Tag: Punjab Politics

  • ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್‌ ಶಾ ಜೊತೆ ಮಾತನಾಡಿದ್ದೇನೆ: ಅಮರೀಂದರ್‌ ಸಿಂಗ್‌

    ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್‌ ಶಾ ಜೊತೆ ಮಾತನಾಡಿದ್ದೇನೆ: ಅಮರೀಂದರ್‌ ಸಿಂಗ್‌

    ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಕಾಂಗ್ರೆಸ್‌ ತೊರೆದಿದ್ದ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಅವರು ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿದ್ದಾರೆ. ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದರೆ ಪಂಜಾಬ್‌ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಸಿಂಗ್‌ ಹೇಳಿದ್ದರು. ಅಂತೆಯೇ ಈಗ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ.

    ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಈಗಾಗಲೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮಾತನಾಡಿದ್ದೇನೆ. ಶನಿವಾರದಂದು ಬಿಜೆಪಿ ರಾಷ್ಟ್ರಾಧ್ಯಾಕ್ಷರನ್ನು ಭೇಟಿಯಾಗಲಿದ್ದೇನೆ ಎಂದು ಮಾಜಿ ಸಿಎಂ ಅಮರೀಂದರ್‌ ಸಿಂಗ್‌ ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್‌ ವಾರಿಯರ್ಸ್‌ಗೆ ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ

    ಕಾಂಗ್ರೆಸ್‌ನ ಯಾವುದೇ ಶಾಸಕರು ತನ್ನ ಬೆಂಬಲಕ್ಕೆ ನಿಂತಿಲ್ಲ ಎಂಬ ಮಾತುಗಳನ್ನು ಅಮರೀಂದರ್‌ ಸಿಂಗ್‌ ತಳ್ಳಿಹಾಕಿದ್ದಾರೆ. ಕಾಂಗ್ರೆಸ್‌ನ ಅನೇಕ ಶಾಸಕರು ತಮ್ಮೊಂದಿಗೆ ಸೇರಲು ಉತ್ಸುಕರಾಗಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಗಾಗಿ ಕಾಯುತ್ತಿದ್ದಾರೆ ಎಂದು ಸಿಂಗ್‌ ತಿಳಿಸಿದ್ದಾರೆ.

    ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮದೇ ಆದ ಅವಕಾಶಗಳಿಗೂ ಅಮರೀಂದರ್‌ ಹಾನಿಮಾಡಿಕೊಳ್ಳುತ್ತಿದ್ದಾರೆ ಎಂದು ಪಂಜಾಬ್‌ ಸಿಎಂ ಚರಣ್‌ಜಿತ್‌ ಸಿಂಗ್‌ ಹೇಳಿದ್ದರು. ಅವರ ಹೇಳಿಕೆಯನ್ನೂ ಅಮರೀಂದರ್‌ ಅವರು ನಿರಾಕರಿಸಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಎಲ್ಲಾ ಕಡೆ ಬಿಜೆಪಿ ಕಡೆಗಿನ ಒಲವು ಹೆಚ್ಚಾಗಿದೆ. ಮೈತ್ರಿ ಆಗುವುದರಿಂದ ಅನೇಕ ಹಿಂದೂಗಳು ಬಿಜೆಪಿ ಮತ್ತು ನಮ್ಮ ಪಕ್ಷವನ್ನು ಬೆಂಬಲಿಸುತ್ತಾರೆ. ಪಂಜಾಬ್‌ನಲ್ಲಿ ಶೇ. 36ರಷ್ಟು ಹಿಂದೂಗಳಿದ್ದು, ರೈತರ ಬೆಂಬಲವೂ ನಮಗೆ ಸಿಗಲಿದೆ. ಹೀಗಾಗಿ ನಾವು ಕಾಂಗ್ರೆಸ್‌ ಪಕ್ಷಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂಬ ಆಶಯವನ್ನು ಅಮರೀಂದರ್‌ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚೀನಾ ಮೇಲೆ ಕಣ್ಣಿಡಲು ಬಂತು ಇಸ್ರೇಲ್ ಡ್ರೋನ್

    ಎಷ್ಟು ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ಅಮರೀಂದರ್‌ ಸಿಂಗ್‌ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಈಗಾಗಲೇ ನಮ್ಮ ಬಳಿ 30-40 ಅರ್ಜಿದಾರರಿದ್ದಾರೆ. ಆದರೆ ಎಷ್ಟು ಶಾಸಕರು, ಸಂಸದರು ನಮ್ಮೊಂದಿಗಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂಬ ಹೇಳಿದ್ದಾರೆ.

  • ಪಂಜಾಬ್ ಕಾಂಗ್ರೆಸ್ ಸರ್ಕಾರಕ್ಕೆ ಶುರುವಾಯ್ತು-ಆಪ್ ಜೊತೆ ಕೈ ಜೋಡಿಸ್ತಾರಾ ಸಿಧು?

    ಪಂಜಾಬ್ ಕಾಂಗ್ರೆಸ್ ಸರ್ಕಾರಕ್ಕೆ ಶುರುವಾಯ್ತು-ಆಪ್ ಜೊತೆ ಕೈ ಜೋಡಿಸ್ತಾರಾ ಸಿಧು?

