ಚಿಕ್ಕಮಗಳೂರು: ದೇವಾಲಯದ ಹುಂಡಿ ಒಡೆಯಲು ಬಂದ ಕಳ್ಳನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಕಲ್ಲುಹೊಳೆ ಗ್ರಾಮದಲ್ಲಿ ನಡೆದಿದೆ.
ಕಲ್ಲುಹೊಳೆ ಗ್ರಾಮದ ಹುಲ್ಲೇ ಕಲ್ಲೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಒಡೆಯಲು ಕಳ್ಳ ಕಳೆದ ರಾತ್ರಿ ಬಂದಿದ್ದ. ಮಚ್ಚು ಹಾಗೂ ಸುತ್ತಿಗೆಯಲ್ಲಿ ಹುಡಿಯನ್ನ ಒಡೆಯುವ ವೇಳೆ ಶಬ್ಧ ಕೇಳಿ ಗ್ರಾಮಸ್ಥರು ಇಡೀ ದೇವಾಲಯವನ್ನ ಸುತ್ತುವರಿದಿದ್ದರು. ಯಾಕಂದರೆ ದೇವಾಲಯದಲ್ಲಿ ಹಿಂದೊಮ್ಮೆಯೂ ಕಳ್ಳತನವಾಗಿತ್ತು. ಹಾಗಾಗಿ ಊರಿನ ಜನ ಕೂಡ ಅಲರ್ಟ್ ಆಗಿದ್ದರು.
ದೇವಾಲಯದಲ್ಲಿ ಹುಂಡಿ ಒಡೆಯುವ ಶಬ್ಧ ಕೇಳಿದ ಕೂಡಲೇ ಗ್ರಾಮಸ್ಥರು ದೇವಾಲಯವನ್ನ ಸುತ್ತುವರಿದು ಕಳ್ಳನನ್ನ ಹಿಡಿದಿದ್ದಾರೆ. ಎರಡನೇ ಬಾರಿ ದೇವಾಲಯದ ಹುಂಡಿ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳ ಸ್ಥಳೀಯರ ಅತಿಥಿಯಾಗಿ ಗೂಸಾ ತಿಂದಿದ್ದಾನೆ. ಹುಂಡಿ ಕಳ್ಳನನ್ನ ಹಿಡಿದ ಸ್ಥಳೀಯರು ಅವನನ್ನ ಊರಿನ ಹೆಬ್ಬಾಗಿಲ ಕಂಬಕ್ಕೆ ಕಟ್ಟಿ ಥಳಿಸಿ, ಕಡೂರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಬರುವವರೆಗೂ ಸ್ಥಳೀಯರು ಹುಂಡಿ ಕಳ್ಳನಿಗೆ ಭರ್ಜರಿ ಗೂಸಾ ಕೊಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಕಳ್ಳನನ್ನ ವಶಕ್ಕೆ ಪಡೆದಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಾತ, ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬೀರೂರು ಬಳಿ ನಡೆದಿದೆ.
ಬೀರೂರು ಸಮೀಪದ ಬಳಿಗನೂರು ಗ್ರಾಮದ ಮಲ್ಲಪ್ಪ (57) ಹಾಗೂ ಉತ್ಸವ್ (12) ಮೃತ ದುರ್ದೈವಿಗಳು. ಕಡೂರು-ಬೀರೂರು ಮಧ್ಯದ ಪರ್ಲ್ಸ್ ಕ್ಲಬ್ ಸಮೀಪದ ರಂಗನಾಥ್ ಶೋಂ ರೂಂ ಬಳಿ ಈ ಅಪಘಾತ ಸಂಭವಿಸಿದೆ.
ಬೀರೂರಿನಿಂದ ಕಡೂರು ಕಡೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಡೂರಿನಿಂದ ಬೀರೂರು ಕಡೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ವೇಗವಾಗಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆಯ ಬದಿಯ ಮರಕ್ಕೆ ಟಿಪ್ಪರ್ ಅದೇ ವೇಗದಲ್ಲಿ ಅಪ್ಪಳಿಸಿದೆ.
ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬೀರೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಬಾರ್ ಓಪನ್ ಆಗಿದೆ ಎಂದು ಓಡೋಡಿ ಬಂದ ಮದ್ಯ ಪ್ರಿಯರು ಬಳಿಕ ನಿರಾಸೆಗೊಂಡ ಘಟನೆ ಕಡೂರು ತಾಲೂಕಿನ ಯಗಟಿ ಬಳಿಯ ಯಳ್ಳಂಬಳಸೆ ಗ್ರಾಮದಲ್ಲಿ ನಡೆದಿದೆ.
ಜನ ಎಷ್ಟರ ಮಟ್ಟಿಗೆ ಎಣ್ಣೆ-ಎಣ್ಣೆ ಅಂತಿದ್ದಾರೆ ಅಂದ್ರೆ ಬೆಳಗೆದ್ದು ದೇವರ ಮುಖ ನೋಡ್ತಾರೋ ಇಲ್ವೋ ಗೊತ್ತಿಲ್ಲ. ಆದರೆ ಎಣ್ಣೆ ಅಂಗಡಿ ಓಪನ್ ಆಗುತ್ತಾ, ಸಿಎಂ ಏನಾದರೂ ಹೇಳ್ತಾರಾ ಅಂತ ಟಿವಿ ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಯಗಟಿ ಬಳಿ ಓರ್ವ ಎಣ್ಣೆ ಅಂಗಡಿ ಓಪನ್ ಆಗಿದೆ ಎಂದು ಸ್ನೇಹಿತರಿಗೆ ಹೇಳಿದ್ದೇ ತಡ, ವಿಷಯ ಒಬ್ಬರಿಂದ ಒಬ್ಬರಿಗೆ ಹಬ್ಬಿ ಎದ್ನೋ-ಬಿದ್ನೋ ಅಂತ ಯಗಟಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನ ಬೆಳ್ಳಂಬೆಳಗ್ಗೆಯೇ ಬಾರ್ ಮುಂದೆ ಜಮಾಯಿಸಿದ್ದರು.
ಸ್ಥಳಕ್ಕೆ ಬಂದ ಮದ್ಯಪ್ರಿಯರಿಗೆ ಪೊಲೀಸರು, ಅಯ್ಯೋ ಪುಣ್ಯಾತ್ಮರೆ ಬಾರ್ ಓಪನ್ ಆಗಿಲ್ಲ. ನಿನ್ನೆ ರಾತ್ರಿ ಬಾರ್ ಕಳ್ಳತನವಾಗಿದೆ. ಸ್ಥಳ ಪರಿಶೀಲನೆಗೆ ಬಂದಿದ್ದೇವೆ. ಮೇ 15ರವರೆಗೂ ಬಾರ್ ಕಡೆ ಬರಬೇಡಿ ಎಂದು ತಿಳಿ ಹೇಳಿ ವಾಪಸ್ ಕಳಿಸಿದ್ದಾರೆ.
