Tag: Jyotiraditya Scindia

  • ಕಾಂಗ್ರೆಸ್‍ನಲ್ಲಿ ನಿಲ್ಲದ ರಾಜೀನಾಮೆ ಪರ್ವ- ರಾಹುಲ್ ಆಪ್ತ ಮಿಲಿಂದ್, ಸಿಂಧಿಯಾ ರಾಜೀನಾಮೆ

    ಕಾಂಗ್ರೆಸ್‍ನಲ್ಲಿ ನಿಲ್ಲದ ರಾಜೀನಾಮೆ ಪರ್ವ- ರಾಹುಲ್ ಆಪ್ತ ಮಿಲಿಂದ್, ಸಿಂಧಿಯಾ ರಾಜೀನಾಮೆ

    ನವದೆಹಲಿ: ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಿಲಿಂದ್ ದಿಯೋರಾ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾಧಿತ್ಯ ಸಿಂಧಿಯಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ ಇಬ್ಬರು ಪ್ರಮುಖ ಯುವ ನಾಯಕರು ಜವಾಬ್ದಾರಿಯಿಂದ ಹಿಂದೆ ಸರಿಯುವ ಮೂಲಕ ಹಿರಿಯ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.

    ಜನರ ತೀರ್ಪನ್ನು ಸ್ವೀಕರಿಸಿದ್ದೇನೆ ಹಾಗೂ ಸೋಲಿನ ಹೊಣೆಯನ್ನು ನಾನು ಕೂಡ ಹೊತ್ತಿರುವೆ. ಈ ಮೂಲಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನದ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದೇನೆ. ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಹಾಗೂ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಜ್ಯೋತಿರಾಧಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

    https://twitter.com/JM_Scindia/status/1147821537128407040

    ಮಿಲಿಂದ್ ದಿಯೋರಾ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಪರಮಾಪ್ತ ಬಳಗದಲ್ಲಿ ಇರುವವರು. ಗುನಾ ಲೋಕಸಭಾ ಕ್ಷೇತ್ರದಿಂದ 2002ರಲ್ಲಿ ಆಯ್ಕೆಯಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಅವರು ನಿರಂತರವಾಗಿ ನಾಲ್ಕು ಬಾರಿ ಭರ್ಜರಿ ಗೆಲುವು ಸಾಧಿಸಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಕೃಷ್ಣಪಾಲ್ ಸಿಂಗ್ ಯಾದವ್ ವಿರುದ್ಧ ಸೋಲು ಕಂಡಿದ್ದಾರೆ.

    ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ನೀಡಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಜ್ಯೋತಿರಾಧಿತ್ಯ ಸಿಂಧಿಯಾ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜಸ್ಥಾನದ ಸಹ-ಉಸ್ತುವಾರಿ ತರುಣ್ ಕುಮಾರ್ ಅವರು ಜೂನ್ 29ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

    ಪಕ್ಷವು ನನಗೆ 2017ರಲ್ಲಿಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿ, ಸರ್ಕಾರ ರಚನೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ವೇಳೆಯೂ ಉತ್ತಮ ರೀತಿಯಲ್ಲಿ ಪ್ರಚಾರ ಹಾಗೂ ಪಕ್ಷ ಸಂಘಟನೆ ಮಾಡಿದ್ದೇವು. ಆದರೆ ಫಲಿತಾಂಶ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಪಕ್ಷದ ಸೋಲನ್ನು ಸಂಪೂರ್ಣವಾಗಿ ನೀವು ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವಿರಿ. ಈ ಸೋಲಿಗೆ ನಾವು ಕೂಡ ಜವಾಬ್ದಾರರಾಗಿದ್ದೇವೆ. ಹೀಗಾಗಿ ನಿಮಗೆ ರಾಜೀನಾಮೆ ಪತ್ರ ನೀಡುತ್ತಿರುವೆ ಎಂದು ತರುಣ್ ಕುಮಾರ್, ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದರು.

    ರಾಹುಲ್ ಗಾಂಧಿ ಅವರೇ ಪಕ್ಷವನ್ನು ಮುನ್ನಡೆಸಬೇಕು ಎಂದು ಅನೇಕ ಯುವಕರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‍ನ ಹಿರಿಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

    ಕಾಂಗ್ರೆಸ್‍ನ ಮಧ್ಯಪ್ರದೇಶ ಘಟಕದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಮತ್ತು ಗೋವಾ ಕಾಂಗ್ರೆಸ್ ಘಟಕ ಅಧ್ಯಕ್ಷ ಗಿರೀಶ್ ಚೊಡನ್‍ಕರ್ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಎಐಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ 300ಕ್ಕೂ ಹೆಚ್ಚು ಯುವ ನಾಯಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.