Tag: INX Media case

  • ನೋ ರಿಲೀಫ್ – ಚಿದಂಬರಂಗೆ ಸುಪ್ರೀಂನಲ್ಲೂ ಸಿಗಲಿಲ್ಲ ಜಾಮೀನು

    ನೋ ರಿಲೀಫ್ – ಚಿದಂಬರಂಗೆ ಸುಪ್ರೀಂನಲ್ಲೂ ಸಿಗಲಿಲ್ಲ ಜಾಮೀನು

    ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಚಿದಂಬರಂ ಅವರನ್ನು ಸಿಬಿಐ ಈಗಾಗಲೇ ಬಂಧಿಸಿದ್ದು, ಈಗ ಜಾರಿ ನಿರ್ದೇಶನಾಲಯ(ಇಡಿ) ಸಹ ಚಿದಂಬರಂ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಮುಂದಾಗುತ್ತಿದೆ. ಈ ಸಂಬಂಧ ಚಿದಂಬರಂ ಅವರು ಸುಪ್ರೀಂನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ಭಾನುಮತಿ ಮತ್ತು ನ್ಯಾ. ಎ.ಎಸ್.ಬೋಪಣ್ಣ ಅವರಿದ್ದ ದ್ವಿಸದಸ್ಯ ಪೀಠ ಆಗಸ್ಟ್ 29 ರಂದು ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು.

    ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಪ್ರಾಥಮಿಕ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡುವುದು ಸರಿಯಲ್ಲ. ತನಿಖೆ ನಡೆಸುತ್ತಿರುವ ಇಡಿ ನ್ಯಾಯಾಲಯದಲ್ಲಿ ತನಿಖಾ ಮಾಹಿತಿಯನ್ನು ಹಂಚಿಕೊಳ್ಳುವ ಅಗತ್ಯವಿಲ್ಲ. ಆರ್ಥಿಕ ಅಪರಾಧಗಳು ವಿವಿಧ ಆಯಾಮಗಳಲ್ಲಿ ತನಿಖೆಯಾಗಬೇಕು ಎಂದು ಪೀಠ ಅಭಿಪ್ರಾಯಪಟ್ಟಿತು.

    ಕೋರ್ಟ್ ಮುಚ್ಚಿದ ಲಕೋಟೆಯಲ್ಲಿ ಈ ಪ್ರಕರಣಕ್ಕೆ ಸಂಬಂಧ ದಾಖಲೆಗಳನ್ನು ಸಲ್ಲಿಸಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತು. ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆ ಚಿದಂಬಂರಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಐಎನ್‍ಎಕ್ಸ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟಿನಲ್ಲಿ ಹೂಡಲಾಗಿರುವ ಎಲ್ಲ ಅರ್ಜಿಗಳನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ತಿಳಿಸಿದರು.

    ಏರ್‍ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ ಎನ್ನುವ ಆರೋಪದ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಕೇಸ್ ದಾಖಲಿಸಿದ್ದು, ಈ ಪ್ರಕರಣದಲ್ಲೂ ಚಿದಂಬಂರಂ ಬಂಧನ ಭೀತಿಗೆ ಒಳಗಾಗಿದ್ದಾರೆ. ಈ ಸಂಬಂಧ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು ಇಂದು ಮಧ್ಯಾಹ್ನ ದೆಹಲಿ ವಿಶೇಷ ನ್ಯಾಯಾಲಯದ ನ್ಯಾ. ಓಪಿ ಸೈನಿ ಆದೇಶ ಪ್ರಕಟಿಸಲಿದ್ದಾರೆ.

    ಏನಿದು ಆರೋಪ?
    ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಒಡೆತನದ ಐಎನ್‍ಎಕ್ಸ್ ಮೀಡಿಯಾಗೆ 2007ರ ಮಾರ್ಚ್ ತಿಂಗಳಿನಲ್ಲಿ ಮೂರು ಮಾರಿಷಸ್ ಕಂಪೆನಿಗಳಿಂದ ಸುಮಾರು 4.62 ಕೋಟಿ ರೂಪಾಯಿ ವಿದೇಶಿ ನೇರ ಬಂಡವಾಳ ಹರಿದುಬರಲು ಅಂದಿನ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರ 4.62 ಕೋಟಿ ರೂ.ಗೆ ಅನುಮತಿ ನೀಡಿದ್ದರೆ 305 ಕೋಟಿ ರೂಪಾಯಿಗಳನ್ನು ಹೂಡಿಕೆಯಾಗಿ ವಿದೇಶದಿಂದ ತರಲಾಯಿತು. ಈ ಸಂದರ್ಭದಲ್ಲಿ ಡೌನ್ ಸ್ಟ್ರೀಮ್ ಇನ್ವೆಸ್ಟ್ ಮೆಂಟ್(ಭಾರತೀಯ ಕಂಪೆನಿ ಮತ್ತೊಂದು ಕಂಪೆನಿಯ ಮೇಲೆ ವಿದೇಶಿ ಹೂಡಿಕೆಯನ್ನು ಮಾಡುವುದು) ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿತ್ತು.

