Tag: Citizenship Bill

  • ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದ ವಿದ್ಯಾರ್ಥಿಗಳಿಗೆ ಮಂಗ್ಳೂರಲ್ಲಿ ಲಾಠಿಚಾರ್ಚ್

    ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದ ವಿದ್ಯಾರ್ಥಿಗಳಿಗೆ ಮಂಗ್ಳೂರಲ್ಲಿ ಲಾಠಿಚಾರ್ಚ್

    ಮಂಗಳೂರು: ದೇಶದೆಲ್ಲೆಡೆ ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಬಿಸಿ ರಾಜ್ಯದ ಕರಾವಳಿಗೂ ತಟ್ಟಿದೆ. ಮಸೂದೆಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ರಸ್ತೆ ತಡೆ ಯತ್ನ ನಡೆದಿದ್ದು ಪೊಲೀಸರು ವಿದ್ಯಾರ್ಥಿಗಳು ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ.

    ನಗರದ ಬಲ್ಮಠ ಜಂಕ್ಷನ್ ನಲ್ಲಿ ಬಲವಂತವಾಗಿ ರಸ್ತೆ ಬ್ಲಾಕ್ ಮಾಡಲು ಯತ್ನಿಸಿದ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರತಿಭಟನೆಯನ್ನು ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ರಸ್ತೆಯಲ್ಲೇ ಮಲಗಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ಬಂಧಿಸಲು ಮುಂದಾದಾಗ ಪೊಲೀಸರ ಕಾರ್ಯಾಚರಣೆಗೆ ಅಡ್ಡಿ ಪಡಿಸಿದ್ದಾರೆ.

    ಪ್ರತಿಭಟನಾಕಾರರು ರಸ್ತೆಯನ್ನು ಬಿಟ್ಟು ಮೇಲೆ ಏಳದೆ ಸಂಚಾರಕ್ಕೆ ತೊಂದರೆ ಮಾಡಿದ ಹಿನ್ನಲೆಯ ಕೊನೆಗೆ ಲಾಠಿಚಾರ್ಜ್ ಮಾಡುತ್ತಲೇ ರಸ್ತೆಗಂಟಿ ಕುಳಿತಿದ್ದ ಯುವಕರನ್ನು ಎತ್ತಿ ಪೊಲೀಸ್ ವಾಹನಕ್ಕೆ ತುಂಬಿಸಿದ್ದಾರೆ. ಯುವಕರು ಘೋಷಣೆ ಕೂಗುತ್ತಲೇ ಪೊಲೀಸರ ಜೊತೆ ಜಟಾಪಟಿ ನಡೆಸಿದ್ದಾರೆ. 50ರಷ್ಟು ಯುವಕರನ್ನು ಬಂಧಿಸಿದ್ದು ಸ್ಥಳದಲ್ಲಿದ್ದ ಇತರೇ ಮುಸ್ಲಿಂ ಯುವಕರು ಪೊಲೀಸರನ್ನು ಸುತ್ತುವರಿದಿದ್ದಲ್ಲದೆ ಪೊಲೀಸರ ಕ್ರಮವನ್ನು ಪ್ರಶ್ನೆ ಮಾಡಲಾರಂಭಿಸಿದ್ದಾರೆ.

    ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿದ್ದರಿಂದ ಉದ್ರಿಕ್ತ ಗುಂಪನ್ನು ಚದುರಿಸಿದ್ದಾರೆ. ಪ್ರತಿಭಟನಾಕಾರರು ಹಿಡಿದಿದ್ದ ಭಿತ್ತಿಪತ್ರ, ಪತಾಕೆಗಳನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನೆ ಮಾಡಲು ಅವಕಾಶ ಇಲ್ಲದಿದ್ದರೂ ಪ್ರತಿಭಟನಾಕಾರರು ಯಾವುದೇ ಅನುಮತಿ ಪಡೆಯದೆ ಪ್ರತಿಭಟಿಸಿ ಸಂಚಾರಕ್ಕೆ ಸಮಸ್ಯೆ ಮಾಡಿದ್ದು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿತ್ತು.

  • ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ- ಕೈ ಮಾಜಿ ಶಾಸಕನ ಬಂಧನ

    ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ- ಕೈ ಮಾಜಿ ಶಾಸಕನ ಬಂಧನ

    ಶಿವಮೊಗ್ಗ: ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸತ್ಯಾಗ್ರಹ ನಡೆಸಿದರು.

    ನಗರದ ಗಾಂಧಿಪಾರ್ಕ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಘೋಷಣೆ ಕೂಗಿದರು. ಕೇಂದ್ರ ಸರಕಾರ ಪ್ರಜಾಪ್ರಭುತ್ವ ವಿರೋಧಿ ಮಸೂದೆ ಮಂಡಿಸಿದೆ. ಬಿಜೆಪಿ ದೇಶಕ್ಕೆ ಮಾರಕವಾಗಿದ್ದು, ಸಂವಿಧಾನ ವಿರೋಧಿಯಾಗಿದ್ದು, ದೇಶ ಒಡೆಯಲು ಈ ಕಾಯ್ದೆ ಜಾರಿಗೊಳಿಸಿದೆ ಎಂದು ಆರೋಪಿಸಿದರು.

    ಇದೇ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸೇರಿದಂತೆ ಇತರೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್ 9 ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, 311 ಮತಗಳಿಂದ ಪಾಸ್ ಸಹ ಆಗಿತ್ತು. ಆದರೆ ಅಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದವು. ಈ ವೇಳೆ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದರು. ಇದಾದ ಬಳಿಕ ಮಸೂದೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದು, ಶುಕ್ರವಾರ ಮಧ್ಯರಾತ್ರಿಯಿಂದಲೇ ಕಾಯ್ದೆ ಜಾರಿಗೆ ಬಂದಿತ್ತು. ಆ ಬಳಿಕ ದೇಶಾದ್ಯಂತ ಪರ ವಿರೋಧ ಚರ್ಚೆಗಳಾಗುತ್ತಿದ್ದು, ಹಲವೆಡೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ.

  • ಪೌರತ್ವ ಮಸೂದೆಗೆ ಲೋಕಸಭೆಯಲ್ಲಿ ಬೆಂಬಲ ನೀಡಿ ಯೂಟರ್ನ್ ಹೊಡೆದ ಶಿವಸೇನೆ

    ಪೌರತ್ವ ಮಸೂದೆಗೆ ಲೋಕಸಭೆಯಲ್ಲಿ ಬೆಂಬಲ ನೀಡಿ ಯೂಟರ್ನ್ ಹೊಡೆದ ಶಿವಸೇನೆ

    – ಬೆಂಬಲಿಸಿದ ಸಂಸದರ ವಿರುದ್ಧ ರಾಹುಲ್ ಕಿಡಿ
    – ಗೊಂದಲದಲ್ಲಿ ಶಿವಸೇನೆ ಸಂಸದರು

    ಮುಂಬೈ: ಲೋಕಸಭೆಯಲ್ಲಿ ಸೋಮವಾರ ರಾತ್ರಿ ಪೌರತ್ವ ತಿದ್ದುಪಡಿ ಮಸೂದೆ ಪರ ಮತ ಹಾಕಿದ್ದ ಶಿವಸೇನೆ ಈಗ ಯೂಟರ್ನ್ ಹೊಡೆದಿದ್ದು, ರಾಜ್ಯಸಭೆಯಲ್ಲಿ ಮಸೂದೆಗೆ ಬೆಂಬಲ ನೀಡಲ್ಲ ಎಂದು ಪಕ್ಷದ ಮುಖ್ಯಸ್ಥ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

