Tag: hrd

  • ಬೆಂಗಳೂರಿನ ಐಐಎಸ್‍ಸಿ ದೇಶದಲ್ಲೇ ನಂ.1 ವಿವಿ: ಪಟ್ಟಿಯಲ್ಲಿ ಕರ್ನಾಟಕದ ಯಾವ ವಿವಿಗೆ ಯಾವ ಸ್ಥಾನ?

    ಬೆಂಗಳೂರಿನ ಐಐಎಸ್‍ಸಿ ದೇಶದಲ್ಲೇ ನಂ.1 ವಿವಿ: ಪಟ್ಟಿಯಲ್ಲಿ ಕರ್ನಾಟಕದ ಯಾವ ವಿವಿಗೆ ಯಾವ ಸ್ಥಾನ?

    ನವದೆಹಲಿ: ದೇಶದ ಶ್ರೇಷ್ಠ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್) ಎರಡನೇ ಬಾರಿ ಮೊದಲ ಶ್ರೇಯಾಂಕವನ್ನು ಪಡೆದುಕೊಂಡಿದೆ.

    ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಶಾಸ್ತ್ರೀ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಟಾಪ್ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದರು.

    ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಚೆನ್ನೈ ನಲ್ಲಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್, ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ ಮೂರನೇ ಸ್ಥಾನ ಪಡೆದುಕೊಂಡಿವೆ.

    ಬೆಂಗಳೂರಿನಲ್ಲಿರುವ ಜವಾಹರಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಸಂಸ್ಥೆಗೆ 11ನೇ ಸ್ಥಾನ, ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ಗೆ 25 ಸ್ಥಾನ ಸಿಕ್ಕಿದೆ.

    ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‍ಗೆ 30ನೇ ಶ್ರೇಯಾಂಕ, ಮೈಸೂರು ವಿವಿಗೆ 57ನೇ ಶ್ರೇಯಾಂಕ, ಸುರತ್ಕಲ್ ನಲ್ಲಿರುವ ಎನ್‍ಐಟಿಕೆಗೆ 65 ಶ್ರೇಯಾಂಕ, ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರೀಶ್ವರ ವಿವಿಗೆ 74ನೇ ಸ್ಥಾನ ಸಿಕ್ಕಿದೆ.

    ಮ್ಯಾನೇಜ್‍ಮೆಂಟ್ ವಿಭಾಗದಲ್ಲಿ ಐಐಎಂ ಅಹಮದಾಬಾದ್‍ಗೆ ಮೊದಲ ಸ್ಥಾನ ಸಿಕ್ಕಿದ್ದರೆ, ಐಐಎಂ ಬೆಂಗಳೂರಿಗೆ ಎರಡನೇ ಸ್ಥಾನ ಸಿಕ್ಕಿದೆ. 2016ರಲ್ಲಿ ಪ್ರಕಟಗೊಂಡ ಪಟ್ಟಿಯಲ್ಲೂ ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ಮೊದಲ ಸ್ಥಾನವನ್ನು ಪಡೆದುಕೊಂಡಿತ್ತು.

    ರಾಜ್ಯದ ಟಾಪ್ ವಿವಿಗಳು: ಶುಕ್ರವಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು `ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಶ್ರೇಯಾಂಕ ಚೌಕಟ್ಟು’ (ಕೆಎಸ್‍ಯುಆರ್‍ಎಫ್) ಸಿದ್ಧಪಡಿಸಿದ್ದ ಶ್ರೇಯಾಂಕ ಪಟ್ಟಿಯನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಬಿಡುಗಡೆಗೊಳಿಸಿದ್ದರು.

    10 ವರ್ಷಕ್ಕಿಂತ ಹಿಂದೆ ಆರಂಭವಾದ ವಿವಿಗಳ ಪಟ್ಟಿಯಲ್ಲಿ ಮಣಿಪಾಲ್ ವಿ.ವಿ 737 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಸಿಕ್ಕಿದ್ದರೆ, ಎರಡನೇ ಸ್ಥಾನದಲ್ಲಿ ಗುಲ್ಬರ್ಗ ವಿವಿ (557) ಮತ್ತು ಕೊನೆಯ ಸ್ಥಾನದಲ್ಲಿ ಮಂಗಳೂರು ವಿವಿ (428) ಇತ್ತು.

