Tag: Meterological department

  • ಕೊಡಗಿನಲ್ಲಿ ಮಳೆ – ಮದೆನಾಡು ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿತ

    ಕೊಡಗಿನಲ್ಲಿ ಮಳೆ – ಮದೆನಾಡು ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿತ

    ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮತ್ತೆ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 275ರಲ್ಲಿ ರಸ್ತೆಗೆ ಮಣ್ಣು ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಕಷ್ಟವಾಗುತ್ತಿದೆ.

    ಮದೆನಾಡು ಬಳಿ ರಾತ್ರಿ 12 ಗಂಟೆಗೆ ಮೇಲೆ ಗುಡ್ಡ ಕುಸಿದಿದೆ. ಕಳೆದ ಬಾರಿ ಮದೆನಾಡು ಗ್ರಾಮದಲ್ಲಿ ಕುಸಿದಿದ್ದ ಗುಡ್ಡವೇ ಮತ್ತೆ ಕುಸಿದಿದೆ. ಆದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

    ಗುಡ್ಡ ಕುಸಿದ ತೀವ್ರತೆಗೆ ವಿದ್ಯುತ್ ಕಂಬ ಬಾಗಿದೆ. ಅಲ್ಲದೆ ರಸ್ತೆಯ ಅರ್ಧ ಭಾಗ ಮಣ್ಣಿನಿಂದ ಆವೃತ ಹಿನ್ನೆಲೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

    ಒಂದು ಭಾಗದಲ್ಲಿ ಮಾತ್ರ ಗುಡ್ಡ ಕುಸಿದಿದ್ದು ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ದೊಡ್ಡ ಸಮಸ್ಯೆಯಾಗಿಲ್ಲ. ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

    ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡುರುವ ಹಿನ್ನೆಲೆ ಕೊಡಗು ಜಿಲ್ಲೆಯಾದ್ಯಂತ ಇಂದಿನಿಂದ ಜುಲೈ 24ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 204.4 ಮಿಮೀ ಮಳೆ ಬೀಳುವ ಸಾಧ್ಯತೆ ಇದೆ ಎಂಬ ಮಾಹಿತಿ ಇದ್ದು, ಸಾರ್ವಜನಿಕರು, ಪ್ರವಾಸಿಗರು ಎಚ್ಚರದಿಂದ ಇರಬೇಕು ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಸೂಚನೆ ನೀಡಿದ್ದಾರೆ.

    ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದೆ. ಹಾಗೆಯೇ ಭಗಮಂಡಲ ವ್ಯಾಪ್ತಿಯಲ್ಲಿ ಕೊಂಚ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿವ ಹರಿವು ಇಳಿಮುಖಗೊಂಡಿದೆ.

  • ಕೊಡಗಿನಲ್ಲಿ 22ರವರೆಗೆ ಭಾರೀ ಮಳೆ ಸಾಧ್ಯತೆ- ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ

    ಕೊಡಗಿನಲ್ಲಿ 22ರವರೆಗೆ ಭಾರೀ ಮಳೆ ಸಾಧ್ಯತೆ- ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ

    ಕೊಡಗು/ ರಾಯಚೂರು: ಜಿಲ್ಲೆಯಲ್ಲಿ ಗುರುವಾರದಿಂದ ಜುಲೈ 22ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಜಿಲ್ಲೆಯಾದ್ಯಂತ 5 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

    ಸದ್ಯ ರಾಜ್ಯದ ಬಹುತೇಕ ಕಡೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೊಡಗಿನಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಆದ್ರೆ ಜುಲೈ 22ರವರೆಗೆ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಮನವಿ ಮಾಡಿದೆ.

    ಬಿಸಿಲುನಾಡು ರಾಯಚೂರಿನಲ್ಲಿ ಕೂಡ ಮಳೆ ಆರಂಭವಾಗಿದ್ದು, ಮಳೆ ಇಲ್ಲದೆ ಕೆಂಗೆಟ್ಟಿದ್ದ ಜನರಿಗೆ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಳೆಯಿಲ್ಲದೆ ಬಿತ್ತನೆ ಮಾಡದೇ ರೈತರು ಕಂಗಾಲಾಗಿ ಕುಳಿತಿದ್ದರು. ಸದ್ಯ ಉತ್ತಮ ಮಳೆಯಾದ ಹಿನ್ನೆಲೆ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಆರಂಭಕ್ಕೆ ಸಿದ್ದತೆ ನಡೆಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಇನ್ನೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹಾಗೆಯೇ ಕರ್ನಾಟಕ ಕರಾವಳಿ ಮತ್ತು ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

    ಒಂದೆಡೆ ಮುಂಗಾರು ಕೊರತೆ ಎದುರಿಸುತ್ತಿರುವ ಕೇರಳದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಪ್ರಮುಖವಾಗಿ 6 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದೆಡೆ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಮುಂದುವರೆದಿದ್ದು, ಅಸ್ಸಾಂ ಮತ್ತು ಬಿಹಾರದಲ್ಲಿ ಒಟ್ಟು ಈವರೆಗೆ 55 ಮಂದಿ ಮೃತಪಟ್ಟಿದ್ದಾರೆ.

    ಅಸ್ಸಾಂನ 33ರಲ್ಲಿ 31 ಜಿಲ್ಲೆಗಳಲ್ಲಿ ಪ್ರವಾಹ ವ್ಯಾಪಿಸಿದ್ದು, 43 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೇಘಾಲಯ, ಮಣಿಪುರ, ಮಿಜೋರಾಂನಲ್ಲಿಯೂ ಪ್ರವಾಹ ಸ್ಥಿತಿ ಉಂಟಾಗಿದೆ. ದೆಹಲಿ, ಹರಿಯಾಣದಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದೇಶದ ಉತ್ತರ ಭಾಗದಲ್ಲಿಯೂ ಮಳೆರಾಯನ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಸೃಷ್ಟಿಯಾಗಿದೆ.