Tag: Pushkar

  • ಭೀಮಾ ಪುಷ್ಕರದಲ್ಲಿ ಮಿಂದೆದ್ದು ಪಾವನರಾದ ಭಕ್ತರು

    ಭೀಮಾ ಪುಷ್ಕರದಲ್ಲಿ ಮಿಂದೆದ್ದು ಪಾವನರಾದ ಭಕ್ತರು

    ರಾಯಚೂರು: ತೆಲಂಗಾಣ ಕರ್ನಾಟಕ ಗಡಿಯಲ್ಲಿ ಭೀಮಾ ಪುಷ್ಕರದ ಸಂಭ್ರಮ ಮನೆಮಾಡಿದ್ದು, 12 ವರ್ಷಕ್ಕೆ ಒಮ್ಮೆ ಬರುವ ಭೀಮಾ ಪುಷ್ಕರದಲ್ಲಿ ಪುಣ್ಯ ಸ್ನಾನ ಮಾಡಲು ಜನ ದೂರದ ಊರುಗಳಿಂದ ಬರುತ್ತಿದ್ದಾರೆ.

    ಜಿಲ್ಲೆಯಲ್ಲಿ ಭೀಮಾನದಿ ಹರಿಯುವುದಿಲ್ಲವಾದರೂ ತೆಲಂಗಾಣ ಗಡಿಯಲ್ಲಿ ಭೀಮಾ-ಕೃಷ್ಣ ಸಂಗಮವಾಗುವುದರಿಂದ ಪುಷ್ಕರಕ್ಕೆ ಮಹತ್ವ ಬಂದಿದೆ. ನದಿಯಲ್ಲಿ ಮಾಡುವ ಸ್ನಾನ ಪುಣ್ಯ ಸ್ನಾನ ಅಂತಲೇ ಮೊದಲಿನಿಂದಲೂ ನಂಬಿಕೆ ಇದೆ. ಆದರೆ ಪುಷ್ಕರದ ವೇಳೆ ಆಯಾ ನದಿಯಲ್ಲಿ ಮುಕ್ಕೋಟಿ ದೇವರು ಮಿಂದೇಳುವುದರಿಂದ ಆ ಸ್ನಾನ ಪರಮ ಪವಿತ್ರ ಸ್ನಾನವೆಂದೇ ನಂಬಲಾಗುತ್ತದೆ.

    ಗುರು ಯಾವ ರಾಶಿಗೆ ಪ್ರವೇಶಿಸುತ್ತಾನೆ ಎನ್ನುವುದರ ಮೇಲೆ ಒಂದೊಂದು ನದಿಯ ಪುಷ್ಕರ ನಿರ್ಧಾರವಾಗುತ್ತದೆ. ಸಿಂಹ ರಾಶಿಯಲ್ಲಿ ಗೋದಾವರಿ ನದಿಗೆ, ಕನ್ಯಾ ರಾಶಿಯಲ್ಲಿ ಕೃಷ್ಣ ನದಿಗೆ, ತುಲಾ ರಾಶಿಯಲ್ಲಿ ಕಾವೇರಿ ನದಿಗೆ ಹಾಗೂ ವೃಶ್ಚಿಕ ರಾಶಿಯಲ್ಲಿ ಭೀಮಾನದಿಗೆ ಪುಷ್ಕರ ಬರುತ್ತದೆ.

    12 ವರ್ಷಗಳ ಬಳಿಕ ಭೀಮಾ ನದಿಯಲ್ಲಿ ಪುಷ್ಕರ ನಡೆಯುತ್ತಿದ್ದು, ವಿಶೇಷವಾಗಿ ಕೃಷ್ಣದೇವರಾಯ, ನಿಜಾಮಶಾಯಿ, ಆದಿಲ್‍ಶಾಯಿಗಳ ರಾಜ್ಯಗಳ ಗಡಿ ಸಂಗಮದ ಪ್ರದೇಶದಲ್ಲೆ ಈಗ 12 ದಿನ ಕಾಲ ಪುಷ್ಕರ ನಡೆಯುತ್ತಿದೆ. ಹೀಗಾಗಿ ರಾಯಚೂರಿನಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಭೀಮಾ ನದಿ ಪುಷ್ಕರದ ಪುಣ್ಯ ಸ್ನಾನಕ್ಕಾಗಿ ತೆಲಂಗಾಣಕ್ಕೆ ತೆರಳುತ್ತಿದ್ದಾರೆ.

