Tag: Dr. Siddalingaiah

  • ಕಲಾಗ್ರಾಮದಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ- ಸರ್ಕಾರದ ಪರ ಅಂತಿಮ ನಮನ ಅರ್ಪಿಸಿದ ಡಿಸಿಎಂ

    ಕಲಾಗ್ರಾಮದಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ- ಸರ್ಕಾರದ ಪರ ಅಂತಿಮ ನಮನ ಅರ್ಪಿಸಿದ ಡಿಸಿಎಂ

    ಬೆಂಗಳೂರು: ರಾಜ್ಯ ಕಂಡ ಶ್ರೇಷ್ಠ ಸಾಹಿತಿ. ದಮನಿತರ ದನಿಯಾಗಿದ್ದವರು ಡಾ.ಸಿದ್ದಲಿಂಗಯ್ಯ. ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು ಎಂದು ಸರ್ಕಾರದ ಪರ ಅಂತಿಮ ನಮನ ಅರ್ಪಿಸಿ ಡಿಸಿಎಂ ಅಶ್ವಥ್ ನಾರಾಯಣ್ ಅವರು ಅಭಿಪ್ರಯಾಪಟ್ಟರು. ಇದನ್ನೂ ಓದಿ:  ನಿಮ್ಮ ಜೇಬು ತುಂಬಿದ್ರೆ ಸಾಕೆ?, ಬಡವರ ಸ್ಥಿತಿ ಏನಾಗ್ಬೇಕು?: ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನೆ

    ಕೋವಿಡ್‍ನಿಂದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು. ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅವರಿಗೆ ಅಂತಿಮ ವಿದಾಯ ಹೇಳಲಾಯಿತಲ್ಲದೆ, ಸರ್ಕಾರದ ಪರವಾಗಿ ಡಿಸಿಎಂ ಅವರು, ಅಂತಿಮ ನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು. ಅವರ ಜತೆಯಲ್ಲಿ ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅಗಲಿದ ಚೇತನಕ್ಕೆ ನಮನ ಅರ್ಪಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಡಾ.ಸಿದ್ದಲಿಂಗಯ್ಯ, ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು. ಎರಡು ಅವಧಿಗಳಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಸದನದಲ್ಲಿ ವಿಚಾರ ಮಂಡನೆ, ಚರ್ಚೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ನೆರವೇರಿಸಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡೋಣ ಎಂದು ಡಿಸಿಎಂ ಹೇಳಿದರು.

  • ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಎಚ್‍ಡಿಕೆ ಸೇರಿ ವಿವಿಧ ಗಣ್ಯರ ಸಂತಾಪ

    ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಎಚ್‍ಡಿಕೆ ಸೇರಿ ವಿವಿಧ ಗಣ್ಯರ ಸಂತಾಪ

    ಬೆಂಗಳೂರು: ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ವಿ.ಸೋಮಣ್ಣ, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸಂತಾಪ ಸೂಚಿಸಿದ್ದಾರೆ.

    ಕನ್ನಡದ ಪ್ರಮುಖ ಲೇಖಕ, ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ.ಸಿದ್ದಲಿಂಗಯ್ಯ ಅವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು ಎಂದು ಸ್ಮರಿಸಿದ್ದಾರೆ.

    ಡಾ.ಸಿದ್ದಲಿಂಗಯ್ಯ ಅವರು 1954 ರಲ್ಲಿ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ್ದರು. ಅವರ ಜಿಲ್ಲೆಯಿಂದಲೇ ನಾನು ರಾಜಕೀಯ ಪ್ರವೇಶ ಮಾಡಿದ್ದು ಎಂಬುದನ್ನು ವಿನಮ್ರತೆಯಿಂದ ಸ್ಮರಿಸಿಕೊಳ್ಳುತ್ತೇನೆ. ಸಿದ್ದಲಿಂಗಯ್ಯನವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ.ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿಗಳು ಸಂದಿವೆ.

    ಕವಿ ಡಾ.ಸಿದ್ದಲಿಂಗಯ್ಯ ಅವರು ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 1988-94, 1995-2001 ರವರೆಗೆ ಎರಡುಬಾರಿ ನಾಮಕರಣಗೊಂಡಿರುವುದರ ಜೊತೆಗೆ 2006-08ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