    ಮಹಾರಾಷ್ಟ್ರದ ಮೈತ್ರಿ ಸರ್ಕಾರ ಈಗಾಗಲೇ ತೊಂದರೆಯಲ್ಲಿದೆ. ಏಕೆಂದರೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಸೂದೆಯನ್ನು ಬೆಂಬಲಿಸಿದ ಪಕ್ಷ ಹಾಗೂ ಸಂಸದರನ್ನು ಖಂಡಿಸಿ ತೀಕ್ಷ್ಣವಾದ ಟ್ವೀಟ್ ಮಾಡಿದ್ದಾರೆ. ಈ ಬೆನ್ನಲ್ಲೇ ಮಸೂದೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಉದ್ಧವ್ ಠಾಕ್ರೆ, ಪೌರತ್ವ ತಿದ್ದುಪಡಿ ಮಸೂದೆಯ ವಿಷಯಗಳು ಸ್ಪಷ್ಟವಾಗದ ಹೊರತು ನಾವು ಬೆಂಬಲ ನೀಡುವುದಿಲ್ಲ. ಲೋಕಸಭೆಯಲ್ಲಿ ಸೋಮವಾರ ನಾವು ಕೇಳಿದ ಪ್ರಶ್ನೆಗಳಿಗೆ ಉತ್ತರಗಳು ಸಿಕ್ಕಿಲ್ಲ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ಮಸೂದೆಯನ್ನು ರಾಜ್ಯಸಭೆಗೆ ತರುವಾಗ ಬದಲಾವಣೆಗಳನ್ನು ಮಾಡಬೇಕು. ನಾವು ಮಸೂದೆ ಪರ ಲೋಕಸಭೆಯಲ್ಲಿ ಮತ ಚಲಾಯಿಸಿದ್ದೇವೆ. ಆದರೆ ರಾಜ್ಯಸಭೆ ಅದು ಸಾಧ್ಯವಾಗದೆ ಇರಬಹುದು ಎಂದು ಉದ್ಧವ್ ಠಾಕ್ರೆ ಅವರ ಆಪ್ತ, ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

    ರಾಜ್ಯಸಭೆಯಲ್ಲೂ ಮಸೂದೆಯನ್ನು ಪಕ್ಷವು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಸಂಸದ ಅರವಿಂದ ಸಾವಂತ್ ಅವರು, ನಮಗೆ ವಿಭಿನ್ನ ಪಾತ್ರಗಳಿವೆಯೇ? ಶಿವಸೇನೆ ರಾಷ್ಟ್ರೀಯ ಹಿತಾಸಕ್ತಿಯೊಂದಿಗೆ ನಿಂತಿದೆ. ಪಕ್ಷವು ಯಾರೊಬ್ಬರ ಏಕಸ್ವಾಮ್ಯವಲ್ಲ. ನಾವು ರಾಷ್ಟ್ರದ ಹಿತದೃಷ್ಟಿಯಿಂದ ಮಸೂದೆಯನ್ನು ಬೆಂಬಲಿಸಿದ್ದೇವೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮಹಾರಾಷ್ಟ್ರದಲ್ಲಿ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

    ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯದ ಶಿವಸೇನೆ-ಎನ್‍ಸಿಪಿ-ಕಾಂಗ್ರೆಸ್ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿವೆ. ಆದರೆ ಶಿವಸೇನೆ ಕಾಂಗ್ರೆಸ್ ವಿರೋಧದ ನಡುವೆಯೂ ಪೌರತ್ವದ ತಿದ್ದುಪಡಿ ಮಸೂದೆ ಬೆಂಬಲಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ರಾಜ್ಯಸಭೆಯಲ್ಲಿ ಬೆಂಬಲ ನೀಡದಿರಲು ಶಿವಸೇವೆ ಮುಂದಾಗಿದೆ. ರಾಜ್ಯಸಭೆಯಲ್ಲಿ ಶಿವಸೇನೆಯ ಮೂವರು ಸದಸ್ಯರಿದ್ದಾರೆ.

  • 6 ಧರ್ಮದ ವಲಸಿಗರಿಗೆ ಭಾರತೀಯ ಪೌರತ್ವ – ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

    6 ಧರ್ಮದ ವಲಸಿಗರಿಗೆ ಭಾರತೀಯ ಪೌರತ್ವ – ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

    ನವದೆಹಲಿ: ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ಥಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

    ಈ ದೇಶಗಳಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯ ಕಿರುಕುಳ ಅನುಭವಿಸುತ್ತಿದೆ. ಹೀಗಾಗಿ ಇವರಿಗೆ ಭಾರತದ ಪೌರತ್ವ ನೀಡುವ ಅವಶ್ಯಕತೆ ಇದೆ ಎನ್ನುವುದು ಕೇಂದ್ರದ ವಾದ. ಆದರೆ ಮುಸ್ಲಿಮರನ್ನು ಹೊರಗಡೆ ಇಟ್ಟಿರುವುದು ಸಂವಿಧಾನ ವಿರೋಧಿ ನಡೆ ಎನ್ನುವುದು ವಿಪಕ್ಷಗಳ ಪ್ರತಿವಾದ.