    ಈ ಬಗ್ಗೆ ಅರ್ಚಕರಾದ ಶೇಷಗಿರಿಯಾಚಾರ್ ಪ್ರತಿಕ್ರಿಯಿಸಿ, ಪುಷ್ಕರಕ್ಕೆ ಬರುವ ಭಕ್ತರು ಪುಣ್ಯಸ್ನಾನದ ಜೊತೆ ಪಿಂಡ ಪ್ರಧಾನವನ್ನು ಮಾಡುತ್ತಾರೆ. ಇಲ್ಲಿ ದಾನಗಳನ್ನು ಮಾಡುವ ಮೂಲಕ ತಮ್ಮ ಪಾಪಕರ್ಮಗಳನ್ನು ಕಳೆದುಕೊಳ್ಳುತ್ತಾರೆ. ಈ ಬಾರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಿರುವುದರಿಂದ ಪುಷ್ಕರಕ್ಕೆ ಅನಾನುಕೂಲಗಳು ಸಹ ಆಗಿವೆ. ಆದರೂ ಸಹ ಪುಣ್ಯ ಸ್ನಾನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಜನ ಭೀಮಾನದಿಗೆ ಬರುತ್ತಾರೆ ಎಂದು ತಿಳಿಸಿದರು.

    ಪುಷ್ಕರದ ಕುರಿತು ಸ್ಥಳೀಯರಾದ ಚಕ್ರಪಾಣಿ ಆಚಾರ್ ಮಾತನಾಡಿ, ಕರ್ನಾಟಕದಲ್ಲೇ ಹೆಚ್ಚು ದೂರದವರೆಗೆ ಸಾಗುವ ಭೀಮಾನದಿಯು ತೆಲಂಗಾಣ ಪ್ರವೇಶಿಸಿ ಪುನಃ ಕೃಷ್ಣಾ ನದಿಯಲ್ಲಿ ಸಂಗಮವಾಗುತ್ತದೆ. ತೆಲಂಗಾಣದ ಮೆಹಬೂಬನಗರ ಜಿಲ್ಲೆಯ ಕೃಷ್ಣ ಮಂಡಲದಲ್ಲಿ ಬರುವ ಕುಸಮತಿ ಹಾಗೂ ತಂಗಡಗಿಯಲ್ಲಿ ಪುಷ್ಕರಕ್ಕೆ ಸಕಲ ವ್ಯವಸ್ಥೆಗಳನ್ನ ಮಾಡಲಾಗಿದೆ. ಗುರು ರಾಘವೇಂದ್ರ ಸ್ವಾಮಿಗಳ ಪ್ರೀತಿಗೆ ಪಾತ್ರರಾದ ಮಹಾಯತಿ ಕೃಷ್ಣದ್ವೈಪಾದರು ಐಕ್ಯವಾದ ಸ್ಥಳವು ಇಲ್ಲೇ ಇರುವುದರಿಂದ ಪುಷ್ಕರಕ್ಕೆ ಇನ್ನಷ್ಟು ಮಹತ್ವ ಬಂದಿದೆ ಎಂದು ವಿವರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರತೀಯ ರೈಲ್ವೇಯಿಂದ ದೇವಸ್ಥಾನಗಳಿಗೆ ವಿಶೇಷ ಪ್ಯಾಕೇಜ್! ಟೆಕೆಟ್ ಎಷ್ಟು?

    ಭಾರತೀಯ ರೈಲ್ವೇಯಿಂದ ದೇವಸ್ಥಾನಗಳಿಗೆ ವಿಶೇಷ ಪ್ಯಾಕೇಜ್! ಟೆಕೆಟ್ ಎಷ್ಟು?