ಎಣ್ಣೆ ಆಸೆಯಿಂದ ಬಂದ ಮದ್ಯಪ್ರಿಯರು ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ ಹೋಗಿದ್ದಾರೆ. ಮೇ 3ರವರಗೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಆದರೆ ಲಾಕ್ಡೌನ್ ಅನ್ನು ಮತ್ತೆ ಮುಂದೂಡಿದರೆ ಮದ್ಯ ಸಿಗುವುದು ಡೌಟ್.
– ಕೊಲೆಗೈದು ‘ಈಟಿಂಗ್ ದೋಸೆ ವಿಥ್ ಸನ್’ ಅಂತ ಸ್ಟೇಟಸ್ ಹಾಕ್ದ
– ಶವದ ಜೊತೆ 6 ತಿಂಗ್ಳ ಕಂದಮ್ಮನ ಬಿಟ್ಟು ಹೋದ
– ಪರಸ್ತ್ರೀ ಸೆರಗಲ್ಲಿ ಮಲಗಲು ಹೆಂಡ್ತಿಯನ್ನ ಕೊಂದ
– ಒಂದು ಕೊಲೆ, ಎರಡು ಆತ್ಮಹತ್ಯೆ, ಮೂರು ಮಕ್ಕಳು ಅನಾಥ
– ಅವ್ಳು ಬಿಟ್ಟು ಬಂದ್ಳು, ಇವ್ನು ಕೊಂದು ಹೋಗಲು ರೆಡಿಯಾಗಿದ್ದ
ಚಿಕ್ಕಮಗಳೂರು: ಜಿಲ್ಲೆಯ ಕಡೂರಿನಲ್ಲಿ ನಡೆದಿದ್ದ ಒಂಟಿ ಮಹಿಳೆ ಕತ್ತು ಸೀಳಿ ಮನೆ ದೋಚಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ಹೆಂಡತಿ ಸತ್ತಾಗ ಮೊಸಳೆ ಕಣ್ಣೀರಿಟ್ಟಿದ್ದ ವೈದ್ಯ ಮಹಾಶಯನೇ ಮರ್ಡರ್ ಮಿಸ್ಟರಿ ಹಿಂದಿರುವ ಸರ್ಜರಿ ಎಕ್ಸ್ ಪರ್ಟ್ ಆಗಿದ್ದಾನೆ.
ದಂತವೈದ್ಯ ರೇವಂತ್ ಪತ್ನಿ ಕವಿತಾಳನ್ನು ಕೊಂದ ಪ್ರಕರಣಕ್ಕೆ ಭರ್ಜರಿ ಟ್ವಿಸ್ಟ್ ಸಿಕ್ಕಿದೆ. ಈ ಮೂಲಕ ಒಂಟಿ ಮಹಿಳೆಯ ಕೊಲೆ ಪ್ರಕರಣದಿಂದ ಇಡೀ ಕಡೂರು ತಲ್ಲಣವಾಗಿದೆ. ಆರು ತಿಂಗಳ ಮಗು ನೋಡಿ ಕಣ್ಣೀರಿಟ್ಟಿದ್ದ ಕಡೂರಿನ ಜನತೆ ಮೂಕ ವಿಸ್ಮಿತರಾಗಿದ್ದಾರೆ. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ವೈದ್ಯನ ಕಣ್ಣಲ್ಲೇ ಹಂತಕ ಕಂಡಿದ್ದು, ಬುದ್ಧಿವಂತ ಡಾಕ್ಟರ್ ಏನು ಆಟವಾಡುತ್ತಾನೋ ಆಡಲಿ ಎಂದು ಪೊಲೀಸರು ಮೂಕ ಪ್ರೇಕ್ಷಕರಂತೆ ನಟಿಸಿದ್ದರು. ಆದರೆ ವಿಚಾರಣೆಯಲ್ಲಿ ಪೊಲೀಸರ ಪ್ರಶ್ನೆಗಳಿಗೆ ಕಕ್ಕಾಬಿಕ್ಕಿಯಾಗಿದ್ದ ವೈದ್ಯ ಅಂದರ್ ಆಗೋದು ಗ್ಯಾರಂಟಿ ಎಂದು ಖಚಿತವಾಗುತ್ತಿದ್ದಂತೆ ಭಯ ಭೀತನಾಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಾಣಾಗಿದ್ದ.
ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಡೂರಿನ ಜನ ಬೇಸರ ವ್ಯಕ್ತಪಡಿಸಿದ್ದರು. ಹೆಂಡತಿ ಸತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಭಾವಿಸಿದ್ದರು. ಅಲ್ಲದೆ ವೈದ್ಯನ ಎರಡು ಮಕ್ಕಳನ್ನು ಕಂಡು ಕಣ್ಣೀರಿಟ್ಟಿದ್ದರು. ಆದರೆ ಅಸಲಿ ವಿಷಯ ಪೊಲೀಸರಿಗೆ ಮಾತ್ರ ತಿಳಿದಿತ್ತು. ನಾಲ್ಕು ದಿನದಿಂದ ಹಗಲಿರುಳು ಮಾಹಿತಿ ಸಂಗ್ರಹಿಸಿದ್ದೆವು, ಬಂಧಿಸುವಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡ ಬುದ್ಧಿವಂತ, ಹಂತಕ ಜಸ್ಟ್ ಮಿಸ್ ಎಂದು ಬೇಸರ ವ್ಯಕ್ತಪಡಿಸಿದರು. ಮತ್ತೊಬ್ಬಳ ಮೇಲಿನ ಆಸೆಗೆ ವೈದ್ಯ ತನ್ನ ಪತ್ನಿಯನ್ನೇ ಕೊಂದ, ಪೊಲೀಸರ ಮೇಲಿನ ಭಯಕ್ಕೆ ತಾನೂ ಆತ್ಮಹತ್ಯೆ ಮಾಡಿಕೊಂಡ. ಆದರೆ ಅನಾಥವಾಗಿದ್ದು ಮಾತ್ರ ನಾಲ್ಕು ಹಾಗೂ ಆರು ತಿಂಗಳ ಕಂದಮ್ಮಗಳು.
ಪತ್ನಿ ಕೊಲ್ಲಲು ಕಾರಣವೇನು?