    ಇಂದ್ರಾಣಿ ಮುಖರ್ಜಿಯ ಕಂಪನಿಗೆ ಈ ಸಂದರ್ಭದಲ್ಲಿ ಕಾರ್ತಿ ಮಾಲೀಕತ್ವದ ಅಡ್ವಾನ್ಸ್ಡ್ ಸ್ಟ್ರಟಜಿಕ್ ಕನಸ್ಟಲಿಂಗ್ ಪ್ರೈವೆಟ್ ಲಿಮಿಟೆಡ್(ಎಎಸ್‍ಸಿಪಿಎಲ್) ಕಂಪನಿಯಿಂದ ಹೂಡಿಕೆಯಾಗಿತ್ತು. ಕಾರ್ತಿ ಮತ್ತು ಇಂದ್ರಾಣಿ ಮಾತುಕತೆಯ ಫಲವಾಗಿ ಎಎಸ್‍ಸಿಪಿಎಲ್ ಮತ್ತು ಇದರ ಸಹಭಾಗಿತ್ವದಲ್ಲಿರುವ ಕಂಪನಿಗಳು ಸುಮಾರು 7 ಲಕ್ಷ ಡಾಲರ್(ಆಗಿನ ಮೌಲ್ಯ 3.10 ಕೋಟಿ ರೂ.) ಹೂಡಿಕೆಯಾಗಿತ್ತು. ನಂತರ ಈ ಹಣ ಮರುಪಾವತಿಯಾಗಿತ್ತು. ಇದಾದ ನಂತರ ವಿದೇಶಿ ಬಂಡವಾಳ ಉತ್ತೇಜನ ಮಂಡಳಿ(ಎಫ್‍ಐಪಿಬಿ) ಕೆಲ ಬದಲಾವಣೆ ಮಾಡಿ ಇಂದ್ರಾಣಿ ಕಂಪನಿಗೆ ಅನುಮತಿ ನೀಡಿತ್ತು ಎನ್ನುವುದು ಇಡಿ ಆರೋಪ.

    ಸಿಬಿಐ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ನೀಡಿದ ಮಾಹಿತಿ ಪ್ರಕಾರ, ಎಫ್‍ಐಪಿಬಿ 4.62 ಕೋಟಿ ರೂ. ವಿದೇಶಿ ಹೂಡಿಕೆಗೆ ಅನುಮತಿ ನೀಡಿತ್ತು. ಆದರೆ ಚಿದಂಬರಂ ಮೂಲಕ ಕಾರ್ತಿಗೆ ಲಂಚ ನೀಡಿದ ಪರಿಣಾಮ 305 ಕೋಟಿ ರೂ. ವಿದೇಶಿ ಹಣ ಬಂದಿತ್ತು. ಅಷ್ಟೇ ಅಲ್ಲದೇ ಐಎನ್‍ಎಕ್ಸ್ ನ್ಯೂಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಶೇ.26 ರಷ್ಟು ಡೌನ್‍ಸ್ಟ್ರೀಮ್ ಇನ್ವೆಸ್ಟ್ ಮೆಂಟ್ ಮಾಡಲಾಯಿತು ಎಂದು ತಿಳಿಸಿದ್ದರು.

    ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಲಂಚವಾಗಿ ಪಡೆದ ಹಣದಲ್ಲಿ ಕಾರ್ತಿ ಚಿದಂಬರಂ ಸ್ಪೇನ್ ದೇಶದಲ್ಲಿ ಟೆನ್ನಿಸ್ ಕ್ಲಬ್, ಇಂಗ್ಲೆಂಡಿನಲ್ಲಿ ಕಾಟೇಜ್, ಭಾರತ ಮತ್ತು ವಿದೇಶಗಳಲ್ಲಿ ಸುಮಾರು 54 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಆಸ್ತಿಗಳನ್ನು ಖರೀದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

  • ಚಿದಂಬರಂ ಐದು ದಿನ ಸಿಬಿಐ ಕಸ್ಟಡಿಗೆ

    ಚಿದಂಬರಂ ಐದು ದಿನ ಸಿಬಿಐ ಕಸ್ಟಡಿಗೆ

    ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಅವ್ಯವಹಾರ ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

    ಸಿಬಿಐ ಅಧಿಕಾರಿಗಳು ಬುಧವಾರ ರಾತ್ರಿ ಪಿ.ಚಿದಂಬರಂ ಅವರನ್ನು ಬಂಧಿಸಿದ್ದರು. ರಾತ್ರಿ ಸಿಬಿಐ ಕೇಂದ್ರ ಕಚೇರಿಯಲ್ಲಿ ಇರಿಸಿಕೊಂಡಿದ್ದ ಅಧಿಕಾರಿಗಳು ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದರು. ಪ್ರರಕಣದ ಕುರಿತು ವಿಚಾರಣೆ ನಡೆದಿದ ಕೋರ್ಟ್, ಆಗಸ್ಟ್ 22ರಿಂದ 26ರ ವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.

    ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್​ ಜನರಲ್​ ತುಶಾರ್​ ಮೆಹ್ತಾ ಅವರು, ಮೌನ ಎಂಬುದು ಸಂವಿಧಾನಿಕ ಹಕ್ಕು. ಇದರ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಆದರೆ ಐಎನ್‍ಎಕ್ಸ್ ಮೀಡಿಯಾ ಅವ್ಯವಹಾರ ಹಗರಣ ಕುರಿತು ಪಿ.ಚಿದಂಬರಂ ಅವರು ತನಿಖೆಗೆ ಸಹಕರಿಸುತ್ತಿಲ್ಲ.  ಅವರು ಪ್ರಶ್ನೆಗಳಿಂದ ಪಲಾಯನ ಮಾಡುತ್ತಿದ್ದಾರೆ ಎಂದು ಕೋರ್ಟ್​ ಮುಂದೆ ವಾದ ಮಂಡಿಸಿದರು.

    ಮಾಜಿ ಸಚಿವ ಪಿ.ಚಿದಂಬರಂ ಅವರ ಪರ ಹಿರಿಯ ವಕೀಲ ಕಪಿಲ್​ ಸಿಬಲ್​  ಅವರು ವಾದ ಮಂಡಿಸಿದರು. ಮಾಜಿ ಸಚಿವರ ಜೊತೆಗೆ ಅಭಿಷೇಕ್​ ಮನು ಸಿಂಗ್ವಿ, ಅವರ ಪತ್ನಿ ನಳಿನಿ ಮತ್ತು ಸಹ ಆರೋಪಿ ಮಗ ಕಾರ್ತಿ ಚಿದಂಬರಂ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು. ವಾದ ಪ್ರತಿವಾದವನ್ನು ಆಲಿಸಿದ ಕೋರ್ಟ್  ಪಿ.ಚಿದಂಬರಂ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

    ಮಾಜಿ ಸಚಿವರು ಸಲ್ಲಿಸಿದ್ದ ನೀರಿಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ಮಂಗಳವಾರ ವಜಾಗೊಳಿಸಿದ ಬಳಿಕ ಪಿ.ಚಿದಂಬರಂ ಅವರು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಆದರೆ 24 ಗಂಟೆ ಬಳಿಕ (ಬುಧವಾರ) ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರತ್ಯಕ್ಷರಾಗಿ ಸುದ್ದಿಗೋಷ್ಠಿ ನಡೆಸಿದ್ದ ಅವರು ಆ ಬಳಿಕ ತಮ್ಮ ನಿವಾಸಕ್ಕೆ ತೆರಳಿದ್ದರು.

