Tag: Pushkara

  • ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ತುಂಗಭದ್ರಾ ಪುಷ್ಕರ ಸ್ನಾನಕ್ಕೆ ಬ್ರೇಕ್

    ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ತುಂಗಭದ್ರಾ ಪುಷ್ಕರ ಸ್ನಾನಕ್ಕೆ ಬ್ರೇಕ್

    – ತಾಲೂಕು ಆಡಳಿತದಿಂದ ಆದೇಶ

    ಶಿವಮೊಗ್ಗ: ದಕ್ಷಿಣ ಭಾರತದ ವಾರಾಣಸಿ ಎಂದೇ ಖ್ಯಾತಿ ಪಡೆದಿರುವ ತುಂಗಾ-ಭದ್ರಾ ನದಿಯ ಸಂಗಮವಾಗಿರುವ ಕೂಡ್ಲಿಯಲ್ಲಿ ಈ ಬಾರಿ ಇತಿಹಾಸ ಪ್ರಸಿದ್ಧ ಪುಷ್ಕರ ಸ್ನಾನಕ್ಕೆ ಬ್ರೇಕ್ ಬಿದ್ದಿದೆ. ಕೋವಿಡ್-19 ಸೋಂಕು ಹರಡುವ ಭೀತಿ ಹಿನ್ನೆಲೆ ಈ ಬಾರಿಯ ಪುಷ್ಕರವನ್ನು ನಿಷೇಧಿಸಿ ತಾಲೂಕು ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಪ್ರಾಚೀನ ಕಾಲದಿಂದಲೂ ಪೂಜೆ, ಧ್ಯಾನ ಮತ್ತು ಶಾಂತಿಯ ಪ್ರಮುಖ ತಾಣವಾಗಿರುವ ಶಿವಮೊಗ್ಗ ಜಿಲ್ಲೆಯ ಕೂಡ್ಲಿಯಲ್ಲಿ ತುಂಗಾ ಮತ್ತು ಭದ್ರಾ ಎರಡು ನದಿಗಳ ಸಂಗಮವಾಗಿದೆ. ದೇಶದಲ್ಲಿ ನದಿಗಳು ಸೇರುವ ಪವಿತ್ರ ಸ್ಥಳಗಳಲ್ಲಿ ಪುಷ್ಕರ ನಡೆಯುವುದು ಸಂಪ್ರದಾಯವಾಗಿದ್ದು, ಇಂದಿನಿಂದ 12 ದಿನಗಳ ಕಾಲ ಈ ಪುಷ್ಕರ ಸಂಭ್ರಮ ನಡೆಯುತ್ತದೆ. ಗುರುವು ಇಂದಿನಿಂದ ತನ್ನ ಪಥ ಬದಲಾಯಿಸುತ್ತಿದ್ದು, ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಈ ಪುಣ್ಯ ದಿನಗಳಂದು ಸಾವಿರಾರು ವರ್ಷಗಳ ಪುರಾಣ ಪ್ರಸಿದ್ಧ ತಾಣವಾಗಿರುವ ಕೂಡ್ಲಿಯಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ಪುಷ್ಕರ ಸ್ನಾನ ನಡೆಯುವುದು ಸಂಪ್ರದಾಯವಾಗಿದೆ. ಆದರೆ ಈ ಬಾರಿ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ರೇಕ್ ಬಿದ್ದಿದೆ.

    ಇಂದಿನಿಂದ ಆರಂಭವಾಗಬೇಕಿದ್ದ ಪುಷ್ಕರ ಸ್ನಾನಕ್ಕೆ ನಿರ್ಬಂಧ ಹೇರಲಾಗಿದ್ದು, ಕೂಡ್ಲಿ ಕ್ಷೇತ್ರಕ್ಕೆ ಹೊಂದಿಕೊಂಡಂತೆ ಇರುವ ಗ್ರಾಮ ಪಂಚಾಯಿತಿ ಈ ಬಾರಿಯ ಪುಷ್ಕರವನ್ನು ನಿಷೇಧಗೊಳಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಹೊರಗಿನಿಂದ ಬರುವವರಿಗೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಇಂದು ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ ಪುಷ್ಕರ ಸ್ನಾನ ಮಾಡಿದರು.

    ರಾಜ್ಯದ ವಿವಿಧೆಡೆಯಿಂದ ಜನ ಆಗಮಿಸಿ ಪುಷ್ಕರದ ದಿನಗಳಲ್ಲಿ ಸ್ನಾನ ಮಾಡಲು ಆಗಮಿಸುತ್ತಿದ್ದರು. ಇಂದಿನ ಯೋಗದ ದಿನ ಸಂಗಮದಲ್ಲಿ ಸ್ನಾನ ಮಾಡಿದರೆ ರೋಗ-ರುಜಿನಗಳು ಮಾಯವಾಗುತ್ತದೆ ಎಂಬುದು ಭಕ್ತರ ನಂಬಿಕೆ. ಆದರೆ ಇದಕ್ಕೆ ಇದೀಗ ಬ್ರೇಕ್ ಬಿದ್ದಿದೆ. ತಾಲೂಕು ಆಡಳಿತದ ಕ್ರಮಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ಪುಷ್ಕರ ನಡೆಸಲೇಬೇಕೆಂದು ಒತ್ತಾಯಿಸುತ್ತಿದ್ದಾರೆ.

