Tag: KR Pate

  • ಟಿಕೆಟ್‍ಗಾಗಿ ಕೈ ರಾಜ್ಯನಾಯಕರ ಮುಂದೆ ಆಕಾಂಕ್ಷಿಗಳು ಪೆರೇಡ್

    ಟಿಕೆಟ್‍ಗಾಗಿ ಕೈ ರಾಜ್ಯನಾಯಕರ ಮುಂದೆ ಆಕಾಂಕ್ಷಿಗಳು ಪೆರೇಡ್

    ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರ ಬಿಟ್ಟು ಬೆಂಗಳೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿತರು ಠಿಕಾಣಿ ಹೂಡಿದ್ದಾರೆ. ಟಿಕೆಟ್‍ಗಾಗಿ ಕಾಂಗ್ರೆಸ್ಸಿನ ರಾಜ್ಯ ನಾಯಕರ ಮುಂದೆ ಆಕಾಂಕ್ಷಿಗಳು ಪೆರೇಡ್ ನಡೆಸುತ್ತಿದ್ದಾರೆ.

    ಕೆ.ಆರ್.ಪೇಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಎರಡು ಬಾರಿ ಸೋಲಿನ ಬಳಿಕ ಗೆಲ್ಲುವಿನ ನಿರೀಕ್ಷೆಯಲ್ಲಿರುವ ಕೈಗೆ ಬಂಡಾಯದ ಬಿಸಿ ತಟ್ಟುತ್ತಿದೆ. ಕಾಂಗ್ರೆಸ್ ವರಿಷ್ಠರಿಗೆ ಟಿಕೆಟ್ ಆಕಾಂಕ್ಷಿಗಳ ದಂಡು ತಲೆನೋವು ತಂದಿಟ್ಟಿದೆ. ತಮಗೆ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡಿ ಎಂದು ಆಕಾಂಕ್ಷಿಗಳು ಕ್ಷೇತ್ರ ಬಿಟ್ಟು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದಾರೆ.

    ಯಾರಿಗೇ ಟಿಕೆಟ್ ನೀಡಿದರೂ ಉಳಿದವರು ಬಂಡಾಯ ಏಳುವ ಸಾಧ್ಯತೆ ಇದ್ದು, ಅಸಮಾಧಾನಗೊಂಡ ಆಕಾಂಕ್ಷಿತರು ಬಂಡಾಯವಾಗಿ ಸ್ಪರ್ಧೆಗಿಳಿದರೆ ಏನು ಗತಿ ಎಂದು ಕಾಂಗ್ರೆಸ್ಸಿನಲ್ಲಿ ಮತ್ತೊಮ್ಮೆ ಸೋಲಿನ ಆತಂಕ ಮನೆ ಮಾಡಿದೆ. ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಡಿಕೆ ಶಿವಕುಮಾರ್ ಅವರ ಆಪ್ತ ಹರಳಹಳ್ಳಿ ವಿಶ್ವನಾಥ್, ಕಿಕ್ಕೇರಿ ಸುರೇಶ್, ಎಂ.ಡಿ.ಕೃಷ್ಣಮೂರ್ತಿ, ಜಿಪಂ ಸದಸ್ಯ ಕೆ.ಎಲ್.ದೇವರಾಜು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯಿಂದ ಟಿಕೆಟ್‍ಗಾಗಿ ಲಾಭಿ ನಡೆಯುತ್ತಿದೆ ಎನ್ನಲಾಗಿದೆ.

    ಈಗಾಗಲೇ ಕೆ.ಆರ್.ಪೇಟೆ ಉಪಚುನಾವಣೆಗೆ ಕಾಂಗ್ರೆಸ್ಸಿನಿಂದ ಸ್ಪರ್ಧಿಸುತ್ತಿರುವುದಾಗಿ ಜಿಪಂ ಸದಸ್ಯ ದೇವರಾಜು ನಾಮಪತ್ರ ಸಲ್ಲಿಸಿದ್ದಾರೆ. ಇತ್ತ ಟಿಕೆಟ್ ನೀಡದಿದ್ದರೆ ಬಂಡಾಯವಾಗಿ ಸ್ಪರ್ಧಿಸುವುದಾಗಿ ಆಕಾಂಕ್ಷಿಗಳು ಕಾಂಗ್ರೆಸ್ಸಿಗೆ ಎಚ್ಚರಿಕೆ ರವಾನಿಸಿದ್ದಾರೆ.

