Tag: Job creation

  • ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಸಂಪುಟ ಅನುಮೋದನೆ

    ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಸಂಪುಟ ಅನುಮೋದನೆ

    ನವದೆಹಲಿ: ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಕೇಂದ್ರ ಸಂಪುಟ (Union Cabinet) ಅನುಮೋದನೆ ನೀಡಿದೆ.

    ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿಗೆ ಬೆಂಬಲ ನೀಡಲು, ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು 1.07 ಲಕ್ಷ ಕೋಟಿ ರೂ.ಗಳ ವೆಚ್ಚದ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರ ಮಂಗಳವಾರ ಅನುಮೋದಿಸಿದೆ. ಇದನ್ನೂ ಓದಿ: ಘಾನಾದಿಂದ ಬ್ರೆಜಿಲ್‌ವರೆಗೆ – ಆಪರೇಷನ್ ಸಿಂಧೂರ, ಗ್ಲೋಬಲ್ ಸೌತ್ ಸಂಬಂಧಕ್ಕೆ ಮೋದಿ ಒತ್ತು

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

    ಎರಡು ವರ್ಷಗಳಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಪ್ರೋತ್ಸಾಹ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಇದಲ್ಲದೆ, ಈ ಯೋಜನೆಯು ಮೊದಲ ಬಾರಿಗೆ ಕೆಲಸ ಮಾಡುವ ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡುತ್ತದೆ. ಇದನ್ನೂ ಓದಿ: ಗುಡ್‌ ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ

    ಮೊದಲ ಬಾರಿಗೆ ಹೆಚ್ಚುವರಿಯಾಗಿ ಕೆಲಸ ಮಾಡುವ ಪ್ರತಿ ಉದ್ಯೋಗಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3,000 ರೂ.ಗಳವರೆಗೆ ಪ್ರೋತ್ಸಾಹ ಧನ ಹಾಗೂ 1 ಲಕ್ಷ ರೂ.ಗಳವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಪ್ರೋತ್ಸಾಹ ಧನ ಪಡೆಯುತ್ತಾರೆ.

    ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ, ಉದ್ಯೋಗದಾತರಿಗೆ ನೀಡುವ ಪ್ರೋತ್ಸಾಹ ಧನವನ್ನು ಮೂರನೇ ಮತ್ತು ನಾಲ್ಕನೇ ವರ್ಷಗಳಿಗೂ ವಿಸ್ತರಿಸಲಾಗುವುದು.

  • ಮೋದಿ ಉದ್ಯೋಗ ಸೃಷ್ಟಿಸುವ ಕೆಲಸ ಮಾಡ್ಲಿ, ನಾನೇ ನಿಂತು ಜಾಗ ಕೊಡಿಸ್ತೀನಿ: ಡಿಕೆಶಿ

    ಮೋದಿ ಉದ್ಯೋಗ ಸೃಷ್ಟಿಸುವ ಕೆಲಸ ಮಾಡ್ಲಿ, ನಾನೇ ನಿಂತು ಜಾಗ ಕೊಡಿಸ್ತೀನಿ: ಡಿಕೆಶಿ

    – ಬಿಜೆಪಿ-ಜೆಡಿಎಸ್ ನಾಯಕರು ಮೊಸರಲ್ಲಿ ಕಲ್ಲು ಹುಡುಕೋದು ಬೇಡವೆಂದ ಡಿಸಿಎಂ

    ಬೆಂಗಳೂರು: ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ವಿಷಯ ಇಲ್ಲದೇ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿವೆ. ಮೋದಿ (DK Shivakumar) ಅವರು ಮೊದಲು ಕೊಟ್ಟಿರುವ ಭರವಸೆ ಈಡೇರಿಸುವ ಕೆಲಸ ಮಾಡಲಿ. ಉದ್ಯೋಗ ಸೃಷ್ಟಿ ಮಾಡೋ ಕೆಲಸ ಮಾಡಲಿ ರಾಜ್ಯದಲ್ಲಿ ಜಾಗ ಬೇಕಿದ್ರೆ ಹೇಳಲಿ, ನಾನೇ ನಿಂತು ಜಾಗ ಕೊಡಿಸುತ್ತೇನೆ ಉದ್ಯೋಗ ನೀಡಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಹೇಳಿದರು.