ಬೀರೂರಿನಲ್ಲಿ ಕ್ಲಿನಿಕ್ ಇಟ್ಟುಕೊಂಡಿದ್ದ ದಂತವೈದ್ಯ ರೇವಂತ್ಗೆ, ಉಡುಪಿ ಮೂಲದ ಕವಿತಾ ಜೊತೆಗೆ ಏಳು ವರ್ಷದ ಹಿಂದೆ ಮದುವೆಯಾಗಿತ್ತು. ನಾಲ್ಕು ವರ್ಷ ಹಾಗೂ ಆರು ತಿಂಗಳ ಎರಡು ಮಕ್ಕಳಿದ್ದರು. ಸುಖಿ ಕುಟುಂಬ, ಕವಿತಾ ಕೂಡ ಸುಂದರ ಹೆಣ್ಣು. ಇಬ್ಬರದ್ದು ಸುಂದರ ಸಂಸಾರ. ಆದರೆ ಡಾಕ್ಟರ್ ರೇವಂತ್ಗೆ ಪತ್ನಿಯಿಂದ ದೂರವಿರುವ ಮಾಯಾಂಗನೆಯ ಸ್ನೇಹವಾಗಿತ್ತು. ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು 45ರ ಹರೆಯದ ಡಾಕ್ಟರ್ ಅಂಕಲ್ ಪರಸ್ತ್ರೀಯೊಂದಿಗೆ ಲವರ್ಸ್ ಡೇ ಆಚರಿಸಿದ್ದ. ಈ ವಿಚಾರವಾಗಿ ಗಂಡ-ಹೆಂಡತಿ ಮಧ್ಯೆ ಗಲಾಟೆ ಕೂಡ ನಡೆದಿತ್ತಂತೆ. ಹಾಗಾಗಿ ಏಳು ವರ್ಷದಿಂದ ಸಂಸಾರ ಮಾಡಿ ಬೇಜಾರಾಗಿದ್ದ ವೈದ್ಯ ಪರ ಸ್ತ್ರೀಯ ಸೆರಗಲ್ಲಿ ಸರಸವಾಡಲು ಹೆಂಡತಿಯನ್ನೇ ಮರ್ಡರ್ ಮಾಡಲು ಸ್ಕೆಚ್ ಹಾಕಿದ್ದ. ದರೋಡೆಕೋರರ ತಲೆಗೆ ಕಟ್ಟುವಂತೆ ಪತ್ನಿಯ ಕೊಲೆ ಮಾಡಿದ್ದ.
ಬ್ಲೂಪ್ರಿಂಟ್ ರೆಡಿ ಮಾಡಿದ್ದ:
ವೈದ್ಯ ಆವೇಶದಲ್ಲೋ-ಆತಂಕದಲ್ಲೋ ಅಥವಾ ಮುಗಿಸಿ ಬಿಡೋಣವೆಂದೋ ಏಕಾಏಕಿ ಕೊಲೆ ಮಾಡಿಲ್ಲ. ಬದಲಿಗೆ ಹೀಗೆ ಮಾಡಿದರೆ ಹೀಗೆ ಆಗುತ್ತದೆ. ಏನು ಮಾಡಬೇಕು ಎಂದೆಲ್ಲ ಬ್ಲೂಪ್ರಿಂಟ್ ಸಿದ್ಧ ಮಾಡಿಕೊಂಡಿದ್ದ. ಪೊಲೀಸರನ್ನ ದಡ್ಡರೆಂದು ಭಾವಿಸಿದ್ದ ಡಾಕ್ಟರ್, ಪ್ಲ್ಯಾನ್ ಮಾಡಿದ ರೀತಿಯಲ್ಲೇ ಎಲ್ಲ ಮಾಡಿ ಮುಗಿಸಿದ್ದ. ಆದರೆ ಘಟನೆ ನಡೆದು ಮೂರೇ ದಿನಕ್ಕೆ ಹಂತಕನಿವನೇ ಎಂದು ಕಡೂರು ಪೊಲೀಸರಿಗೆ ಖಚಿತವಾಗಿತ್ತು. ಆದರೆ ಇರಲಿ ನೋಡೋಣ ಎಂದು ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದರು. ನಂತರ ಕೊಲೆಗಡುಕ ಯಾರೂ ಅಲ್ಲ ಅವನೇ ಎಂಬುದು ಪಕ್ಕಾಗಿದೆ. ನಂತರ ಬಂಧಿಸುವಷ್ಟರಲ್ಲಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದೃಶ್ಯಂ ಚಿತ್ರದ ರೀತಿಯಲ್ಲೇ ಮರ್ಡರ್ ಗೆ ಸ್ಕೆಚ್:
ಫೆಬ್ರವರಿ 17ರ ಮಧ್ಯಾಹ್ನ 3.30ಕ್ಕೆ ಪತ್ನಿಗೆ ಆಭರಣ ಕೊಡಿಸಿಕೊಂಡು ಬಂದಿದ್ದಾನೆ. ಆಗ ನಾಲ್ಕು ವರ್ಷದ ಮಗುವೂ ಜೊತೆಗಿತ್ತು. ಮನೆಗೆ ಬಂದವನೇ ಸಿದ್ಧವಿದ್ದ ಪ್ಲ್ಯಾನ್ನಂತೆ ಔಷಧಿಯಿಂದ ಪತ್ನಿಯ ಜ್ಞಾನ ತಪ್ಪಿಸಿ, ಹೊಟ್ಟೆಗೆ ಇಂಜಕ್ಷನ್ ನೀಡಿದ್ದಾನೆ. ಜ್ಞಾನ ತಪ್ಪಿದ ನಂತರ ಕಾರ್ ಶೆಡ್ಗೆ ಎಳೆದೊಯ್ದು, ಎದೆಹಾಲು ಕುಡಿಯುವ ಆರು ತಿಂಗಳ ಮಗುವಿನ ಎದುರೇ ಒಂದು ಬಾರಿ ಬ್ಲೆಡ್ನಿಂದ ಕುತ್ತಿಗೆಗೆ ಹೊಡೆದು, ರಕ್ತ ಹರಿಯಬಾರದೆಂದು ಕಾಲು ಓರೆಸುವ ಮ್ಯಾಟ್ಗಳನ್ನು ದೇಹದ ಸುತ್ತ ಹಾಕಿ, ಬಾಗಿಲು ಹಾಕಿ ಬಂದಿದ್ದಾನೆ. ನಂತರ ಮನೆಯಲ್ಲಿನ ವಸ್ತುಗಳನ್ನ ಕದಲಿದ್ದಾನೆ. ಬೀರೂವಿನಲ್ಲಿದ್ದ ಹಣ-ಬೆಳ್ಳಿ-ಬಂಗಾರವನ್ನು ಅವನೇ ಎಸ್ಕೇಪ್ ಮಾಡಿದ್ದಾನೆ. ನಾಲ್ಕು ವರ್ಷದ ಮಗ ಅಮ್ಮ ಎಂದು ಕೂಗಿದಾಗ ವಾಶ್ ರೂಂಗೆ ಹೋಗಿದ್ದಾಳೆಂದು ಮಗನ ಬುಕ್ಗಳನ್ನು ಬ್ಯಾಗಿಗೆ ಹಾಕಿಕೊಂಡು ಕ್ಲಿನಿಕ್ನಲ್ಲೇ ಹೋಂ ವರ್ಕ್ ಮಾಡುವಂತೆ ಬಾ ಎಂದು ಕರೆದೊಯ್ದಿದ್ದಾನೆ. ಪತ್ನಿಯ ಹೆಣ ಜೊತೆ ಆರು ತಿಂಗಳ ಕೂಸನ್ನೂ ಬಿಟ್ಟು ಬೀಗ ಹಾಕಿ ಹೋಗಿದ್ದಾನೆ.