    ‘ಆ ಬೆಟ್ಟದಲ್ಲಿ, ಬೆಳದಿಂಗಳಲ್ಲಿ ಸುಳಿದಾಡ ಬೇಡ ಗೆಳತಿ’ ಗೀತೆಯನ್ನು ಎರಡು ಚಲನಚಿತ್ರಗಳಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಪುಟ್ಟಣ್ಣ ಕಣಗಾಲ್ ಅವರ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ‘ಗೆಳತಿ ಓ ಗೆಳತಿ’ ಬಂಡಾಯ ಕವಿಯ ಪ್ರೇಮ ಗೀತೆಗಳು. ಅವರೊಳಗಿದ್ದ ವ್ಯವಸ್ಥೆಯ ಬಗೆಗಿನ ಕಿಚ್ಚಿನ ಜೊತೆಯಲ್ಲೇ ಒಬ್ಬ ಅಪ್ಪಟ ಪ್ರೇಮಿಯು ಇದ್ದ ಎಂಬುದಕ್ಕೆ ಮೇಲಿನ ಗೀತೆಗಳು ಸದಾ ಹಸಿರು. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಅವರ ಸಾಹಿತ್ಯಾಭಿಮಾನಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

    ವಸತಿ ಸಚಿವ ವಿ.ಸೋಮಣ್ಣ ಸಹ ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕವಿ ಸಿದ್ದಲಿಂಗಯ್ಯನವರು ತಮ್ಮ `ಹೊಲೆಮಾದಿಗರ ಹಾಡು’ ಕವನ ಸಂಕಲನದ ಮೂಲಕ ದಮನಿತರ, ತುಳಿತಕ್ಕೆ ಒಳಗಾದವರ ನೋವು, ದುಃಖ, ದುಮ್ಮಾನಗಳನ್ನು ಸಮಾಜದ ಮುಂದೆ ಇರಿಸಿದ್ದರು. ತಮ್ಮ ಸಾಹಿತ್ಯದಲ್ಲಿ ಗಾಂಭೀರ್ಯತೆಯ ನಡುವೆಯೂ ಅಸಹಾಯಕರ ನೋವು, ಅವಮಾನಗಳನ್ನು ಮನನೀಯವಾಗಿ ಚಿತ್ರಿಸುತ್ತಿದ್ದರು. ನನ್ನೊಂದಿಗೆ ಆತ್ಮೀಯರಾಗಿದ್ದ ಕವಿ ಸಿದ್ದಲಿಂಗಯ್ಯನವರು ದೂರಾಗಿರುವುದು ಇಡೀ ಕನ್ನಡ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

    ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಸದನದ ಭೂಷಣಪ್ರಾಯರಾಗಿ ವಿಷಯಗಳನ್ನು ಚರ್ಚಿಸುತ್ತಿದ್ದರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಅಭಿವೃದ್ಧಿಗೆ ಕಂಕಣಬದ್ಧರಾಗಿದ್ದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವಕ್ಕೆ ಕವಿ ಸಿದ್ದಲಿಂಗಯ್ಯನವರು ಪಾತ್ರರಾಗಿದ್ದನ್ನೂ ಸಚಿವರು ಸ್ಮರಿಸಿಕೊಂಡಿದ್ದಾರೆ.

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ಹಂಪಿ ಕನ್ನಡ ವಿವಿಯ ನಾಡೋಜ ಪುರಸ್ಕಾರ, ವಿ.ಸೋಮಣ್ಣ ಪ್ರತಿಷ್ಠಾನದ ಪ್ರಥಮ ಜೆ.ಹೆಚ್ ಪಟೇಲ್ ಪ್ರಶಸ್ತಿ, ಪ್ರತಿಷ್ಟಿತ ನೃಪತುಂಗ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಹಿರಿಯ ಕವಿಗಳ ಚೇತನಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕೋರಿದ್ದಾರೆ.

    ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಹ ಸಂತಾಪ ಸೂಚಿಸಿದ್ದು, ರಾಜ್ಯದಲ್ಲಿ ದಲಿತ ಚಳವಳಿಯ ಆದ್ವರ್ಯು ಹಾಗೂ ದಲಿತ ಸಾಹಿತ್ಯದ ಮೇರು ಆಗಿದ್ದ ಕವಿ ಸಿದ್ದಲಿಂಗಯ್ಯ ಅವರ ನಿಧನ ಕನ್ನಡ ಸಾರಸ್ವತ ಲೋಕಕ್ಕಾದ ಬಹುದೊಡ್ಡ ನಷ್ಟ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

    ಸಿದ್ದಲಿಂಗಯ್ಯ ಅವರು ಕನ್ನಡದ ಅಗ್ರ ಲೇಖಕರಲ್ಲೊಬ್ಬರು, ‘ದಲಿತ ಕವಿ’ ಎಂದೇ ಪ್ರಸಿದ್ಧರು. ಸಾಮಾಜಿಕ ಸಮಾನತೆಯ ಆಶಯದೊಂದಿಗೆ ಅವರು ರಚಿಸಿದ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಆಧುನಿಕ ಸಾಹಿತ್ಯದಲ್ಲಿ ಅತ್ಯುನ್ನತ ಸ್ಥಾನ ಹೊಂದಿವೆ ಎಂದು ಡಿಸಿಎಂ ಗುಣಗಾನ ಮಾಡಿದ್ದಾರೆ.

