೆಟಪ್ಪಿನಲ್ಲಿ ಬರ್ತಾರಂತೆ ಉಪ್ಪಿ!

    ಜನ ಈವರೆಗೆ ನೋಡಿರದ ಗೆಟಪ್ಪಿನಲ್ಲಿ ಬರ್ತಾರಂತೆ ಉಪ್ಪಿ!

    ಬೆಂಗಳೂರು: ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರೋ ಐ ಲವ್ ಯೂ ಚಿತ್ರದ ಮೂಲಕ ರಿಯಲ್ ಸ್ಟಾರ್ ಉಪೇಂದ್ರ ಪಾಲಿಗೆ ಭರಪೂರ ಗೆಲುವು ಲಭಿಸಿದೆ. ಯಶಸ್ವಿಯಾಗಿ ನೂರು ದಿನ ಪೂರೈಸಿಕೊಳ್ಳುವ ಮೂಲಕ ಈ ವರ್ಷದ ಸೂಪರ್ ಹಿಟ್ ಚಿತ್ರವಾಗಿಯೂ ದಾಖಲಾಗಿದೆ. ಹೀಗೆ ಗೆದ್ದ ಖುಷಿಯಲ್ಲಿರೋ ಉಪೇಂದ್ರ ಸದ್ಯ ಬುದ್ಧಿವಂತ 2 ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಈ ಹಿಂದೆ ಎಂದೂ ನೋಡಿರದಂಥಾ ಗೆಟಪ್ಪಿನಲ್ಲಿ ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲು ಉಪ್ಪಿ ರೆಡಿಯಾಗಿದ್ದಾರೆಂಬ ಸುದ್ದಿಗಳು ಹರಿದಾಡುತ್ತಿವೆ.

    ಉಪೇಂದ್ರ ಸಿನಿಮಾಗಳೆಂದ ಮೇಲೆ ಆರಂಭಿಕವಾಗಿಯೇ ದೊಡ್ಡ ಮಟ್ಟದಲ್ಲಿ ಕ್ರೇಜ್ ಹುಟ್ಟಿಕೊಳ್ಳುತ್ತೆ. ಯಾವ ಚಿತ್ರವಾದರೂ ಉಪ್ಪಿ ಫ್ಲೇವರಿನ ಒಂದಷ್ಟು ಪ್ರಯೋಗಗಳಾದರೂ ಗ್ಯಾರೆಂಟಿ ಎಂಬ ನಂಬಿಕೆ ಅಭಿಮಾನಿಗಳಲ್ಲಿದೆ. ಅದರಲ್ಲಿಯೂ ಹಿಟ್ ಸಿನಿಮಾಗಳ ನಿರ್ಮಾಪಕರೆಂದೇ ಖ್ಯಾತರಾಗಿರುವ ಟಿ.ಆರ್. ಚಂದ್ರಶೇಖರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಬುದ್ಧಿವಂತ-2 ಚಿತ್ರ ಘೋಷಣೆಯಾದಂದಿನಿಂದಲೇ ಭಾರೀ ಕುತೂಹಲ ಮೂಡಿಕೊಂಡಿತ್ತು. ಸೆಟ್ಟೇರಿ ಒಂದಷ್ಟು ಕಾಲವೂ ಕಳೆದಿದ್ದರಿಂದ ಈ ಚಿತ್ರದ ಕಥೆ ಏನಾಯ್ತೆಂಬ ಧಾವಂತವೂ ಉಪ್ಪಿ ಅಭಿಮಾನಿಗಳಲ್ಲಿದ್ದದ್ದು ಸುಳ್ಳಲ್ಲ.

    ಆದರೀಗ ಬುದ್ಧಿವಂತ 2 ಚಿತ್ರ ಸದ್ದೇ ಇಲ್ಲದೆ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಒಂದಷ್ಟು ಬಿಡುವಿನ ಬಳಿಕ ಹಬ್ಬ ಮುಗಿಸಿಕೊಂಡು ಮತ್ತೆ ಚಿತ್ರೀಕರಣ ನಡೆಸಲು ಚಿತ್ರತಂಡ ತೀರ್ಮಾನಿಸಿದೆಯಂತೆ. ಈ ಮೊದಲ ಹಂತದ ಚಿತ್ರೀಕರಣದ ಸಮಯದಲ್ಲಿಯೇ ಈ ಸಿನಿಮಾ ಬಗ್ಗೆ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳು ಜಾಹೀರಾಗಿವೆ. ಅದರಲ್ಲಿಯೂ ಉಪ್ಪಿ ಗೆಟಪ್ಪಿನ ಬಗ್ಗೆಯಂತೂ ಅಭಿಮಾನಿಗಳೆಲ್ಲ ಥ್ರಿಲ್ ಆಗುವಂಥಾ ವಿಚಾರಗಳೇ ಹರಿದಾಡುತ್ತಿವೆ. ಈ ನಿಟ್ಟಿನಲ್ಲಿ ಹೇಳೋದಾದರೆ ಉಪೇಂದ್ರ ಈ ಹಿಂದೆಂದೂ ಕಾಣಿಸಿಕೊಂಡಿರದ ಗೆಟಪ್ಪಿನಲ್ಲಿ ಈ ಚಿತ್ರದ ಪಾತ್ರಕ್ಕೆ ಜೀವ ತುಂಬಿದ್ದಾರಂತೆ. ಇಲ್ಲಿ ಅವರು ಡಬಲ್ ರೋಲನ್ನು ನಿರ್ವಹಿಸಿದ್ದಾರಂತೆ.