Tag: Private Clinic

  • ಹೊಟ್ಟೆನೋವೆಂದು ಖಾಸಗಿ ಕ್ಲಿನಿಕ್ ಸೇರಿದ ಮಹಿಳೆ – ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು

    ಹೊಟ್ಟೆನೋವೆಂದು ಖಾಸಗಿ ಕ್ಲಿನಿಕ್ ಸೇರಿದ ಮಹಿಳೆ – ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು

    ಪಾಟ್ನಾ: ಹೊಟ್ಟೆನೋವೆಂದು ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್‌ಗೆ (Private Clinic) ದಾಖಲಾಗಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ (Opration) ಮಾಡುವ ನೆಪದಲ್ಲಿ ವೈದ್ಯರು (Doctors) ಎರಡೂ ಕಿಡ್ನಿಗಳನ್ನು ಕದ್ದಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ (Hospital) ದಾಖಲಿಸಲಾಯಿತು. ಬಳಿಕ ಕಿಡ್ನಿ (Kidney) ತೆಗೆದಿರುವ ವಿಷಯ ತಿಳಿದುಬಂದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಿಳೆ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಬರಿಯಾರ್‌ಪುರ ಠಾಣೆಯ ಪೊಲೀಸರು (Police) ತನಿಖೆ ಆರಂಭಿಸಿದ್ದಾರೆ.

    ಸಂತ್ರಸ್ತ ಮಹಿಳೆ (Women) ಬಾಜಿರೌತ್ ಗ್ರಾಮದವರಾಗಿದ್ದು, ಮಹಿಳೆಯ ವೈದ್ಯಕೀಯ ವರದಿಗಳನ್ನು ನೀಡುವಂತೆ ಕುಟುಂಬಸ್ಥರನ್ನು ಕೇಳಿದಾಗ ಆಕೆಯ ಎರಡೂ ಕಿಡ್ನಿಗಳನ್ನು ತೆಗೆಯಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ರೊಚ್ಚಿಗೆದ್ದ ಮಹಿಳೆಯ ಕುಟುಂಬಸ್ಥರು ಕ್ಲಿನಿಕ್ ಮುಂಭಾಗದಲ್ಲೇ ಗಲಾಟೆ ಆರಂಭಿಸಿದ್ದರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಹಿಂದೆ IT ಕಂಪನಿಗಳ ಕೈವಾಡವೂ ಇದೆ: ಸಂತೋಷ್ ಹೆಗ್ಡೆ

    ಅಷ್ಟಕ್ಕೂ ನಡೆದಿದ್ದೇನು?
    ಬಾಜಿರೌತ್ ನಿವಾಸಿ ಲಾಲ್‌ದೇವ್ ರಾಮ್ ಅವರ ಪುತ್ರಿ ಸುನೀತಾ ದೇವಿ ಆರೋಗ್ಯ ಕಳೆದ ಆಗಸ್ಟ್ 3 ರಂದು ಕ್ಷೀಣಿಸಿತ್ತು. ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಬರಿಯಾರ್‌ಪುರದ ಖಾಸಗಿ ಕ್ಲಿನಿಕ್‌ಗೆ ಕರೆದೊಯ್ಯಲಾಗಿತ್ತು. ಬಳಿಕ ಆಪರೇಷನ್ ಮಾಡಬೇಕಾಗುತ್ತದೆ ಎಂದು ಹೇಳಿದ ವೈದ್ಯರು 20 ಸಾವಿರ ರೂಪಾಯಿಯಿಂದ ಚಿಕಿತ್ಸೆ ಆರಂಭಿಸಿದ್ದರು. ಅದಾದ ನಂತರವೂ ಹೊಟ್ಟೆನೋವು ಹೆಚ್ಚಾದ ಬಳಿಕ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಅಲ್ಲಿ ವೈದ್ಯರು ತಪಾಸಣೆ ನಡೆಸಿದ ಬಳಿಕ ಎರಡೂ ಕಿಡ್ನಿ ತೆಗೆದಿರುವ ರಹಸ್ಯ ಬಯಲಾಗಿದೆ ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ಯುವತಿ ಕೆರೆ ಪಾಲು – ಉಪ್ಪು ಸುರಿದು ಬದುಕಿಸಲು ಯತ್ನ