    ಚಂಡೀಗಢ: ಪಂಜಾಬ್‍ನಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಂಡಾಯದ ಬಿಸಿ ತಾಗಿದ್ದು, ಆಮ್ ಆದ್ಮಿ ಪಾರ್ಟಿ (ಆಪ್) ಜೊತೆ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಕೈ ಜೋಡಿಸ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿವೆ. ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮೇಲೆ ಅಸಮಾಧಾನ ಹೊಂದಿರುವ ನವಜೋತ್ ಸಿಂಗ್ ಸಿಧು ಅವರನ್ನು ಸೆಳೆಯುವ ಪ್ರಯತ್ನವನ್ನು ಆಪ್ ನಾಯಕರು ಮಾಡುತ್ತಿದ್ದಾರೆ. ಬಹಿರಂಗವಾಗಿಯೇ ಸಿಧು ಅವರನ್ನು ಪಕ್ಷಕ್ಕೆ ಬರುವಂತೆ ಆಪ್ ನಾಯಕರು ಆಹ್ವಾನಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಆಪ್ ಶಾಸಕ ಅಮನ್ ಅರೋಡಾ, ಸಿಎಂ ಅಮರಿಂದರ್ ಸಿಂಗ್ ಸರ್ಕಾರದ ನಾಲ್ವರು ಕಾಂಗ್ರೆಸ್ ಶಾಸಕರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಸದ್ಯ ನಮಗೆ ಕಾಂಗ್ರೆಸ್ ನ 40 ಶಾಸಕರ ಬೆಂಬಲವಿದೆ. ಕಾಂಗ್ರೆಸ್ ಮತ್ತು ಆಪ್ (19) ಶಾಸಕರು ಸೇರಿದರೆ ಬಹುಮತ (59) ನಮ್ಮದಾಗತ್ತದೆ. ಹಾಗಾಗಿ ನವಜೋತ್ ಸಿಂಗ್ ಸಿಧು ಅವರಿಗೆ ಹೊಸ ಸರ್ಕಾರ ರಚಿಸಲು ಆಹ್ವಾನಿಸುತ್ತೇನೆ. ಈ ಸಂಬಂಧ ನಾವು ಕಾಂಗ್ರೆಸ್ ಶಾಸಕರೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಟಿಕೆಟ್ ನಿರಾಕರಿಸಿದ್ದಕ್ಕೆ ಸಿಧು ಪತ್ನಿ ಕಾಂಗ್ರೆಸ್‍ಗೆ ಗುಡ್ ಬೈ

    2017ರ ಫಲಿತಾಂಶ: 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 117 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77, ಶಿರೋಮಣಿ ಅಕಾಲಿ ದಳ 15 ಮತ್ತು ಆಪ್ 20, ಬಿಜೆಪಿ 3 ಮತ್ತು ಎಲ್‍ಐಪಿ 2ರಲ್ಲಿ ಗೆಲುವು ದಾಖಲಿಸಿತ್ತು. ಮ್ಯಾಜಿಕ್ ನಂಬರ್ ಸಹಿತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್, ಸರ್ಕಾರ ರಚನೆ ಮಾಡಿತ್ತು. ರಾಜ್ಯದಲ್ಲಿ ಉಪಚುನಾವಣೆ ನಡೆದ ಹಿನ್ನೆಲೆಯಲ್ಲಿ ಆಪ್ ಶಾಸಕರ ಸಂಖ್ಯೆ 20ರಿಂದ 19ಕ್ಕೆ ಇಳಿಕೆಯಾಗಿದೆ. ಸದ್ಯ ಕಾಂಗ್ರೆಸ್ ಸರ್ಕಾರ 80 ಶಾಸಕರ ಬಲವನ್ನು ಹೊಂದಿದೆ. ಇದನ್ನೂ ಓದಿ: ಪಂಜಾಬಿನಲ್ಲಿ ಕೈ ಬಂಡಾಯ – ಸಚಿವ ಸ್ಥಾನಕ್ಕೆ ಸಿಧು ರಾಜೀನಾಮೆ

    ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆದಾಗನಿಂದಲೂ ಸಿಎಂ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಶೀತನ ಸಮರ ನಡೆದುಕೊಂಡು ಬಂದಿದೆ. ಸಿಎಂ ಮುನಿಸಿಕೊಂಡ ಸಿಧು ಹಲವು ಬಾರಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿ, ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸದ್ಯ ಆಪ್ ನಾಯಕರ ಹೇಳಿಕೆ ಪಂಜಾಬ್ ರಾಜಕೀಯ ಅಂಗಳದಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಕ್ಯಾಪ್ಟನ್ ವಿರುದ್ಧ ಕಮೆಂಟ್, ಸಿಧುಗೆ ಅಸಮಾಧಾನ ಇದ್ರೆ ಸಚಿವ ಸ್ಥಾನ ಬಿಡಲಿ – ಪಂಜಾಬ್ ಸಚಿವ