    ಕೆಪಿಸಿಸಿ (KPCC) ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ, ಕುಮಾರಸ್ವಾಮಿಗೆ (HD Kumaraswamy) ನಮ್ಮ ಸರ್ಕಾರದ ಬಗ್ಗೆ ಹೇಳೋದಕ್ಕೆ ಏನೂ ಇಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿದ್ರು. ಯಾವ ಬಡವರಿಗೂ ಸಹಾಯ ಮಾಡಲಿಲ್ಲ. ಒಂದು ಕಾರ್ಯಕ್ರಮ ಕೋಡೋದಕ್ಕೆ ಆಗಲಿಲ್ಲ ಎಂದು ತಿವಿದರು. ಇದನ್ನೂ ಓದಿ: ಸೆಮಿಕಂಡಕ್ಟರ್ ವಹಿವಾಟು 100 ಶತಕೋಟಿ ಡಾಲರ್ ನತ್ತ: ಟಾಟಾ ಎಲೆಕ್ಟ್ರಾನಿಕ್ಸ್‌ನ ಮೂರ್ತಿ ದಸಾಕ

    ಅನ್ನಭಾಗ್ಯ ಕಾರ್ಯಕ್ರಮ ಅವರು ಮಾಡಿದ್ರಾ? ಪಿಂಚಣಿ ಕೊಡೋ ಕಾರ್ಯಕ್ರಮ ಅವರು ಮಾಡಿದ್ರಾ? ಸೈಟ್ ಕೊಡೋ ಕಾರ್ಯಕ್ರಮ ಅವರು ಮಾಡಿದ್ರಾ, ಜಮೀನು ಕೊಟ್ರಾ..? ಈಗ ಕೆಲವರು ಸರ್ಕಾರಿ ನೌಕಕರಿದ್ದಾರೆ. ಅನುಕೂಲಸ್ಥರಿದ್ದಾರೆ ಅವರಿಗೆ ಎಲ್ಲಾ ಸಿಗ್ತಿದೆ. ಅದನ್ನ ಸರ್ವೇ ಮಾಡ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಅನುಕೂಲ ಇದೆ. ಬಡವರು ಯಾರು ಅನ್ನೋದು ಲಿಮಿಟೇಷನ್ ರಾಜ್ಯ ಸರ್ಕಾರವೇ ಮಾಡಿದೆ. ಕೆಲವರು ಜಿಎಸ್‌ಟಿ ಟ್ಯಾಕ್ಸ್ (GST Tax) ಕಟ್ಟುತ್ತಿದ್ದಾರೆ. ಅದರಲ್ಲಿ ಬಡವರು ಇದ್ದಾರೆ ಅಂದ್ರೆ ಮತ್ತೆ ಅವರಿಗೆ ಬಿಪಿಎಲ್‌ ಕಾರ್ಡ್‌ (BPL Card) ಕೊಡಬೇಕು ಎಂದು ನಿರ್ಧರಿಸಿದ್ದೇವೆ. ಈ ಬಗ್ಗೆ ನಿನ್ನೆಯೇ ಸಿಎಂ ಅವರು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಪಿಎಲ್, ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ: ಕೆ.ಹೆಚ್.ಮುನಿಯಪ್ಪ

    ಯಾವ ಬಡವರಿಗೂ ತೊಂದ್ರೆ ಆಗಲ್ಲ. ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ಕುಮಾರಸ್ವಾಮಿ ರಾಜ್ಯಕ್ಕೆ ಏನು ಮಾಡಿದ್ದಾರೆ ರೀ? ಅವರ ಕೊಡುಗೆ ರಾಜ್ಯಕ್ಕೆ ಏನಿದೆ..? ಗಾಳಿಯಲ್ಲಿ ಗುಂಡು ಹೊಡೆಯೋದೇ ಕೊಡುಗೆನಾ? ನಾವು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದ್ದೇವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಯಾರು ಏನೂ ಗಾಬರಿ ಪಡಬೇಕಾಗಿಲ್ಲ. ಮೋದಿ ಅವರು ಕೊಟ್ಟಿರುವ ಭರವಸೆ ಈಡೇರಿಸುವ ಕೆಲಸ ಮಾಡಲಿ. ಉದ್ಯೋಗ ಸೃಷ್ಟಿ ಮಾಡೋ ಕೆಲಸ ಮಾಡಲಿ ರಾಜ್ಯದಲ್ಲಿ ಜಾಗ ಬೇಕಿದ್ರೆ ಹೇಳಲಿ, ನಾನೇ ನಿಂತು ಜಾಗ ಕೊಡಿಸುತ್ತೇನೆ ಉದ್ಯೋಗ ನೀಡಲಿ ಎಂದು ಗುಡುಗಿದರು. ಇದನ್ನೂ ಓದಿ: ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ-ಐಸಿಯುಗಳತ್ತ ಚಿತ್ತ: ದಿನೇಶ್ ಗುಂಡೂರಾವ್