    ಸದ್ಯ ಪೊಲೀಸರು ವೈದ್ಯಕೀಯ ವರದಿಯ ಮಾಹಿತಿ ಪಡೆಯುತ್ತಿದ್ದಾರೆ. ವೈದ್ಯರಿಂದ ಮಹಿಳೆ ವಂಚನೆಗೆ ಒಳಗಾಗಿದ್ದಾರೆ ಎಂಬುದು ಸತ್ಯಾಂಶವಾಗಿದ್ದು, ಎರಡೂ ಕಿಡ್ನಿ ತೆಗೆಯಲಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯ

    ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯ

    ಕಲಬುರಗಿ: ಕೊರೊನಾ ಪರಿಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿಂದ ಹಲವು ರೋಗಿಗಳು ಪರದಾಡುತ್ತಿದ್ದಾರೆ. ಹೀಗಿರುವಾಗ ಸರ್ಕಾರಿ ಆಸ್ಪತ್ರೆಯ ಎಲುಬು ಮತ್ತು ಕಿಲು ತಜ್ಞ ಡಾ.ಸಂಗಮೇಶ್ ಟಕ್ಕಳಕಿ ತಮ್ಮ ಕೆಲಸಕ್ಕೆ ಹಾಜರಾಗದೆ, ಅಫಜಲಪುರ ಪಟ್ಟಣದ ಖಾಸಗಿ ಕ್ಲಿನಿಕ್‍ನಲ್ಲಿ ಕಾರ್ಯ ನಿರ್ವಹಿಸುವಾಗ ತಹಶೀಲ್ದಾರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದಾರೆ.

    ಮೇ 25ರಿಂದ ಸರ್ಕಾರಿ ಕೆಲಸಕ್ಕೆ ಅನಧಿಕೃತವಾಗಿ ಡಾ.ಸಂಗಮೇಶ್ ಗೈರಾಗಿದ್ದರು, ಈ ಸಂಬಂಧ ಮೇಲಾಧಿಕಾರಿಗಳು ದೂರವಾಣಿ ಕರೆ ಮಾಡಿದ್ದರೂ ಕರೆಯನ್ನು ಸ್ವೀಕರಿಸಿರಲಿಲ್ಲ. ವೈದ್ಯ ಕರೆ ಸ್ವೀಕರಿಸದೇ ಇದ್ದಾಗ ಅನುಮಾನಗೊಂಡ ತಾಲೂಕು ಆಸ್ಪತ್ರೆಯವರು, ಸೋಮವಾರ ಸಂಜೆ ಅಫಜಲಪುರ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮತ್ತು ತಾಲೂಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಸುಶೀಲ್ ಕುಮಾರ್ ನೇತೃತ್ವದಲ್ಲಿ ಡಾ.ಸಂಗಮೇಶ್ ಟಕ್ಕಳಕಿ ನಡೆಸುತ್ತಿದ್ದ ಸಂಗಮೇಶ್ವರ ಕ್ಲಿನಿಕ್ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

    ಈ ವೇಳೆ ಡಾ.ಸಂಗಮೇಶ್ ಟಕ್ಕಳಕಿ ರೋಗಿಯೊಬ್ಬರನ್ನು ತಪಾಸಣೆ ಮಾಡುತ್ತಿದ್ದಾಗಲೇ ಅಧಿಅಕರಿಗಳ ಕೈಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಸದ್ಯ ಸರ್ಕಾರಿ ಕೆಲಸಕ್ಕೆ ಅನಧಿಕೃತವಾಗಿ ಗೈರಾಗಿರುವ ಮತ್ತು ಖಾಸಗಿ ಕ್ಲಿನಿಕ್‍ನಲ್ಲಿ ಕರ್ತವ್ಯ ನಿರ್ವಸುತ್ತಿದ್ದ ಸಂಬಂಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

  • ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಲೈಸೆನ್ಸ್ ರದ್ದು – ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ

    ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಲೈಸೆನ್ಸ್ ರದ್ದು – ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ

    ಹಾವೇರಿ: ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಗಿ ರದ್ದು ಪಡಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಹಾವೇರಿ ನಗರಸಭಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು ಆರೋಗ್ಯದ ದೃಷ್ಟಿಯಿಂದ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವುದು ಆರೋಗ್ಯ, ವೈದ್ಯಕೀಯ, ಗೃಹ ಈ ಇಲಾಖೆಗಳದ್ದಷ್ಟೇ ಕೆಲಸ ಎಂದು ಭಾವಿಸದೆ ಜನರು ಈ ಬಗ್ಗೆ ಸ್ವಯಂಪ್ರೇರಿತರಾಗಿ ಜಾಗೃತರಾಗುವುದು ಮುಖ್ಯ ಎಂದು ಕರೆ ನೀಡಿದರು.

    ಖಾಸಗಿ ವೈದ್ಯರು ಮೆಡಿಕಲ್ ಶಾಪ್, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ. ಒಂದು ವೇಳೆ ಸರ್ಕಾರದ ನೊಟೀಸ್‍ಗೂ ಬೆಲೆಕೊಡದೆ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಗಿ ರದ್ದು ಪಡಿಸಲಾಗುವುದು ಎಂದು ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಿಂದ ಹೊರಬರಬೇಡಿ. ನಮ್ಮ ನಮ್ಮ ಮನೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವ-ದಿಗ್ಬಂಧನ ಹಾಕಿಕೊಳ್ಳುವ ಮೂಲಕ ನಮ್ಮ ಹಾಗೂ ನಮ್ಮ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಆರೋಗ್ಯ ಕಾಪಾಡಲು ಬದ್ಧರಾಗಿದ್ದು, ಜನತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕರಿಸಬೇಕು. ಅನಾವಶ್ಯಕ ಮನೆಯಿಂದ ಹೊರಬರಬೇಡಿ, ಅನಿವಾರ್ಯತೆ ಇದ್ದಲ್ಲಿ ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಿಂದ ಹೊರಬರಬೇಕು ಎಂದು ಮನವಿ ಮಾಡಿದರು.

    ಈಗಾಗಲೇ ಅತಿ ಅವಶ್ಯಕ ವಸ್ತುಗಳಾದ ದಿನಸಿ, ತರಕಾರಿ, ಹಣ್ಣು-ಹಂಪಲುಗಳನ್ನು ವಾರ್ಡ್ ವಾರು ತಳ್ಳುವಗಾಡಿಯ ಮೂಲಕ ಮಾರಲು ಅನುಕೂಲ ಮಾಡಿಕೊಡಲಾಗಿದೆ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದರು.

    ಬಿ.ಸಿ.ಪಾಟೀಲ್ ಇಂದು ಜಿಲ್ಲೆಯ ಹಿರೇಕೆರೂರು ನಗರ, ರಾಣೆಬೆನ್ನೂರು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆ, ಹಾವೇರಿ ಎಪಿಎಂಸಿ ಸೇರಿದಂತೆ ಹಲವೆಡೆ ಭೇಟಿ ನೀಡಿದ್ದರು. ಅಲ್ಲದೇ ಕೊರೊನಾ ಬಗ್ಗೆ ಜನತೆಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಹಾವೇರಿ ಶಾಸಕ ನೆಹರು ಓಲೇಕಾರ್, ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಉಪಸ್ಥಿತರಿದ್ದರು.