  • ತುಂಗಭದ್ರಾ ಪುಷ್ಕರಕ್ಕೆ ಮಂತ್ರಾಲಯ ಮಠದಲ್ಲಿ ಭರ್ಜರಿ ಸಿದ್ಧತೆ

    ತುಂಗಭದ್ರಾ ಪುಷ್ಕರಕ್ಕೆ ಮಂತ್ರಾಲಯ ಮಠದಲ್ಲಿ ಭರ್ಜರಿ ಸಿದ್ಧತೆ

    ರಾಯಚೂರು: 12 ವರ್ಷಕ್ಕೆ ಒಂದು ಬಾರಿ ಬರುವ ಸಂಭ್ರಮದ ಪುಷ್ಕರ ಈ ಬಾರಿ ತುಂಗಭದ್ರಾ ನದಿಯಲ್ಲಿ ನಡೆಯಲಿದೆ. ಹೀಗಾಗಿ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠ ಪುಷ್ಕರಕ್ಕೆ ಭರ್ಜರಿ ತಯಾರಿ ನಡೆಸಿದೆ. ಭಕ್ತರ ಪುಣ್ಯ ಸ್ನಾನಕ್ಕೆ ಹದಿನೈದು ದಿನಗಳ ಮುಂಚಿತವಾಗಿಯೇ ಮಠ ಅಂತಿಮ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.

    ತುಂಗಭದ್ರಾ ನದಿಯ ಪುಷ್ಕರ ಪುಣ್ಯ ಸ್ನಾನಕ್ಕೆ ಈಗ ದಿನಗಣನೇ ಆರಂಭವಾಗಿದೆ. 12 ವರ್ಷಕ್ಕೆ ಒಂದು ಬಾರಿ ಬರುವ ಪುಷ್ಕರ ಆಚರಣೆ ಈ ವರ್ಷ ತುಂಗಾಭದ್ರ ನದಿಗೆ ಬಂದಿದೆ. ಪುಷ್ಕರವನ್ನು ಗುರು ಮಕರ ರಾಶಿಗೆ ಪ್ರವೇಶಿಸಿದ ಸಮಯದಿಂದ 12 ದಿನಗಳವರೆಗೆ ಆಚರಿಸಲಾಗುತ್ತದೆ. ನವೆಂಬರ್ 20ರಿಂದ ಡಿಸೆಂಬರ್ 1ರ ವರೆಗೆ ತುಂಗಭದ್ರಾ ನದಿಯ ಪುಷ್ಕರ ನಡೆಯಲಿದೆ. ಈ ವೇಳೆ ನದಿಯಲ್ಲಿ ಸ್ನಾನ ಮಾಡಿದರೆ ಪುಣ್ಯ ಲಭಿಸುತ್ತದೆ ಅನ್ನೋ ನಂಬಿಕೆಯಿದೆ. ಈ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಯರ ಉತ್ಸವದೊಂದಿಗೆ ತುಂಗಭದ್ರಾ ನದಿಯ ತೀರದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.

    ಮಠದಲ್ಲಿ ಅನ್ನಪ್ರಸಾದ, ಪರಿಮಳ ಪ್ರಸಾದದ ವ್ಯವಸ್ಥೆಯನ್ನು ಭಕ್ತರಿಗೆ ಕಲ್ಪಿಸಲಾಗಿದೆ. ಕೋವಿಡ್ ಹಿನ್ನೆಲೆ ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವ ನಿಯಮಪಾಲನೆಗೆ ಒತ್ತುಕೊಡಲಾಗಿದೆ. ಪುಷ್ಕರದ ವೇಳೆ ದಿನಕ್ಕೆ 25 ಸಾವಿರ ಭಕ್ತಾಧಿಗಳು ಬರುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮಿ ತಿಳಿಸಿದ್ದಾರೆ.

    ಪುಷ್ಕರ ವೇಳೆ ದೇಶದ ಮೂಲೆ ಮೂಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮಠ ಮನವಿ ಮಾಡಿದೆ. ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಇಲ್ಲಿನ ಐದು ಘಾಟ್‍ಗಳಲ್ಲಿ ಒಂದು ಘಾಟ್ ನಲ್ಲಿ ಒಂದು ಗಂಟೆಗೆ 60 ಜನ ಸ್ನಾನ ಮಾಡಲು ಅವಕಾಶ ನೀಡಲಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದ 6 ಗಂಟೆಯವರೆಗೆ ತುಂಗಾಸ್ನಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

    ಮಠದ ಸಿಬ್ಬಂದಿಯಿಂದ ಆವರಣದಲ್ಲಿ ಕೋವಿಡ್ ನಿಯಮ ಪಾಲಿಸುವಂತೆ ಭಕ್ತರಿಗೆ ತಿಳುವಳಿಕೆ ನೀಡಲು ಸಿದ್ಧತೆ ನಡೆದಿದೆ. ವಿವಿಧೆಡೆಯಿಂದ ಪುಣ್ಯ ಸ್ನಾನ ಹಾಗೂ ರಾಯರ ದರ್ಶನಕ್ಕೆ ಬರುವ ಭಕ್ತಾಧಿಗಳಿಗೆ ವಸತಿ ಗೃಹ, ತಾತ್ಕಾಲಿಕ ಶಾಮಿಯಾನ ಕಲ್ಪಿಸಲಾಗುತ್ತಿದೆ. ಪ್ರಾಥಮಿಕ ಚಿಕಿತ್ಸೆ, ಶುದ್ಧ ಕುಡಿಯುವ ನೀರು ಸೇರಿದಂತೆ ಎಲ್ಲಾ ತಯಾರಿಗಳನ್ನು ಮಠದ ಆಡಳಿತ ಮಂಡಳಿ ನಡೆಸಿದೆ.