    ಐದರಿಂದ ಹತ್ತು ವರ್ಷದೊಳಗೆ ಸ್ಥಾಪನೆಯಾದ ವಿ.ವಿಗಳ ಪಟ್ಟಿಯಲ್ಲಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ವಿಶ್ವವಿದ್ಯಾಲಯ (711) ಮೊದಲ ಸ್ಥಾನ ಸಿಕ್ಕಿತ್ತು. ಎರಡನೇ ಸ್ಥಾನದಲ್ಲಿ ಜೈನ್ ವಿಶ್ವವಿದ್ಯಾಲಯ (661) ಇದ್ದರೆ, ದಾವಣಗೆರೆ ವಿ.ವಿ ಕೊನೆಯ ಸ್ಥಾನ (279) ಪಡೆದಿದೆ. 5 ವರ್ಷದೊಳಗಿನ ವಿ.ವಿಗಳ ಪಟ್ಟಿಯಲ್ಲಿ ಪಿಇಎಸ್ ವಿಶ್ವವಿದ್ಯಾಲಯ ಪ್ರಥಮ (617) ಮತ್ತು ರೈ ಟೆಕ್ನಾಲಜಿ ವಿ.ವಿ ಕೊನೆಯ (305) ಸ್ಥಾನದಲ್ಲಿದೆ.

    ವಿಷಯಾಧಾರಿತ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಧಾರವಾಡದ ಕೃಷಿ ವಿ.ವಿ ಪ್ರಥಮ (779), ಬೀದರ್‍ನ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ದ್ವಿತೀಯ (656) ಹಾಗೂ ಜಾನಪದ ವಿಶ್ವವಿದ್ಯಾಲಯ ಕೊನೆ (289) ಸ್ಥಾನ ಸಿಕ್ಕಿತ್ತು.

  • ಎಂಜಿನಿಯರಿಂಗ್ ಓದುತ್ತಿರುವ ಮತ್ತು ಮುಂದೆ ಓದಲಿರುವ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

    ಎಂಜಿನಿಯರಿಂಗ್ ಓದುತ್ತಿರುವ ಮತ್ತು ಮುಂದೆ ಓದಲಿರುವ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

    ನವದೆಹಲಿ: ದೇಶದೆಲ್ಲೆಡೆ ಓದುತ್ತಿರುವ ಮತ್ತು ಮುಂದೆ ಓದಲಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಈ ಶೈಕ್ಷಣಿಕ ವರ್ಷದಿಂದ ನೀವು ಅರ್ಧದಲ್ಲೇ ಕಾಲೇಜನ್ನು ಬಿಟ್ಟರೂ ಶುಲ್ಕ ಮರುಪಾವತಿಯಾಗಲಿದೆ.

    ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಎಲ್ಲಾ ಕಾಲೇಜುಗಳಿಗೆ ಈ ಶುಲ್ಕವನ್ನು ಮರು ಪಾವತಿಸುವಂತೆ ನಿರ್ದೇಶನ ನೀಡಿದೆ. ಶುಲ್ಕ ಮರುಪಾವತಿಯ ಜೊತೆಗೆ ಕಾಲೇಜುಗಳು ವಿದ್ಯಾರ್ಥಿ ಪ್ರವೇಶಾತಿ ಸಂದರ್ಭದಲ್ಲಿ ನೀಡಿರುವ ಎಲ್ಲ ದಾಖಲೆಗಳನ್ನು 7 ದಿನದ ಒಳಗಡೆ ಹಿಂದಿರುಗಿಸಲು ಸೂಚಿಸಿದೆ.

    ಇದನ್ನೂ ಓದಿ: ಅಮೆರಿಕಕ್ಕೆ ಭಾರತೀಯ ಟೆಕ್ಕಿಗಳನ್ನು ಕಳುಹಿಸಬೇಕೇ:ಇನ್ಫಿ ನಾರಾಯಣ ಮೂರ್ತಿ ಹೇಳಿದ್ದು ಹೀಗೆ

    2017- 18ರ ಎಐಸಿಟಿಇಯ ಕೈಪಿಡಿ ಪ್ರಕಟವಾಗಿದೆ. ಈ ಕೈಪಿಡಿಯಲ್ಲಿ ಕೋರ್ಸ್ ಆರಂಭವಾಗುವ ಮುನ್ನವೇ ಕಾಲೇಜನ್ನು ಬಿಟ್ಟರೆ ಪ್ರವೇಶಾತಿ ಪ್ರಕ್ರಿಯೆಗಳಿಗೆ 1 ಸಾವಿರ ರೂ. ಶುಲ್ಕಗಳನ್ನು ತೆಗೆದುಕೊಂಡು ಉಳಿದ ಎಲ್ಲ ಶುಲ್ಕಗಳನ್ನು ಮರು ಪಾವತಿಸಬೇಕೆಂದು ಸ್ಪಷ್ಟವಾಗಿ ತಿಳಿಸಲಾಗಿದೆ.