    ಮೂಲತಃ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ ಅವರು, ನೆಲದ ಸೊಗಡನ್ನೂ ತಮ್ಮ ಸಾಹಿತ್ಯದಲ್ಲಿ ಸೊಗಸಾಗಿ ಕಟ್ಟಿಕೊಟ್ಟವರು. ಅಪ್ರತಿಮ ಭಾಷಣಕಾರರು ಆಗಿದ್ದ ಸಿದ್ದಲಿಂಗಯ್ಯ ಅವರು, ವಿಧಾನ ಪರಿಷತ್ ಸದಸ್ಯರಾಗಿಯೂ ಚಿರಸ್ಮರಣೀಯ ಸೇವೆ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ, ಬಂಧುಗಳಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಡಿಸಿಎಂ ಪ್ರಾರ್ಥನೆ ಮಾಡಿದ್ದಾರೆ.

    ಎಚ್.ಕೆ.ಪಾಟೀಲ್ ಸಹ ಸಂತಾಪ ಸೂಚಿಸಿ, ಕನ್ನಡದ ಲೇಖಕ ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಡಾ.ಸಿದ್ದಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆ ಬಗ್ಗೆ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ ಮತ್ತು ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿ ನಮ್ಮೊಂದಿಗೆ ಕೆಲಸ ಮಾಡಿದ್ದರು. ತುಂಬಾ ಮೊನಚಾದ ಮಾತು ಹಾಗೂ ಅಷ್ಟೇ ಹಾಸ್ಯಪ್ರಜ್ಞೆ ಅವರಲ್ಲಿತ್ತು. ಸದನದಲ್ಲಿ ಅವರು ಮಾತನಾಡುತ್ತಿದ್ದಾಗ ಹೊಸ ವಿಚಾರಗಳು ಪ್ರಕಟವಾಗುತ್ತಿದ್ದವು ಎಂದಿದ್ದಾರೆ.

    ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದವರಾದ ಇವರು, ನಮ್ಮ ಉತ್ತರ ಕರ್ನಾಟಕ ಭಾಷೆಯನ್ನು ಹೆಚ್ಚು ಪ್ರೀತಿಸುತ್ತಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೇಂದ್ರ ಸಾಹಿತ್ಯ ಅಕಾದೆಮಿಯಲ್ಲಿ ಕೆಲಸ ಮಾಡಿದ್ದರು. ಕನ್ನಡದ ಸಾಹಿತ್ಯ, ದಲಿತ-ಬಂಡಾಯ ಚಳುವಳಿಗೆ ಹೊಸ ದಿಕ್ಕನ್ನು ತಂದುಕೊಟ್ಟವರು. ಉತ್ತಮ ಭಾಷಣಕಾರರಾಗಿದ್ದ ಸಿದ್ದಲಿಂಗಯ್ಯನವರು, ಅಂಬೇಡ್ಕರ್, ಪೆರಿಯಾರ್ ಮತ್ತು ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಬೆಳೆದವರು.

    ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು ಇವರ ದಾಖಲಾರ್ಹ ಕೃತಿಗಳು. ಕನ್ನಡ ಸಾಹಿತ್ಯಕ್ಕೊಂದು ಹೊಸ ತಿರುವನ್ನು ನೀಡಿದ ಹಾಗೂ ಉತ್ತಮ ಸಂಸದೀಯ ಪಟುವಾಗಿದ್ದ ಡಾ.ಸಿದ್ದಲಿಂಗಯ್ಯ ನಿಧನರಾಗಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಕನ್ನಡದ ಉತ್ತಮ ಸಂಸದೀಯ ಪಟುವಾಗಿದ್ದ ಇವರನ್ನು ಕಳೆದುಕೊಂಡು ಕನ್ನಡ ನಾಡು ಬಡವಾಗಿದೆ ಎಂದಿದ್ದಾರೆ.