    ಮಾಜಿ ಸಚಿವರು ನಿವಾಸಕ್ಕೆ ತೆರಳಿದ ಮಾಹಿತಿ ಲಭಿಸುತ್ತಿದಂತೆ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆ ಆಗಮಿಸಿದ್ದರು. ಆದರೆ ಈ ಸಂದರ್ಭದಲ್ಲಿ ಗೇಟ್ ಹಾಕಿದ್ದರಿಂದ ಅಧಿಕಾರಿಗಳು ನಿವಾಸದ ಎದುರಿನ ಗೇಟ್ ಹಾಗೂ ಕಾಂಪೌಡ್ ಜಿಗಿದು ಪ್ರವೇಶಿಸಿದ್ದರು. ಇಡಿ ಹಾಗೂ ಸಿಬಿಐ ಅಧಿಕಾರಿಗಳು ನಿವಾಸ ಪ್ರವೇಶ ಮಾಡುತ್ತಿದಂತೆ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಈ ವೇಳೆ ಪೊಲೀಸರು ಕೂಡ ನಿವಾಸ ಎದುರು ಬೀಡು ಬಿಟ್ಟಿದ್ದರು. ಇಡಿ ಅಧಿಕಾರಿಗಳು ಚಿದಂಬರಂ ಅವರನ್ನು ಮನೆಯಲ್ಲಿಯೇ ವಿಚಾರಣೆಗೆ ಒಳಪಡಿಸಿದ್ದರು. ಆ ಬಳಿಕ ಮಾಜಿ ಸಚಿವರನ್ನು ಬಂಧಿಸಿದ ಅಧಿಕಾರಿಗಳು ಕಾರಿನಲ್ಲಿ ಕರೆದುಕೊಂಡ ಹೋಗಿದ್ದರು.

    ಏನಿದು ಪ್ರಕರಣ?
    ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

    ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.

  • ಚಿದಂಬರಂಗಿಲ್ಲ ರಿಲೀಫ್ – ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರ

    ಚಿದಂಬರಂಗಿಲ್ಲ ರಿಲೀಫ್ – ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರ

    ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಬಂಧನ ಭೀತಿ ಎದುರಾಗಿದ್ದು, ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಸಹ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಈ ಮೂಲಕ ಚಿದಂಬರಂ ಅವರಿಗೆ ಭಾರೀ ಹಿನ್ನಡೆಯಾದಂತಾಗಿದೆ.

    ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳುಹಿಸುತ್ತೇವೆ ಅವರೇ ಆದೇಶ ಪ್ರಕಟಿಸುತ್ತಾರೆ ಎಂದು ನ್ಯಾಯಮೂರ್ತಿ ಎನ್.ವಿ.ರಮಣ್, ಎಂ.ಶಾಂತನಗೌಡರ್ ಹಾಗೂ ಅಜಯ್ ರಸ್ಟೋಗಿ ಅವರಿದ್ದ ಪೀಠ ತಿಳಿಸಿದೆ.

    ಸಿಬಿಐ ಅಧಿಕಾರಿಗಳು ಮಂಗಳವಾರ ಮಧ್ಯ ರಾತ್ರಿಯೇ ನೋಟಿಸ್ ನೀಡಿದ್ದು, ಇದೀಗ ಜಾರಿ ನಿರ್ದೇಶನಾಲಯ ಲುಕೌಟ್ ನೋಟಿಸ್ ಜಾರಿ ಮಾಡಿದೆ. ಮಾತ್ರವಲ್ಲದೆ ಸಿಬಿಐ ಅಧಿಕಾರಿಗಳು ಸಹ ಚಿದಂಬರಂ ಅವರ ಮನೆಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಚಿದಂಬರಂ ಅವರು ಮನೆಯಲ್ಲಿರಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬುದು ತಿಳಿದಿಲ್ಲ. ಮಂಗಳವಾರ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ನಂತರ ಚಿಂದಂಬರಂ ಅವರು ಕಾಣೆಯಾಗಿದ್ದಾರೆ. ಹೀಗಾಗಿ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಗೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ.

    ಸಿಬಿಐ ಹಾಗೂ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರ ಕುರಿತು ಚಿದಂಬರಂ ಪರ ವಕೀಲ ಆಕ್ರೋಶ ವ್ಯಕ್ತಪಡಿಸಿದ್ದು, ಕಾನೂನಿನ ಯಾವ ನಿಬಂಧನೆ ಅಡಿಯಲ್ಲಿ ನನ್ನ ಕಕ್ಷಿದಾರರಿಗೆ ನೋಟಿಸ್ ನೀಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

    ಐಎನ್‍ಎಕ್ಸ್ ಮೀಡಿಯಾ ಮತ್ತು ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕೃತಗೊಳಿಸಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಬಂಧನಕ್ಕಾಗಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಮನೆಯಲ್ಲಿ ಇಲ್ಲದ ಕಾರಣ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಿ ಎಂದು ಸಿಬಿಐ ಅಧಿಕಾರಿಗಳು ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.

    ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದರು.

    ಏನಿದು ಪ್ರಕರಣ?
    ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

    ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.