ದೋಸೆ ತಿನ್ನೋ ಫೋಟೋ ಹಾಕಿ ಫೋನ್:
ಮನೆಯಿಂದ ಕ್ಲಿನಿಕ್ಗೆ ಮಗನ ಜೊತೆ ಹೋದ ವೈದ್ಯ, ‘ಐ ಆ್ಯಮ್ ಈಟೀಂಗ್ ದೋಸಾ, ವಿಥ್ ಮೈ ಸನ್ ಅಟ್ ಫೇಮಸ್ ಹೋಟೆಲ್ ಇನ್ ಬೀರೂರು’ ಎಂದು ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿದ್ದಾನೆ. ಅಲ್ಲದೆ ಫ್ರೆಂಡ್ಸ್ಗಳಿಗೆ ಸಹ ಫೋಟೋ ಕಳುಹಿಸಿದ್ದಾನೆ. ತಾನು ಅಮಾಯಕ ಎಂದು ತೋರಿಸಲು ಎಲ್ಲಾ ಮಾಡಿದ್ದಾನೆ. ಅಲ್ಲದೆ ಬೀರೂರಿನ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಅಮ್ಮನಿಗೆ ಫೋನ್ ಮಾಡಿ ಕ್ಲಿನಿಕ್ಗೆ ಕರೆಸಿಕೊಂಡಿದ್ದಾನೆ. ನಂತರ ಮನೆಗೆ ಹೋಗೋಣ ಬಾ ಎಂದು ತಾಯಿ ಕರೆದರೆ, ಇರು ಅಮ್ಮ ಕೆಲಸ ಇದೆ ಹೋಗೋಣ ಎಂದು ಎರಡು ಗಂಟೆ ಸಮಯ ತಳ್ಳಿದ್ದಾನೆ. ಅಲ್ಲದೆ ಸಾಯಿಸಿ ಬಂದ ಹೆಂಡತಿಗೆ ಬೇಕೆಂದೇ ಫೋನ್ ಮಾಡಿದ್ದಾನೆ.
ಇಬ್ಬರು ಸಂಬಂಧಿಕರಿಗೆ ಕರೆ ಮಾಡಿ, ಕ್ಲಿನಿಕ್ ಬಳಿ ಕರೆಸಿಕೊಂಡ. ಬಾಳೆಕಾಯಿ ಮಂಡಿಗೆ ಹೋಗ್ಬೇಕು ಎಂದರೂ ಬಿಡದೆ ಹೇ.. ಬರ್ರೋ.. ಎಂದು ಜೊತೆಗೆ ಕರೆತಂದಿದ್ದಾನೆ. ಅಲ್ಲದೆ ಮನೆಯಿಂದ ಹೊರಡುವಾಗ ತನ್ನ ಮನೆಯ ಸಿಸಿಟಿವಿ ಕ್ಯಾಮೆರಾಗಳನ್ನು ತಾನೇ ಎರಡ್ಮೂರು ಬಾರಿ ನೋಡಿದ್ದ. ಬರುವಾಗಲು ಮತ್ತೆ-ಮತ್ತೆ ನೋಡಿದ್ದಾನೆ. ಮನೆಗೆ ಹೋದವನೆ ಸೋಫಾ ಮೇಲೆ ಕೂತು ಕವಿತಾ… ಕವಿತಾ… ಎಂದು ಕೂಗಿದ್ದಾನೆ. ಹುಡುಕಿಲ್ಲ, ಮಗು ಅಮ್ಮ.. ಅಮ್ಮ.. ಎಂದು ಹುಡುಕಿದೆ. ತಮ್ಮಂದಿರು ಅತ್ತಿಗೆ… ಅತ್ತಿಗೆ… ಎಂದು ಕೂಗಿದ್ದಾರೆ. ವೈದ್ಯ ರೇವಂತ್ ತಾಯಿ ಕೂಡ ಕೂಗಿದ್ದಾರೆ, ನಂತರ ಒಳಗೆ ಹೋಗಿ ನೋಡಿದಾಗ ದಿಗ್ಭ್ರಾಂತರಾಗಿದ್ದಾರೆ. ಆಗ ವೈದ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ.
ವಿಷಯ ಕೇಳಿ ಸ್ಥಳಕ್ಕೆ ಬಂದ ಪೊಲೀಸರಿಗೂ ಶಾಕ್ ಆಗಿತ್ತು. 206 ರಾಷ್ಟ್ರೀಯ ಹೆದ್ದಾರಿ ಸದಾ ಜನ ಓಡಾಡೋ ಜಾಗ ಹೀಗಾಯ್ತಲ್ಲ ಎಂದು ಪೊಲೀಸರು ತಲೆಕೆಡಿಸಿಕೊಂಡು ಹುಡುಕಾಟ ನಡೆಸಿದ್ದಾರೆ. ಆದರೆ ಮಡದಿ ಕಳೆದುಕೊಂಡ ವೈದ್ಯನ ಮುಖದ ಭಾವ ಕಂಡು ಎಲ್ಲೋ ಮಿಸ್ ಹೊಡೀತಿದೆಯಲ್ಲಾ ಎಂದು ಕಡೂರು ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಭಾವಿಸಿದ್ದಾರೆ. ಬೀರೂರಿನ ಪಿಎಸ್ಐ ರಾಜಕುಮಾರ್, ಸಖರಾಯಪಟ್ಟಣ ಸಬ್ ಇನ್ಸ್ಪೆಕ್ಟರ್ ಮೌನೇಶ್, ಕಡೂರಿನ ಪಿಎಸ್ಐ ವಿಶ್ವನಾಥ್ ಹಾಗೂ ಸಿಬ್ಬಂದಿ ನಾಲ್ಕು ದಿನಗಳ ಕಾಲ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಿ, ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನೇನು ವೈದ್ಯನನ್ನು ಬಂಧಿಸುವಷ್ಟರಲ್ಲಿ ಪಾಪ ಪ್ರಜ್ಞೆಯೋ ಅಥವಾ ಪೊಲೀಸರ ಮೇಲಿನ ಭಯಕ್ಕೋ ಆತ್ಮಹತ್ಯಗೆ ಶರಣಾಗಿದ್ದಾನೆ. ಆದರೆ ಎರಡು ಮಕ್ಕಳು ಮಾತ್ರ ಅನಾಥವಾಗಿವೆ.
ಡಾ.ರೇವಂತ್ ಏನೋ ಆತ್ಮಹತ್ಯೆಗೆ ಶರಣಾದ. ಹೆಂಡತಿ ಕೊಲೆ ಹಿಂದೆ ಅವನೊಬ್ಬನೇ ಇಲ್ಲ. ಅವನು-ಅವಳ ಮಧ್ಯೆ ಮತ್ತೊಬ್ಬಳಾಗಿದ್ದ ಹರ್ಷಿತಾ ಹಾಗೂ ಮತ್ತಿಬ್ಬರ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಅವನನ್ನು ಬಂಧಿಸಿದ ಬಳಿಕ ಆ ಮೂವರನ್ನು ಬಂಧಿಸಲು ಯೋಚಿಸಿದ್ದರು. ಆದರೆ ಇದೀಗ ನಾನೂ ಪ್ರಕರಣದಲ್ಲಿ ಭಾಗಿಯಾಗುತ್ತೇನೆ, ಪೊಲೀಸರು ನನ್ನನ್ನೂ ಬಂಧಿಸುತ್ತಾರೆ ಎಂಬ ಭಯದಿಂದಲೋ, ಕುಟುಂಬ ಸರ್ವನಾಶ ಮಾಡಿದ ಪಾಪಪ್ರಜ್ಞೆಯಿಂದಲೋ ವೈದ್ಯನ ಲವರ್ 32ರ ಹರ್ಷಿತಾ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಗ ಅವಳ ಮಗುವೂ ಅನಾಥವಾಗಿದೆ. ಹರ್ಷಿತಾಳಿಗೂ ಗಂಡ ಬೇಡವಾಗಿದ್ದ, ರೇವಂತ್ಗೆ ಪತ್ನಿ ಕವಿತಾ ಬೇಡವಾಗಿದ್ದಳು, ಅವಳು ಬಿಟ್ಟು ಬಂದಳು, ಇವನು ಕೊಲೆ ಮಾಡಿಯೇ ಬರಲು ರೆಡಿಯಾಗಿದ್ದ. ಆದರೆ ಇದೀಗ ಒಂದು ಕೊಲೆ, ಎರಡು ಆತ್ಮಹತ್ಯೆಯಲ್ಲಿ ಮೂರು ಮಕ್ಕಳು ಅನಾಥವಾಗಿವೆ.