    ಭಾರತದ ಪೌರತ್ವ ಪಡೆಯಬೇಕಾದರೆ 12 ವರ್ಷಕ್ಕಿಂತ ಹೆಚ್ಚು ಕಾಲ ದೇಶದಲ್ಲಿ ನೆಲೆಸಿರಬೇಕು ಎನ್ನುವ ನಿಯಮವನ್ನು 6 ವರ್ಷಕ್ಕೆ ಈ ಮಸೂದೆ ಇಳಿಸಿದೆ. ಸೂಕ್ತ ದಾಖಲೆಯ ಅಗತ್ಯತೆಯೂ ಇಲ್ಲದಿದ್ದರೂ ಕೂಡ ಪೌರತ್ವ ಸಿಗಲಿದೆ.

    2016ರಲ್ಲಿ ಈ ಮಸೂದೆ ಮೊದಲ ಬಾರಿಗೆ ಲೋಕಸಭೆಯಲ್ಲಿ ಮಂಡನೆಯಾಗಿತ್ತು. ಈ ವೇಳೆ ಕೋಲಾಹಲ ನಡೆದು ಜಂಟಿ ಸಂಸದೀಯ ಸಮಿತಿ ಪರಾಮರ್ಶೆಗೆ ಹೋಗಿತ್ತು. ಈ ಸಮಿತಿ ಈ ವರ್ಷದ ಜನವರಿಯಲ್ಲಿ ವರದಿ ನೀಡಿದ ಬಳಿಕ ಮಸೂದೆ ಮಂಡನೆಯಾಗಿತ್ತು. ಲೋಕಸಭೆಯಲ್ಲಿ ಪಾಸ್ ಆದರೂ ರಾಜ್ಯಸಭೆಯಲ್ಲಿ ಬಹುಮತ ಇಲ್ಲದ ಕಾರಣ ಮಸೂದೆ ಪಾಸ್ ಆಗಿರಲಿಲ್ಲ. ಈ ಸಂದರ್ಭದಲ್ಲಿ 16ನೇ ಲೋಕಸಭೆಯ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಈಗ ತಿದ್ದುಪಡಿ ಮಾಡಿ ಮಂದಿನ ಮಂಗಳವಾರ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವಷ್ಟೇ ಮಹತ್ವದ ಮಸೂದೆ ಇದಾಗಿದೆ. ಹೀಗಾಗಿ ಎಲ್ಲ ಸಂಸದರು ಸದನದಲ್ಲಿ ಹಾಜರಿರಬೇಕು ಎಂದು ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.

    ಈ ಮಸೂದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದು ಸಂವಿಧಾನ ವಿರೋಧಿ ಕ್ರಮ ಎಂದು ವಿಪಕ್ಷಗಳು ಆರೋಪಿಸಿವೆ. ಈ ಮಧ್ಯೆ, ಅಸ್ಸಾಂನಲ್ಲಿ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ. ಮತ್ತಷ್ಟು ವಲಸಿಗರಿಗೆ ಆಶ್ರ ನೀಡೋಕೆ ಸಾಧ್ಯವೇ ಇಲ್ಲ. ಕೇಂದ್ರ ಸರ್ಕಾರ ಈ ಕ್ಷಣವೇ ಬಿಲ್ ಹಿಂಪಡೆಯಬೇಕು ಎಂದು ಅಮಿತ್‍ಶಾ, ಸಿಎಂ ಸರ್ವಾನಂದ ಸೋನಾವಲ್ ಪ್ರತಿಕೃತಿ ದಹಿಸಲಾಗಿದೆ.