  • ಅವಳಿ ನಗರಗಳಲ್ಲಿ 25 ಸಾವಿರ ಕೋಟಿ ಬಂಡವಾಳ ಹೂಡಿಕೆ 10 ಸಾವಿರ ಉದ್ಯೋಗ ಸೃಷ್ಟಿ: ಶೆಟ್ಟರ್

    ಅವಳಿ ನಗರಗಳಲ್ಲಿ 25 ಸಾವಿರ ಕೋಟಿ ಬಂಡವಾಳ ಹೂಡಿಕೆ 10 ಸಾವಿರ ಉದ್ಯೋಗ ಸೃಷ್ಟಿ: ಶೆಟ್ಟರ್

    – ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ

    ಹುಬ್ಬಳ್ಳಿ: ನಗರದಲ್ಲಿ ಏಕಸ್, ಯಫ್ಲೆಕ್ಸ್, ರಾಜೇಶ್ ಎಕ್ಸೋ ಸೇರಿದಂತೆ ಪ್ರತಿಷ್ಠಿತ ಕಂಪನಿಗಳು ಸುಮಾರು 25 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ. ಇದರಿಂದ ಸ್ಥಳೀಯವಾಗಿ 10 ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ. ಇದರಿಂದ ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉದ್ಯೋಗ ಅರಸಿ ಬೆಂಗಳೂರು, ಪೂಣೆ, ಮುಂಬೈಗಳಿಗೆ ವಲಸೆ ಹೋಗುವುದು ತಪ್ಪಲಿದೆ ಸ್ಥಳೀಯವಾಗಿ ವಿಪುಲ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರೂ ಆದ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

    ನಗರದ ಮಹಿಳಾ ವಿದ್ಯಾಪೀಠದ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ವಿತರಿಸಿ ಮಾತನಾಡಿದರು. ಬೆಂಗಳೂರಿಗೆ ಸೀಮಿತವಾಗಿದ್ದ ಕೈಗಾರಿಕೆಗಳಲ್ಲಿನ ಬಂಡವಾಳ ಹೂಡಿಕೆಯನ್ನು ರಾಜ್ಯದ ಎರೆಡು ಹಾಗೂ ಮೂರನೇ ಹಂತದ ನಗರಗಳಲ್ಲಿ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದರು.

    ಸರ್ಕಾರ ಪದವಿ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣೆ ಮಾಡುತ್ತಿದೆ. ಇದರಿಂದ ವಿದ್ಯಾಭ್ಯಾಸಕ್ಕೆ ಪರೀಕ್ಷೆಗಳಿಗೆ ಹೆಚ್ಚಿನ ಜ್ಞಾನ ಪಡೆಯಲು ಅವಕಾಶವಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮೆರಿಟ್‍ಗೆ ಹೆಚ್ಚಿನ ಅವಕಾಶವಿದೆ. ವಿದ್ಯಾರ್ಥಿಗಳು ಕೀಳರಿಮೆ ಬೆಳೆಸಿಕೊಳ್ಳದೆ ಅಧ್ಯಯನ ನಡೆಸಿ. ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಉದ್ಯೋಗ ಅವಕಾಶಗಳು ಲಭಿಸುತ್ತವೆ ಎಂದರು.

    ಇದೇ ಸಂದರ್ಭದಲ್ಲಿ ಮಹಿಳಾ ವಿದ್ಯಾಪೀಠದ ಪ್ರಾಚಾರ್ಯೆ ಗೀತಾ ಎಂ. ಅವರ ಮನವಿ ಸ್ಪಂದಿಸಿ, ವಿವಿಧ ಕಂಪನಿಗಳ ಸಿ.ಎಸ್.ಆರ್ ನಿಧಿಯಡಿ ಕಾಲೇಜಿಗೆ ಅಗತ್ಯ ಇರುವ ಕಂಪ್ಯೂಟರ್ ಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್‍ನ 440 ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ಆನಂದ ಖಾನಾಪುರ, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಕೋವಿಡ್ ಸಂಕಷ್ಟದಿಂದ ಹೊರಬರಲು ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ

    ಕೋವಿಡ್ ಸಂಕಷ್ಟದಿಂದ ಹೊರಬರಲು ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ

    -ಸಾಗರೋತ್ತರ ಕನ್ನಡಿಗರೊಂದಿಗೆ ಸಂವಾದದಲ್ಲಿ ಡಿಸಿಎಂ ಹೇಳಿಕೆ

    ಬೆಂಗಳೂರು: ಕೋವಿಡ್ ಸೇರಿದಂತೆ ಇತರ ಸಮಸ್ಯೆಗಳಿಂದ ನಿಂದ ಉಂಟಾಗಿರುವ ಉದ್ಯೋಗ ಮತ್ತು ಆರ್ಥಿಕ ನಷ್ಟವನ್ನು ಭರ್ತಿ ಮಾಡಲು ಇನ್ನು ಕೆಲ ವರ್ಷಗಳಲ್ಲಿ ಹಂತ ಹಂತವಾಗಿ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ & ಉದ್ಯಮಶೀಲತಾ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

    ಸ್ವ ಉದ್ಯೋಗಕ್ಕೆ ಶಕ್ತಿ ನೀಡುವ ಹಿನ್ನೆಲೆಯಲ್ಲಿ ಶನಿವಾರ ಸಾಗರೋತ್ತರ ಕನ್ನಡಿಗರೊಂದಿಗೆ ಕರಕುಶಲ ಕಾಯಕ, ಕನ್ನಡ ಮತ್ತು ನಾವು ಎಂಬ ವಿಷಯದ ಕುರಿತು ಸಂವಾದ ನಡೆಸಿದ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಗಳ ಮೂಲಕ ಇಷ್ಟು ಪ್ರಮಾಣದ ಉದ್ಯೋಗಾವಕಾಶಗಳನ್ನು ನಗರ, ಗ್ರಾಮೀಣ ಪ್ರದೇಶದಲ್ಲಿ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ ಎಂದರು.