ಚಿಕ್ಕಮಗಳೂರು: ಶಾಶ್ವತ ಬರದ ತವರಲ್ಲಿ 12 ವರ್ಷಗಳ ಬಳಿಕ ಕೆರೆ ತುಂಬಿದ ಖುಷಿಗೆ ಗ್ರಾಮಸ್ಥರು ಅದ್ಧೂರಿ ಹಾಗೂ ಸುಂದರ ತೆಪ್ಪೋತ್ಸವ ಮಾಡಿ ಬಸವೇಶ್ವರ ಸ್ವಾಮಿಗೆ ಉಘೇ ಅಂದಿದ್ದಾರೆ.
ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದ ಕೆರೆ 12 ವರ್ಷಗಳಿಂದ ತುಂಬಿರಲಿಲ್ಲ. 70 ವರ್ಷಗಳಿಂದ ತೆಪ್ಪೋತ್ಸವ ನಿಂತಿದರಿಂದ ಈ ತಲೆಮಾರಿನ ಜನ ಗ್ರಾಮದ ತೆಪ್ಪೋತ್ಸವವನ್ನೇ ಕಂಡಿರಲಿಲ್ಲ. 75 ವರ್ಷಗಳ ಅವಧಿಯಲ್ಲಿ ಹತ್ತಾರು ಬಾರಿ ಕೆರೆ ತುಂಬಿದ್ರು ಹಣದ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ತೆಪ್ಪೋತ್ಸವ ನಡೆದಿರಲಿಲ್ಲ. ಈ ವರ್ಷ ಕೆರೆ ತುಂಬಿದ ಪರಿಣಾಮ ವೃದ್ಧರು, ಯುವಕ-ಯುವತಿಯರೆಲ್ಲಾ ಸೇರಿ ತೆಪ್ಪೋತ್ಸವ ನಡೆಸಿದ್ದಾರೆ.
ಜಿಲ್ಲೆಯ ಕಡೂರು ತಾಲೂಕು ಶಾಶ್ವತ ಬರಗಾಲಕ್ಕೆ ತುತ್ತಾದ ಕ್ಷೇತ್ರ. ಕಡೂರು ತಾಲೂಕಿನ ಜನ-ಜಾನುವಾರಗಳಿಗೆ ಕುಡಿಯೋ ನೀರಿಗೂ ಹಾಹಾಕಾರವಿತ್ತು. ಎಷ್ಟು ಹಾಹಾಕಾರವಂದರೆ ಗುಡ್ಡಕ್ಕೆ ಮೇವಿಗೆ ಹೊಡೆದ ದನಕರುಗಳನ್ನ ಅಲ್ಲೆ ಬಿಟ್ಟು ಬರುವಷ್ಟು ಮತ್ತು ಹೋದ ಬೆಲೆಗೆ ಮಾರುವಷ್ಟು ಇವರನ್ನು ಬರಗಾಲ ಕಾಡುತ್ತಿತ್ತು. ಆದರೆ ಈ ವರ್ಷ ಮಳೆಯಿಂದ ಕೆರೆ ತುಂಬಿದ್ದು, ಹಳ್ಳಿಗರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಅದೇ ಖುಷಿಯಲ್ಲಿ ಈ ವರ್ಷ ವಿಧ-ವಿಧದ ಹೂವುಗಳಿಂದ ಅಲಂಕಾರ ಮಾಡಿ ತೆಪ್ಪೋತ್ಸವ ನಡೆಸಿ ಖುಷಿ ಪಟ್ಟಿದ್ದಾರೆ.
ಹಾಸನ-ಚಿತ್ರದುರ್ಗ-ಚಿಕ್ಕಮಗಳೂರಿನ ಗಡಿಗ್ರಾಮವಾದ ಈ ಹಳ್ಳಿಯ ತೆಪ್ಪೋತ್ಸವದಲ್ಲಿ ಹೊಸದುರ್ಗ, ಕಡೂರು, ಅರಸೀಕೆರೆ ತಾಲೂಕಿನ ಹತ್ತಾರು ಹಳ್ಳಿಯ ಜನ ಒಗ್ಗೂಡಿ ತೆಪ್ಪೋತ್ಸವ ನಡೆಸಿದರು. ಜಾತ್ರೆಯಲ್ಲಿ ಐದು ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದರು.
ಚಿಕ್ಕಮಗಳೂರು: ಮಲೆನಾಡಿನ ಜಲಪ್ರಳಯಕ್ಕೆ ಮಲೆನಾಡಿಗರ ಬದುಕು ಮೂರಾಬಟ್ಟೆಯಾದ್ರೆ, ಬಯಲುಸೀಮೆ ಜನರಿಗೆ ಬದುಕುವ ಚೈತನ್ಯ ತಂದಿದೆ. ಅಲ್ಲಿ ಅಲ್ಲೋಲ-ಕಲ್ಲೋಲ, ಇಲ್ಲಿ ಹರ್ಷೋದ್ಘಾರ ಎನ್ನುವಂತೆ ಒಂದೆಡೆ ನೀರಿಂದಲೇ ಬದುಕು ಬೀದಿಗೆ ಬಂದಿದ್ದರೆ, ಇನ್ನೊಂದೆಡೆ ಅದೇ ನೀರು ಬದುಕುವ ಆಸೆ ತಂದಿದೆ.
ಹೌದು. ಮೂರು ಹವಾಗುಣ ಹೊಂದಿರೋ ಕಾಫಿನಾಡಲ್ಲಿ ಒಂದೊಂದು ಭಾಗದ್ದು ಒಂದೊಂದು ಗೋಳು. ಶಾಶ್ವತ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆಯ ಕಡೂರು ತಾಲೂಕಿನ ಜನಕ್ಕೀಗ ಸಖರಾಯಪಟ್ಟಣದ ಐತಿಹಾಸಿಕ ಅಯ್ಯನಕೆರೆ ತುಂಬಿರೋದು ಮರಳುಗಾಡಲ್ಲಿ ಓಯಾಸೀಸ್ ಸಿಕ್ಕಂತಾಗಿದೆ. 100 ಎಕ್ರೆಗೂ ಹೆಚ್ಚಿನ ವಿಸ್ತಿರ್ಣವುಳ್ಳ ಅಯ್ಯನಕೆರೆ ಅಂದಾಜು 5 ರಿಂದ 6 ಸಾವಿರ ಹೆಕ್ಟೇರ್ ನೀರಾವರಿ ಕಲ್ಪಿಸೋ ಜೀವನಾಡಿಯಾಗಿದ್ದು, ಮಲೆನಾಡಿನ ಮಳೆ ಅಬ್ಬರಕ್ಕೆ ಕಳೆದೊಂದು ವಾರದಿಂದ ಅಯ್ಯನಕೆರೆ ಆಕರ್ಷಣೆಯ ಕೇಂದ್ರ ಬಿಂದುವಾಗಿ ಪ್ರವಾಸಿ ತಾಣವಾಗಿದೆ.
