Tag: K B Shivakumar

  • ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    – ರಸ್ತೆ ಸಾರಿಗೆ ಪ್ರಾಧಿಕಾರದ ಸಭೆ
    – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ

    ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‍ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

    ಆಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

    ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಿಗೆ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಿಗೆ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಆರ್‌ಟಿಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೊಮ್ಮಾಯಿ ಜನತಾದಳದ ಸಿಎಂ – ಎಚ್‍ಡಿ ಕುಮಾರಸ್ವಾಮಿ

  • ಶಿವಮೊಗ್ಗದಲ್ಲಿ ಕೊರೊನಾ ಮೇಲುಸ್ತುವಾರಿಗೆ ಹಿರಿಯ ಅಧಿಕಾರಿಗಳ ತಂಡ ರಚನೆ

    ಶಿವಮೊಗ್ಗದಲ್ಲಿ ಕೊರೊನಾ ಮೇಲುಸ್ತುವಾರಿಗೆ ಹಿರಿಯ ಅಧಿಕಾರಿಗಳ ತಂಡ ರಚನೆ

    ಶಿವಮೊಗ್ಗ: ಕೊರೊನಾ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಮೇಲುಸ್ತುವಾರಿ ನೋಡಿಕೊಳ್ಳಲು ಜಿಲ್ಲೆಯಲ್ಲಿ 24 ಹಿರಿಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳನ್ನು ಒಳಗೊಂಡಂತೆ ಜಿಲ್ಲಾ ಸರ್ವೇಕ್ಷಣಾ ತಂಡವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ರಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ತಂಡದ ಸದಸ್ಯರ ಜವಾಬ್ದಾರಿ ಬಗ್ಗೆ ಮಾಹಿತಿಯನ್ನು ನೀಡಿದರು.

    ಇದೇ ರೀತಿಯ ಸಮಿತಿಯನ್ನು ತಾಲೂಕು ಮಟ್ಟದಲ್ಲಿ ಸಹ ರಚಿಸಬೇಕು. ಪ್ರತಿ ದಿನ ಸಮಿತಿ ಸಭೆ ನಡೆಸಿ ವರದಿಯನ್ನು ಜಿಲ್ಲಾ ಸಮಿತಿಗೆ ಸಲ್ಲಿಸಬೇಕು. ಎಲ್ಲಾ ತಹಶೀಲ್ದಾರ್ ಗಳನ್ನು ತಾಲೂಕು ಮಟ್ಟದ ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ ಎಂದರು.

    ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್‍ಮೆಂಟ್ ವಲಯದಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆಯನ್ನು ತೀವ್ರಗೊಳಿಸಬೇಕು. ರೋಗ ಲಕ್ಷಣವಿಲ್ಲದ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಮಾರ್ಗಸೂಚಿ ಪ್ರಕಾರ ಸೌಲಭ್ಯಗಳು ಲಭ್ಯವಿದ್ದರೆ ಮನೆಯಲ್ಲಿಯೇ ಐಸೋಲೇಷನ್‍ಗೆ ಅನುಮತಿ ನೀಡಲಾಗುತ್ತಿದೆ. ಅಂತಹ ವ್ಯಕ್ತಿಗಳ ಆರೋಗ್ಯದ ಮೇಲೆ ಪ್ರತಿದಿನ ನಿಗಾ ಇರಿಸಬೇಕು ಎಂದು ಸೂಚನೆ ನೀಡಿದರು.

    ಪ್ರಸ್ತುತ ಲಭ್ಯವಿರುವ ಬೆಡ್‍ಗಳು, ಮುಂದಿನ ಮೂರು ದಿನಗಳಲ್ಲಿ ಲಭ್ಯವಾಗುವ ಬೆಡ್‍ಗಳು, ಆಕ್ಸಿಜನ್, ವೆಂಟಿಲೇಟರ್ ಗಳ ಬಗ್ಗೆ ಪ್ರತಿದಿನ ಮಾಹಿತಿಯನ್ನು ಒದಗಿಸಬೇಕು. ಬೆಡ್‍ಗಳನ್ನು ಒದಗಿಸುವುದರಲ್ಲಿ ಗೊಂದಲಕ್ಕೆ ಅವಕಾಶ ಮಾಡಬಾರದು. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ವಿವರಗಳನ್ನು ಪರಿಶೀಲಿಸಿ ಶನಿವಾರದ ಒಳಗಾಗಿ ಮಾಹಿತಿ ನೀಡಬೇಕು ಎಂದರು.

    ಶಿಕಾರಿಪುರದ ವಸತಿ ಶಾಲೆಯಲ್ಲಿ 250 ಬೆಡ್‍ಗಳು ಹಾಗೂ ದೇವರ ನರಸೀಪುರ ವಸತಿ ಶಾಲೆಯಲ್ಲಿ 50 ಬೆಡ್‍ಗಳನ್ನು ಸಜ್ಜುಗೊಳಿಸಲಾಗಿದ್ದು, ಕೊರೊನಾ ಕೇರ್ ಸೆಂಟರ್ ಕಾರ್ಯಾರಂಭ ಮಾಡಬಹುದಾಗಿದೆ ಎಂದರು.

    ಕೊರೊನಾ ಕೇರ್ ಸೆಂಟರ್ ಗೆ ದಾಖಲಾಗುವವರು ಮನೆಯಿಂದಲೇ ಬೆಡ್‍ಶೀಟ್, ಟವೆಲ್, ಟೂತ್‍ಪೇಸ್ಟ್, ಬ್ರಷ್, ಸಾಬೂನು ಇತ್ಯಾದಿ ಅಗತ್ಯ ವಸ್ತುಗಳನ್ನು ತರಲು ಸೂಚಿಸಬೇಕು. ಮನೆಯಿಂದ ಹಣ್ಣುಹಂಪಲುಗಳನ್ನು ಮಾತ್ರ ತರಿಸಲು ಅವಕಾಶವಿದೆ. ಇತರ ಆಹಾರ ಪದಾರ್ಥ ಮನೆಯಿಂದ ಒದಗಿಸಲು ಅವಕಾಶ ಇರುವುದಿಲ್ಲ. ಕೋವಿಡ್ ವಾರ್ಡ್ ಗಳಲ್ಲಿ ವಿಡಿಯೋ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಲಾಗಿದ್ದು, ವಿಡಿಯೋ ಚಿತ್ರೀಕರಣ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಬಿ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಉಪಸ್ಥಿತರಿದ್ದರು.