    ಈ ನಿಟ್ಟಿನಲ್ಲಿ ಯುವಜನರಿಗೆ ಕೌಶಲ್ಯ ತರಬೇತಿ ಕೊಡುವುದರ ಜತೆಗೆ, ಈಗಾಗಲೇ ಈ ವಲಯದಲ್ಲಿ ತೊಡಗಿಸಿಕೊಂಡಿರುವವರ ಕೌಶಲತೆಯನ್ನು ಉತ್ತಮಪಡಿಸುವ ಕೆಲಸವನ್ನೂ ಸರಕಾರ ಕೈಗೆತ್ತಿಕೊಂಡಿದೆ. ಅಲ್ಲದೆ, ಕರಕುಶಲ ವಲಯವೂ ಸೇರಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ದಾರಿಯಲ್ಲಿ ಸಾಗುತ್ತಿರುವವರಿಗೆ ತಾಂತ್ರಿಕವಾಗಿ ಬಲ ತುಂಬುವುದು ಹಾಗೂ ಆರ್ಥಿಕ, ಮಾರುಕಟ್ಟೆ ವಿಸ್ತಾರಕ್ಕೆ ಸಾಥ್ ಕೊಡುವುದು ಮಾಡಲಾಗುತ್ತಿದೆ. ಕ್ರಮೇಣವಾಗಿ ಅವರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗುವಂತೆ ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

    ಮಾರುಕಟ್ಟೆ ಮುಖ್ಯವಾಹಿನಿಗೆ: ರಾಜ್ಯದ ಉದ್ದಗಲಕ್ಕೂ ಕಾರ್ಯ ನಿರತವಾಗಿರುವ ಪ್ರತಿ ಸಣ್ಣ ವ್ಯಾಪಾರಿಯನ್ನೂ ಇ-ಕಾಮರ್ಸ್ ಮೂಲಕ ಮಾರುಕಟ್ಟೆಯ ಮುಖ್ಯವಾಹಿನಿಗೆ ತರುವ ಕೆಲಸವನ್ನು ಸರಕಾರ ಮಾಡುತ್ತಿದೆ. ಪ್ಲಿಪ್ಕಾರ್ಟ್, ಅಮೆಜಾನ್ನಂಥ ಇ-ಕಾಮರ್ಸ್ ಪೋರ್ಟಲ್ ಗಳ ಮೂಲಕ ಅವರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡುವ ರೀತಿಯಲ್ಲಿ ಅನುಕೂಲ ಮಾಡಿಕೊಡಲಾಗಿದೆ. ಈಗಾಗಲೇ ಇಂಥ ಅನೇಕ ದೈತ್ಯ ಕಂಪನಿಗಳ ಸರಕಾರ ಒಡಂಬಡಿಕೆ ಮಾಡಿಕೊಂಡಿದೆ ಎಂದು ಅವರು ಹೇಳಿದರು.

    ಕರಕುಶಲ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಯಾರಾಗುವ ಅಥವಾ ಬೆಳೆಯುವ ಕೃಷಿ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಮಾರಾಟ ಮಾಡುವುದಕ್ಕೆ ಪೂರಕವಾಗುವಂತೆ ಕೇಂದ್ರ ಸರಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ ಎಂಬ ಯೋಜನೆಯನ್ನು ಪರಿಚಯಿಸಿದೆ. ಆ ಯೋಜನೆಯ ಮೂಲಕ ನಮ್ಮ ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸಲಾಗುತ್ತಿದೆ. ಇದರ ವ್ಯಾಪ್ತಿಗೆ ಚನ್ನಪಟ್ಟಣದ ಗೊಂಬೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ತಯಾರಾಗುತ್ತಿರುವ ಉತ್ಪನ್ನಗಳು ಸೇರಲಿವೆ. ಗ್ರಾಮೀಣ ಆರ್ಥಿಕತೆಗೆ ಬಲ ತುಂಬಲು ಈ ಯೋಜನೆ ಸಹಕಾರಿಯಾಗುತ್ತದೆ ಎಂದು ಡಿಸಿಎಂ ನುಡಿದರು.