  • ತಾಲೂಕುಗಳಲ್ಲಿನ ಖಾಸಗಿ ಕ್ಲಿನಿಕ್‍ಗಳನ್ನು ತೆರೆದು ಚಿಕಿತ್ಸೆ ನೀಡಲು ಬೀದರ್ ಡಿಸಿ ಸೂಚನೆ

    ತಾಲೂಕುಗಳಲ್ಲಿನ ಖಾಸಗಿ ಕ್ಲಿನಿಕ್‍ಗಳನ್ನು ತೆರೆದು ಚಿಕಿತ್ಸೆ ನೀಡಲು ಬೀದರ್ ಡಿಸಿ ಸೂಚನೆ

    ಬೀದರ್: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕಗಳು ಮುಚ್ಚಿರುವುದಾಗಿ ತಿಳಿದು ಬಂದಿದ್ದು, ಕೂಡಲೇ ಎಲ್ಲಾ ಖಾಸಗಿ ಕ್ಲಿನಿಕ್‍ಗಳು ತೆರೆದು ಸಾಮಾನ್ಯ ಲಕ್ಷಣ ಕಂಡು ಬರುವ ರೋಗಿಗಳಿಗೆ ಚಿಕಿತ್ಸೆ ಒದಗಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಆರ್ ಮಹಾದೇವ್ ಅವರು ಡಿಎಚ್‍ಓ ಅವರಿಗೆ ಸೂಚಿಸಿದ್ದಾರೆ.

    ಇಂದು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ತಾಲೂಕಿನ ತಹಶೀಲ್ದಾರ್ ಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಡಿಸಿ ವಿಡಿಯೋ ಸಂವಾದ ನಡೆಸಿದರು. ಕೊರೊನಾ ವೈರಾಣು ತೀವ್ರ ಹರಡುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸುವ ನಿಟ್ಟಿನಲ್ಲಿ ಜನತೆಗೆ ಈಗ ಸಕಾಲಕ್ಕೆ ಚಿಕಿತ್ಸೆ ಕೊಡಬೇಕಿದೆ. ಹೀಗಿದ್ದರೂ ಖಾಸಗಿ ಕ್ಲಿನಿಕ್‍ಗಳು ಮುಚ್ಚಿದಲ್ಲಿ ಅಂತಹ ಕ್ಲಿನಿಕ್‍ಗಳ ಪರವಾನಿಗೆಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ವಿದೇಶ, ಹೊರ ರಾಜ್ಯಗಳಿಂದ ಬಂದು ಹೋಮ್ ಕ್ವಾರಂಟೈನ್ ನಲ್ಲಿ ಇರುವ ಜನರ ಬಗ್ಗೆ ಸರಿಯಾದ ರೀತಿಯಲ್ಲಿ ಗಮನ ಕೊಡಬೇಕು ಎಂದು ಎಲ್ಲಾ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಸಾಮಾನ್ಯ ರೋಗಿಗಳು ಬಂದರೂ ಕೂಡ ಅಂತರ ಕಾಯ್ದುಕೊಂಡು ಅವರಿಗೆ ತಪಾಸಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಎಲ್ಲಾ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

    ಈ ವೇಳೆ ಸಿಇಓ ಗ್ಯಾನೇಂದ್ರಕುಮಾರ್ ಗಂಗವಾರ, ಬೀದರ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ ರೆಡ್ಡಿ, ಬ್ರಿಮ್ಸ್ ನಿರ್ದೇಶಕರಾದ ಡಾ. ಶಿವಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶರಣಬಸಪ್ಪ ಕೋಟಪ್ಪಗೋಳ, ನಗರಸಭೆ ಪೌರಾಯುಕ್ತರಾದ ಬಸಪ್ಪ, ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ. ರತಿಕಾಂತ ಸ್ವಾಮಿ, ಇಂದುಮತಿ ಪಾಟೀಲ್, ಜಿಲ್ಲಾ ಕಣ್ಗಾವಲು ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಕೃಷ್ಣಾರೆಡ್ಡಿ ಹಾಗೂ ಇತರರು ಉಪಸ್ಥಿತರಿದ್ದರು.