ಏಳು ಗುಡ್ಡಗಳ ಮಧ್ಯೆ ಇರೋ ಈ ಕೆರೆಯ ಸೌಂದರ್ಯಕ್ಕೆ ಕೆರೆಯ ಸಾಕ್ಷಿಯಂತಾಗಿದೆ. ಹಸಿರ ನೀರಿನ ಸೌಂದರ್ಯವನ್ನ ಸವಿಯಲು ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು. ಇಲ್ಲಿ ಬೋಟಿಂಗ್ ವ್ಯವಸ್ಥೆಗೆ ಸರ್ಕಾರ ಚಿಂತನೆ ನಡೆಸಿದೆ. ಈ ಕೆರೆ ತುಂಬಿರೋದು ಒಂದೆಡೆ ಪ್ರವಾಸಿಗರಿಗೆ ಮನೋರಂಜನೆ ನೀಡುತ್ತಿದ್ದರೆ. ಇನ್ನೊಂದೆಡೆ ನೀರಿನ ಅಭಾವದಿಂದ ಪರದಾಡುತ್ತಿದ್ದ ಹಳ್ಳಿಗರು, ರೈತರು ನಿಟ್ಟುಸಿರು ಬಿಡುವಂತಾಗಿದೆ.
ಚಂದ್ರದ್ರೋಣ ಪರ್ವತ ಶ್ರೇಣಿಗೆ ಭೇಟಿ ನೀಡೋ ಪ್ರವಾಸಿಗರು ಇಲ್ಲಿಗೂ ಬಂದು ಇಲ್ಲಿನ ಸೌಂದರ್ಯವನ್ನ ಸವಿಯುತ್ತಾರೆ. ಅದರಲ್ಲೂ ಇಲ್ಲಿ ಯುವಕ-ಯುವತಿಯರು, ಪ್ರೇಮಿಗಳ ಸಂಖ್ಯೆಯೇ ಹೆಚ್ಚಾಗಿರುತ್ತದೆ. ವೀಕೆಂಡ್ನಲ್ಲಿ ಇಲ್ಲಿಗೆ ಆಗಮಿಸೋ ಪ್ರವಾಸಿಗರು ದಿನವಿಡೀ ಕೆರೆ ಬಳಿ ಕುಣಿದು ಕುಪ್ಪಳಿಸ್ತಾರೆ. ಮತ್ತೊಂದೆಡೆ ಸಾಹಸಿ ಈಜುಪಟುಗಳು ಮನಸ್ಸಿಗೆ ತೋಚಿದಂತೆಲ್ಲಾ ನೀರಿಗೆ ಬಿದ್ದು, ಈಜಿ ತಮ್ಮ ಆಸೆ ಪೂರೈಸಿಕೊಳ್ತಿದ್ದಾರೆ. ಇಲ್ಲಿ ಹರಿಯೋ ನೀರು ಕಡೂರಿನ ಬಹುತೇಕ ಭಾಗಕ್ಕೆ ಕುಡಿಯೋ ನೀರಿನ ಸೌಲಭ್ಯ ಕಲ್ಪಿಸಿದೆ. ಇಲ್ಲಿನ ಊರುಕಾಲುವೆ, ಬಸವನಕಾಲುವೆ, ಕಡೇ ಕಾಲುವೆ, ಗೌರಿ ಹಳ್ಳಿ ಹೀಗೆ ನಾಲ್ಕು ಕಾಲುವೆಗಳಾಗಿ ಹರಿಯೋ ನೀರು ಸಾವಿರಾರು ಜನರಿಗೆ ಬದುಕುವ ಚೈತನ್ಯ ತಂದಿದೆ. ಅಲ್ಲದೆ ಈಗ ಸರ್ಕಾರ ಈ ಕೆರೆಗೆ ಬೋಟಿಂಗ್ ವ್ಯವಸ್ಥೆ ಕಲ್ಪಿಸಿಕೊಡಲು ಮುಂದಾಗಿರುವುದು ವ್ಯವಹಾರದ ದೃಷ್ಠಿಯಿಂದ ಸ್ಥಳೀಯರಿಗೆ ಹಾಗೂ ಪ್ರವಾಸಿಗರಿಗೆ ಮತ್ತಷ್ಟು ಖುಷಿ ತಂದಿದೆ.
ಮಲೆನಾಡಿನ ಮಳೆ ಒಂದೆಡೆ ಖುಷಿ ತಂದರೆ. ಮತ್ತೊಂದೆಡೆ ನೋವು ತರಿಸಿದೆ. ಮಲೆನಾಡಿಗರು ನಮಗೆ ಮಳೆಯೇ ಬೇಡ ಅಂತಿದ್ದರೆ, ಕಡೂರು ತಾಲೂಕಿನ ಮಂದಿ ಮಾತ್ರ ಇಂದಿಗೂ ಬಾರಪ್ಪ ಮಳೆರಾಯ ಅನ್ನೊದನ್ನ ಬಿಟ್ಟಿಲ್ಲ. ಪ್ರವಾಸಿ ತಾಣವಾಗಿ ಈ ನಯನ ಮನೋಹರ ಜಾಗವಾದ ಅಯ್ಯನಕೆರೆ ಪ್ರವಾಸಿಗರನ್ನ ಕೈ ಬಿಸಿ ಕರೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಕೆರೆಯ ಸೌಂದರ್ಯ ರಾಶಿ ಕೂಡ ಕಣ್ಣಲ್ಲಿ ಕಟ್ಟುವಂತಿದೆ. ಇಲ್ಲಿ ಬೋಟಿಂಗ್ ವ್ಯವಸ್ಥೆಯಾದರೆ ಸ್ಥಳೀಯ ಸಾವಿರಾರು ಜನರಿಗೆ ಉದ್ಯೋಗ ಸಿಗುತ್ತದೆ.
ಚಿಕ್ಕಮಗಳೂರು: ಡೀಸೆಲ್ ಖಾಲಿಯಾಗಿ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಈಶಾನ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಕಡೂರು ತಾಲೂಕಿನ ಗೌರಿಹಳ್ಳ ಬಳಿ ನಡೆದಿದೆ.
ಶಿವಮೊಗ್ಗ ಮೂಲದ ಲಾರಿ ಚಾಲಕ ಶರವಣ ಹಾಗೂ ಕಡೂರಿನ ಸರ್ವೆ ಡಿಪಾರ್ಟಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ರುಚಿತಾ (22) ಮೃತ ದುರ್ದೈವಿಗಳು. ರುಚಿತಾ ಮೂಲತಃ ಹಾಸನ ಬೇಲೂರು ತಾಲೂಕಿನ ಹಗರೆ ಗ್ರಾಮದ ನಿವಾಸಿ. ಘಟನೆಯಲ್ಲಿ ಒಟ್ಟು 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಡೀಸೆಲ್ ಖಾಲಿಯಾಗಿದ್ದರಿಂದ ಚಾಲಕ ಶರವಣ ಲಾರಿಯನ್ನು ಗೌರಿಹಳ್ಳ ಸಮೀಪದ ರಸ್ತೆ ತಿರುವಿನಲ್ಲಿ ನಿಲ್ಲಿಸಿದ್ದರು. ಬಳಿಕ ಕ್ಯಾನ್ನಲ್ಲಿದ್ದ ಡಿಸೇಲ್ ಅನ್ನು ಲಾರಿಗೆ ಹಾಕುತ್ತಿದ್ದಾಗ ವೇಗವಾಗಿ ಬಂದ ಬಸ್ ಚಾಲಕ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಲ್ಲಿಯೆ ಇದ್ದ ಶರವಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಖರಾಯಪಟ್ಟಣ ಪೋಲಿಸರು, ಗಂಭೀರವಾಗಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಸ್ನಲ್ಲಿದ್ದ ರುಚಿತಾ ಸೇರಿದಂತೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಕಡೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಪೈಕಿ ರುಚಿತಾ ಸೇರಿದಂತೆ ಮೂವರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದರು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ರುಚಿತಾ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಮಗಳೂರು: ಪ್ರಕೃತಿಯ ವೈಚಿತ್ರ್ಯಕ್ಕೆ ಕಾಫಿನಾಡು ಹತ್ತಾರು ವರ್ಷಗಳಿಂದ ಕೊರಗುತ್ತಿದೆ. ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆ ಮೂರು ಹವಾಮಾನವನ್ನ ಹೊಂದಿರುವ ಕಾಫಿನಾಡಿನ ಕಡೂರು ಶಾಶ್ಚತ ಬರಗಾಲಕ್ಕೆ ತುತ್ತಾದ ತಾಲೂಕು. ಇಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಹಾಹಾಕಾರ. ಆದರೆ ಕಡೂರಿನ ಪಿಳ್ಳೇನಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಶಾಪವಾಗಿದ್ದ ಬರಗಾಲವನ್ನ ತಾವೇ ಮೆಟ್ಟಿ ನಿಂತು, ಗ್ರಾಮವನ್ನ ಹಸಿರಾಗಿಸಿಕೊಂಡಿದ್ದಾರೆ.
ಪಿಳ್ಳೇನಹಳ್ಳಿಯಿಂದ 6 ಕಿ.ಮೀ. ದೂರದಲ್ಲಿರೋ ವೇದಾವತಿ ನದಿಯಿಂದ ತಮ್ಮ ಗ್ರಾಮಕ್ಕೆ ನೀರು ತಂದುಕೊಂಡಿದ್ದಾರೆ. ಊರಿನ ಜನರೇ ಚಂದಾ ಎತ್ತಿ ಒಂದು ಲಕ್ಷಕ್ಕೂ ಅಧಿಕ ಹಣವನ್ನ ಸಂಗ್ರಹಿಸಿಕೊಂಡು ಪೈಪ್ ಹಾಗೂ ಮೋಟರ್ಗಳನ್ನ ತಾವೇ ತಂದು ಶ್ರಮದಾನದ ಮೂಲಕ ಆರು ಕಿ.ಮೀ. ಪೈಪ್ ಹಾಕಿಕೊಂಡು ನೀರು ತಂದಿದ್ದಾರೆ. ಹಳ್ಳಿಗರ ಭಗೀರಥ ಪ್ರಯತ್ನದಿಂದ ಇಂದು ಗ್ರಾಮದಲ್ಲಿನ ಕೆರೆಗಳು ತುಂಬಿದ್ದು ಜನ-ಜಾನುವಾರುಗಳಿಗೆ ಕುಡಿಯೋಕೆ ನೀರು ಸಿಗುವಂತಾಗಿದೆ.
ವೇದಾವತಿ ನದಿ ಕೂಡ 12 ವರ್ಷಗಳಿಂದ ಬತ್ತಿದ್ದು, ಈ ವರ್ಷ ಮೈದುಂಬಿ ಹರಿಯುತ್ತಿದೆ. ರಾಜಕಾರಣಿಗಳು, ಅಧಿಕಾರಿಗಳಿಗೆ ಮನವಿ ಮಾಡಿ ಸುಸ್ತಾಗಿದ್ದ ಹಳ್ಳಿಗರು, ತಮ್ಮ ದಾಹವನ್ನ ತಾವೇ ನೀಗಿಸಿಕೊಳ್ಳೋಕೆ ಮುಂದಾಗಿ ಸೈ ಎನ್ನಿಸಿಕೊಂಡಿದ್ದಾರೆ. ಗ್ರಾಮಸ್ಥರೇ ಮುಂದೆ ನಿಂತು ಕೃತಕ ನಾಲೆ ನಿರ್ಮಿಸಿಕೊಂಡು 6 ಕಿ.ಮೀ. ದೂರದಿಂದ ತಮ್ಮ ಊರಿಗೆ ನೀರು ತಂದುಕೊಂಡಿದ್ದಾರೆ. ಅಲ್ಲಿಂದ 15 ಹೆಚ್.ಪಿ. ಸಾಮರ್ಥ್ಯದ ಎರಡು ಮೋಟರ್ ಗಳನ್ನ ಬಳಸಿಕೊಂಡು ಗ್ರಾಮಕ್ಕೆ ನೀರು ಹಾಯಿಸಿಕೊಂಡಿದ್ದಾರೆ.
ಗ್ರಾಮಸ್ಥರು ಹಾಗೂ ಗ್ರಾಮದ ಯುವಕರ ಕೆಲಸಕ್ಕೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಹಕರಿಸಿದರೆ ಗ್ರಾಮಕ್ಕೆ ಶಾಶ್ವತ ನೀರಿನ ಮೂಲ ಸಿಗುವುದರಲ್ಲಿ ಅನುಮಾನವಿಲ್ಲ. ಶಾಸಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಲಹೆ ನೀಡುವುದರ ಜೊತೆ ಈ ಯೋಜನೆಯನ್ನ ಶಾಶ್ವತ ಯೋಜನೆಯನ್ನಾಗಿಸಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಗ್ರಾಮದ ಜನರ ಕೆಲಸ ರಾಜ್ಯಕ್ಕೆ ಮಾದರಿಯಾಗುವಂತದ್ದು. ಶಾಶ್ಚತ ನೀರಾವರಿ ಯೋಜನೆಗೆ ಹತ್ತಾರು ವರ್ಷ ಸಮಯ ಕೇಳುವ ಅಧಿಕಾರಿಗಳು ಹಾಗೂ ರೈತರ ಉದ್ಧಾರವೇ ನಮ್ಮ ಗುರಿ ಅಂತಾ ಮಾರುದ್ಧ ಭಾಷಣ ಬಿಗಿಯೋ ರಾಜಕಾರಣಿಗಳಿಗೂ ಈ ಗ್ರಾಮದ ಜನ ಮಾದರಿಯಾಗಿದ್ದಾರೆ. ರೈತರೇ ಮಾಡಿಕೊಂಡಿರೋ ಈ ಯೋಜನೆಗೂ ಸರ್ಕಾರ ಕಲ್ಲು ಹಾಕದೆ, ಅಭಿವೃದ್ಧಿಪಡಿಸೋ ನಿಟ್ಟಿನಲ್ಲಿ ಯೋಚಿಸಲಿ ಅನ್ನೋದು ಬಯಲುಸೀಮೆಯ ಜನರ ಆಶಯ.
ಚಿಕ್ಕಮಗಳೂರು: ಶಾಶ್ವತ ಬರಗಾಲಕ್ಕೆ ತುತ್ತಾದ ತಾಲೂಕು ಎಂದೇ ಕರೆಯುವ ಕಡೂರಿನ ಖಂಡುಗದಹಳ್ಳಿಯ ದೇವಾಲಯದಲ್ಲಿನ ಬೋರ್ವೆಲ್ನಲ್ಲಿ ಎರಡು ದಿನಗಳಿಂದ ನಿರಂತರವಾಗಿ ನೀರು ಉಕ್ಕಿಬರುತ್ತಿದೆ.
ಖಂಡುಗದಹಳ್ಳಿಯ ಸೋಮೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಒಂದು ವರ್ಷದ ಹಿಂದೆ ಬೋರ್ವೆಲ್ ಕೊರೆಸಿದ್ದರು. ಬೋರ್ವೆಲ್ ಕೊರೆದಾಗಿನಿಂದ ಅರ್ಧ ಇಂಚು ನೀರು ಬರುತ್ತಿತ್ತು. ಆದರೆ ಎರಡು ದಿನಗಳಿಂದ ಬೋರ್ನಿಂದ ನಿರಂತರವಾಗಿ ನೀರು ಉಕ್ಕಿ ಹರಿಯುತ್ತಿದೆ. ಬರದ ನಾಡಲ್ಲಿ ಈ ವಿಸ್ಮಯ ನಡೆದಿರುವುದು ಸೋಮೇಶ್ವರ ಸ್ವಾಮಿಯ ಮಹಿಮೆ ಎಂದು ಭಕ್ತರು ಹಾಡಿ ಹೊಗಳುತ್ತಿದ್ದಾರೆ.
ಹಿಂದೊಮ್ಮೆ ದೇವಾಲಯದಲ್ಲಿ ನೀರಿನಲ್ಲಿ ದೀಪ ಹಚ್ಚಿದ್ದು ಜನರನ್ನು ಅಚ್ಚರಿಗೊಳಿಸಿತ್ತು. ಈಗ ಬೋರ್ವೆಲ್ನಲ್ಲಿ ನೀರು ಉಕ್ಕುತ್ತಿರುವುದು ಜನರ ಆಶ್ಚರ್ಯಕ್ಕೆ ಕಾರಣವಾಗಿದೆ. ಹೀಗೆ ಈ ಭಾಗದಲ್ಲಿ ಸೋಮೇಶ್ವರ ಸ್ವಾಮಿಯಿಂದ ಹಲವು ವಿಸ್ಮಯಗಳು ನಡೆಯುತ್ತಲೇ ಇರುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಿಕ್ಕಮಗಳೂರು: ಊರಿನಲ್ಲಿ ಬರಗಾಲ, ಮಕ್ಕಳ ಭವಿಷ್ಯಕ್ಕಾಗಿ ಬೆಂಗಳೂರಿನಲ್ಲೇ ಇರೋಣ ಅಂದಿದ್ದಕ್ಕೆ ಪತ್ನಿಯನ್ನೇ ಪತಿ ಕೊಂದಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಜೋಡಿಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ ಬಾಯಿ ಎಂಬವರೇ ಕೊಲೆಯಾದ ಮಹಿಳೆ. ಮೃತ ಜ್ಯೋತಿ ಬಾಯಿ ಹಾಗೂ ಮಹೇಶ್ ನಾಯ್ಕ್ ಮೂಲತಃ ಜೋಡಿಲಿಂಗದಹಳ್ಳಿ ಗ್ರಾಮದ ನಿವಾಸಿಗಳು. ಈ ಜೋಡಿಗೆ ಇಬ್ಬರು ಮಕ್ಕಳೂ ಕೂಡ ಇದ್ದಾರೆ. ಕೆಲ ವರ್ಷಗಳ ಹಿಂದೆ ಮಳೆ-ಬೆಳೆ ಇಲ್ಲದ ಕಡೂರಿನಲ್ಲಿ ಜೀವನ ನಡೆಸುವುದು ಕಷ್ಟವೆಂದು ಇಡೀ ಕುಟುಂಬವೇ ಬೆಂಗಳೂರಿಗೆ ಬಂದು ಸೇರಿತ್ತು. ಒಂದೆಡೆ ಗಂಡ ಟಿಂಬರ್ ಕೆಲಸಕ್ಕೆ ಹೋದ್ರೆ, ಇನ್ನೊಂದೆಡೆ ಹೆಂಡತಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೋಗಿದ್ದಾಗ, ಮಹೇಶ್ ಪತ್ನಿಗೆ ಮತ್ತೆ ಬೆಂಗಳೂರಿಗೆ ಹೋಗೋದು ಬೇಡ ಇಲ್ಲಿಯೇ ಇರೋಣ ಎಂದಿದ್ದಾನೆ. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಕೋಪಗೊಂಡಿದ್ದ ಮಹೇಶ್ ಮನೆಗೆ ಕುಡಿದು ಬಂದು ಮೊದಲು ಮಕ್ಕಳಿಗೆ 5 ರೂ. ದುಡ್ಡು ಕೊಟ್ಟು ಚಾಕಲೇಟ್ ತರಲು ಅಂಗಡಿಗೆ ಕಳುಹಿಸಿದ್ದಾನೆ. ನಂತರ ಪತ್ನಿಯನ್ನು ಹೊಡೆದು ಸಾಯಿಸಿದ್ದಾನೆ. ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕುತ್ತಿಗೆಗೆ ಹಗ್ಗ ಹಾಕಿಕೊಂಡು ಕೆಳಗೆ ಬಿದ್ದಿದ್ದಾನೆ. ಮಕ್ಕಳು ಅಂಗಡಿಯಿಂದ ಹಿಂತಿರುಗಿ ಬಂದು ಬಾಗಿಲು ಬಡಿದಾಗ ಯಾರು ಬಾರದ ಕಾರಣ ಅಕ್ಕಪಕ್ಕದವರು ಬಂದು ಮನೆಯ ಹೆಂಚು ತೆಗೆದು, ಜ್ಯೋತಿಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ಜ್ಯೋತಿಯ ಕುಟುಂಬಸ್ಥರು ಹೇಳಿದ್ದಾರೆ.
ಸದ್ಯ ಆರೋಪಿ ಮಹೇಶ್ನನ್ನು ಪೊಲೀಸರು ಬಂಧಿಸಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.