    ಮುಖ್ಯಮಂತ್ರಿ ಜತೆ ಚರ್ಚೆ: ಅನಿವಾಸಿ ಕರಕುಶಲ ವೇದಿಕೆಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಚರ್ಚೆ ನಡೆಸಲಾಗುವುದು. ಆದಷ್ಟು ಬೇಗ ಈ ನೇಮಕಾತಿಯನ್ನು ಮಾಡಲಾಗುವುದು. ಈ ಕ್ಷೇತ್ರಕ್ಕೆ ಅಗತ್ಯವಾದ ಎಲ್ಲ ಸಹಕಾರವನ್ನೂ ಕೊಡಲು ಸರಕಾರ ಸಿದ್ಧವಿದೆ ಎಂದು ಡಾ.ಅಶ್ವತ್ಥನಾರಾಯಣ ಭರವಸೆ ನೀಡಿದರು.

    ವಿದೇಶಗಳಿಂದ ರಾಜ್ಯಕ್ಕೆ ವಾಪಸ್ಸಾಗಿ ಇಲ್ಲಿಯೇ ಕೌಶಲ್ಯ ಕ್ಷೇತ್ರದ ಉದ್ಯಮದಲ್ಲಿ ತೊಡಗಿಸಿಕೊಳ್ಳುವವರಿಗೆ ಎಲ್ಲ ಸಹಕಾರ ನೀಡಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾದ ಪೋರ್ಟಲ್ ಇದ್ದು, ಕಳೆದ ವರ್ಷ 10,000 ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರೆಲ್ಲರಿಗೂ ಸರಕಾರ ವಿವಿಧ ರೀತಿಯಲ್ಲಿ ನೆರವು ಕೊಡುತ್ತಿದೆಯಲ್ಲದೆ, ವಿವಿಧ ಕಂಪನಿಗಳ ಜತೆ ಸಂಪರ್ಕ ವ್ಯವಸ್ಥೆ ಮಾಡಿದೆ. ಮುಂದೆ ಕೂಡ ಯಾರಾದರೂ ಬಂದರೆ ನಮ್ಮ ನೆರವು ಇದ್ದೇ ಇರುತ್ತದೆ ಎಂದು ಅವರು ತಿಳಿಸಿದರು.

    ಕೋವಿಡ್ ನಿಯಂತ್ರಣಕ್ಕೆ ಕ್ರಮ: ರಾಜ್ಯದ ಕೋವಿಡ್ ಪರಿಸ್ಥಿತಿಯ ಬಗ್ಗೆ ಕಳವಳ ಬೇಡ. ಈಗಾಗಲೇ ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ 55,000 ಬೆಡ್ ಗಳಿವೆ. 30,000 ಆಕ್ಸಿಜನ್ ಬೆಡ್‍ಗಳಿವೆ. ರಾಜ್ಯದಲ್ಲಿ ಶೇ.92ಕ್ಕೂ ಹೆಚ್ಚು ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್ ಆಗಿದ್ದಾರೆ. ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲ ದಿನಗಳಲ್ಲೇ 10,000 ಆಕ್ಸಿಜನ್ ಬೆಡ್‍ಗಳನ್ನು ಹೊಸದಾಗಿ ಮಾಡಲಾಗುವುದು ಎಂದು ಡಿಸಿಎಂ ಹೇಳಿದರು.

    ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ಬೇಲೂರು ರಾಘವೇಂದ್ರ ಶೆಟ್ಟಿ, ಅನಿವಾಸಿ ಕನ್ನಡಿಗರಾದ ಚಂದ್ರಶೇಖರ ಲಿಂಗದಳ್ಳಿ (ಅಮೆರಿಕ), ಗೋಪಾಲ್ ಕುಲಕರ್ಣಿ (ಇಂಗ್ಲೆಂಡ್), ಹೇಮಗೌಡ ಮಧು (ಇಟಲಿ), ರವಿ ಮಹಾದೇವ (ಸೌದಿ ಅರೆಬಿಯಾ), ಬಸವ ಪಾಟೀಲ್ (ಇಂಗ್ಲೆಂಡ್) ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

  • ಡಿಜಿಟಲ್ ಕಲಿಕೆಗೆ ಪ್ರೋತ್ಸಾಹ – ಆರು ತಿಂಗಳಲ್ಲಿ 8,000 ಸ್ಮಾರ್ಟ್‍ಕ್ಲಾಸ್ ರೂಮ್

    ಡಿಜಿಟಲ್ ಕಲಿಕೆಗೆ ಪ್ರೋತ್ಸಾಹ – ಆರು ತಿಂಗಳಲ್ಲಿ 8,000 ಸ್ಮಾರ್ಟ್‍ಕ್ಲಾಸ್ ರೂಮ್

    ಬೆಂಗಳೂರು: ಕೋವಿಡೋತ್ತರ ಕಾಲದಲ್ಲಿ ಡಿಜಿಟಲ್ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನೂ ಎರಡು ತಿಂಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳ 2,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‍ಕ್ಲಾಸ್ ರೂಮ್‍ಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದ್ದಾರೆ.

