ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಡಿಜಿಪಿ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹೀಗಾಗಿ ಇಂಟರ್ನೆಟ್ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ ಕೋಮು ಪ್ರಚೋದಕ ವಿಚಾರಗಳ ಸಂದೇಶ ರವಾನೆಯಾದರೆ ಕಡಿವಾಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಗೋಲಿಬಾರ್, ಇಬ್ಬರು ಬಲಿ- ಗುಂಡು ಹಾರಿಸಿದ್ದಕ್ಕೆ ಪೊಲೀಸ್ ಆಯುಕ್ತರಿಂದ ಸ್ಪಷ್ಟನೆ
ಮಂಗಳೂರಿನಲ್ಲಿ ಕರ್ಪ್ಯೂ ಅವಧಿ ವಿಸ್ತರಣೆ ಮಾಡಲಾಗಿದ್ದು, ಡಿಸೆಂಬರ್ 22ರ ಮಧ್ಯರಾತ್ರಿವರೆಗೆ ಜಾರಿಯಲ್ಲಿ ಇರಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್ ಹರ್ಷ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜು, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಎಲ್ಲಾ ಮದ್ಯದಂಗಡಿ, ವೈನ್ ಶಾಪ್, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ತೆರೆಯುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
ಕರ್ಪ್ಯೂ ಪ್ರಕರಣ:
ಗುಪ್ತದಳದ ಮುಖ್ಯಸ್ಥ ಡಿಐಜಿ ದಯಾನಂದ್ ಅವರಿಗೆ ಹೆಚ್ಚುವರಿ ಉಸ್ತುವಾರಿ ನೀಡಲಾಗಿದ್ದು, ತುರ್ತಾಗಿ ಮಂಗಳೂರಿಗೆ ತೆರಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಈ ಮೂಲಕ ದಯಾನಂದ್ ಅವರು ಪರಿಸ್ಥಿತಿ ನಿಯಂತ್ರಣಕ್ಕೆ ತುರ್ತು ಮಂಗಳೂರಿಗೆ ತೆರಳುತ್ತಿದ್ದಾರೆ.
ಮಂಗಳೂರು: ಬಹುಷಃ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದಲ್ಲಿ ಈ ಪರಿ ವಿರೋಧ ವ್ಯಕ್ತವಾಗುತ್ತದೆ ಎಂದು ಕೇಂದ್ರ ಸರ್ಕಾರ ಭಾವಿಸಲಿಕ್ಕಿಲ್ಲ ಎನಿಸುತ್ತಿದೆ. ಕಳೆದ 8 ದಿನಗಳಿಂದ ಪೌರತ್ವ ಜ್ವಾಲೆ ಇಡೀ ದೇಶವನ್ನು ಆವರಿಸಿದೆ. ಇದೀಗ ಕರ್ನಾಟಕವೂ ಧಗಧಗಿಸಿದೆ.
ರಾಜ್ಯಾದ್ಯಾಂತ ಇಂದು ನಿಷೇಧಾಜ್ಞೆ ಜಾರಿಗೊಳಿಸಿದ್ದರೂ, ಮಂಗಳೂರಿನಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು ಗೋಲಿಬಾರ್ ನಡೆದಿದೆ. ಬಂದರು ಸಮೀಪ ನಡೆದ ಹಿಂಸಾಚಾರ ಹತ್ತಿಕ್ಕುವ ಭರದಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದು, ಗುಂಡು ತಗುಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಕಣ್ಣಿಗೆ ಗುಂಡೇಟು ಬಿದ್ದಿದ್ದರೆ, ಇನ್ನೊಬ್ಬರ ಬೆನ್ನಿನ ಭಾಗಕ್ಕೆ ಗುಂಡು ಬಿದ್ದಿದ್ದು ನಗರದಲ್ಲಿ ಶುಕ್ರವಾರ ಮಧ್ಯರಾತ್ರಿಯವರೆಗೆ ಕಫ್ರ್ಯೂ ಜಾರಿ ಮಾಡಿದ್ದಾರೆ.
ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರು, ಪೊಲೀಸ್ ಗೋಲಿಬಾರ್ ನಲ್ಲಿ ಮಂಗಳೂರು ನಿವಾಸಿಗಳಾದ ನೌಶೀನ್ ಕುದ್ರೋಳಿ ಹಾಗೂ ಅಬ್ದುಲ್ ಜಲೀಲ್ ಮೃತಪಟ್ಟಿದ್ದಾರೆ. ಮೃತ ಹಾಗೂ ಗಂಭೀರವಾಗಿ ಗಾಯಗೊಂಡ ಯುವಕರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗುಂಡು ಹಾರಿಸಿದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಪಿಎಸ್ ಹರ್ಷ ಕೂಡ ಸ್ಪಷ್ಟನೆ ನೀಡಿದ್ದು, ಉದ್ರಿಕ್ತರು ಮಾರಕಾಸ್ತ್ರ ಹಿಡಿದು ಪೊಲೀಸರ ಮೇಲೆ ಯತ್ನಿಸಿದರು. ಇದರಿಂದಾಗಿ ಕೆಲ ಪೊಲೀಸರು ಹಾಗೂ ಸಾರ್ವಜನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರ ಉಗ್ರಸ್ವರೂಪದ ಭೀತಿ ಕಾಳಗದಿಂದ ಅನಿವಾರ್ಯವಾಗಿ ಗುಂಡು ಹಾರಿಸಿಬೇಕಾಯಿತು ಎಂದು ತಿಳಿಸಿದ್ದಾರೆ.
ನಗರದಲ್ಲಿ ಶಾಂತಿ ಕಾಪಾಡುವಂತೆ ಬುಧವಾರ ರಾತ್ರಿ ಸಭೆ ನಡೆಸಿ ಎಲ್ಲಾ ಸಮುದಾಯದ ಮುಖಂಡರಿಗೆ ಮನವಿ ಮಾಡಿಕೊಂಡಿದ್ದೆವು. 144 ಸೆಕ್ಷನ್ ಜಾರಿ ಸಂಬಂಧ ಎಲ್ಲಾ ನಗರದ ವಿವಿಧ ಬೀದಿಗಳಲ್ಲಿ ಭಿತ್ತಿಪತ್ರ ಅಂಟಿಸಿದ್ದೆವು. ಆದರೂ ಇಂದು ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಬಳಿ ಯುವಕರು ಪ್ರತಿಭಟನೆ ನಡೆಸಿ ಶಾಂತಿ ಕದಡಿದರು. ಹೀಗಾಗಿ ಅಶ್ರುವಾಯು ಬಳಸಿ ಗುಂಪನ್ನು ಚದುರಿಸಿದ್ದೇವು. ಆದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಭಾರೀ ಅನಾಹುತಗಳನ್ನು ಸೃಷ್ಟಿಸಿತು ಎಂದು ತಿಳಿಸಿದರು.
ಘರ್ಷಣೆ ಹೇಗಾಯ್ತು?
ಡಿಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪ್ರತಿಭಟನಾಕಾರರು ಬೈಕ್ಗೆ ಬೆಂಕಿ ಹಚ್ಚಿದರು. ಕೂಡಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿ ಸಿಕ್ಕಸಿಕ್ಕವರನ್ನು ಹೊಡೆದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಯಶಸ್ವಿಯಾದರೂ, ಸಂಜೆ ಹೊತ್ತಿಗೆ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು.
ಪೊಲೀಸರ ಮೇಲೆ ಪ್ರತಿಭಟನಾಕಾರರು ನಿರಂತರವಾಗಿ ಕಲ್ಲು ತೂರಿ, ವಾಹನಗಳಿಗೆ ಬೆಂಕಿ ಹಚ್ಚುತ್ತಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಗುಂಡು ಹಾರಿಸಿದರು. ಕಲ್ಲು ತೂರಿದರು. ಕಟ್ಟಡವೊಂದರಲ್ಲಿ ಅಡಗಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಸಿಡಿಸಿದರು. ಜನರಂತೂ ದಿಕ್ಕೆಟ್ಟು ಓಡಿದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೂ ಬಂದರು ಠಾಣೆ ಸೇರಿದಂತೆ, 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಫ್ರ್ಯೂ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಬಿಗಿಯಾದ ಬಂದೋಬಸ್ತ್ ಮಾಡಲಾಗಿದೆ. ಶುಕ್ರವಾರ ಮಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳೂರು ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಉನ್ನತಾಧಿಕಾರಿಗಳನ್ನು ಮಂಗಳೂರಿಗೆ ಕಳಿಸುವುದಾಗಿ ತಿಳಿಸಿದ್ದಾರೆ.
ಮಂಗಳೂರು: ಪೌರತ್ವ ಕಾಯ್ದೆ ವಿರೋಧಿ ನಗರದಲ್ಲಿ ಪ್ರತಿಭಟನೆ ಜೋರಾಗಿದ್ದು, ಕೆಲ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಅಷ್ಟೇ ಅಲ್ಲದೆ ನಗರದ ಪ್ರಮುಖ ಬೀದಿಗಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ನಿಷೇಧಾಜ್ಞೆ ಹೊರತಾಗಿಯೂ ಕೆಲ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಯತ್ನಿಸಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣ, ಸ್ಟೇಟ್ ಬ್ಯಾಂಕ್ ವೃತ್ತ, ಹಂಪನಕಟ್ಟೆ ವೃತ್ತ ಸಂಪೂರ್ಣ ಸ್ಥಗಿತವಾಗಿದೆ. ಕೆಲ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾರೆ.