    ಬೆಂಗಳೂರು: ಪ್ರಸಿದ್ಧ ದೇವಸ್ಥಾನಗಳಿಗೆ ಭಾರತೀಯ ರೈಲ್ವೇ ಹತ್ತು ದಿನಗಳ ವಿಶೇಷ ಪ್ಯಾಕೇಜ್ ಪ್ರವಾಸ ಪ್ರಾರಂಭಿಸಿದ್ದು, ಕಡಿಮೆ ದರದಲ್ಲಿ ಮೂರು ರಾಜ್ಯಗಳ ವಿವಿಧ ದೇವಸ್ಥಾನ ಹಾಗೂ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡಬಹುದು.

    ಸೆಪ್ಟೆಂಬರ್ 15ರಂದು ಬೆಂಗಳೂರಿನಿಂದ ಪ್ರವಾಸ ಪ್ರಾರಂಭವಾಗಲಿದ್ದು ಒಬ್ಬರಿಗೆ 10,820 ರೂ. ಟಿಕೆಟ್ ದರವನ್ನು ನಿಗದಿಪಡಿಸಿದೆ.

    ಯಾವ ಸ್ಥಳಕ್ಕೆ ಪ್ರವಾಸ?
    ಬೆಂಗಳೂರಿನಿಂದ ಹೊರಟ ರೈಲು ಮಧ್ಯಪ್ರದೇಶದ ಮಹಾಕಾಳೇಶ್ವರ, ಓಂಕಾರೇಶ್ವರ, ರಾಜಸ್ಥಾನದ ಜೈಪುರ, ಪುಷ್ಕರ, ಮಹಾರಾಷ್ಟ್ರದ ತ್ರಿಯಂಬಕೇಶ್ವರ, ಪಂಢರಾಪುರ ಮತ್ತು ಶಿರಿಡಿಗೆ ಕರೆದೊಯ್ಯಲಾಗುವುದು ಎಂದು ಐಆರ್‌ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

    ವಿಶೇಷ ಸೂಚನೆ:
    ಪ್ರಯಾಣಿಕರಿಗೆ ತಿಂಡಿಯ ವ್ಯವಸ್ಥೆಯನ್ನು ಕೂಡಾ ಐಆರ್‌ಸಿಟಿಸಿ ನಿರ್ವಹಿಸಲಿದೆ. ಆದರೆ ಕೇವಲ ಸಸ್ಯಾಹಾರ ತಿನಿಸುಗಳನ್ನು ಮಾತ್ರ. ಪ್ರತಿದಿನ ಒಂದು ಲೀಟರ್ ನೀರು ಮತ್ತು ಎರಡು ಬಾರಿ ಕಾಫಿ ಅಥವಾ ಟೀ ಒದಗಿಸಲಾಗುತ್ತದೆ. ನಿಲ್ದಾಣಗಳಿಂದ ದೇವಸ್ಥಾನಗಳಿಗೆ ಹೋಗಲು ರೈಲ್ವೆ ನಿಗಮ ಪ್ರಯಾಣಿಕರಿಗೆ ಟ್ಯಾಕ್ಸಿ ವ್ಯವಸ್ಥೆ ಕೂಡಾ ಇದೆ.

    ಮೈಸೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಬುಕ್ ಆಗಿಲ್ಲ. ಒಂದು ವೇಳೆ ಮುಂದಿನ ಕೆಲವು ದಿನಗಳಲ್ಲಿ ಸಂಖ್ಯೆ ಏರಿಕೆಯಾದರೆ ಮೈಸೂರು ರೈಲು ನಿಲ್ದಾಣದಿಂದಲೇ ಪ್ರಯಾಣ ಪ್ರಾರಂಭಿಸಲಾಗುವುದು. ಇಲ್ಲದಿದ್ದರೆ ಹಾಸನದಿಂದ ಪ್ರಯಾಣ ಪ್ರಾರಂಭವಾಗಲಿದೆ ಎಂದು ಐಆರ್‌ಸಿಟಿಸಿ ಅಧಿಕಾರಿ ಇಮ್ರಾನ್ ಅಹ್ಮದ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv