– 4ಕ್ಕಿಂತ ಹೆಚ್ಚು ಟಿಕೆಟ್ ಒಟ್ಟಿಗೆ ಬುಕ್ ಮಾಡಿದ್ರೆ ಡಿಸ್ಕೌಂಟ್
ಕಲಬುರಗಿ: ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (KKRTC_ ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ 500 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ ಸುಶೀಲಾ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆಪ್ಟೆಂಬರ್ 29ರ ವರೆಗೆ ಸಂಸ್ಥೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು (Bengaluru), ತುಳಜಾಪೂರ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಸೆಪ್ಟೆಂಬರ್ 26 (ಇಂದಿನಿಂದ) ರಿಂದ ಸೆ.27 ಹಾಗೂ ಸೆ.30 ರಂದು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ವಾಹನಗಳನ್ನ ಕಾರ್ಯಾಚರಣೆಗೆ ನಿಯೋಜಿಸಲಾಗುತ್ತಿದೆ. ಇನ್ನು ಹಬ್ಬ ಮತ್ತು ರಜೆ ಮುಗಿದ ನಂತರ ಅಕ್ಟೋಬರ್ 3 ರಿಂದ 5ರ ವರೆಗೆ ಸಹ ಸಂಚಾರ ದಟ್ಟಣೆಗೆ ಅನುಗುಣವಾಗಿ ವಾಹನಗಳ ಕಾರ್ಯಾಚರಣೆ ನಡೆಯಲಿದೆ ಎಂದಿದ್ದಾರೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ನಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅವಕಾಶವಿದ್ದು, ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿರುವ 18 ಗಣಕೀಕೃತ ಬುಕ್ಕಿಂಗ್ ಕೌಂಟರ್ಗಳ ಮುಖಾಂತರ ಆಸನ ಬುಕಿಂಗ್ ಮಾಡಬಹುದಾಗಿದೆ. 4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಅಥವಾ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯತಿ ನೀಡಲಾಗುತ್ತಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ ಅಪ್ ಪಾಯಿಂಟ್ ಸ್ಥಳ ಮತ್ತು ಹೆಸರು ಗಮನಿಸಬೇಕೆಂದು ಅವರು ತಿಳಿಸಿದ್ದಾರೆ.














