Tag: Private Sector Job

  • ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ!

    ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ!

    ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ (Reservation For Kannadigas In Private Sector) ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಅಂತಲೂ ಬರೆದುಕೊಂಡಿದ್ದಾರೆ.

    ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೇ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೇ ಶುಕ್ರವಾರ ಅಥವಾ ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಮಂಡನೆ ಆಗಲಿದೆ ಎಂದು ಹೇಳಲಾಗಿತ್ತು. ಆದರೀಗ ತಾತ್ಕಾಲಿಕವಾಗಿ ವಿಧೇಯಕವನ್ನು ತಡೆಹಿಡಿಯಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

    ಮಸೂದೆಯಲ್ಲೇನಿದೆ?
    ಆಡಳಿತಾತ್ಮಕ ಹುದ್ದೆಗೆ 50% (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು)

    ಆಡಳಿತೇತರ ಹುದ್ದೆಗೆ 75% (ಕ್ಲರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ)
    * ಉಲ್ಲಂಘಿಸಿದರೆ 25 ಸಾವಿರ ರೂ. ವರೆಗೆ ದಂಡ. ಕನಿಷ್ಟ 10 ಸಾವಿರ, ಗರಿಷ್ಟ 25 ಸಾವಿರ
    * ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ

    ಕನ್ನಡಿಗರಿಗೆ ಅರ್ಹತೆ ಹೇಗೆ?
    * ಕರ್ನಾಟಕದಲ್ಲಿ ಹುಟ್ಟಿರಬೇಕು.
    * ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು.
    * ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು.
    * ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದನ್ನೂ ಓದಿ: ನೈಸ್‌ ರಸ್ತೆ ಟೋಲ್‌ ದರ ಏರಿಕೆ ಬೆನ್ನಲ್ಲೇ ಶಾಕ್‌ – ಟೋಲ್‌ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ!

    ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ ಕೊಟ್ಟಿರುವುದನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದರು. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಹೇಳಿದ್ದರು.

    ರಾಜ್ಯ ಸರ್ಕಾರದ ನಿರ್ಧಾರಕ್ಕೆ ಐಟಿ-ಬಿಟಿ ವಲಯದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಉದ್ಯಮಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂದರ್ ಷಾ, ಟೆಕ್ ಹಬ್ ಆಗಿರೋ ನಮಗೆ ನುರಿತ ಪ್ರತಿಭೆಗಳು ಬೇಕಾಗಿವೆ. ನಮಗೆ ಲೋಕಲ್ ಅನ್ನೋದಕ್ಕಿಂತ ನುರಿತ ಪ್ರತಿಭೆಗಳು ಬೇಕಿದೆ ಎಂದು ಪೋಸ್ಟ್ ಮಾಡಿದ್ದರು. ಅಲ್ಲದೇ ಮೋಹನ್ ದಾಸ್ ಪೈ ವಿರೋಧ ವ್ಯಕ್ತಪಡಿಸಿದ್ದರು. ಇದು ತಾರತಮ್ಯ, ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಯಾರೆಂದು ಸರ್ಕಾರ ಪ್ರಮಾಣೀಕರಿಸುತ್ತದೆಯೇ? ಅನಿಮಲ್ ಫಾರ್ಮ್‌ನಲ್ಲಿರುವಂತೆ ಇದು ಫ್ಯಾಸಿಸ್ಟ್ ಮಸೂದೆಯಾಗಿದೆ. ಅದನ್ನು ನಂಬಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.

  • ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.100 ಮೀಸಲಾತಿ; ಎಕ್ಸ್‌ನಲ್ಲಿ ಪೋಸ್ಟ್‌ ಡಿಲೀಟ್‌ ಮಾಡಿದ ಸಿಎಂ

    ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.100 ಮೀಸಲಾತಿ; ಎಕ್ಸ್‌ನಲ್ಲಿ ಪೋಸ್ಟ್‌ ಡಿಲೀಟ್‌ ಮಾಡಿದ ಸಿಎಂ

    ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ `ಸಿ’ ಮತ್ತು `ಡಿ’ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100 ಮೀಸಲಾತಿ (Reservation For Kannadigas) ನೀಡುವ ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಗಳವಾರ ಸಂಜೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದನ್ನ ಬುಧವಾರ ಡಿಲೀಟ್ ಮಾಡಿದ್ದಾರೆ.

    ಸಿಎಂ ಟ್ವೀಟ್‌ಗೆ ಖಾಸಗಿ ಉದ್ಯಮ ವಲಯದಿಂದ (Private Sector) ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಈ ರೀತಿಯ ಕ್ರಮದಿಂದ ಐಟಿ ಉದ್ಯಮಕ್ಕೆ ತೊಂದರೆಯಾಗಲಿದೆ. ಉದ್ಯಮದಲ್ಲಿ ಗುಣಮಟ್ಟದ ಸೇವೆ ನೀಡಲು ಸಮಸ್ಯೆಯಾಗುತ್ತದೆ ಎಂದು ಉದ್ಯಮಿಗಳು ಆಕ್ಷೇಪ ಎತ್ತಿದ್ದರು. ಕೆಲವರಂತೂ ಇದು ತಾರತಮ್ಯದ ಮಸೂದೆ ಎಂದು ಆಕ್ಷೇಪ ವ್ಯಕ್ತಪಸಿಡಿದ್ದರು. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ; ವಿಧಾನಸಭೆ ಅಧಿವೇಶನದಲ್ಲಿ ಬಿಲ್ ಮಂಡನೆಗೆ ಗ್ರೀನ್ ಸಿಗ್ನಲ್

    ಉದ್ಯಮ ವಲಯದಲ್ಲಿ ಆಕ್ಷೇಪ ಕೇಳಿಬಂದ ನಂತರ ಎಚ್ಚೆತ್ತ ಸಿಎಂ ಬುಧವಾರ ಎಕ್ಸ್ ಪೋಸ್ಟ್ ಅನ್ನು ಅಳಿಸಿಹಾಕಿದ್ದಾರೆ. ಜೊತೆಗೆ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನೈಸ್‌ ರಸ್ತೆ ಟೋಲ್‌ ದರ ಏರಿಕೆ ಬೆನ್ನಲ್ಲೇ ಶಾಕ್‌ – ಟೋಲ್‌ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ! 

    ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
    ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು – ಬಿಜೆಪಿ ನಾಯಕ ಸುವೆಂದು ಅಧಿಕಾರಿ