  • ಕಾರ್ಯಕರ್ತರ ಒತ್ತಡವಿದೆ, ನಿಖಿಲ್ ಉಪಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಾ.ರಾ.ಮಹೇಶ್

    ಕಾರ್ಯಕರ್ತರ ಒತ್ತಡವಿದೆ, ನಿಖಿಲ್ ಉಪಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಾ.ರಾ.ಮಹೇಶ್

    ಹಾಸನ: ಉಪಚುನಾವಣೆಯಲ್ಲಿ ಕೆ.ಆರ್.ಪೇಟೆಯಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಪ್ರಸ್ತಾಪ ಪಕ್ಷದ ವರಿಷ್ಠರ ಬಳಿ ಇಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್, ಕೆಲ ಕಾರ್ಯಕರ್ತರು ಈ ಕುರಿತು ಒತ್ತಡ ಹೇರುತ್ತಿರುವುದು ನಿಜ. ಇಂತಹ ಯಾವುದೇ ಪ್ರಸ್ತಾಪ ರಾಷ್ಟ್ರೀಯ ನಾಯಕರು ಹಾಗೂ ಕುಮಾರಸ್ವಾಮಿ ಅವರ ಬಳಿ ಇಲ್ಲ. ಕುಮಾರಸ್ವಾಮಿಯವರೇ ಈ ಕುರಿತು ಸ್ಪಷ್ಟಪಡಿಸುತ್ತಾರೆ ಎಂದು ತಿಳಿಸಿದ್ದಾರೆ.

    ಕೆಲ ಕಾರ್ಯಕರ್ತರ ಒತ್ತಡ ಇದೆ. ಆದರೆ ನಿಖಿಲ್ ಅವರ ಸ್ಪರ್ಧೆ ಇಲ್ಲ ಎಂದು ತೀರ್ಮಾನ ಮಾಡಲಾಗಿದೆ. ಪಕ್ಷದಲ್ಲಿ ನಿಷ್ಟಾವಂತರಾಗಿ ಕೆಲಸ ಮಾಡುತ್ತಿರುವ ಯಾರನ್ನಾದರು ಅಭ್ಯರ್ಥಿ ಮಾಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

    ಈ ಕುರಿತು ಚರ್ಚಿಸಲು ಇಂದು ಸಭೆ ಕರೆಯಲಾಗಿದೆ. ಜೆಡಿಎಸ್ ಒಂದು ಕುಟುಂಬದ ಪಕ್ಷ ಎಂಬ ಆರೋಪ ಕೆಲ ವೇಳೆ ಇತ್ತು. ಹಾಗಾಗಿಯೇ ಹಿಂದುಳಿದವರನ್ನು ಕರೆತಂದು ಅವಕಾಶ ನೀಡಲಾಗಿತ್ತು. ಆದರೆ, ಅವರು ಹೀಗೆ ಮಾಡಿ ಹೋಗಿದ್ದಾರೆ. ಹುಣಸೂರಿನಲ್ಲಿಯೂ ಕಾರ್ಯಕರ್ತರ ಸಭೆ ಕರೆದು ಪಕ್ಷದ ನಿಷ್ಠರಿಗೆ ಅವಕಾಶ ನೀಡಲಾಗುತ್ತದೆ ಎಂದು ಅನರ್ಹಗೊಂಡ ಹುಣಸೂರು ಶಾಸಕ ವಿಶ್ವನಾಥ್ ವಿರುದ್ಧ ಸಾ.ರ.ಮಹೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.