    ಒಂದು ವೇಳೆ ತರಗತಿ ಆರಂಭಗೊಂಡು ಅರ್ಧದಿಂದ ವಿದ್ಯಾರ್ಥಿ ಕೈಬಿಟ್ಟರೆ ಅದುವರೆಗಿನ ಅವಧಿಯ ಶುಲ್ಕವನ್ನು ಮತ್ತು ಹಾಸ್ಟೆಲ್ ಶುಲ್ಕವನ್ನು ತೆಗೆದುಕೊಂಡು ಉಳಿದ ಶುಲ್ಕವನ್ನು ವಾಪಸ್ ಮಾಡಬೇಕೆಂದು ಸೂಚಿಸಿದೆ.

    ಅರ್ಧದಲ್ಲೇ ಕೈ ಬಿಟ್ಟ ವಿದ್ಯಾರ್ಥಿಗಳ ದಾಖಲೆಗಳನ್ನು ಕಾಲೇಜಿನಲ್ಲೇ ಇಟ್ಟುಕೊಳ್ಳುವುದನ್ನು ಎಐಸಿಟಿಇ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

     ಇದನ್ನೂ ಓದಿ: 6 ಸಾವಿರ ಟೆಕ್ಕಿಗಳನ್ನು ಕೆಲಸದಿಂದ ತೆಗೆಯಲಿದೆ ಕಾಗ್ನಿಜೆಂಟ್!

    ಒಂದು ವೇಳೆ ಈ ನಿರ್ದೇಶನವನ್ನು ಕಾಲೇಜುಗಳು ಉಲ್ಲಂಘಿಸಿದಲ್ಲಿ ಕಾಲೇಜುಗಳ ಮೇಲೆ ಎಐಸಿಟಿಇ ಕಠಿಣ ಕ್ರಮವನ್ನು ಕೈಗೊಳ್ಳಲಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾದರೆ ಕೊಡಬೇಕಾಗಿರುವ ಶುಲ್ಕದ ದುಪ್ಪಟ್ಟು ಹಣವನ್ನು ವಿದ್ಯಾರ್ಥಿಗೆ ನೀಡಬೇಕಾಗುತ್ತದೆ. ಅಷ್ಟೇ ಅಲ್ಲದೇ ಕಾಲೇಜಿನ ಕೋರ್ಸ್‍ಗಳಿಗೆ ಮಂಜೂರು ಮಾಡಿದ ಅನುಮೋದನೆಯನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಎಐಸಿಟಿಇ ತನ್ನ ಹ್ಯಾಂಡ್ ಬುಕ್‍ನಲ್ಲಿ ಹೇಳಿದೆ.

    ಮಾನವ ಸಂಪನ್ಮೂಲ ಸಚಿವಾಲಯಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಸಾಕಷ್ಟು ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಎಐಸಿಟಿಇ ಈ ಕ್ರಮವನ್ನು ಕೈಗೊಂಡಿದೆ. ದೇಶದಲ್ಲಿ 3 ಸಾವಿರಕ್ಕೂ ಅಧಿಕ ನೊಂದಾಯಿತ ಎಂಜಿನಿಯರಿಂಗ್ ಕಾಲೇಜುಗಳಿದ್ದು ಪ್ರತಿವರ್ಷ 7 ಲಕ್ಷ ಎಂಜಿನಿಯರ್ ಪದವೀಧರರು ಹೊರ ಬರುತ್ತಿದ್ದಾರೆ.

    ಕೆಲ ದಿನಗಳ ಹಿಂದೆ ಯುಜಿಸಿ ಎಲ್ಲ ಕಾಲೇಜುಗಳಿಗೆ ಪ್ರವೇಶಾತಿ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಪಡೆದುಕೊಳ್ಳಬಾರದು ಎಂದು ಸುತ್ತೋಲೆ ಹೊರಡಿಸಿತ್ತು.

     ಇದನ್ನೂ ಓದಿ: ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ: ಯಾವ ನಗರದಲ್ಲಿ ಎಷ್ಟು ಸಂಬಳ?