ಪ್ರತಿಭಟನೆ ನಿಷೇಧಿಸಿ ಹಾಕಿದ್ದ 144 ಸೆಕ್ಷನ್ ಉಲ್ಲಂಘಿಸಿ, ಕೆಲ ಯುವಕರು ಮೆರವಣಿಗೆ ನಡೆಸಲು ಯತ್ನಿಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುವಂತಾಗಿದೆ. ಮಧ್ಯಾಹ್ನ ಆಗುತ್ತಿದ್ದಂತೆ ಯುವಕರು ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದ ಬಳಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ಪೊಲೀಸರು ಸ್ಟೇಟ್ ಬ್ಯಾಂಕ್ ವೃತ್ತದ ಬಳಿ ಸೇರಿದ್ದ ಸಾರ್ವಜನಿಕರನ್ನು ಹೊರಗೆ ಕಳುಹಿಸಿದರು.ಈ ವೇಳೆ ಮನವಿ ಲೆಕ್ಕಿಸದೆ ಮುನ್ನುಗ್ಗಿದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡಿದ್ದಾರೆ. ಆದರೆ ಲಾಠಿಗೆ ಪ್ರತಿಯಾಗಿ ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರತಿಭಟನಾಕಾರರು ಬೀಸಿದ ಕಲ್ಲುಗಳು ತಾಗಿ ಕೆಲ ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಯುವಕರು ಪ್ರತಿಭಟನೆ ಮುಂದುವರಿಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಪೌರತ್ವ ಮಸೂದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತ್ತವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿತ್ತು. ಹೀಗಾಗಿ ಬೆಳಗ್ಗಿನಿಂದಲೂ ಪೊಲೀಸರು ಜನ ಗುಂಪು ಕೂಡದಂತೆ ಎಚ್ಚರಿಸುತ್ತಾ ಜನರನ್ನು ಚದುರಿಸುತ್ತಿದ್ದರು. ಹೆಚ್ಚುವರಿ ಪೊಲೀಸ್ ಪಡೆಯನ್ನೂ ಮಂಗಳೂರಿನಲ್ಲಿ ನಿಯೋಜನೆ ಮಾಡಲಾಗಿತ್ತು.
ಸ್ವತಃ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್ ಹರ್ಷ ನಗರದ ಆಯಕಟ್ಟಿನ ಪ್ರದೇಶಗಳಿಗೆ ತೆರಳಿ, ಬಂದೋಬಸ್ತ್ ನೋಡಿಕೊಂಡಿದ್ದರು. ಮಧ್ಯಾಹ್ನ ಕಮಿಷನರೇಟ್ ಕಚೇರಿಗೆ ಮುತ್ತಿಗೆ ಹಾಕುವ ಸಂದೇಶ ಹರಿದಾಡಿದ ಹಿನ್ನೆಲೆಯಲ್ಲಿ ಗನ್ ಪಾಯಿಂಟ್ ನಿರ್ಮಾಣವೂ ನಡೆದಿತ್ತು. ಇಷ್ಟಾದರೂ, ಉದ್ರಿಕ್ತ ಕೆಲವು ಯುವಕರು ಪ್ರತಿಭಟನೆ ನಡೆಸಿಯೇ ಸಿದ್ಧ ಎನ್ನುವಂತೆ ನುಗ್ಗಿ ಬಂದಿದ್ದು ವಿಕೋಪಕ್ಕೆ ತಿರುಗುವಂತಾಗಿದೆ. ಸದ್ಯಕ್ಕೆ ಮಂಗಳೂರಿನ ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್ ವೃತ್ತ, ಹಳೆ ಬಂದರು ಪ್ರದೇಶ ಸಂಪೂರ್ಣ ಬಂದ್ ಆಗಿವೆ. ಕಟ್ಟಡಗಳಲ್ಲಿ ಅಡಗಿ ನಿಂತು ಕಲ್ಲು ತೂರಾಟ ನಡೆಸಿದ ಗುಂಪನ್ನು ಅಶ್ರುವಾಯು ಮೂಲಕ ಚದುರಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ, ಉದ್ರಿಕ್ತ ಯುವಕರನ್ನು ಓಡಿಸುವ ಪ್ರಯತ್ನ ಮಾಡಿದ್ದಾರೆ.