    ಬೆಂಗಳೂರು ಕಲಾ ಕಾಲೇಜ್‍ನಲ್ಲಿ ಗುರುವಾರ ನೂತನ ಜಿಮ್ ಹೌಸ್ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೋವಿಡ್ ಕಾರಣಕ್ಕೆ ಕಲಿಕೆಯ ಮಾದರಿಗಳೇ ಬದಲಾಗಿವೆ. ಹೀಗಾಗಿ ಸರಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಸ್ಲಾರ್ಟ್‍ಕ್ಲಾಸ್ ರೂಮ್ ಪರಿಕಲ್ಪನೆಯನ್ನು ರೂಪಿಸಲಾಗಿದೆ. 2,500 ತರಗತಿ ಕೊಠಡಿಗಳು ಸ್ಮಾರ್ಟ್ ಕ್ಲಾಸ್‍ಗಳಾದ ನಂತರ ಮುಂಬರುವ 6 ತಿಂಗಳಲ್ಲಿ 5,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‍ಕ್ಲಾಸ್ ರೂಮ್‍ಗಳಾಗಿ ರೂಪಿಸಲಾಗುವುದು ಎಂದರು.

    ಹೈಸ್ಪೀಡ್ ಇಂಟರ್‍ನೆಟ್, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್ ನೀಡುವುದು ಹಾಗೂ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‍ಎಂಎಸ್)ಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್‍ಕ್ಲಾಸ್ ರೂಮ್ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗತಿಯೇ ಬದಲಾಗುತ್ತದೆ. ಗುಣಮಟ್ಟದ ಕಲಿಕೆಯ ಕನಸು ಈ ಮೂಲಕ ಸಾಕಾರವಾಗುತ್ತದೆ ಎಂದು ತಿಳಿಸಿದರು.

    ಸಮಗ್ರ ಕಲಿಕಾ ವ್ಯವಸ್ಥೆ (ಎಲ್‍ಎಂಎಸ್): ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ಮಾಡಲಾಗಿರುವ ಸಮಗ್ರ ಕಲಿಕಾ ವ್ಯವಸ್ಥೆಯು ಕ್ರಾಂತಿಕಾರಕ. ಇಡೀ ದೇಶದಲ್ಲಿ ಇಂಥ ವ್ಯವಸ್ಥೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮದೇ ಮಾನವ ಸಂಪನ್ಮೂಲ ಬಳಸಿಕೊಂಡು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ. ಎಲ್ಲೇ ಇದ್ದರೂ ಟ್ಯಾಬ್ ಮತ್ತು ಇಂಟರ್‍ನೆಟ್ ಇದ್ದರೆ ಕಲಿಯಬಹುದು. ಜತೆಗೆ, ವಿದ್ಯಾರ್ಥಿ ಕಲಿಕೆಯ ಮಟ್ಟವನ್ನೂ ಬೋಧಕರು ಟ್ರ್ಯಾಕ್ ಮಾಡಬಹುದು. ಈ ಎಲ್ಲ ಉಪಕ್ರಮಗಳ ಮೂಲಕ ಸರಕಾರಿ ಕಾಲೇಜುಗಳು ಖಾಸಗಿ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜತೆ ಮಾತ್ರವಲ್ಲ, ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆಗೂ ಪೈಪೋಟಿ ನಡೆಸಲು ಸಜ್ಜಾಗುತ್ತಿವೆ. ಅದಕ್ಕೆ ಅಗತ್ಯವಾದ ಎಲ್ಲ ಉಪ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಹೇಳಿದರು.

    ಪಠ್ಯ ಆಯ್ಕೆಯಲ್ಲಿ ಸ್ವಾತಂತ್ರ್ಯ: ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ತದ ನಂತರ ವಿದ್ಯಾರ್ಥಿಗಳು ಪೂರ್ವ ನಿಗದಿ ಮಾಡಿದ ಪಠ್ಯ ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ಅಂದರೆ ವಿದ್ಯಾರ್ಥಿಗಳ ಮೇಲೆ ಪಠ್ಯವನ್ನು ಹೇರುವ ವ್ಯವಸ್ಥೆ ಅಳಿಯಲಿದೆ. ಬದಲಿಗೆ ವಿದ್ಯಾರ್ಥಿಗಳೇ ತಮಗೆ ಆಸಕ್ತಿ ಇರುವ ಪಠ್ಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುವ ವ್ಯವಸ್ಥೆ ಬರಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದೆ ಎಂದು ಡಿಸಿಎಂ ಪ್ರಕಟಿಸಿದರು.

    ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಂ.1: ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇವಲ ಔಷಧ ಕ್ಷೇತ್ರವೊಂದರಲ್ಲೇ ಪ್ರತಿ ವರ್ಷ 5 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ. ಭವಿಷ್ಯ ನಿಧಿ ಖಾತೆಗಳಲ್ಲಿ ವರ್ಷಕ್ಕೆ 5 ಲಕ್ಷ ಜನ ನೋಂದಣಿ ಆಗುತ್ತಿದ್ದಾರೆ. ಜೊತೆಗೆ ಇತರೆ ಕ್ಷೇತ್ರಗಳಲ್ಲಿ ಎರಡು ಲಕ್ಷದಷ್ಟು ಉದ್ಯೋಗ ಸೃಷ್ಟಿ ಆಗುತ್ತಿದೆ. ವರ್ಷಕ್ಕೆ ಒಟ್ಟು 7 ಲಕ್ಷ ಉದ್ಯೋಗ ಸೃಷ್ಟಿ ನಮ್ಮ ಬೆಂಗಳೂರಿನಲ್ಲಿ ಆಗುತ್ತಿದೆ. ಬೆಂಗಳೂರು ನಾಲೆಜ್ ಸಿಟಿ ಮಾತ್ರವಲ್ಲದೆ ಆವಿಷ್ಕಾರಕ್ಕೂ ಹೆಚ್ಚು ಒತ್ತಾಸೆ ನೀಡುತ್ತಿರುವುದರಿಂದ ಇದು ಸಾಧ್ಯವಾಗಿದೆ ಎಂದರು.

    ಅಲ್ಲದೆ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹತ್ತು ದಶಲಕ್ಷ ಉದ್ಯೋಗಳನ್ನು ಸೃಷ್ಟಿ ಮಾಡಲು ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ದಿನದ 24 ಗಂಟೆ ವಿದ್ಯುತ್ ಹಾಗೂ ಎಲ್ಲ ಜಾಗದಲ್ಲೂ ಹೈಸ್ಪೀಡ್ ಇಂಟರ್‍ನೆಟ್ ಸಿಗುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

    ನಮ್ಮ ಅಕ್ಕಪಕ್ಕದ ರಾಜ್ಯಗಳಲ್ಲಿ ಈ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಹಾಗೂ ಉದ್ಯಮಶೀಲತೆಯ ವಾತಾವರಣವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಆದರೆ ಬೆಂಗಳೂರಿಗೆ ಮಾತ್ರ ಇದು ಸಾಧ್ಯವಾಗುತ್ತಿದೆ. ನಮ್ಮ ರಾಜ್ಯದಲ್ಲಿ ಅತ್ಯುತ್ತಮ ಪ್ರತಿಭೆಗಳು ಹೊರ ಹೊಮ್ಮುತ್ತಿರುವ ಜೊತೆಗೆ ಹೊರ ರಾಜ್ಯಗಳಿಂದ ಪ್ರತಿಭಾವಂತ ಯುವಕರು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ನುಡಿದರು.

    ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೋಡದ ರಾಜಶೇಖರಪ್ಪ, ಡಾ.ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.

  • ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣ- ರಾಜನಾಥ್ ಸಿಂಗ್ ಜೊತೆ ಡಿಸಿಎಂ ಚರ್ಚೆ

    ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣ- ರಾಜನಾಥ್ ಸಿಂಗ್ ಜೊತೆ ಡಿಸಿಎಂ ಚರ್ಚೆ

    – ರಕ್ಷಣಾ ಇಲಾಖೆ ಸ್ವಾಧೀನದ 750 ಎಕರೆ ಭೂಮಿ ಹಸ್ತಾಂತರಕ್ಕೆ ಮನವಿ

    ನವದೆಹಲಿ: ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ನಿರ್ಮಿಸಲು ರಕ್ಷಣಾ ಇಲಾಖೆ ಸ್ವಾಧೀನದಲ್ಲಿರುವ ಸುಮಾರು 750 ಎಕರೆ ಭೂಮಿಯನ್ನು ಸರ್ಕಾರಕ್ಕೆ ಬಿಟ್ಟುಕೊಡುವಂತೆ ರಾಜ್ಯದ ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಕೋರಿದ್ದಾರೆ.

    ರಾಜನಾಥ್ ಸಿಂಗ್ ಅವರನ್ನು ಶನಿವಾರ ನವದೆಹಲಿಯ ಅವರ ಮನೆಯಲ್ಲಿ ಭೇಟಿಯಾಗಿ ಈ ಬಗ್ಗೆ ಪ್ರಸ್ತಾಪಿಸಿದರು. ಈ ಜಾಗವನ್ನು ಕರ್ನಾಟಕ ಸರ್ಕಾರಕ್ಕೆ ಬಿಟ್ಟುಕೊಟ್ಟರೆ ಐಟಿ ಉದ್ಯಮದ ಜೊತೆಗೆ ಎಲೆಕ್ಟ್ರಾನಿಕ್ ಹಾರ್ಡ್ ವೇರ್, ವೈಮಾಂತರಿಕ್ಷ ಹಾಗೂ ಇತರ ತಯಾರಿಕಾ ಉದ್ಯಮಗಳ ಬೆಳವಣಿಗೆಗೆ ಪೂರಕವಾಗುವಂತೆ ಬಳಸಿಕೊಳ್ಳಲಾಗುವುದು ರಾಜನಾಥ್ ಅವರಿಗೆ ತಿಳಿಸಿದರು.

    ದಾಖಲೆಗಳ ಪ್ರಕಾರ ಬೆಳಗಾವಿ ಗ್ರಾಮದ ಆರ್.ಎಸ್. ನಂಬರ್ 1304ರಿಂದ 1397ರವರೆಗಿನ ಜಾಗಗಳಲ್ಲಿರುವ ಈ ಭೂಮಿಯು ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ ಇದೆ. ಹೀಗಾಗಿ ಉದ್ದೇಶಿತ ಐ.ಟಿ.ಪಾರ್ಕ್ ಸ್ಥಾಪನೆಗೆ ಅನುಕೂಲಕರವಾಗಿದೆ. ಈ ಭೂಮಿಯನ್ನು ರಾಜ್ಯ ಸರ್ಕಾರ ಪುನರ್ ಸ್ವಾಧೀನಕ್ಕೆ ತೆಗೆದುಕೊಳ್ಳಲು 2012ರ ನವೆಂಬರ್ ನಲ್ಲೇ ಆದೇಶ ಹೊರಡಿಸಿದೆ. ಆದರೆ ಇದು ರಕ್ಷಣಾ ಇಲಾಖೆ ಸ್ವಾಧೀನದಲ್ಲೇ ಮುಂದುವರಿದಿದೆ ಎಂಬ ಅಂಶವನ್ನು ಅಶ್ವತ್ಥ ನಾರಾಯಣ ಅವರು ಮನವರಿಕೆ ಮಾಡಿಕೊಟ್ಟರು.

    ಕರ್ನಾಟಕ ರಾಜ್ಯವು ಐ.ಟಿ./ಐಟಿಇಎಸ್ ಉದ್ಯಮದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಈ ಅಗ್ರಶ್ರೇಯಾಂಕ ಕಾಯ್ದುಕೊಳ್ಳುವ ದಿಸೆಯಲ್ಲಿ ಇತ್ತೀಚೆಗೆ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಪ್ರಕಟಿಸಲಾಗಿದೆ. ಜೊತೆಗೆ, ಬೆಂಗಳೂರಿಗೆ ಹೊರತಾದ ಬೇರೆ ಪ್ರದೇಶಗಳಲ್ಲೂ ಐಟಿ/ಐಟಿಇಎಸ್ ಹಾಗೂ ಎಲೆಕ್ಟ್ರಾನಿಕ್ ಉದ್ಯಮಗಳನ್ನು ಬೆಳೆಸಿ, ರಾಜ್ಯದಲ್ಲಿ ಸಮತೋಲನದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ‘ಬಿಯಾಂಡ್ ಬೆಂಗಳೂರು’ ಯೋಜನೆ ಜಾರಿಗೊಳಿಸಿದೆ. ಹೀಗಾಗಿ, ಈ ಜಾಗ ಬಿಟ್ಟುಕೊಟ್ಟರೆ ಉದ್ಯಮದ ಬೆಳವಣಿಗೆಗೆ ಅನುವು ಮಾಡಿಕೊಟ್ಟಂತೆ ಆಗುತ್ತದೆ ಎಂದರು.

    ಬೆಳಗಾವಿಯು ಉತ್ತಮ ಶೈಕ್ಷಣಿಕ ವಲಯವಾಗಿದೆ. ಪಕ್ಕದ ಧಾರವಾಡದಲ್ಲಿ ಐಐಟಿ-ಧಾರವಾಡ, ಐಐಐಟಿ-ಧಾರವಾಡ, ಕೆ.ಎಲ್.ಇ.ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳು ಇರುವುದರಿಂದ ಪ್ರತಿವರ್ಷ ಪ್ರತಿಭಾವಂತ ಪದವೀಧರರು ಹೊರಬರುತ್ತಿದ್ದಾರೆ. ಜೊತೆಗೆ ಇಲ್ಲಿ ಐಟಿ/ಐಟಿಇಎಸ್ ಉದ್ಯಮಕ್ಕೆ ಸೂಕ್ತವಾದ ಪರ್ಯಾವರಣವಿದೆ. ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣದಿಂದ ಈ ಕ್ಷೇತ್ರದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇದೆ. ಈ ಐಟಿ ಪಾರ್ಕ್ ನಿರ್ಮಾಣವು ಭಾರತದ ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಗುರಿಯಲ್ಲಿ ಕರ್ನಾಟಕದ ಶೇ 30ರಷ್ಟು ಕೊಡುಗೆಗೆ ಪೂರಕವಾಗಿರಲಿದೆ ಎಂದು ಅಶ್ವತ್ಥ ನಾರಾಯಣ ಮನವರಿಕೆ ಮಾಡಿಕೊಟ್ಟರು.

    ಬೆಳಗಾವಿ ಶಾಸಕ ಅಭಯ್ ಪಾಟೀಲ್ ಅವರೂ ಡಿಸಿಎಂ ಜತೆ ಸಿಂಗ್ ಅವರನ್ನು ಭೇಟಿ ಮಾಡಿದರು.