    ಕೋವಿಡ್ ಸಾಂಕ್ರಾಮಿಕ ವೈರಸ್ ನಿಂದಾಗಿ ಹೋರಾಟದ ಸಾಹಿತಿಗಳನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ನಾವು ತಲುಪಿದ್ದೇವೆ, ಇದೊಂದು ವಿಪರ್ಯಾಸ. ಇತ್ತಿಚೆಗೆ ನನ್ನ ಕೃತಿಗೆ ಮುನ್ನುಡಿ ಬರೆಯಲು ಕೋರಿದ್ದಾಗ ಪ್ರೀತಿಯಿಂದ ಒಪ್ಪಿ ಬರೆದು ಕೊಡುವುದಾಗಿ ಹೇಳಿದ್ದರು. ಒಬ್ಬ ಸ್ನೇಹಜೀವಿ, ಬುದ್ಧಿಜೀವಿ ಹಾಗೂ ಹೋರಾಟಗಾರನನ್ನು ಕಳೆದುಕೊಂಡಿದ್ದೇವೆ. ಆಗಲಿದ ಸಿದ್ದಲಿಂಗಯ್ಯನವರ ಆತ್ಮಕ್ಕೆ ಶಾಂತಿಯನ್ನು ಹಾಗೂ ಕುಟುಂಬ ವರ್ಗಕ್ಕೆ, ಬಂಧುವರ್ಗಕ್ಕೆ, ಅಭಿಮಾನಿ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

  • ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

    ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

    ಬೆಂಗಳೂರು: ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದುದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

    ಅವರ ನಿಧನದಿಂದ ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದಲಿಂಗಯ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದ್ರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ 4.45ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾರೆ.

  • ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶ

    ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶ

    ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದಲಿಂಗಯ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

    ಸಿದ್ಧಲಿಂಗಯ್ಯನವರು ಮಾಗಡಿ ತಾಲೂಕಿನ ಮಂಚನಬೆಲೆ’ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

    ಇಂದು ಸಂಜೆ 4.45ಕ್ಕೆ ಸಿದ್ದಲಿಂಗಯ್ಯ ನಿಧನರಾಗಿದ್ದು, ಇವತ್ತೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.

    ಹೊಲೆಮಾದಿಗರ ಹಾಡು, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ಆಯ್ದ ಕವಿತೆಗಳು, ಮೆರವಣಿಗೆ, ನನ್ನ ಜನಗಳು ಮತ್ತು ಇತರ ಕವಿತೆಗಳು, ಕುದಿವ ನೀಲಿಯ ಕಡಲು, ಊರು ಸಾಗರವಾಗಿ ಸೇರಿದಂತೆ ಮುಂತಾದ ಕವನ ಸಂಕಲನಗಳನ್ನು ರಚಿಸಿದ್ದಾರೆ. ಊರು ಕೇರಿ ಎಂಬ ಆತ್ಮಕಥನ ಬರೆದಿದ್ದಾರೆ. ಅಲ್ಲದೆ ಪಂಚಮ, ನೆಲಸಮ, ಏಕಲವ್ಯ ನಾಟಕಗಳನ್ನು ರಚಿಸಿದ್ದಾರೆ. ಹಕ್ಕಿನೋಟ, ಗ್ರಾಮದೇವತೆಗಳು, ಅವತಾರಗಳು, ಜನ ಸಂಸ್ಕೃತಿ, ಆ ಮುಖ ಈ ಮುಖ ಎಂಬ ವಿಮರ್ಶಾ ಕೃತಿಗಳನ್ನು ಬರೆದಿದ್ದಾರೆ.

    ಪಂಪ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅಲ್ಲದೆ 2015ರಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಹ ಆಗಿದ್ದರು.

    ಸಿದ್ದಲಿಂಗಯ್ಯನವರು 1988-94 ಮತ್ತು 1995-2001ರವರೆಗೆ ಎರಡುಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ನಾಮಕರಣಗೊಂಡಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

    ಪ್ರಶಸ್ತಿಗಳು:

    * ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ-1984
    * ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ-1986
    * ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ -1992
    * ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -1996
    * ಜಾನಪದ ತಜ್ಞ ಪ್ರಶಸ್ತಿ -2001
    * ಸಂದೇಶ್ ಪ್ರಶಸ್ತಿ -2001
    * ಡಾ.ಅಂಬೇಡ್ಕರ್ ಪ್ರಶಸ್ತಿ -2002
    * ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ -2002
    * ಬಾಬುಜಗಜೀವನರಾಮ್ ಪ್ರಶಸ್ತಿ -2005
    * ನಾಡೋಜ ಪ್ರಶಸ್ತಿ -2007
    * ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ -2012
    * ಆಳ್ವಾಸ್ ನುಡಿಸಿರಿ ಪ್ರಶಸ್ತಿ -2012
    * ನೃಪತುಂಗ ಪ್ರಶಸ್ತಿ -2018
    * ಪಂಪ ಪ್ರಶಸ್ತಿ – 2019 ಗೌರವ ಪ್ರಶಸ್ತಿಗೆ ಭಾಜನರಾಗಿದ್ದರು